ಸಿಎಂ ಕಚೇರಿಯಿಂದ ಕೊಟ್ಟ 1,00,000 ರೂ ಮೂಲ ಯಾವುದಯ್ಯ ಎಂದ ಸುರ್ಜೇವಾಲಾ!
ಬೆಂಗಳೂರು, ಅಕ್ಟೋಬರ್ 29: ಕರ್ನಾಟಕದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಚೇರಿಯಿಂದಲೇ ಪತ್ರಕರ್ತರಿಗೆ ಲಂಚ ನೀಡಲಾಗಿದೆ ಎಂದು ಕೇಳಿ ಬಂದಿರುವ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಿರಿಯ ಮುಖಂಡ ರಂದೀಪ್ ಸಿಂಗ್ ಸುರ್ಜೇವಾಲಾ ಟ್ವೀಟ್ ಮಾಡಿದ್ದಾರೆ.
ಕರ್ನಾಟದಲ್ಲಿ 40 ಪರ್ಸೆಂಟ್ ಸರ್ಕಾರವು ಪತ್ರಕರ್ತರಿಗೆ 1 ಲಕ್ಷ ರೂಪಾಯಿ ನಗದು ಲಂಚ ನೀಡಲು ಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಪ್ರಶ್ನಿಸಿ ಟ್ವೀಟ್ ಸಂದೇಶವನ್ನು ಪೋಸ್ಟ್ ಮಾಡಿದ್ದಾರೆ.
ಡೆಕ್ಕನ್ ಹೆರಾಲ್ಡ್ ಮತ್ತು ಪ್ರಜಾವಾಣಿಯ ಪ್ರಧಾನ ಮತ್ತು ಮುಖ್ಯ ವರದಿಗಾರರಿಬ್ಬರಿಗೆ ದೀಪಾವಳಿ ಹಬ್ಬದ ನೆಪದಲ್ಲಿ ಸ್ವೀಟ್ ಬಾಕ್ಸ್ನೊಂದಿಗೆ 1 ಲಕ್ಷ ರೂಪಾಯಿ ನಗದು ಹಣವನ್ನು ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕ ಶಂಕರ್ ಪಾಗೋಜಿ ಎಂಬುವರು ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಜನಾಧಿಕಾರ ಸಂಘರ್ಷ ಪರಿಷತ್ ಮುಖ್ಯಮಂತ್ರಿ ಮತ್ತು ಮಾಧ್ಯಮ ಸಂಯೋಜಕರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ 2018ರ ತಿದ್ದುಪಡಿ ಅಧಿನಿಯಮದ ಅನ್ವಯ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಒತ್ತಾಯಿಸಿದೆ. ಇದರ ಮಧ್ಯೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉತ್ತರಿಸುವರೇ ಎಂದು ಪ್ರಶ್ನೆ ಮಾಡಿದ್ದಾರೆ.

ಸಿಎಂ ಬೊಮ್ಮಾಯಿಗೆ ಸುರ್ಜೇವಾಲಾ ಪ್ರಶ್ನೆ
* ಸಿಎಂ ನೀಡುತ್ತಿರುವುದು "ಲಂಚ" ಅಲ್ಲವೇ?
* 1,00,000 ಮೂಲ ಯಾವುದು? ಸಾರ್ವಜನಿಕ ಖಜಾನೆಯಿಂದ ಬಂದಿದೆಯೇ ಅಥವಾ ಸಿಎಂ ಅವರಿಂದಲೇ ಬಂದಿದೆಯೇ?
* ಇದನ್ನು ಜಾರಿ ನಿರ್ದೇಶನಾಲಯ ಅಥವಾ ಆದಾಯ ತೆರಿಗೆ ಇಲಾಖೆಯು ಗಮನಿಸುತ್ತದೆಯೇ?

ಎರಡನೇ ಟ್ವೀಟ್ ಸಂದೇಶದಲ್ಲಿ ಏನಿದೆ?
"ಸಿಎಂ ಬೊಮ್ಮಾಯಿ ಮತ್ತು ಅವರ ಮುಖ್ಯಮಂತ್ರಿ ಕಚೇರಿಯ ಲಂಚದ ಗೇಟ್ ಅನ್ನು ಬಯಲಿಗೆಳೆದ ಕರ್ನಾಟಕದ ಧೀರ ಸಾಹಿತಿಗಳಿಗೆ ಹ್ಯಾಟ್ಸ್ ಆಫ್. ಎಲ್ಲರೂ "ಮಾರಾಟದಲ್ಲಿಲ್ಲ" ಎಂಬುದನ್ನು ಬಿಜೆಪಿ ಸರ್ಕಾರ ಅರಿತುಕೊಳ್ಳುತ್ತದೆ ಎಂದು ಭಾವಿಸುತ್ತೇವೆ. ರಾಷ್ಟ್ರೀಯ ಮಾಧ್ಯಮ ಮಿತ್ರರು ಈ ಬಗ್ಗೆ ಗಮನಿಸಿ," ಎಂದು ರಂದೀಪ್ ಸುರ್ಜೇವಾಲಾ ಟ್ವೀಟ್ ಮಾಡಿದ್ದಾರೆ.

