ಈ ಮೂವರಲ್ಲಿ ಕೆಪಿಸಿಸಿ ಚುಕ್ಕಾಣಿ ಹಿಡಿಯುವವರು ಯಾರು?
ಬೆಂಗಳೂರು, ಡಿ. 19: ರಾಜ್ಯ ವಿಧಾನಸಭೆ ವಿರೋಧ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಮುಂದುವರೆಯುವುದು ಬಹುತೇಕ ಖಚಿತವಾಗಿದ್ದು, ಕೆಪಿಸಿಸಿ ಅಧ್ಯಕ್ಷ ಸ್ಥಾನದ ರೇಸ್ನಲ್ಲಿ ಮಾಜಿ ಸಚಿವರುಗಳಾದ ಎಂ.ಬಿ. ಪಾಟೀಲ್, ಡಿ.ಕೆ. ಶಿವಕುಮಾರ್ ಹಾಗೂ ಈಶ್ವರ್ ಖಂಡ್ರೆ ಇದ್ದಾರೆ. ಹೈಕಮಾಂಡ್ ಸೂಚನೆಯಂತೆ ರಾಜ್ಯಕ್ಕೆ ಆಗಮಿಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಮಧಸೂದನ್ ಮಿಸ್ತ್ರಿ ಹಾಗೂ ಭಕ್ತ ಚರಣದಾಸ್ ಅವರುಗಳು ರಾಜ್ಯ ಕಾಂಗ್ರೆಸ್ ನಾಯಕರ ಅಭಿಪ್ರಾಯ ಸಂಗ್ರಹಿಸಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ರಾಜೀನಾಮೆಯಿಂದ ತೆರವಾಗಿರುವ ವಿಧಾನಸಭೆ ವಿಪಕ್ಷ ನಾಯಕ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನಗಳಿಗೆ ಯಾರನ್ನು ನೇಮಕ ಮಾಡಬೇಕು ಎಂಬುದರ ಕುರಿತು ರಾಜ್ಯ ಕಾಂಗ್ರೆಸ್ ಹೈಕಮಾಂಡ್ ರಾಜ್ಯ ಕಾಂಗ್ರೆಸ್ ನಾಯಕರ ಅಭಿಪ್ರಾಯ ಸಂಗ್ರಹಿಸಲು ಸೂಚಿಸಿತ್ತು. ಬೆಂಗಳೂರಿನ ಕುಮಾರಕೃಪಾ ಗೆಸ್ಟ್ಹೌಸ್ನಲ್ಲಿ ರಾಜ್ಯ ಕಾಂಗ್ರೆಸ್ ನಾಯಕರ ಅಭಿಪ್ರಾಯವನ್ನು ಪ್ರತ್ಯೇಕವಾಗಿ ಸಂಗ್ರಹಿಸಲಾಗಿದೆ.

ಯೋಚಿಸಿ ಹೇಳ್ತೇನೆ ಎಂದ ಸಿದ್ದರಾಮಯ್ಯ
ಬೆಂಗಳೂರಿಗೆ ಬಂದಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಮಧಸೂದನ್ ಮಿಸ್ತ್ರಿ ಹಾಗೂ ಭಕ್ತ ಚರಣದಾಸ್ ಮಾಜಿ ಸಿಎಂ ಸಿದ್ದರಾಮಯ್ಯ ಅವ್ರನ್ನ ಇವತ್ತು ಬೆಳಗ್ಗೆ ಕಾವೇರಿ ನಿವಾಸದಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಇದೇ ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರ ಅಭಿಪ್ರಾಯವನ್ನು ಸಿದ್ದರಾಮ್ಯ ಅವರಿಗೆ ಮಿಸ್ತ್ರಿ ವಿವರಿಸಿದ್ದಾರೆ. ಆದರೆ ಆರೋಗ್ಯದ ಹಿನ್ನೆಲೆಯಲ್ಲಿ ಹಾಗೂ ಇನ್ನಿತರ ಕಾರಣಗಳಿಂದಾಗಿ ಯೋಚಿಸಿ ಹೇಳುತ್ತೇನೆ ಎಂದು ಸಿದ್ದರಾಮಯ್ಯ ಮಧುಸೂದನ್ ಮಿಸ್ತ್ರಿ ಹಾಗೂ ಭಕ್ತ ಚರಣದಾಸ್ ಅವರುಗಳಿಗೆ ತಿಳಿಸಿದ್ದಾರೆ ಎನ್ನಲಾಗಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಬೇರೆಯವರನ್ನು ನೇಮಕ ಮಾಡಲು ಹೈಕಮಾಂಡ್ ನಿರ್ಧರಿಸಿದ್ದು, ವಿಪಕ್ಷ ನಾಯಕರಾಗಿ ಸಿದ್ದರಾಮಯ್ಯ ಅವರೇ ಮುಂದುವರೆಯಬೇಕೆಂದು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಿಸಿದೆ ಎಂಬ ಮಾಹಿತಿಯಿದೆ.

