Tejasvi Surya: ಕಾಂಗ್ರೆಸ್ ವೋಟ್ ಬ್ಯಾಂಕ್ ಭದ್ರಗೊಳಿಸುತ್ತಿದೆ: ಸಂಸದ ತೇಜಸ್ವಿ ಸೂರ್ಯ
ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಟೆಂಡರ್ಗಳಲ್ಲಿ ಅಲ್ಪಸಂಖ್ಯಾತರಿಗೆ ಶೇ 4ರಷ್ಟು ಮೀಸಲಾತಿ ಕೊಡುತ್ತಿರುವ ವಿಚಾರವು ಭಾರೀ ಚರ್ಚೆಗೆ ಕಾರಣವಾಗಿದೆ. ಈ ವಿಷಯವಾಗಿ ಕರ್ನಾಟಕ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಈ ಸಂಬಂಧ ಮಾತನಾಡಿರುವ ಸಂಸದ ತೇಜಸ್ವಿ ಸೂರ್ಯ ಅವರು, ಸರ್ಕಾರಿ ಟೆಂಡರ್ಗಳಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ನೀಡುವ ವಿಚಾರವಾಗಿ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಅಸಂವಿಧಾನಿಕ ನಿರ್ಧಾರವಾಗಿದೆ ಎಂದಿದ್ದಾರೆ. ಬಿಜೆಪಿ ಸಹ ಇದಕ್ಕೆ ಆಕ್ರೋಶ ಹೊರ ಹಾಕಿದೆ. ಈ ವಿಚಾರ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ.
ಎಸ್.ಸಿ, ಎಸ್ ಟಿ & ಇತರ ಹಿಂದುಳಿದ ವರ್ಗಗಳಿಗೆ ನ್ಯಾಯಯುತವಾಗಿ ಸಿಗಬೇಕಾದ ಮೀಸಲಾತಿ ಸೌಲಭ್ಯಗಳನ್ನು, ತನ್ನ ವೋಟ್ ಬ್ಯಾಂಕ್ ಭದ್ರಗೊಳಿಸಲು, ಕೇವಲ ರಾಜಕೀಯ, ಧಾರ್ಮಿಕ ಕಾರಣಗಳಿಗಾಗಿ ಜಾರಿಗೆ ತರುತ್ತಿರುವ ಇಂತಹ ನಿರ್ಧಾರಗಳನ್ನು ದೇಶದ ನ್ಯಾಯಾಲಯಗಳು ಈಗಾಗಲೇ ಹಲವು ಬಾರಿ ತಿರಸ್ಕರಿಸಿವೆ ಎಂದು ತೇಜಸ್ವಿ ಸೂರ್ಯ ಅವರು ಎಚ್ಚರಿಸಿದ್ದಾರೆ.

