ಕಾಂಗ್ರೆಸ್ ವಿರೋಧ ಪಕ್ಷವಾಗಿ ವಿಫಲ; ಬಸವರಾಜ ಬೊಮ್ಮಾಯಿ
ಬೆಂಗಳೂರು, ಫೆಬ್ರವರಿ 22; "ಆಡಳಿತ ಪಕ್ಷವಾಗಿ ನೀವು ಕೆಲಸ ಮಾಡಲು ಯೋಗ್ಯರಲ್ಲ ಎಂದು ಜನ 2018ರಲ್ಲಿ ತೀರ್ಮಾನ ಮಾಡಿದರು. ಕನಿಷ್ಠ ವಿರೋಧ ಪಕ್ಷವಾಗಿಯಾದರೂ ಕಾಂಗ್ರೆಸ್ ಪಕ್ಷ ಕೆಲಸ ಮಾಡಬೇಕಿತ್ತು. ವಿರೋಧ ಪಕ್ಷವಾಗಿಯೂ ಕಾಂಗ್ರೆಸ್ ವಿಫಲವಾಗಿದೆ" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು.
ಮಂಗಳವಾರ ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, "ರಾಜಕಾರಣದ ಮುಸುಕು ಅವರ ಹಾಗೂ ಅವರ ಪಕ್ಷದ ಮೇಲೆ ಬಿದ್ದಿದೆ. ಎಲ್ಲವನ್ನೂ ರಾಜಕೀಯವಾಗಿ ನೋಡುವುದು, ದ್ವೇಷದಿಂದ ನೋಡುವುದರಿಂದ ಅವರಿಗಾಗಲಿ, ಅವರ ಪಕ್ಷಕ್ಕಾಗಲಿ ರಾಜಕೀಯ ಭವಿಷ್ಯವಿಲ್ಲ" ಎಂದರು.
"ಸದನ ಶಕ್ರವಾರದವರಿಗೂ ನಡೆಯಬೇಕಿತ್ತು. ಸದನವನ್ನು ಇಂದೇ ಮೊಟಕುಗೊಳಿಸಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಾಗಿದ್ದು ಬೇಸರದ ಸಂಗತಿ. ವಿರೋಧ ಪಕ್ಷದವರು ಸದನ ಕರೆಯಿರಿ ಚರ್ಚಿಸಬೇಕು ಎನ್ನುತ್ತಾರೆ. ಅಧಿವೇಶನ ನಡೆಯುವಾಗ ಚರ್ಚೆ ಮಾಡಲು ಅವರು ತಯಾರಿಲ್ಲ" ಎಂದು ಟೀಕಿಸಿದರು.
"ಯಾವುದೇ ವಿಚಾರವನ್ನೇ ಆಗಲಿ ಚರ್ಚೆ ಹಾಗೂ ವಾದ ಮಾಡಬಹುದು. ರಾಜ್ಯಪಾಲರ ವಂದನಾ ನಿರ್ಣಯದ ಮೇಲೆ ಸರ್ಕಾರದ ಸಾಧನೆಯನ್ನು ಹೇಳಿಕೊಂಡಾಗ ಅದರ ನ್ಯೂನತೆಗಳನ್ನು ಹೇಳಬಹುದಾಗಿತ್ತು. ಆ ಕರ್ತವ್ಯವನ್ನೂ ಅವರು ಮಾಡಲಿಲ್ಲ" ಎಂದು ಮುಖ್ಯಮಂತ್ರಿಗಳು ಹೇಳಿದರು.

ಚರ್ಚೆ ಮಾಡಲು ಸರ್ಕಾರ ಸಿದ್ಧವಿತ್ತು
"ಇಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ. ಎಸ್. ಈಶ್ವರಪ್ಪ ಅವರ ಹೇಳಿಕೆಯ ಬಗ್ಗೆಯೂ ಚರ್ಚೆ ಮಾಡಬಹುದಾಗಿತ್ತು. ಯಾವುದೇ ವಿಚಾರದ ಬಗ್ಗೆ ಚರ್ಚೆ ಮಾಡಲು ಸರ್ಕಾರ ಸಿದ್ಧವಿತ್ತು. ಆದರೆ, ಆ ಹೇಳಿಕೆಯಲ್ಲಿ ಏನೂ ಇಲ್ಲ ಎಂದು ಅವರಿಗೆ ಗೊತ್ತಿದೆ" ಎಂದು ಮುಖ್ಯಮಂತ್ರಿಗಳು ಹೇಳಿದರು.