ಕಾಂಗ್ರೆಸ್ನ 55 ನಾಯಕರಿಂದ ಪ್ರತ್ಯೇಕವಾಗಿ ಅಭಿಪ್ರಾಯ ಸಂಗ್ರಹ
ಉಪ ಚುನಾವಣೆಯಲ್ಲಿನ ಸೋಲಿನ ಬಳಿಕ ನೈತಿಕ ಹೊಣೆಹೊತ್ತು ವಿಧಾನಸಭೆ ವಿಪಕ್ಷ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ಸಲ್ಲಿಸಿದ್ದರು. ಆ ಸ್ಥಾನಗಳಿಗೆ ಈಗ ಯಾರನ್ನು ನೇಮಕ ಮಾಡಬೇಕು ಎಂಬುದರ ಕುರಿತು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರ ಅಭಿಪ್ರಾಯವನ್ನು ಮಧುಸೂದನ್ ಮಿಸ್ತ್ರಿ ಹಾಗೂ ಭಕ್ತ ಚರಣದಾಸ್ ಪಡೆದು ಕೊಂಡಿದ್ದಾರೆ. ಆರ್.ವಿ. ದೇಶಪಾಂಡೆ, ವೀರಣ್ಣ ಮತ್ತಿಕಟ್ಟಿ, ಸಿ.ಎಂ. ಇಬ್ರಾಹಿಂ, ವಿ.ಆರ್. ಸುದರ್ಶನ್, ವೀರಪ್ಪ ಮೊಯ್ಲಿ, ಬಿ.ಕೆ. ಹರಿಪ್ರಸಾದ್, ಡಾ. ಜಿ. ಪರಮೇಶ್ವರ್, ಈಶ್ವರ್ ಖಂಡ್ರೆ, ಡಿ.ಕೆ. ಶಿವಕುಮಾರ್ ಸೇರಿದಂತೆ 55 ಪ್ರಮುಖ ನಾಯಕರಿಂದ ಸಂಗ್ರಹಿಸಿರುವ ಅಭಿಪ್ರಾಯವನ್ನು ನಾಳೆ ದೆಹಲಿಯಲ್ಲಿ ಹೈಕಮಾಂಡ್ಗೆ ತಲುಪಿಸಲಿದ್ದಾರೆ.

