ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ : ಸಮನ್ವಯ ಸಮಿತಿ ಸಭೆ ನಿರ್ಣಯಗಳು
ಬೆಂಗಳೂರು, ಜೂನ್ 14 : ಕಾಂಗ್ರೆಸ್-ಜೆಡಿಎಸ್ ಸಮ್ಮಶ್ರ ಸರ್ಕಾರದ ಮೊದಲ ಸಮನ್ವಯ ಸಮಿತಿ ಸಭೆಯಲ್ಲಿ ಹಲವು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ನಿಗಮ-ಮಂಡಳಿ ನೇಮಕಾತಿಗಳಲ್ಲಿ ಅತೃಪ್ತ ಶಾಸಕರಿಗೆ ಮೊದಲ ಆದ್ಯತೆ ನೀಡಲು ನಿರ್ಧರಿಸಲಾಗಿದೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಗುರುವಾರ ಸಮನ್ವಯ ಸಮಿತಿಯ ಮೊದಲ ಸಭೆ ನಡೆಯಿತು. ಎಚ್.ಡಿ.ಕುಮಾರಸ್ವಾಮಿ, ಕೆ.ಸಿ.ವೇಣುಗೋಪಾಲ್, ಡಾ.ಜಿ.ಪರಮೇಶ್ವರ, ಡ್ಯಾನಿಷ್ ಅಲಿ ಸಭೆಯಲ್ಲಿ ಪಾಲ್ಗೊಂಡಿದ್ದರು.
ಸುಮಾರು ಒಂದೂವರೆ ಗಂಟೆಗಳ ಕಾಲ ನಡೆದ ಸಭೆಯಲ್ಲಿ ಸಚಿವ ಸ್ಥಾನ ವಂಚಿತ ಕಾಂಗ್ರೆಸ್ ಶಾಸಕರ ಬಂಡಾಯದ ಕುರಿತು ಪ್ರಮುಖವಾಗಿ ಚರ್ಚೆ ನಡೆಯಿತು. ಶಾಸಕರ ಅಸಮಾಧಾನವನ್ನು ಬಗೆಹರಿಸಲು ನಿಗಮ-ಮಂಡಳಿ ನೇಮಕಾತಿಯಲ್ಲಿ ಶಾಸಕರಿಗೆ ಆದ್ಯತೆ ನೀಡುವ ಕುರಿತು ತೀರ್ಮಾನಿಸಲಾಯಿತು.
ಕಾಂಗ್ರೆಸ್ ಮತ್ತು ಜೆಡಿಎಸ್ ಪ್ರಣಾಳಿಕೆಯಲ್ಲಿನ ಘೋಷಣೆಗಳ ಅನುಷ್ಠಾನಕ್ಕಾಗಿ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ರೂಪಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಸಿದ್ಧಪಡಿಸಲು ಸಮಿತಿಯನ್ನು ರಚನೆ ಮಾಡಲು ನಿರ್ಧರಿಸಲಾಗಿದೆ. ಸಮನ್ವಯ ಸಮಿತಿ ಸಭೆಯ ತೀರ್ಮಾನಗಳು ಇಲ್ಲಿವೆ...

ನಿಗಮ-ಮಂಡಳಿ ನೇಮಕಾತಿ
ಸಚಿವ ಸ್ಥಾನ ಕೈ ತಪ್ಪಿದ ಹಿನ್ನಲೆಯಲ್ಲಿ ಎಂ.ಬಿ.ಪಾಟೀಲ್, ಸತೀಶ್ ಜಾರಕಿಹೊಳಿ ಮುಂತಾದ ಶಾಸಕರು ಅಸಮಾಧಾನಗೊಂಡಿದ್ದಾರೆ. ಆದ್ದರಿಂದ, ನಿಗಮ-ಮಂಡಳಿ ನೇಮಕಾತಿಯಲ್ಲಿ ಅತೃಪ್ತ ಶಾಸಕರಿಗೆ ಆದ್ಯತೆ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ.
ನಿಗಮ-ಮಂಡಳಿ ನೇಮಕಾತಿಗಳಲ್ಲಿ 3/2 ಭಾಗ ಕಾಂಗ್ರೆಸ್ ಪಕ್ಷಕ್ಕೆ 3/1 ಭಾಗ ಜೆಡಿಎಸ್ ಪಾಲಾಗಲಿದೆ. ಒಂದು ವಾರದಲ್ಲಿ 30 ನಿಗಮ-ಮಂಡಳಿಗಳಿಗೆ ನೇಮಕಾತಿ ಮಾಡಲಾಗುತ್ತದೆ. ಯಾರನ್ನು ನೇಮಕ ಮಾಡಬೇಕು ಎಂದು ಎಚ್.ಡಿ.ಕುಮಾರಸ್ವಾಮಿ ಮತ್ತು ಜಿ.ಪರಮೇಶ್ವರ ನಿರ್ಧರಿಸಲಿದ್ದಾರೆ.

