ಸರ್ಕಾರದಿಂದ ಮಾಧ್ಯಮಗಳ ಸ್ವಾತಂತ್ರ್ಯ ಹರಣ: ಮಾಜಿ ಸಿಎಂ ಕೊಟ್ಟ ಎಚ್ಚರಿಕೆ ಏನು?
ಬೆಂಗಳೂರು, ಆಗಸ್ಟ್ 18: ಕರ್ನಾಟಕದಲ್ಲಿ ರಾಜ್ಯ ಸರ್ಕಾರವು ತನ್ನ ವಿರುದ್ದ ಟೀಕಿಸಿದವರನ್ನು ದಮನ ಮಾಡುವ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದೆ. ಮಾಧ್ಯಮಗಳ ಸ್ವಾತಂತ್ರ್ಯ ಹರಣ ಮಾಡಲಾಗುತ್ತಿದ್ದು, ಇದರ ವಿರುದ್ಧ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದರು.
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನಿವಾಸದಲ್ಲಿ ನಡೆದ ಪಕ್ಷದ ಬೆಂಗಳೂರು ಶಾಸಕರ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹನ್ನೊಂದು ಜನ ಶಾಸಕರು ಫೇಕ್ ಪತ್ರ ಎಂದು ದೂರು ಕೊಟ್ಟ ತಕ್ಷಣ ಮಾಧ್ಯಮದವರಿಗೆ ನೊಟಿಸ್ ಕೊಡಲಾಗುತ್ತಿದೆ. ಮೊದಲು ಪತ್ರಕ್ಕೆ ಸಹಿ ಮಾಡಿದವರನ್ನು ಕರೆಯಿಸಿ ವಿಚಾರಣೆ ಮಾಡಬೇಕಿತ್ತು ಎಂದರು.

ಪತ್ರದಲ್ಲಿ ಸಹಿ ಮಾಡಿದ್ದು ನಕಲಿನೋ ಅಥವಾ ಅಸಲಿಯೋ ಎಂಬುದನ್ನು ವಿಚಾರಣೆ ಮಾಡಬೇಕು. ಶಾಸಕರು ಸಹಿ ಮಾಡಿರುವ ಬಗ್ಗೆ FSL ಗೆ ಕಳುಹಿಸಿ ತನಿಖೆ ನಡೆಸಲಿ, ಅದನ್ನು ಬಿಟ್ಟು ಸುದ್ದಿ ಪ್ರಸಾರ ಮಾಡಿದ ಮಾಧ್ಯಮಗಳನ್ನು ವಿಚಾರಣೆ ಕರೆಯಲಾಗುತ್ತಿದೆ. ಇದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಅವರು ದೂರಿದರು.
ಹೀಗೆ ಸುದ್ದಿ ಪ್ರಸಾರ ಮಾಡುವ ಮಾಧ್ಯಮಗಳಿಗೆ ನೊಟಿಸ್ ಕೊಟ್ಟು ವಿಚಾರಣೆಗೆ ಕರೆದಿರುವುದು ಜಗತ್ತಿನಲ್ಲಿ ಎಲ್ಲಿಯೂ ನಡೆದಿರಲಿಲ್ಲ. ಕರ್ನಾಟಕದಲ್ಲಿಯೇ ಮೊದಲು ಬೊಮ್ಮಾಯಿ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವಿರುದ್ಧ ವಾಗ್ದಾಳಿ ನಡೆಸಿದರು.