ಸಿದ್ದರಾಮಯ್ಯ ವಿಪಕ್ಷ ನಾಯಕರಾಗಿ ಮುಂದುವರೆಯಲಿ ಎಂದ ಆಪ್ತರು
ಈ ಸಂದರ್ಭದಲ್ಲಿ ವಲಸೆ ಹಾಗೂ ಮೂಲ ಕಾಂಗ್ರೆಸ್ಸಿಗರ ಮಧ್ಯದ ಅಂತರ ಮತ್ತಷ್ಟು ಕಂಡುಬಂದಿದೆ. ಈಗಾಗಲೇ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟಿದ್ದಾರೆ. ಹಾಗಾಗಿ ಬೇರೆಯವರಿಗೆ ಅವಕಾಶ ಕಲ್ಪಿಸಿ ಕೊಡಿ ಅಂತಾ ಮೂಲ ಕಾಂಗ್ರೆಸ್ಸಿಗರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಅವರೇ ವಿಪಕ್ಷ ನಾಯಕರಾಗಿ ಮುಂದು ವರೆಯಬೇಕು. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಾತ್ರ ಬೇರೆಯವರನ್ನು ನೇಮಕ ಮಾಡಿ ಅಂತಾ ವಲಸೆ ಕಾಂಗ್ರೆಸ್ಸಿಗರು ಹೈಕಮಾಂಡ್ ಗಮನಕ್ಕೆ ತಂದಿದ್ದಾರೆ ಎಂದು ಹೆಸರು ಹೇಳಲು ಇಚ್ಚಿಸದ ಕಾಂಗ್ರಸ್ ನಾಯಕರೊಬ್ಬರು "ಒನ್ ಇಂಡಿಯಾ"ಕ್ಕೆ ಮಾಹಿತಿ ಕೊಟ್ಟಿದ್ದಾರೆ. ಪಕ್ಷದಲ್ಲಿನ ವೈಮನಸ್ಸುಗಳು ಈ ಸಂದರ್ಭದಲ್ಲಿ ವ್ಯಕ್ತವಾಗಿವೆ. ಹಾಗಾಗಿ ಕಾಂಗ್ರೆಸ್ ಹೈಕಮಾಂಡ್ಗೆ ಮತ್ತೆ ಮೂಲ, ವಲಸೆ ಕಾಂಗ್ರೆಸ್ಸಿಗರ ಮಧ್ಯದ ಅಂತರ ತಲೆನೋವಾಗಿ ಪರಿಣಮಿಸುವ ಸಾಧ್ಯತೆಯಿದೆ.

ಈ ಮೂವರಲ್ಲಿ ಕೆಪಿಸಿಸಿ ಚುಕ್ಕಾಣಿ ಹಿಡಿಯುವವರು ಯಾರೂ?
ರಾಜ್ಯ ಕಾಂಗ್ರೆಸ್ ನಾಯಕರಿಂದ ಅಭಿಪ್ರಾಯ ಸಂಗ್ರಹಿಸಿದ್ದರೂ ಸಿದ್ದರಾಮಯ್ಯ ಅವರೇ ವಿಪಕ್ಷ ನಾಯಕನ ಸ್ಥಾನದಲ್ಲಿ ಮುಂದುವರೆಯಬೇಕು ಎಂದು ಕೈ ಹೈಕಮಾಂಡ್ ತೀರ್ಮಾನಿಸಿದೆ ಎನ್ನಲಾಗಿದೆ. ಹಾಗಾಗಿ ಸಿದ್ದರಾಮಯ್ಯ ಮನವೊಲಿಸುವಂತೆ ಮಧುಸೂದನ್ ಮಿಸ್ತ್ರಿ ಹಾಗೂ ಭಕ್ತಚರಣದಾಸ್ ಅವರಿಗೆ ಸೂಚಿಸಿತ್ತು. ಆದರೆ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಸೂಕ್ತ ಮಾಹಿತಿ, ಅಭಿಪ್ರಾಯ ಪಡೆಯುವಂತೆ ಹೈಕಮಾಂಡ್ ಸೂಚಿಸಿತ್ತು. ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವರುಗಳಾದ ಎಂ.ಬಿ. ಪಾಟೀಲ್, ಡಿ.ಕೆ. ಶಿವಕುಮಾರ್ ಹಾಗೂ ಈಶ್ವರ್ ಖಂಡ್ರೆ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಆದರೆ ಸಮುದಾಯವನ್ನು ಹಿಡಿತದಲ್ಲಿಟ್ಟುಕೊಂಡಿರುವ ಪ್ರಬಲ ನಾಯಕರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಡಲು ಹೈಕಮಾಂಡ್ ತೀರ್ಮಾನಿಸಿದೆ. ಹಾಗಾಗಿ ಕೆಪಿಸಿಸಿ ಚುಕ್ಕಾಣಿ ಹಿಡಿಯುವವರನ್ನು ಅಂತಿಮವಾಗಿ ಹೈಕಮಾಂಡ್ ನಿರ್ಧಾರ ಮಾಡಲಿದೆ.












Click it and Unblock the Notifications