SC.ST ಮೀಸಲಾತಿ ಹೆಚ್ಚಳಕ್ಕೆ ಕೇಂದ್ರಕ್ಕೆ ಸಲ್ಲಿಕೆಯಾಗದ ಪ್ರಸ್ತಾವನೆ; ಪ್ರತಿಭಟನೆ ಕಾಂಗ್ರೆಸ್ ನಿರ್ಧಾರ
ಬಿಜೆಪಿ ಸರ್ಕಾರ ದಲಿತ ಸಮುದಾಯಕ್ಕೆ ಹೇಗೆ ದ್ರೋಹ ಬಗೆಯುತ್ತಿದೆ ಎಂಬುದಕ್ಕೆ ಇದೇ ಸಾಕ್ಷಿ ಎಂದು ಪರಮೇಶ್ವರ್ ಕಿಡಿಕಾರಿದ್ದಾರೆ.
ಬೆಂಗಳೂರು, ಮಾರ್ಚ್ 21: ಬಿಜೆಪಿ ಅತ್ಯಂತ ಮೋಸದ ಪಕ್ಷ. ದಲಿತರು, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರಿಗೆ ಮೋಸ ಮಾಡುತ್ತಲೇ ಬಂದಿದ್ದಾರೆ. ಬಿಜೆಪಿ ನಾಯಕರು ಕಾಂಗ್ರೆಸ್ ದಲಿತರಿಗೆ ಮೋಸ ಮಾಡಿದ್ದು, ನಾವು ಅವರಿಗೆ ಮೀಸಲಾತಿ ಹೆಚ್ಚಿಸುತ್ತಿದ್ದೇವೆ ಎಂದು ಸುಳ್ಳು ಹೇಳಿದ್ದಾರೆ ಎಂದು ಸರ್ಕಾರದ ವಿರುದ್ದ ಮಾಜಿ ಡಿಸಿಎಂ ಡಾ. ಜಿ ಪರಮೇಶ್ವರ್ ಕಿಡಿಕಾರಿದ್ದಾರೆ.
ಈ ಕುರಿತು ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಮಾತನಾಡಿದ ಅವರು, ಎಸ್ಸಿ, ಎಸ್ಟಿ ಮೀಸಲಾತಿ ವಿಚಾರವಾಗಿ ಸಂಸದರು ಸಂಸತ್ತಿನಲ್ಲಿ ಪ್ರಶ್ನೆ ಮಾಡಿದಾಗ. ರಾಜ್ಯ ಬಿಜೆಪಿ ಸರ್ಕಾರ ಮೀಸಲಾತಿ ಹೆಚ್ಚಳ ವಿಚಾರವಾಗಿ ಕೇಂದ್ರ ಸರ್ಕಾರಕ್ಕೆ ಯಾವುದೇ ಪ್ರಸ್ತಾವನೆ ನೀಡಿಲ್ಲ ಎಂದು ರಾಜ್ಯದ ಸಂಸದರು ಹಾಗೂ ಕೇಂದ್ರ ಸಚಿವರಾದ ನಾರಾಯಣಸ್ವಾಮಿ ಅವರು ಸಂಸತ್ತಿನಲ್ಲಿ ಉತ್ತರಿಸಿದ್ದಾರೆ. ಬಿಜೆಪಿ ಸರ್ಕಾರ ದಲಿತ ಸಮುದಾಯಕ್ಕೆ ಹೇಗೆ ದ್ರೋಹ ಬಗೆಯುತ್ತಿದೆ ಎಂಬುದಕ್ಕೆ ಇದೇ ಸಾಕ್ಷಿ. ಇಕ್ಕಿಂತ ಮೋಸ ಮಾಡಲು ಜಗತ್ತಿನಲ್ಲಿ ಯಾರಿಗೂ ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದಾರೆ.