ಸಾಮಾನ್ಯ ಕನಿಷ್ಠ ಕಾರ್ಯಕ್ರಮ
ಕಾಂಗ್ರೆಸ್ ಮತ್ತು ಜೆಡಿಎಸ್ ಪ್ರಣಾಳಿಕೆಯಲ್ಲಿನ ಘೋಷಣೆಗಳ ಅನುಷ್ಠಾನಕ್ಕಾಗಿ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ರೂಪಿಸಲು ಸಮನ್ವಯ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಇದಕ್ಕಾಗಿ ಒಂದು ಸಮಿತಿಯನ್ನು ರಚನೆ ಮಾಡಲಾಗುತ್ತದೆ.
ಎರಡೂ ಪಕ್ಷ ಚುನಾವಣೆ ಪ್ರಣಾಳಿಕೆಯಲ್ಲಿ ಹಲವು ಭರವಸೆ ನೀಡಿವೆ. ಎಲ್ಲಾ ಕಾರ್ಯಕ್ರಮ ಅನುಷ್ಠಾನ ಅಸಾಧ್ಯ. ಆದ್ದರಿಂದ, ಸಾಮಾನ್ಯ ಕನಿಷ್ಠ ಕಾರ್ಯಕ್ರ ರೂಪಿಸಲಾಗುತ್ತದೆ. ಕಾಂಗ್ರೆಸ್ನ 3, ಜೆಡಿಎಸ್ನ 2 ಸದಸ್ಯರನ್ನು ಒಳಗೊಂಡ ಸಮಿತಿ ಸಾಮಾನ್ಯ ಕನಿಷ್ಠ ಕಾರ್ಯಕ್ರಮದ ಕರಡನ್ನು ಸಿದ್ಧಪಡಿಸಿ 10 ದಿನದಲ್ಲಿ ನೀಡಲಿದೆ.

ಜಯಪ್ರಿಯ ಕಾರ್ಯಕ್ರಮ ಮುಂದುವರಿಕೆ
ಹಿಂದಿನ ಕಾಂಗ್ರೆಸ್ ಸರ್ಕಾರದ ಜನಪ್ರಿಯ ಕಾರ್ಯಕ್ರಮಗಳನ್ನು ಮುಂದುವರೆಸಲು ಸಮನ್ವಯ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ರೈತರ ಸಾಲಾಮನ್ನಾ ವಿಚಾರವೂ ಸಾಮಾನ್ಯ ಕನಿಷ್ಠ ಕಾರ್ಯಕ್ರಮದಲ್ಲಿ ಸೇರಿದೆ.
'ಎಚ್.ಡಿ.ಕುಮಾರಸ್ವಾಮಿ ಅವರ ಜೊತೆ ಚರ್ಚೆ ನಡೆಸಿ ಸಂಪುಟ ವಿಸ್ತರಣೆ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ' ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಹೇಳಿದ್ದಾರೆ. ಇದೇ ವಾರದಲ್ಲಿ ಸಂಪುಟ ವಿಸ್ತರಣೆಯಾಗುವ ನಿರೀಕ್ಷೆ ಇದೆ.

ವರ್ಗಾವಣೆ ರಾಜಕೀಯ
ನೌಕರರ ವರ್ಗಾವಣೆ ವಿಚಾರದ ಬಗ್ಗೆ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುವುದು ಉತ್ತಮ ಎಂಬ ಅಭಿಪ್ರಾಯ ಕಾಂಗ್ರೆಸ್ ವಲಯದಿಂದ ವ್ಯಕ್ತವಾಗಿದೆ. ಮೈತ್ರಿ ಸರ್ಕಾರದಲ್ಲಿ ಸಮನ್ವಯ ಇಲ್ಲ ಎಂಬ ಭಾವನೆ ಜನರಿಗೆ ಬರದಂತೆ ಎಚ್ಚರಿಕೆ ವಹಿಸಲು ತೀರ್ಮಾನಿಸಲಾಗಿದೆ.
ಸೂಕ್ಷ್ಮ ವಿಷಯಗಳ ಬಗ್ಗೆ ಪ್ರತಿಕ್ರಿಯೆ ನೀಡುವ ಮುನ್ನ ಉಭಯ ಪಕ್ಷಗಳ ಮುಖಂಡರ ಜೊತೆ ಚರ್ಚೆ ನಡೆಸಲು ಸಲಹೆ ಬಂದಿದೆ. 'ಪಕ್ಷದಲ್ಲಿ ಯಾವುದೇ ಅಸಮಾಧಾನವಿಲ್ಲ. ಅತೃಪ್ತ ಶಾಸಕರು ಎಂ.ಬಿ.ಪಾಟೀಲರ ಮನೆಯಲ್ಲಿ ಊಟಕ್ಕೆ ಸೇರಿರಬಹುದು' ಎಂದು ಪರಮೇಶ್ವರ ಹೇಳಿದ್ದಾರೆ.












Click it and Unblock the Notifications