ಪತ್ರಕರ್ತರಿಗೆ ಒಂದು ಲಕ್ಷ ರೂಪಾಯಿ ಲಂಚದ ಆರೋಪ
ಕರ್ನಾಟಕದಲ್ಲಿ ಗುತ್ತಿಗೆದಾರರಿಂದ 40 ಪರ್ಸೆಂಟೇಜ್ ಕಮಿಷನ್ಗೆ ಬೇಡಿಕೆ ಇಟ್ಟಿದ್ದ ಪ್ರಕರಣವು ಇನ್ನೂ ಹಸಿರಾಗಿದೆ. ಪರ್ಸೆಂಟೇಜ್ ವಿಷಯವು ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿರುವುದರ ಮಧ್ಯೆ ಮುಖ್ಯಮಂತ್ರಿ ಕಚೇರಿಯಿಂದ ಪತ್ರಕರ್ತರಿಗೆ ಲಕ್ಷಗಟ್ಟಲೇ ಲಂಚ ನೀಡಿರುವ ಬಗ್ಗೆ ಆರೋಪ ಕೇಳಿ ಬಂದಿದೆ. ಇದು ರಾಜ್ಯದ ಬಿಜೆಪಿ ಸರ್ಕಾರವನ್ನು ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿಸಿದೆ.

ಪತ್ರಕರ್ತರಿಗೆ ಒಂದು ಲಕ್ಷ ರೂಪಾಯಿ ಕೊಟ್ಟಿದ್ದು ಏಕೆ?
ಮುಖ್ಯಮಂತ್ರಿ ವಿರುದ್ಧ ಕೇಳಿ ಬಂದಿರುವ ಭ್ರಷ್ಟಾಚಾರದ ಆರೋಪ, ಕೆಟ್ಟ ಆಡಳಿತದ ಕುರಿತು ಪತ್ರಿಕೆಯಲ್ಲಿ ಪ್ರಕಟಿಸದಂತೆ ಹಣವನ್ನು ನೀಡಲಾಗಿದೆ ಎಂಬುದಕ್ಕೆ ಪುಷ್ಟಿ ನೀಡಿದಂತೆ ಆಗಿದೆ. ಮುಖ್ಯಮಂತ್ರಿ ಕಚೇರಿಯೇ ನೇರವಾಗಿ ಮಾಧ್ಯಮ ಪ್ರತಿನಿಧಿಗಳಿಗೆ ಲಂಚ ನೀಡಿರುವುದು ಅನೈತಿಕವಾದದ್ದಾಗಿದೆ. ಅಲ್ಲದೇ ಮಾಧ್ಯಮ ಸಂಸ್ಥೆಗಳ ಮೇಲೆ ಪ್ರಭಾವ ಬೀರಿ ಸರ್ಕಾರದ ಪರವಾಗಿ ಇರುವಂತೆ ನೋಡಿಕೊಂಡಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ದೂರಿನಲ್ಲಿ ಜನಾಧಿಕಾರ ಸಂಘರ್ಷ ಪರಿಷತ್ ವಿವರಿಸಿದೆ.
ಸರ್ಕಾರದ ಅಧಿಕಾರಿಗಳ ಭ್ರಷ್ಟಾಚಾರದ ವಿರುದ್ಧ ಹಲವಾರು ದೂರುಗಳನ್ನು ನೀಡಿದ್ದರೂ ಮಾಧ್ಯಮಗಳು ಗಂಭೀರವಾಗಿ ಪರಿಗಣಿಸಿರಲಿಲ್ಲ. ಈ ಮಾಧ್ಯಮಗಳನ್ನು ಸರ್ಕಾರವು ಕೊಳ್ಳುತ್ತಿರುವ ಬಗ್ಗೆ ಬಹುತೇಕ ಜನರಿಗೆ ಅನುಮಾನವಿದೆ. ಈ ಪ್ರಕರಣವು ಆ ಅನುಮಾನವನ್ನು ಸಾಬೀತುಗೊಳಿಸಿದೆ. ಇದು ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಮತ್ತು ಸಂವಿಧಾನವನ್ನು ಬುಡಮೇಲು ಮಾಡಲು ಬಿಜೆಪಿಯು ಹುನ್ನಾರ ನಡೆಸುತ್ತಿರುವ ಹಲವಾರು ಪ್ರಯತ್ನಗಳಲ್ಲಿ ಒಂದಾಗಿದೆ. ಈ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಿದ್ದು ತಕ್ಷಣವೇ ಲೋಕಾಯುಕ್ತರು ಈ ದೂರನ್ನಾಧರಿಸಿ ತನಿಖೆ ನಡೆಸಿ ಆಪಾದಿತ ಮುಖ್ಯಮಂತ್ರಿ ಮತ್ತು ಅವರ ಮಾಧ್ಯಮ ಸಂಯೋಜಕರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ 2018ರ ತಿದ್ದುಪಡಿ ಅಧಿನಿಯಮ ಅನ್ವಯ ಕ್ರಮ ಕೈಗೊಳ್ಳಬೇಕು,' ಎಂದು ಜನಾಧಿಕಾರ ಸಂಘರ್ಷ ಪರಿಷತ್ನ ಸಹ ಅಧ್ಯಕ್ಷ ಆದರ್ಶ ಐಯ್ಯರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.












Click it and Unblock the Notifications