Congress Guarantee Scheme: ಗ್ಯಾರಂಟಿ ಸಮಿತಿಯ ಗೌರವಧನ, ಭತ್ಯೆ ಎಷ್ಟು?
ಬೆಂಗಳೂರು, ಜುಲೈ 27: ಕರ್ನಾಟಕದ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಯೋಜನೆಗಳಿಗೆ ಕೋಟ್ಯಾಂತರ ರೂಪಾಯಿ ಖರ್ಚು ಮಾಡುತ್ತಿದೆ. ಅಲ್ಲದೇ ಗ್ಯಾರಂಟಿ ಯೋಜನೆಗಳ ಅನುಷ್ಟಾನದ ಬಗ್ಗೆ ತಿಳಿಯಲು ರಾಜ್ಯ, ಜಿಲ್ಲಾ, ಬಿಬಿಎಂಪಿ ಮಟ್ಟದ ಅನುಷ್ಟಾನ ಸಮಿತಿ ಹಾಗೂ ತಾಲ್ಲೂಕು ಮಟ್ಟದಲ್ಲಿ ಅನುಷ್ಕಾನ ಸಮಿತಿಗಳನ್ನು ರಚಿಸಿ, ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಬಗ್ಗೆ ನಿರ್ವಹಣೆ ಮಾಡುತ್ತಿದೆ.
ಈ ಗ್ಯಾರಂಟಿ ಅನುಷ್ಠಾನ ಸಮಿತಿಗೆ ಎಷ್ಟು ವೇತನ ನೀಡಲಾಗುತ್ತದೆ?, ಸಭೆಯನ್ನು ಹೇಗೆ ನಡೆಸಬೇಕು? ಎಂದು ಆದೇಶವೊಂದನ್ನು ಹೊರಡಿಸಲಾಗಿದೆ. ಈ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ವಿಮಲಾಕ್ಷಿ. ಬಿ. ಸರ್ಕಾರದ ಅಧೀನ ಕಾರ್ಯದರ್ಶಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಆಸು-ತಪಾಸಣೆ & ಸ್ವೀಮರ೦) ಆದೇಶಿಸಿದ್ದಾರೆ.

ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಮತ್ತು ಮೇಲ್ವಿಚಾರಣೆಗಾಗಿ ರಾಜ್ಯ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ, ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಹಾಗೂ ಬಿಬಿಎಂಪಿ ಮಟ್ಟದಲ್ಲಿ ಬಿಬಿಎಂಪಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳನ್ನು ರಚಿಸಿ, ಸದರಿ ಪ್ರಾಧಿಕಾರ ಮತ್ತು ಸಮಿತಿಗಳ ಕರ್ತವ್ಯ ಮತ್ತು ಜವಾಬ್ದಾರಿ ನಿರ್ವಹಣೆ ಬಗ್ಗೆ ನಿರ್ದೇಶನಗಳನ್ನು ನೀಡಿ ಆದೇಶಿಸಲಾಗಿದೆ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿಗಳು 6 ಅಂಶಗಳ ಆಧಾರದ ಮೇಲೆ ಸೂಕ್ತ ತಿದ್ದುಪಡಿಗಳನ್ನು ಮಾಡಲು ಆದೇಶಿಸಿರುತ್ತಾರೆ. ಆದ್ದರಿಂದ ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಕೂಲಂಕಷವಾಗಿ ಪರಿಶೀಲಿಸಿ ಈ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ. ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು, ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಬಿಬಿಎಂಪಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರುಗಳಿಗೆ ಗೌರವಧನ/ ಸಭಾ ಭತ್ಯೆಯನ್ನು ನಿಗದಿಪಡಿಸಿ ಆದೇಶಿಸಿದೆ ಎಂದು ತಿಳಿಸಿದೆ.
ಗೌರವಧನ, ಭತ್ಯೆ ಎಷ್ಟು?: ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ. ಅಧ್ಯಕ್ಷರುರೂ. 40,000 (ಪ್ರತಿ ತಿಂಗಳಿಗೆ ಗೌರವಧನ). ಉಪಾಧ್ಯಕ್ಷರು ರೂ.1,200 (ಪ್ರತಿ ಸಭೆಗೆ ಸಭಾ ಭತ್ಯೆ). ಸದಸ್ಯರು
1,100 ರೂ. (ಪ್ರತಿ ಸಭೆಗೆ ಸಭಾ ಭತ್ಯೆ) ನಿಗದಿ ಮಾಡಲಾಗಿದೆ.
ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ. ಅಧ್ಯಕ್ಷರು 25,000 (ಪ್ರತಿ ತಿಂಗಳಿಗೆ ಗೌರವಧನ). ಸದಸ್ಯರು 1,000 ರೂ. (ಪ್ರತಿ ಸಭೆಗೆ ಸಭಾ ಭತ್ಯೆ).
ಬಿಬಿಎಂಪಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ. ಅಧ್ಯಕ್ಷರು 40,000 ರೂ. (ಪ್ರತಿ ತಿಂಗಳಿಗೆ ಗೌರವಧನ). ಸದಸ್ಯರು ಪ್ರತಿ ಸಭೆಗೆ ಸಭಾ ಭತ್ಯೆ ರೂ. 1,200.
ಎಷ್ಟು ಸಭೆಗಳನ್ನು ಮಾಡಬೇಕು?; ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ, ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಮತ್ತು ಬಿಬಿಎಂಪಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯು ತಿಂಗಳಿಗೆ ಗರಿಷ್ಠ 2 ಸಭೆಗಳನ್ನು ಆಯೋಜಿಸತಕ್ಕದ್ದು.
ಗ್ಯಾರಂಟಿ ಯೋಜನೆಗಳು ವಿವಿಧ ಇಲಾಖೆಗಳ ಅನುಷ್ಠಾನಗೊಳ್ಳುತ್ತಿರುವುದರಿಂದ ಸಮನ್ವಯ ಸಾಧಿಸುವ ದೃಷ್ಟಿಯಿಂದ, ಸರ್ಕಾರದ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಆಡಳಿತ ಸುಧಾರಣೆ) ಇವರನ್ನು ನೋಡೆಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ.
ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯನ್ನು ನಡೆಸಲು ಜಿಲ್ಲಾ ಪಂಚಾಯತ್ನ ಸಭಾಂಗಣ ಹಾಗೂ ತಾಲ್ಲೂಕು ಮಟ್ಟದಲ್ಲಿ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯನ್ನು ನಡೆಸಲು ತಾಲ್ಲೂಕು ಪಂಚಾಯತ್ ಸಭಾಂಗಣವನ್ನು ಉಪಯೋಗಿಸಿಕೊಳ್ಳತಕ್ಕದ್ದು.
ಸರ್ಕಾರದ ಆದೇಶ ದಿನಾಂಕ 25/01/2024ರಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾಗಿ ಆಯಾ ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳನ್ನು ನೇಮಿಸಲಾಗಿತ್ತು. ಪ್ರಸ್ತುತ ಸದರಿ ಸಮಿತಿಗೆ ಆಯಾ ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳ ಬದಲಾಗಿ ಆಯಾ ಜಿಲ್ಲೆಯ ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಗಳನ್ನು ಸದಸ್ಯ ಕಾರ್ಯದರ್ಶಿಗಳನ್ನಾಗಿ ನೇಮಿಸಿ ಆದೇಶಿಸಿದೆ.
ಜಿಲ್ಲಾ ಮಟ್ಟದ ಸದಸ್ಯ ಕಾರ್ಯದರ್ಶಿಗಳಾದ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯವರು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗೆ ಜಿಲ್ಲಾ ಪಂಚಾಯತ್ನ ಕಛೇರಿ ಆವರಣದಲ್ಲಿ ಕಛೇರಿಯ ವ್ಯವಸ್ಥೆ ಮತ್ತು ಸದರಿ ಕಛೇರಿಗೆ ಅಗತ್ಯವಿರುವ ಪೀಠೋಪಕರಣಗಳ ವ್ಯವಸ್ಥೆಯನ್ನು ಮಾಡುವುದು ಹಾಗೂ ಸದರಿ ಸಮಿತಿಯ ಸಭೆಯ ದಿನಗಳಲ್ಲಿ ತಮ್ಮ ವ್ಯಾಪ್ತಿಯಲ್ಲಿ ಬರುವ ಸಿಬ್ಬಂದಿಗಳನ್ನು ನಿಯೋಜಿಸಲು ಅಗತ್ಯ ಕ್ರಮ ಕೈಗೊಳ್ಳುವುದು.
