ಆರ್ಸಿಇಪಿ ರೈತ ವಿರೋಧಿ; ಹೋರಾಟಕ್ಕೆ ಸಿದ್ದರಾಮಯ್ಯ ಕರೆ
ಬೆಂಗಳೂರು, ಅಕ್ಟೋಬರ್ 25 : ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಒಪ್ಪಂದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದರು. "ಭಾರತೀಯ ರೈತರನ್ನು ಮತ್ತೊಂದು ಮುಕ್ತ ವ್ಯಾಪಾರ ಒಪ್ಪಂದಕ್ಕೆ ಒಳಪಡಿಸುವುದು ಅತ್ಯಂತ ಅಪಾಯಕಾರಿ ಬೆಳವಣಿಗೆ" ಎಂದು ಅವರು ಆತಂಕ ವ್ಯಕ್ತಪಡಿಸಿದರು.
ಶುಕ್ರವಾರ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, "ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮುಕ್ತ ವ್ಯಾಪಾರ ಒಪ್ಪಂದ ವಿರೋಧಿಸಲು ಕರೆ ನೀಡಿರುವುದನ್ನು ಸ್ವಾಗತಿಸುತ್ತೇನೆ" ಎಂದು ಹೇಳಿದರು.
"ಭಾರತೀಯ ರೈತರನ್ನು ಮತ್ತೊಂದು ಮುಕ್ತ ವ್ಯಾಪಾರ ಒಪ್ಪಂದಕ್ಕೆ ಒಳಪಡಿಸುವುದು ಅತ್ಯಂತ ಅಪಾಯಕಾರಿ ಬೆಳವಣಿಗೆ. ಇದು ನಮ್ಮ ರೈತರ ಹಿತಾಸಕ್ತಿಗೆ ವಿರುದ್ಧವಾದದ್ದು. ಆರ್. ಸಿ. ಇ. ಪಿ ಒಪ್ಪಂದ ನಡೆಯದಂತೆ ಇಡೀ ದೇಶ ಹೋರಾಟ ನಡೆಸಬೇಕಾದ ಅಗತ್ಯ ಇದೆ. ನಮ್ಮ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನೂ ರೈತ ವಿರೋಧಿ ಒಪ್ಪಂದದ ಹೋರಾಟದಲ್ಲಿತೊಡಗಿಸಿಕೊಳ್ಳಬೇಕು" ಎಂದು ಸಿದ್ದರಾಮಯ್ಯ ಕರೆ ನೀಡಿದರು.
"ನವಂಬರ್ 4ರಂದು ಒಪ್ಫಂದಕ್ಕೆ ಅಂತಿಮ ಸಹಿ ಬೀಳುವ ನಿರೀಕ್ಷೆ ಇದೆ. ಈ ಒಪ್ಪಂದ ನಡೆದು ಹೋದರೆ ಈ ಗುಂಪಿನ ಹದಿನಾರು ದೇಶಗಳು ಶೇಕಡಾ 80 ರಿಂದ 90ರಷ್ಟು ಸರಕುಗಳನ್ನು ಕಡಿಮೆ ಆಮದು ಸುಂಕ ತೆತ್ತು ಆಮದು ಮಾಡಿಕೊಳ್ಳಬಹುದಾಗಿದೆ" ಎಂದು ಸಿದ್ದರಾಮಯ್ಯ ತಿಳಿಸಿದರು.

ಮುಕ್ತ ವ್ಯಾಪಾರ ಒಪ್ಪಂದ
ಏಷ್ಯಾದ 10 ಅಸಿಯಾನ್ ದೇಶಗಳು (ಬ್ರೂನೈ, ಕಾಂಬೋಡಿಯಾ, ಸಿಂಗಾಪುರ, ಫಿಲಿಫ್ಫಿನ್ಸ್, ಇಂಡೋನೇಷಿಯಾ, ಲಾವೋಸ್, ಥೈಲಾಂಡ್, ಮಲೇಷಿಯಾ, ವಿಯೆಟ್ನಾಂ ಮತ್ತು ಮ್ಯಾನ್ಮಾರ್) ಮತ್ತು ಈ ದೇಶಗಳ ಜೊತೆ ಮುಕ್ತ ವ್ಯಾಪಾರ ಒಪ್ಪಂದ ಮಾಡಿಕೊಂಡಿರುವ ಅಸ್ಟ್ರೇಲಿಯಾ, ಭಾರತ, ಚೀನಾ, ಜಪಾನ್, ಕೊರಿಯಾ ಮತ್ತು ನ್ಯೂಜಿಲೆಂಟ್ ದೇಶಗಳ ನಡುವೆ ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ( RCEP)ದ ಅಡಿಯಲ್ಲಿ ನಡೆಯಲಿರುವ ಮುಕ್ತ ವ್ಯಾಪಾರ ಒಪ್ಪಂದ (FTA)ದ ಬಗ್ಗೆ ಮಾತುಕತೆಗಳು ಅಂತಿಮ ಹಂತದಲ್ಲಿವೆ.
