ರಾಜ್ಯ ಕಾಂಗ್ರೆಸ್ ಸರ್ಕಾರ ಕೇಂದ್ರಕ್ಕೆ ಪುಕ್ಕಟೆ ಅಕ್ಕಿ ಕೇಳಿರಲಿಲ್ಲ: ಎಂಬಿ ಪಾಟೀಲ್
ಬೆಂಗಳೂರು, ಜೂನ್ 18: ಕಾಂಗ್ರೆಸ್ ಸರ್ಕಾರ ಅನ್ನಭಾಗ್ಯ ಯೋಜನೆಯಡಿ ಕರ್ನಾಟಕದ ಬಡವರಿಗೆ ವಿತರಿಸಲು ಅಗತ್ಯವಾಗಿರುವ ಅಕ್ಕಿಯನ್ನು ಕೇಂದ್ರ ಸರಕಾರದಿಂದ ಖರೀದಿಸಲು ಕೇಳಿದ್ದೇವು. ಇದರ ಹೊರತು ಪುಕ್ಕಟೆಯಾಗಿಯೇನೂ ಕೇಳಿರಲಿಲ್ಲ. ಆದರೆ ಕೇಂದ್ರದವರು ಇದರಲ್ಲೂ ರಾಜಕೀಯ ಮಾಡುವ ಮೂಲಕ ಬಡಜನ ವಿರೋಧಿ ಧೋರಣೆಯನ್ನು ಪ್ರದರ್ಶಿಸುತ್ತಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಸ್ಪಷ್ಟಪಡಿಸಿದರು.
ಬೆಂಗಳೂರಿನಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಅನ್ನಭಾಗ್ಯ ಯೋಜನೆಯ ಅಗತ್ಯದ ಬಗ್ಗೆ ನಾವು ಈಗಾಗಲೇ ಕೇಂದ್ರ ಸರ್ಕಾರಕ್ಕೆ ಸಾಕಷ್ಟು ಹೇಳಿದ್ದೇವೆ. ಇನ್ನು ನಮ್ಮ ರಾಜ್ಯದಿಂದ ಆಯ್ಕೆಯಾಗಿರುವ ಬಿಜೆಪಿ ಸಂಸದರು ಧ್ವನಿ ಎತ್ತಬೇಕು. ದೇವರು ಇನ್ನಾದರೂ ಅವರಿಗೆ ಸದ್ಬುದ್ಧಿಯನ್ನು ಕೊಡಲಿ ಅಷ್ಟೆ ಎಂದು ಅವರು ಕುಟುಕಿದರು.

ಕಾಂಗ್ರೆಸ್ ಸಕಾರವು ಚುನಾವಣೆಯ ಹೊತ್ತಿನಲ್ಲೇ ಅನ್ನಭಾಗ್ಯ ಸೇರಿದಂತೆ ಐದು ಗ್ಯಾರಂಟಿಗಳನ್ನು ಘೋಷಿಸಿತ್ತು. ಈಗ ಇವುಗಳನ್ನು ಒಂದೊಂದಾಗಿ ಜಾರಿಗೆ ತರಲಾಗುತ್ತಿದೆ. ಬಡವರ ಹಸಿವನ್ನು ನೀಗಿಸುವಂತಹ ಅನ್ನಭಾಗ್ಯ ಯೋಜನೆಗೆ ಮೊದಲು ಅಕ್ಕಿ ಕೊಡುವುದಾಗಿ ಹೇಳಿದ್ದ ಕೇಂದ್ರದ ಬಿಜೆಪಿ ಸಕಾರವು, ಇದೀಗ ಭರವಸೆಯಂತೆ ನಡೆದಿಕೊಳ್ಳುತ್ತಿಲ್ಲ. ಅಗತ್ಯ ಅಕ್ಕಿ ಪೂರೈಸುತ್ತಿಲ್ಲ, ಇದು ಅವರ ಸಣ್ಣತನವನ್ನು ತೋರಿಸುತ್ತದೆ ಅಷ್ಟೆ ಎಂದು ಪಾಟೀಲರು ಟೀಕಿಸಿದರು.
ವಿಮಾನ ನಿಲ್ದಾಣಗಳ ನಿರ್ವಹಣೆಗೆ ಚಿಂತನೆ
ರಾಜ್ಯದಲ್ಲಿನ ಹೊಸ ವಿಮಾನ ನಿಲ್ದಾಣಗಳನ್ನು ರಾಜ್ಯ ಸರ್ಕಾರದ ವತಿಯಿಂದಲೇ ನಿರ್ವಹಿಸುವ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸಲಾಗುತ್ತಿದೆ. ಇದರ ಸಾಧಕ-ಬಾಧಕಗಳನ್ನು ನೋಡಿಕೊಂಡು ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದರು.
