ಮೈತ್ರಿ ಸರ್ಕಾರದ ಒಂದು ವರ್ಷದ ಸಾಧನೆಯ ಪುಸ್ತಕ ಬಿಡುಗಡೆ
ಬೆಂಗಳೂರು, ಜೂನ್ 20 : ಕರ್ನಾಟಕದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಒಂದು ವರ್ಷ ಪೂರೈಸಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸರ್ಕಾರದ ಸಾಧನೆಯ ಪುಸ್ತಕವನ್ನು ಬಿಡುಗಡೆ ಮಾಡಿದರು.
ಗುರುವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಎಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು 'ಮೈತ್ರಿ ಪರ್ವ' ಸರ್ಕಾರದ ಒಂದು ವರ್ಷದ ಸಾಧನೆಯ ಪುಸ್ತಕವನ್ನು ಬಿಡುಗಡೆ ಮಾಡಿದರು.

ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ ಖರ್ಗೆ, ಆರೋಗ್ಯ ಸಚಿವ ಶಿವಾನಂದ ಎಸ್. ಪಾಟೀಲ್, ತೋಟಗಾರಿಕಾ ಸಚಿವ ಮನಗೂಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಡಾ.ಜಯಮಾಲಾ ಸೇರಿದಂತೆ ಹಲವು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸಮಾರಂಭದಲ್ಲಿ ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ ಅವರು, 'ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಆತ್ಮಸಾಕ್ಷಿಗೆ ತಕ್ಕಂತೆ ಕೆಲಸ ಮಾಡಿದ್ದೇನೆ. ವಿಪಕ್ಷಗಳು ಸರ್ಕಾರ ಬಿದ್ದು ಹೋಗಲಿದೆ ಎಂದು ಬಿಂಬಿಸುತ್ತಿದ್ದರೂ ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಿದ್ದೇನೆ' ಎಂದರು.
'ವಿಪಕ್ಷದವರು ಹೇಳಿದರು ಎಂದು ನಾನ ಹಳ್ಳಿಗೆ ಹೋಗುತ್ತಿಲ್ಲ. ಪಂಚತಾರಾ ಹೋಟೆಲ್ನಲ್ಲಿ ಮಲಗಿದರೂ ನಿದ್ದೆ ಬರುತ್ತದೆ. ಕೆಲವರಿಗೆ ನಿದ್ದೆ ಬಾರದಿದ್ದರೆ ನಾನೇನು ಮಾಡಲಿ. ಮೊನ್ನೆ ಕೆಲವರು ನಿದ್ದೆ ಬಂದಿಲ್ಲ ಎಂದು ಮೌರ್ಯ ಸರ್ಕಲ್ ಬಳಿ ರಸ್ತೆಯಲ್ಲಿ ಮಲಗಿದ್ದರು' ಎಂದು ಬಿಜೆಪಿ ಅಹೋರಾತ್ರಿ ಪ್ರತಿಭಟನೆಗೆ ಕುಮಾರಸ್ವಾಮಿ ಟಾಂಗ್ ನೀಡಿದರು.
ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಮಾತನಾಡಿ, 'ಒಂದು ವರ್ಷದ ಅವಧಿಯಲ್ಲಿ ಸರ್ಕಾರ ಅನೇಕ ಏಳು ಬೀಳುಗಳನ್ನು ಕಂಡಿದೆ. ಬರ, ನೆರೆಯಂತಹ ಕಠಿಣ ಪರಿಸ್ಥಿತಿಯಲ್ಲಿ ಸರ್ಕಾರ ಎದುರಿಸಿದೆ. ಸಾಲಮನ್ನಾ ಯೋಜನೆಯ ಅಡಿ ಇದುವರೆಗೂ 46 ಸಾವಿರ ಕೋಟಿ ರೈತರ ಸಾಲ ಮನ್ನಾ ಮಾಡಲಾಗಿದೆ. 11 ಸಾವಿರ ರೈತರಿಗೆ ಋಣ ಮುಕ್ತ ಪತ್ರ ನೀಡಲಾಗಿದೆ' ಎಂದರು.












Click it and Unblock the Notifications