ಇದೇ ನವಂಬರ್ 4ರಂದು ಇದಕ್ಕೆ ಅಂತಿಮ ಸಹಿ ಬೀಳುವ ನಿರೀಕ್ಷೆ ಇದೆ. ಈ ಒಪ್ಪಂದ ನಡೆದುಹೋದರೆ ಈ ಗುಂಪಿನ 16 ದೇಶಗಳು ಶೇಕಡಾ 80 ರಿಂದ 90ರಷ್ಟು ಸರಕುಗಳನ್ನು ಕಡಿಮೆ ಆಮದು ಸುಂಕ ತೆತ್ತು ಆಮದು ಮಾಡಿಕೊಳ್ಳಬಹುದಾಗಿದೆ.

ಕೃಷಿ ಉತ್ಪನ್ನಗಳ ಮೇಲೆ ಪರಿಣಾಮ
ಈ ವ್ಯಾಪಾರ ಒಪ್ಪಂದ ಮುಂದಿನ ದಿನಗಳಲ್ಲಿ ಬಹುತೇಕ ಕೃಷಿ ಸರಕುಗಳ ಮೇಲಿನ ಆಮದು ಸುಂಕವನ್ನು ಶಾಶ್ವತವಾಗಿ ಶೂನ್ಯಕ್ಕೆ ತರುತ್ತದೆ. ಈ ಗುಂಪಿನಲ್ಲಿರುವ ದೇಶಗಳು ತಮ್ಮ ಹೆಚ್ಚುವರಿ ಕೃಷಿ ಉತ್ಪನ್ನಗಳನ್ನು ಭಾರತಕ್ಕೆ ರಫ್ತು ಮಾಡುತ್ತವೆ. ಇದರಿಂದಾಗಿ ಕೇವಲ ಹೈನುಗಾರಿಕೆ ಮಾತ್ರವಲ್ಲ, ಗದ್ದೆಯ ಮತ್ತು ತೋಟದ ಬೆಳೆಗಳು, ಸಾಂಬಾರ ಪದಾರ್ಥಗಳು ಹೀಗೆ ಎಲ್ಲ ಬಗೆಯ ಕೃಷಿ ಉತ್ಪನ್ನಗಳ ಮೇಲೆಯೂ ಒಪ್ಪಂದ ಪರಿಣಾಮ ಬೀರಲಿದೆ. ಔಷಧಿಗಳ ಬೆಲೆ ಕೂಡಾ ಹೆಚ್ಚಾಗಲಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಹೈನುಗಾರಿಕೆಗೆ ಹೊಡೆತ ಬೀಳಲಿದೆ
ಒಪ್ಪಂದದಿಂದ ಬಹಳ ದೊಡ್ಡ ಪ್ರಮಾಣದಲ್ಲಿ ಬಾದಿತವಾಗುವುದು ಹೈನುಗಾರಿಕೆ. ಪ್ರಸ್ತುತ ನಮ್ಮ ದೇಶದಲ್ಲಿ ಉಳಿದೆಲ್ಲ ದೇಶಗಳಿಗಿಂತ ಹೆಚ್ಚು ಅಂದರೆ ಸುಮಾರು ಒಂದೂವರೆ ಕೋಟಿ ಕುಟುಂಬಗಳು ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡಿವೆ. ನಮ್ಮ ರಾಜ್ಯದಲ್ಲಿಯೇ ಪ್ರತಿದಿನ ಸುಮಾರು 86 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ.