ಜೆ. ಪಿ. ನಡ್ಡಾ ಅವರು ಗ್ರಾಮೀಣಾಭಿವೃದ್ಧಿ ಸಚಿವ ಕೆ. ಎಸ್. ಈಶ್ವರಪ್ಪ ಅವರ ಹೇಳಿಕೆಯನ್ನು ಖಂಡಿಸಿ, ಈ ಬಗ್ಗೆ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಬಸವರಾಜ ಬೊಮ್ಮಾಯಿ, "ಈ ಬಗ್ಗೆ ನನಗೆ ಮಾಹಿತಿ ಇಲ್ಲ. ನಾನು ಅಧಿಕೃತ ಮಾಹಿತಿ ಪಡೆದುಕೊಳ್ಳುತ್ತೇನೆ" ಎಂದರು.

ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ
"ಈಶ್ವರಪ್ಪ ಅವರ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ಹೇಳಿಕೆಯ ಪೂರ್ಣ ಪಾಠವನ್ನು ತೆಗೆದುಕೊಂಡರೆ, ಅವರು ಯಾವುದೇ ಕಾನೂನಿನ ವಿರುದ್ಧವಾಗಲಿ, ರಾಷ್ಟ್ರಧ್ವಜವನ್ನು ಅಪಮಾನ ಮಾಡುವ ಯಾವುದೇ ವಿಚಾರವನ್ನು ಅವರು ಹೇಳಿಲ್ಲ. ಇದು ಬಹಳ ಸ್ಪಷ್ಟವಾಗಿದೆ. ಅದನ್ನು ತಿರುಚಿ ರಾಜಕೀಯವಾಗಿ ಬಳಸಲು ಕಾಂಗ್ರೆಸ್ ಪ್ರಯತ್ನ ಮಾಡುತ್ತಿದೆ. ಕಾಂಗ್ರಸ್ ಪಕ್ಷದವರು ರಾಜ್ಯಪಾಲರಿಗೆ ಮನವಿ ಸಲ್ಲಿಸುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರು ಅಷ್ಟಾದರೂ ಮಾಡಲಿ" ಎಂದು ಮುಖ್ಯಮಂತ್ರಿಗಳು ಹೇಳಿದರು.

ಕಾಂಗ್ರೆಸ್ ವಿರುದ್ಧ ಸಿಎಂ ಅಸಮಾಧಾನ
"ಧರಣಿ ಮಾರ್ಗದ ಮುಖಾಂತರ ರಾಜ್ಯದ ಜನತೆ ಹಾಗೂ ಸದನದ ದಾರಿಯನ್ನು ತಪ್ಪಿಸಲು ನೋಡುತ್ತಿದ್ದಾರೆ. ವಸ್ತ್ರ ಸಂಹಿತೆಯ ಬಗ್ಗೆ ಉಚ್ಛ ನ್ಯಾಯಾಲಯದಲ್ಲಿ ಗಂಭೀರವಾದ ಚರ್ಚೆ ನಡೆಯುತ್ತಿದೆ. ಈಗಾಗಲೇ ಮಧ್ಯಂತರ ಆದೇಶ ನೀಡಿ ಅದರ ಅನುಷ್ಠಾನವಾಗುತ್ತಿದೆ. ಈ ಸಂದರ್ಭದಲ್ಲಿ ಕೆಲವು ಗೊಂದಲಗಳನ್ನು ಸೃಷ್ಟಿ ಮಾಡಲು ಕೆಲವರು ಪ್ರಯತ್ನ ಮಾಡುತ್ತಿದ್ದಾರೆ. ನಾವೆಲ್ಲರೂ ಒಕ್ಕೊರಲಿನ ಸಂದೇಶವನ್ನು ನೀಡೋಣ, ಅಂತಿಮ ಆದೇಶ ಬರುವವರೆಗೂ ಕಾದು, ಶಾಂತಿಯಿಂದ ಇರಬಹುದಾಗಿತ್ತು. ಮಕ್ಕಳ ವಿದ್ಯಾಭ್ಯಾಸ ಬಹಳ ಮುಖ್ಯ, ಪರೀಕ್ಷೆಗಳಿವೆ ಎಂಬ ಕನಿಷ್ಠ ಸಂದೇಶವನ್ನು ಕೊಡಲು ಕೂಡ ಅವರಿಗೆ ಸಾಧ್ಯವಾಗಲಿಲ್ಲ. ಮಾನವೀಯತೆ ವಿಚಾರವನ್ನೇ ಇಟ್ಟುಕೊಂಡಿಲ್ಲ. ರಾಜಕಾರಣವೇ ಪ್ರಮುಖವಾಗಿದೆ. ರಾಜಕಾರಣದಲ್ಲೂ ಕೂಡ ವಿರೋಧ ಪಕ್ಷದ ನಾಯಕರು, ಕಾಂಗ್ರಸ್ ಅಧ್ಯಕ್ಷರು, ಹಿರಿಯರು. ಬಹಳ ವರ್ಷಗಳಿಂದ ರಾಜಕಾರಣದಲ್ಲಿರುವವರು. ಅವರ ಅನುಭವ ಎಲ್ಲಿ ಹೋಯಿತು?. ಅವರ ಅನುಭವದಿಂದ ವಿರೋಧ ಪಕ್ಷವಾಗಿ ಕೆಲಸ ಮಾಡಿದ್ದರೆ, ಜನ ಮೆಚ್ಚಿಕೊಳ್ಳುತ್ತಿದ್ದರು" ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಮಾರ್ಚ್ 4ರಂದು ಬಜೆಟ್ ಮಂಡನೆ
ಮತಾಂತರ ನಿಷೇಧ ವಿಧೇಯಕದ ಬಗ್ಗೆ ಮಾತನಾಡಿದ ಮುಖ್ಯಮಂತ್ರಿಗಳು, "ವಿಧಾನ ಪರಿಷತ್ತಿನಲ್ಲಿ ಈಗ ಮಂಡಿಸಲು ಸಾಧ್ಯವಾಗಲಿಲ್ಲ. ಸದನ ವ್ಯವಸ್ಥಿತವಾಗಿಲ್ಲ. ಚರ್ಚೆ ಮಾಡಿ ಅಂಗೀಕರಿಸಲಾಗುವುದು" ಎಂದರು.
ರಾಜ್ಯದಲ್ಲ ಆರ್ಥಿಕ ಮುಗ್ಗಟ್ಟಿರುವ ಸಂದರ್ಭದಲ್ಲಿ ಸಚಿವರು ಮತ್ತು ಶಾಸಕ ವೇತನವನ್ನು ಹೆಚ್ಚಿಸಿರುವ ಬಗ್ಗೆ ಚರ್ಚೆಯಾಗುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿ, "ಹಲವಾರು ವಿಚಾರದಲ್ಲಿ ವೇತನ ಹೆಚ್ಚಾಗಿರಲಿಲ್ಲ. ಎಲ್ಲಾ ಪಕ್ಷದ ಶಾಸಕರ ಅಭಿಪ್ರಾಯ, ದಿನನಿತ್ಯದ ಓಡಾಟ, ಹಣದುಬ್ಬರ ಎಲ್ಲವನ್ನೂ ಪರಿಗಣಿಸಿ ವೇತನವನ್ನು ಹೆಚ್ಚಿಸಲಾಗಿದೆ" ಎಂದು ಹೇಳಿದರು.
"ಬಜೆಟ್ ಮಾಚ್ 4 ರಂದು ಮಂಡಿಸಲು ತೀರ್ಮಾನಿಸಲಾಗಿದೆ" ಎಂದು ಮುಖ್ಯಮಂತ್ರಿಗಳು ತಿಳಿಸಿದರು.












Click it and Unblock the Notifications