ಮುಂದುವರಿದು ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಲು ಅವಕಾಸವಿರದೇ ಇದ್ದರೂ. ಕೋರ್ಟ್ಗಳಿಂದ ಈ ಕುರಿತಾಗಿ ನಿರ್ದೇಶನಗಳಿದ್ದರೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಮುಸ್ಲಿಮರಿಗೆ ಮೀಸಲಾತಿ ಕಲ್ಪಿಸಲು ನಿರ್ಧರಿಸಿರುವುದು ಡಾ. ಬಿ ಆರ್ ಅಂಬೇಡ್ಕರ್ ಮತ್ತು ಸಂವಿಧಾನಕ್ಕೆ ಮಾಡುತ್ತಿರುವ ದೊಡ್ಡ ಅಪಚಾರ ಎಂದು ಅವರು ಆರೋಪ ಮಾಡಿದ್ದಾರೆ.
ಇನ್ನು ಈ ವಿಚಾರವಾಗಿ ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು, ಮುಸ್ಲಿಮರಿಗೆ ಗುತ್ತಿಗೆಯಲ್ಲಿ ಮೀಸಲಾತಿ ನೀಡುವುದನ್ನು ಬಿಜೆಪಿ ಸ್ಪಷ್ಟವಾಗಿ ವಿರೋಧಿಸುತ್ತದೆ. ಈ ಬಿಲ್ ಸದನದಲ್ಲಿ ಮಂಡಿಸಿದಾಗ ಸದನದ ಒಳಗಡೆ ಹಾಗೂ ಹೊರಗಡೆ ಬಿಜೆಪಿ ಉಗ್ರ ಪ್ರತಿಭಟನೆ ನಡೆಸಲಿದೆ.
ದಲಿತ ಶಾಸಕರಾಗಿದ್ದ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಮುಸ್ಲಿಮರು ಬೆಂಕಿ ಹಚ್ಚಿದಾಗ ಎಲ್ಲಿಗೆ ಹೋಗಿತ್ತು ಸಿದ್ದರಾಮಯ್ಯ ಅವರ ದಲಿತ ಪ್ರೀತಿ ಎಂದು ಪ್ರಶ್ನೆ ಮಾಡಿದ್ದಾರೆ. ಮುಂದುವರಿದು ಮುಸ್ಲಿಮರನ್ನು ಖುಷಿ ಪಡಿಸಲು ಕಾಂಗ್ರೆಸ್ ಯಾವ ಮಟ್ಟಕ್ಕಾದರೂ ಇಳಿಯಲು ಸಿದ್ಧ ಎಂಬುದು ಸ್ಪಷ್ಟವಾಗುತ್ತದೆ. ಸರ್ವ ಜನಾಂಗದ ಶಾಂತಿಯ ತೋಟಕ್ಕೆ ವಿಷ ಬೀಜ ಬಿತ್ತುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ದೂರಿದ್ದಾರೆ.

ನಾವು ಮುಸ್ಲಿಂ ವಿರೋಧಿ ಅಲ್ಲ: ಇನ್ನು ಇದೇ ಸಂದರ್ಭದಲ್ಲಿ ನಾವು ಮುಸ್ಲಿಂ ವಿರೋಧಿ ಅಲ್ಲ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ. ಬಿಜೆಪಿ ಮುಸ್ಲಿಮರ ವಿರೋಧಿ ಅಲ್ಲ. ಆದರೆ, ಕರ್ನಾಟಕ ಕಾಂಗ್ರೆಸ್ ಸರ್ಕಾರದ ಅಲ್ಪಸಂಖ್ಯಾತರ ತುಷ್ಟೀಕರಣ ನೀತಿಯನ್ನು ನಾವು ವಿರೋಧಿಸುತ್ತೇವೆ ಎಂದು ಬಿಜೆಪಿ ಹೇಳಿದೆ. ಇದೇ ಮಾತನ್ನು ಬಿ.ವೈ ವಿಜಯೇಂದ್ರ ಅವರು ಪುನರುಚ್ಚರಿಸಿದ್ದಾರೆ. ಆದರೆ, ಕಾಂಗ್ರೆಸ್ ಸರ್ಕಾರವು ಈ ವಿಚಾರದಲ್ಲಿ ಹಿಂದೆ ಸರಿಯುತ್ತಿಲ್ಲ.
ಇನ್ನು ರಾಜ್ಯದಲ್ಲಿ ಪರಿಶಿಷ್ಟ ವರ್ಗ ಮತ್ತು ಪಂಗಡದವರ ಅಭಿವೃದ್ಧಿಗಾಗಿ ಮೀಸಲಿಟ್ಟ ಎಸ್ಸಿಎಸ್ಪಿ/ಟಿಎಸ್ಪಿ ಅನುದಾನ ದುರ್ಬಳಕೆ ಮಾಡಲಾಗಿದೆ. ಶೋಷಿತರ ಎಸ್ಸಿಎಸ್ಪಿ/ಟಿಎಸ್ಪಿ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿರುವ ವಿಚಾರವನ್ನು ಸರ್ಕಾರವೇ ಅಧಿಕೃತವಾಗಿ ಒಪ್ಪಿಕೊಂಡರೂ, ಸದನದಲ್ಲಿ ಮುಖ್ಯಮಂತ್ರಿಗಳೇಕೆ ಒಪ್ಪಿಕೊಳ್ಳುತ್ತಿಲ್ಲ ಎಂದು ಬಿಜೆಪಿ ಪ್ರಶ್ನೆ ಮಾಡಿದೆ.












Click it and Unblock the Notifications