ಲೋಕಸಭಾ ಚುನಾವಣೆ ಮೈತ್ರಿ : ಜೆಡಿಎಸ್ಗೆ ಸಿಗುವ 7 ಕ್ಷೇತ್ರಗಳ ಪಟ್ಟಿ
Recommended Video

ಬೆಂಗಳೂರು, ಫೆಬ್ರವರಿ 19 : ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಕುರಿತು ಕಾಂಗ್ರೆಸ್ ನಾಯಕರ ಅಭಿಪ್ರಾಯವನ್ನು ಸಂಗ್ರಹಣೆ ಮಾಡಿದೆ. ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿದರೆ ಪಕ್ಷಕ್ಕೆ 7 ಸೀಟುಗಳನ್ನು ಬಿಟ್ಟುಕೊಡಬಹುದು ಎಂದು ಪಕ್ಷದ ನಾಯಕರು ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಸೋಮವಾರ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ನಡೆಯಿತು. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರ ನೇತೃತ್ವದಲ್ಲಿ ಸಭೆ ನಡೆಯಿತು.
ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವುದು ಮತ್ತು ಸೀಟು ಹಂಚಿಕೆ ಬಗ್ಗೆ ಸಭೆಯಲ್ಲಿ ವಿವರವಾದ ಚರ್ಚೆ ನಡೆಯಿತು. ಜೆಡಿಎಸ್ 12 ಸ್ಥಾನಗಳನ್ನು ಕೇಳಬಹುದು, ಆದರೆ, 7 ಸ್ಥಾನಗಳನ್ನು ಅವರಿಗೆ ನೀಡಬಹುದು ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.
ಕಾಂಗ್ರೆಸ್ ಮತ್ತು ಜೆಡಿಎಸ್ ಸಂಸದರು ಗೆಲುವು ಸಾಧಿಸಿರುವ ಕ್ಷೇತ್ರಗಳನ್ನು ಸೀಟು ಹಂಚಿಕೆ ಪ್ರಕ್ರಿಯೆಯಿಂದ ಹೊರಗಿಡಬೇಕು ಎಂದು ನಾಯಕರು ಒತ್ತಾಯಿಸಿದರು. ಎಲ್ಲರ ಅಭಿಪ್ರಾಯವನ್ನು ಸಂಗ್ರಹಿಸಲಾಗಿದ್ದು, ಅದನ್ನು ಹೈಕಮಾಂಡ್ಗೆ ಕಳುಹಿಸಲಾಗುತ್ತದೆ. ಜೆಡಿಎಸ್ ಪಕ್ಷಕ್ಕೆ ಸಿಗುವ 7 ಕ್ಷೇತ್ರಗಳ ವಿವರ ಚಿತ್ರಗಳಲ್ಲಿ...

ಸೀಟು ಹಂಚಿಕೆಯಿಂದ ಹೊರಗಿಡಿ
ಕಾಂಗ್ರೆಸ್ ಮತ್ತು ಜೆಡಿಎಸ್ನ ಹಾಲಿ ಸಂಸದರು ಇರುವ ಕ್ಷೇತ್ರವನ್ನು ಹಂಚಿಕೆ ಮಾಡುವುದು ಬೇಡ. ಕಾಂಗ್ರೆಸ್ ಗೆದ್ದಿರುವ ಯಾವುದೇ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಡುವುದು ಬೇಡ. ಸೀಟು ಹಂಚಿಕೆ ಚರ್ಚೆ ಕಾಂಗ್ರೆಸ್ ಮತ್ತು ಜೆಡಿಎಸ್ ಗೆಲ್ಲದ ಕ್ಷೇತ್ರಗಳಿಗೆ ಮಾತ್ರ ಸೀಮಿತವಾಗಿರಬೇಕು ಎಂದು ಕಾಂಗ್ರೆಸ್ ನಾಯಕರು ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದರು.