ತಾಲ್ಲೂಕು ಮಟ್ಟದ ಸದಸ್ಯ ಕಾರ್ಯದರ್ಶಿಗಳಾದ ಕಾರ್ಯನಿರ್ವಹಣಾ ಅಧಿಕಾರಿಯವರು ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗೆ ತಾಲ್ಲೂಕು ಪಂಚಾಯತ್ನ ಕಛೇರಿ ಆವರಣದಲ್ಲಿ ಕಛೇರಿ ವ್ಯವಸ್ಥೆ ಮತ್ತು ಸದರಿ ಕಛೇರಿಗೆ ಅಗತ್ಯವಾದ ಪೀಠೋಪಕರಣಗಳ ವ್ಯವಸ್ಥೆಯನ್ನು ಮಾಡುವುದು ಹಾಗೂ ಸದರಿ ಸಮಿತಿಯ ಸಭೆಯ ದಿನಗಳಲ್ಲಿ ತಮ್ಮ ವ್ಯಾಪ್ತಿಯಲ್ಲಿ ಬರುವ ಸಿಬ್ಬಂದಿಗಳನ್ನು ನಿಯೋಜಿಸಲು ಅಗತ್ಯ ಕ್ರಮ ಕೈಗೊಳ್ಳುವುದು ಎಂದು ಆದೇಶಿಸಿದೆ.
ಬಿಬಿಎಂಪಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗೆ ಸದಸ್ಯ ಕಾರ್ಯದರ್ಶಿಯಾದ ವಿಶೇಷ ಆಯುಕ್ತರು (ಆಡಳಿತ), ಬಿಬಿಎಂಪಿ ಅವರು ಬಿಬಿಎಂಪಿ ಪ್ರಧಾನ ಕಛೇರಿ ಆವರಣದಲ್ಲಿ ಕಛೇರಿ ವ್ಯವಸ್ಥೆ ಮತ್ತು ಸದರಿ ಕಛೇರಿಗೆ ಅಗತ್ಯವಾದ ಪೀಠೋಪಕರಣಗಳ ವ್ಯವಸ್ಥೆಯನ್ನು ಮಾಡುವುದು ಹಾಗೂ ಸದರಿ ಸಮಿತಿಯ ಸಭೆಯ ದಿನಗಳಲ್ಲಿ ತಮ್ಮ ವ್ಯಾಪ್ತಿಯಲ್ಲಿ ಬರುವ ಸಿಬ್ಬಂದಿಗಳನ್ನು ನಿಯೋಜಿಸಲು ಅಗತ್ಯ ಕ್ರಮ ಕೈಗೊಳ್ಳುವುದು.
ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರು ಮತ್ತು ಪ್ರಾದೇಶಿಕ ರಾಜ್ಯ ಉಪಾಧ್ಯಕ್ಷರುಗಳನ್ನು ಜಿಲ್ಲಾ ಉಸ್ತುವಾರಿ ಸಚಿವರು ನಡೆಸುವ ಜಿಲ್ಲಾ ತ್ರೈಮಾಸಿಕ ಕೆಡಿಪಿ ಸಭೆಗೆ ಆಹ್ವಾನಿಸತಕ್ಕದ್ದು. ಅದೇ ರೀತಿ ತಾಲ್ಲೂಕು ಮಟ್ಟದಲ್ಲಿ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರನ್ನು ವಿಧಾನಸಭಾ ಸದಸ್ಯರುಗಳು ನಡೆಸುವ ತಾಲ್ಲೂಕು ತ್ರೈಮಾಸಿಕ ಕೆಡಿಪಿ ಸಭೆಗೆ ಆಹ್ವಾನಿಸತಕ್ಕದ್ದು ಎಂದು ಆದೇಶ ತಿಳಿಸಿದೆ.












Click it and Unblock the Notifications