ರಾಜ್ಯಪಾಲರಿಗೆ ಗೌರವ ಇಲ್ಲವೇ: ಬೊಮ್ಮಾಯಿ ಪ್ರಶ್ನೆ
ಕಾಮಗಾರಿ ಮಾಡಿದ ಗುತ್ತಿಗೆದಾರರು ಬಿಲ್ ಪಾವತಿಸಿಲ್ಲ ಎಂದು ರಾಜ್ಯಪಾಲರಿಗೆ ದೂರು ನೀಡಿದರೆ, ಅವರ ವಿರದ್ಧವೂ ಪ್ರಕರಣ ದಾಖಲಿಸಲಾಗುತ್ತಿದೆ. ನಮ್ಮ ಅವಧಿಯಲ್ಲಿಯೂ ಗುತ್ತಿಗೆದಾರರು ಆರೋಪ ಮಾಡಿದ್ದರು. ನಾವು ಇದೇ ರೀತಿ ನಡೆದಿದ್ದೇವಾ ? ರಾಜ್ಯಪಾಲರಿಗೂ ಗೌರವ ಇಲ್ಲವೇ? ಎಂದು ಪ್ರಶ್ನಿಸಿದರು.
ಗುತ್ತಿಗೆದಾರರಿಗೆ ಅಂತಲೇ ಒಂದು ಸಂಘ ಇದೆ. ಅವರು ಕೆಲಸ ಮಾಡಿದ್ದಾರೆ. ಅವರು ನಿಮ್ಮೆಲ್ಲರ ಮನೆ ಬಾಗಿಲು ತಟ್ಟಿದ್ದಾರೆ. ಕೊನೆಗೆ ರಾಜ್ಯಪಾಲರು, ಪ್ರತಿಪಕ್ಷದ ನಾಯಕರನ್ನು ಭೇಟಿ ಮಾಡಿದ್ದಾರೆ. ಅವರು ನಿಮ್ಮ ವಿರುದ್ಧ ಧ್ವನಿ ಎತ್ತಿದರೆ ಅವರ ವಿರುದ್ದ ಕೇಸ್ ಹಾಕುತ್ತೀರಿ, ನಿಮ್ಮ ವಿರುದ್ಧ ಯಾರೂ ಧ್ವನಿ ಎತ್ತಬಾರದು ಅನ್ನುವ ಧೋರಣೆ ತಾಳುತ್ತಿದ್ದೀರಿ ಅದನ್ನು ನಾವು ಖಂಡಿಸುತ್ತೇವೆ. ನಿಮ್ಮ ನಡೆದ ವಿರುದ್ಧ ಹೋರಾಟ ಮಾಡಬೇಕಾಗುತ್ತದೆ ಎಂದು ಅವರು ಹೇಳಿದರು.
ಬಿಜೆಪಿಯನ್ನು ಯಾರು ತೊರೆಯುವುದಿಲ್ಲ: ಬೊಮ್ಮಾಯಿ ಸ್ಪಷ್ಟನೆ
ರಾಜ್ಯ ಸರ್ಕಾರ ಭ್ರಷ್ಟಾಚಾರ ಹಾಗೂ ಕಮಿಷನ್ ದಂಧೆಯ ವಿರುದ್ಧ ಕೇಳಿ ಬರುತ್ತಿರುವ ಆರೋಪವನ್ನು ಡೈವರ್ಟ್ ಮಾಡಲು ಬಿಜೆಪಿ ಶಾಸಕರು ಪಕ್ಷಾಂತರದ ಸುಳ್ಳು ಆರೋಪ ಮಾಡುತ್ತಿದ್ದಾರೆ. ಮಾಜಿ ಸಚಿವ ಎಸ್ಟಿ ಸೋಮಶೇಖರ್, ಶಿವರಾಮ್ ಹೆಬ್ಬಾರ್ ಜೊತೆ ನಾನು ಮಾತನಾಡಿದ್ದೇನೆ ಎನ್ನುವ ಮೂಲಕ ಬಿಜೆಪಿಯ ಯಾವ ಶಾಸಕರು ಪಕ್ಷ ತೊರೆಯುವುದಿಲ್ಲ ಎಂದು ಅವರು ಮಾಜಿ ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.
ನಮ್ಮ ಶಾಸಕರು ಸ್ಥಳೀಯವಾಗಿರುವ ಸಮಸ್ಯೆಗಳನ್ನು ಹೇಳಿದ್ದಾರೆ. ಅದನ್ನು ರಾಜ್ಯಾಧ್ಯಕ್ಷರ ಗಮನಕ್ಕೆ ತಂದಿದ್ದೇವೆ. ಎಲ್ಲವನ್ನು ಬಗೆ ಹರಿಸುತ್ತೇವೆ. ನಾವೆಲ್ಲ ಒಗ್ಗಟ್ಟಾಗಿದ್ದೇವೆ. ಕಾಂಗ್ರೆಸ್ ನವರ ವಿರುದ್ಧ ಕೇಳಿ ಬಂದ ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ಅವರ ಶಾಸಕರೇ ದಂಗೆ ಎದ್ದಿರುವುದನ್ನು ಮರೆ ಮಾಚಲು ಪಕ್ಷಾಂತರದ ಸುಳ್ಳು ಕತೆ ಹೇಳುತ್ತಿದ್ದಾರೆ ಎಂದು ಅವರು ಆಪಾದಿಸಿದರು.












Click it and Unblock the Notifications