ಈ ಮೀಸಲಾತಿ ನಮ್ಮ ಹಕ್ಕಾಗಿದೆ. ಬಿಜೆಪಿಯವರು ಅಂಬೇಡ್ಕರ್ ಅವರ ಸಂವಿಧಾನ ಬದಲಿಸುವ ಬಗ್ಗೆ ಮಾತನಾಡುತ್ತಾರೆ. ಇನ್ನು ಕೆಲವರು ಮೀಸಲಾತಿ ತೆಗೆದುಹಾಕಬೇಕು ಎಂದು ಹೇಳುತ್ತಿದ್ದಾರೆ. ಸಂಸತ್ತಿನಲ್ಲಿ ಕೇಂದ್ರ ಸಚಿವರ ಹೇಳಿಕೆ ನಂತರ ದಲಿತ ಸಮುದಾಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ರಾಜ್ಯಾದ್ಯಂತ ಪ್ರತಿಭಟನೆ ಮಾಡಲಾಗುವುದು. ನಮ್ಮ ಪ್ರತಿಭಟನೆ ರೂಪುರೇಷೆಗಳನ್ನು ಶೀಘ್ರ ತಿಳಿಸುತ್ತೇವೆ.
ಇನ್ನು ನಮ್ಮ ಸರ್ಕಾರ ಪರಿಶಿಷ್ಟ ಜಾತಿ ಹಾಗೂ ಪಂಗಡದವರಿಗೆ ಜನಸಂಖ್ಯೆ ಅನುಗುಣವಾಗಿ ಬಜೆಟ್ ನಲ್ಲಿ ಶೇ.24ರಷ್ಟು ಹಣ ಮೀಸಲಿಟಲು ಎಸ್ ಸಿಪಿ ಟಿಎಸ್ ಪಿ ಕಾಯ್ದೆ ತಂದು ಅನುದಾನ ನೀಡಿದ್ದೆವು. ಆದರೆ ಬಿಜೆಪಿ ಸರ್ಕಾರ ಕೇವಲ 28 ಸಾವಿರ ಮಾತ್ರ ನೀಡಿ, ಅದರಲ್ಲಿ ಕೇವಲ 20 ಸಾವಿರ ಕೋಟಿ ಮಾತ್ರ ನೀಡಿದೆ. ಈ ವರ್ಷ 52 ಸಾವಿರ ಕೋಟಿ ಅನುದಾನ ನೀಡದೇ ಕೇವಲ 30 ಸಾವಿರ ಕೋಟಿ ಮಾತ್ರ ನೀಡಿದ್ದಾರೆ. ಇದರ ವಿರುದ್ಧವೂ ನಾವು ಮುಂದಿನ ದಿನಗಳಲ್ಲಿ ಹೋರಾಟ ಮಾಡುತ್ತೇವೆ.
ಇನ್ನೂ ದಲಿತರ ಸಮಸ್ಯೆಗಳ ವಿರುದ್ಧ ರಾಜ್ಯ ಹಾಗೂ ರಾಷ್ಟ್ರಗಳಲ್ಲಿ ಅನೇಕ ಹೋರಾಟಗಳನ್ನು ಮಾಡಿ ಸರ್ಕಾರಗಳನ್ನು ಎಚ್ಚರಿಸುತ್ತಾ ಬಂದಿರುವ ದಲಿತ ಸಮುದಾಯಗಳ ಒಕ್ಕೂಟ ಹಾಗೂ ಅದರ ಮುಂಚೂಣಿ ನಾಯಕರುಗಳಾದ ಸುಧಾಂ ದಾಸ್, ಡಾ.ಗೋಪಾಲ್, ಅಂಬಣ್ಣ, ಹೆಣ್ಣೂರು ಶ್ರೀನಿವಾಸ್ ಅವರುಗಳು ಹಾಗೂ ಅವರ ಜತೆ ಅನೇಕ ಮುಖಂಡರುಗಳು ಕಾಂಗ್ರೆಸ್ ಹಾಗೂ ಇತರೆ ಪಕ್ಷಗಳ ಹೊರಗೆ ನಿಂತು ಹೋರಾಟ ಮಾಡುತ್ತಿದ್ದರು.

ಈಗ ಅವರಿಗೆ ಕಾಂಗ್ರೆಸ್ ಪಕ್ಷದಿಂದ ಮಾತ್ರ ಈ ಸಮುದಾಯಗಳಿಗೆ ನ್ಯಾಯ ಸಿಗಲಿದೆ ಎಂದು ಮನವರಿಕೆಯಾಗಿದೆ. ಹೀಗಾಗಿ ಅವರು ಬಹಳ ಚರ್ಚೆ ಮಾಡಿ ನಮ್ಮ ನಾಯಕರುಗಳ ಜತೆ ಚರ್ಚೆ ಮಾಡಿ ಈ ಸಮುದಾಯಗಳಿಗೆ ನ್ಯಾಯ ಒದಗಿಸಬೇಕು, ಇದು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ ಎಂದು ತೀರ್ಮಾನಿಸಿ ಪಕ್ಷ ಸೇರುತ್ತಿದ್ದಾರೆ ಎಂದರು.