ಸದ್ಯಕ್ಕೆ ನಾವು ಸಾವಿರಾರು ಕೋಟಿ ರೂಪಾಯಿ ವಿನಿಯೋಗಿಸಿ ರಾಜ್ಯದ ಹಲವೆಡೆ ವಿಮಾನ ನಿಲ್ದಾಣಗಳನ್ನು ನಿರ್ಮಿಸಿದ್ದೇವೆ. ಆದರೆ ಬಳಿಕ ಇವುಗಳನ್ನು ವಿಮಾನ ನಿಲ್ದಾಣಗಳ ಪ್ರಾಧಿಕಾರಕ್ಕೆ ಬಿಟ್ಟು ಕೊಡುತ್ತಿದ್ದೇವೆ. ಅವರು, ಇವುಗಳನ್ನು ಅದಾನಿ ಸೇರಿದಂತೆ ಹಲವು ಖಾಸಗಿ ಕಂಪನಿಗಳಿಗೆ ವಹಿಸುತ್ತಿದ್ದಾರೆ. ಹೀಗಾಗಿ ನಮ್ಮದೇ ವಿಮಾನ ನಿಲ್ದಾಣಗಳ ಮೇಲೆ ನಮಗೆ ಯಾವ ಹಕ್ಕೂ ಇಲ್ಲದಂತಾಗಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ನಮ್ಮ ವಿಮಾನ ನಿಲ್ದಾಣಗಳನ್ನು ನಾವೇ ನಿರ್ವಹಿಸುವುದರಿಂದ ಒಳ್ಳೆಯದಾಗುತ್ತದೆ ಎನ್ನುವ ಭಾವನೆ ಇದೆ. ವಿಮಾನ ನಿಲ್ದಾಣ ಪ್ರಾಧಿಕಾರದವರು ಯಾರಿಗೋ ವಹಿಸುವ ಬದಲು ನಾವೇ ಆ ಕೆಲಸವನ್ನು ಮಾಡಬಹುದು. ಸದ್ಯಕ್ಕೆ ಇದನ್ನು ಎಲ್ಲ ಮಗ್ಗುಲಿನಿಂದಲೂ ಪರಿಶೀಲಿಸಲಾಗುತ್ತಿದೆ. ಮಹಾರಾಷ್ಟ್ರದ ಮಾದರಿಯನ್ನೂ ಗಮನಿಸುತ್ತಿದ್ದೇವೆ. ಸದ್ಯದ ವ್ಯವಸ್ಥೆಯಲ್ಲಿ ರಾಜ್ಯದ ಅಹವಾಲುಗಳನ್ನು ವಿಮಾನ ನಿಲ್ದಾಣ ಪ್ರಾಧಿಕಾರ ಕನಿಷ್ಠಪಕ್ಷ ಆಲಿಸುವುದೂ ಇಲ್ಲ ಎಂದು ಅವರು ವಿವರಿಸಿದರು.
ಬಂಡವಾಳ ಹೂಡಿಕೆ ಯಾರೇ ಬಂದರೂ ಸ್ವಾಗತ
ರಾಜ್ಯದಲ್ಲಿ ಪಾರದರ್ಶಕ ಮತ್ತು ಕಾನೂನುಬದ್ಧ ರೀತಿಯಲ್ಲಿ ಬಂಡವಾಳ ಹೂಡಿ, ಉದ್ಯೋಗಸೃಷ್ಟಿ ಮಾಡಲು ಯಾರೇ ಮುಂದೆ ಬಂದರೂ ಅವರನ್ನು ಸ್ವಾಗತಿಸಲಾಗುವುದು. ಇದರಲ್ಲಿ ತಾರತಮ್ಯ ಇರುವುದಿಲ್ಲ. ಆದರೆ ನಾನು ಪ್ರಾಸಂಗಿಕವಾಗಿ ಅದಾನಿ ಹೆಸರು ಹೇಳಿದ್ದನ್ನೇ ಇಟ್ಟುಕೊಂಡು ಬಿಜೆಪಿಯವರು ರಾಜಕೀಯ ಮಾಡುತ್ತಿರುವುದು ಕ್ಷುಲ್ಲಕತನ ಎಂದು ಪಾಟೀಲ್ ಹೇಳಿದರು.
ರಾಜ್ಯದಲ್ಲಿ ಹೂಡಿಕೆಗೆ ಸರಾಗ ವ್ಯವಸ್ಥೆ ಇರಲು 'ಏಕಗವಾಕ್ಷಿ' ವ್ಯವಸ್ಥೆ ಪರಿಣಾಮಕಾರಿ ಆಗಿರುವಂತೆ ನೋಡಿಕೊಳ್ಳಲಾಗುತ್ತದೆ. ಪಂಜಾಬ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಉದ್ಯಮಕ್ಕೆ ಪರವಾನಗಿ ನೀಡಲು ಅಗತ್ಯವಿರುವ ಎಲ್ಲ ಇಲಾಖೆಗಳನ್ನೂ ಒಂದೆಡೆ ತಂದು, ಸರಳ ವ್ಯವಸ್ಥೆಯನ್ನು ಇಟ್ಟುಕೊಳ್ಳಲಾಗಿದೆ. ನಮ್ಮಲ್ಲೂ ಅಂತಹ ವ್ಯವಸ್ಥೆ ಬರಬೇಕು ಎನ್ನುವುದು ನಮ್ಮ ಸರ್ಕಾರದ ಬಯಸಿದೆ ಎಂದು ತಿಳಿಸಿದರು.












Click it and Unblock the Notifications