ಮಂಡ್ಯ ಮತ್ತು ಹಾಸನ ಜೆಡಿಎಸ್ಗೆ
ಮಂಡ್ಯ (ಎಲ್.ಆರ್.ಶಿವರಾಮೇಗೌಡ), ಹಾಸನ (ಎಚ್.ಡಿ.ದೇವೇಗೌಡ) ಜೆಡಿಎಸ್ ಗೆದ್ದಿರುವ ಕ್ಷೇತ್ರವನ್ನು ಕಾಂಗ್ರೆಸ್ ಕೇಳುವುದು ಬೇಡ. ಈ ಕ್ಷೇತ್ರಗಳನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟು ಕೊಡುವುದು ಎಂದು ಸಭೆಯಲ್ಲಿ ಚರ್ಚೆ ನಡೆಸಲಾಯಿತು.

ಶಿವಮೊಗ್ಗ ಜೆಡಿಎಸ್ಗೆ
2018ರ ನವೆಂಬರ್ನಲ್ಲಿ ನಡೆದ ಲೋಕಸಭಾ ಉಪ ಚುನಾವಣೆಯಲ್ಲಿ ಶಿವಮೊಗ್ಗದಲ್ಲಿ ಕಾಂಗ್ರೆಸ್ ಜೆಡಿಎಸ್ಗೆ ಬೆಂಬಲ ನೀಡಿತ್ತು. ಆದ್ದರಿಂದ, ಈ ಬಾರಿಯ ಚುನಾವಣೆಯಲ್ಲಿ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಡುವುದು ಎಂದು ತೀರ್ಮಾನಿಸಲಾಗಿದೆ. ಹಾಲಿ ಕ್ಷೇತ್ರದ ಸಂಸದರು ಬಿಜೆಪಿಯ ಬಿ.ವೈ.ರಾಘವೇಂದ್ರ.

ಬೆಂಗಳೂರು ಉತ್ತರ ಕ್ಷೇತ್ರ
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಡಬಹುದು ಎಂದು ಸಭೆಯಲ್ಲಿ ಚರ್ಚೆಯಾಗಿದೆ. ಈ ಬಾರಿಯ ಚುನಾವಣೆಯಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ ಎಂಬ ಸುದ್ದಿಗಳಿವೆ. ಕ್ಷೇತ್ರದ ಹಾಲಿ ಸಂಸದರು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ.

ಮೈಸೂರು ಜೆಡಿಎಸ್ ಪಾಲಿಗೆ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಕ್ಷೇತ್ರ ಮೈಸೂರು-ಕೊಡಗು ಜೆಡಿಎಸ್ಗೆ ಸಿಗುವ ಸಾಧ್ಯತೆ ಇದೆ. ಜೆಡಿಎಸ್ ಬೇಡಿಕೆ ಇಟ್ಟಿರುವ 12 ಕ್ಷೇತ್ರಗಳಲ್ಲಿ ಮೈಸೂರು ಸಹ ಸೇರಿತ್ತು. ಮೈಸೂರು-ಕೊಡಗು ಕ್ಷೇತ್ರ ಸಹ ಬಿಜೆಪಿ ವಶದಲ್ಲಿದ್ದು, ಪ್ರತಾಪ್ ಸಿಂಹ ಹಾಲಿ ಸಂಸದರು.

ಉತ್ತರ ಕರ್ನಾಟಕ ಭಾಗದಲ್ಲಿ 2 ಕ್ಷೇತ್ರ
ಉತ್ತರ ಕರ್ನಾಟಕ ಭಾಗದಲ್ಲಿ ಜೆಡಿಎಸ್ ಪಕ್ಷಕ್ಕೆ 2 ಕ್ಷೇತ್ರಗಳನ್ನು ಬಿಟ್ಟುಕೊಡಲು ಕಾಂಗ್ರೆಸ್ ತೀರ್ಮಾನಿಸಿದೆ. ಇವುಗಳ ಪೈಕಿ ಧಾರವಾಡ ಮತ್ತು ಬೆಳಗಾವಿ ಕ್ಷೇತ್ರಗಳು ಜೆಡಿಎಸ್ಗೆ ಸಿಗುವ ಸಾಧ್ಯತೆ ಇದೆ. ಬೆಳಗಾವಿ (ಸುರೇಶ್ ಅಂಗಡಿ), ಧಾರವಾಡ (ಪ್ರಹ್ಲಾದ್ ಜೋಶಿ) ಈ ಎರಡೂ ಕ್ಷೇತ್ರಗಳು ಬಿಜೆಪಿಯ ವಶದಲ್ಲಿವೆ.












Click it and Unblock the Notifications