ಇನ್ನೂ ಈ ವೇಳೆ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸುರ್ಜೆವಾಲ ಮಾತನಾಡಿ, ಕಾಂಗ್ರೆಸ್ ಪಕ್ಷದ ಹೊರಗಿರುವ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಪರವಾಗಿ ಧ್ವನಿ ಎತ್ತಿರುವ ಈಗ ನಾಯಕರು ಕಾಂಗ್ರೆಸ್ ಪಕ್ಷವನ್ನು ಸೇರಿ ಶೋಷಿತ ವರ್ಗದ ಪರವಾಗಿ ಕೆಲಸ ಮಾಡಲು ತೀರ್ಮಾನಿಸಿದ್ದಾರೆ. ಬಿಜೆಪಿ ಸರ್ಕಾರದ ದೌರ್ಜನ್ಯಕ್ಕೆ ಒಳಗಾಗಿರುವ ಪರಿಶಿಷ್ಟ ಸಮುದಾಯದ ನಾಯಕರು ಇಂದು ಪಕ್ಷದ ಜತೆ ಕೆಲಸ ಮಾಡಲು ಮುಂದಾಗಿದ್ದಾರೆ. ಈ ನಾಯಕರು ಇಷ್ಟು ದಿನ ರಾಜಕೀಯ ಪಕ್ಷಗಳಿಂದ ಹೊರಗಿದ್ದು ಕೆಲಸ ಮಾಡಿದ್ದು, ಈಗ ಕಾಂಗ್ರೆಸ್ ಪಕ್ಷದಿಂದ ಮಾತ್ರ ಈ ವರ್ಗದವರಿಗೆ ನ್ಯಾಯ ಸಿಗಲಿದೆ ಎಂದು ಅರಿತು ಇಂದು ಪಕ್ಷ ಸೇರುತ್ತಿದ್ದಾರೆ. ಅವರಿಗೆ ನಾನು ಪಕ್ಷಕ್ಕೆ ತುಂಬು ಹೃದಯದಿಂದ ಸ್ವಾಗತಿಸುತ್ತೇನೆ.
ಬಿಜೆಪಿ ಸರ್ಕಾರ ಪರಿಶಿಷ್ಟ ಜಾತಿ ಹಾಗೂ ಪಂಗಡದವರ ವಿಚಾರದಲ್ಲಿ ಮೋಸ ಮಾಡಿದೆ. ಬೊಮ್ಮಾಯಿ ಅವರ ಸರ್ಕಾರ ದಲಿತರಿಗೆ ದ್ರೋಹ ಬಗೆದಿದೆ. ಈ ಹಿಂದೆ ಸಂಸತ್ತಿನಲ್ಲಿ ದಲಿತರಿಗೆ ಮೀಸಲಾತಿ ನಿರಾಕರಿಸಿದೆ. ಮೀಸಲಾತಿ ವಿಚಾರದಲ್ಲಿ ಕೇಂದ್ರ ಸರ್ಕಾರಕ್ಕೆ ನಾಗಮೋಹನ್ ದಾಸ್ ವರದಿ ಶಿಫಾರಸ್ಸಿನ ಮೇರೆಗೆ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ.15ರಿಂದ ಶೇ.17ಕ್ಕೆ, ಪರಿಶಿಷ್ಟ ಪಂಗಡ ಮೀಸಲಾತಿಯನ್ನು ಶೇ.3ರಿಂದ ಶೇ.7ಕ್ಕೆ ಏರಿಸುವ ಕುರಿತು ರಾಜ್ಯ ಬಿಜೆಪಿ ಸರ್ಕಾರ ಯಾವುದೇ ಪ್ರಸ್ತಾವನೆ ಸಲ್ಲಿಸಿಲ್ಲ.












Click it and Unblock the Notifications