ನಮ್ಮ ಲಕ್ಷಾಂತರ ಸಣ್ಣ ರೈತರು ವಿಶೇಷವಾಗಿ ಮಹಿಳೆಯರ ಜೀವನೋಪಾಯಕ್ಕೆ ದಾರಿಯಾಗಿರುವುದು ಹೈನುಗಾರಿಕೆ. ನ್ಯೂಜಿಲೆಂಟ್, ಆಸ್ಟ್ರೇಲಿಯಾದಂತಹ ದೇಶಗಳಿಂದ ಅಗ್ಗದ ದರದ ಹಾಲು ಆಮದು ಮಾಡಿಕೊಳ್ಳಲು ಅವಕಾಶ ನೀಡುವ ಆರ್ಸಿಇಪಿ ನಮ್ಮ ರೈತರನ್ನು ಬೀದಿ ಪಾಲು ಮಾಡಲಿದೆ.
ದೇಶದಲ್ಲಿ ಸಹಕಾರ ಕ್ಷೇತ್ರದ ಸುಮಾರು 1.86 ಲಕ್ಷ ಹಾಲು ಉತ್ಪಾದಕರ ಸಹಕಾರ ಸಂಘಗಳಿವೆ. ಇವುಗಳಲ್ಲಿ 32000 ಸೊಸೈಟಿಗಳು ಮಹಿಳೆಯರ ನೇತೃತ್ವದಲ್ಲಿ ನಡೆಯುತ್ತಿವೆ. ಸಹಕಾರಿ ಕ್ಷೇತ್ರದ ಹೈನೋದ್ಯಮದಲ್ಲಿ ಗುಜರಾತ್ ರಾಜ್ಯದ ಅಮುಲ್ ಮತ್ತು ನಮ್ಮ ರಾಜ್ಯದ ಕೆಎಂಎಫ್ ಯಶಸ್ವಿ ಸಂಸ್ಥೆಗಳು.

ರೈತರನ್ನು ಶಿಕ್ಷಿಸಲು ಹೊರಟಿದೆಯೇ?
ಸಹಕಾರ ಕ್ಷೇತ್ರದ ಹಾಲಿನ ಸೊಸೈಟಿಗಳಿಂದಾಗಿ ರೈತರು ಮಧ್ಯವರ್ತಿಗಳ ಹಾವಳಿ ಇಲ್ಲದೆ ಹಾಲು ಮಾರಾಟ ದರದ ಶೇಕಡಾ 70ರಷ್ಟನ್ನು ಪಡೆಯುತ್ತಿದ್ದಾರೆ. ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ದೇಶಗಳಲ್ಲಿ ಹಾಲನ್ನು ಕಾರ್ಖಾನೆಗಳ ರೀತಿಯಲ್ಲಿ ಉತ್ಪಾದಿಸುತ್ತಾರೆ. ಅಲ್ಲಿ ದನ-ಎಮ್ಮೆಗಳಿಂದ ಹೆಚ್ಚಿನ ಹಾಲು ಪಡೆಯಲು ಅಪಾಯಕಾರಿ ಔಷಧಗಳನ್ನು ನೀಡುತ್ತಿರುವ ಆರೋಪಗಳಿವೆ. ಇದರಿಂದಾಗಿ ಅವರಿಗೆ ಕಡಿಮೆ ಬೆಲೆಯಲ್ಲಿ ಹೆಚ್ಚು ಪ್ರಮಾಣದ ಹಾಲು ಪಡೆಯಲು ಸಾಧ್ಯವಾಗುತ್ತಿದೆ.
ಭಾರತದಲ್ಲಿ ಹಸು-ಎಮ್ಮೆಗಳನ್ನು ಮನೆ ಸದಸ್ಯರಂತೆ ಲಾಲನೆ-ಪಾಲನೆ ಮಾಡುತ್ತಾರೆ. ಗೋವನ್ನು ದೇವರೆಂದು ಪೂಜಿಸುತ್ತೇವೆ ಎಂದು ಹೇಳುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಪರಿವಾರದ ನಾಯಕರು ಗೋವುಗಳನ್ನು ಪ್ರೀತಿ-ಕಾಳಜಿಯಿಂದ ಸಾಕುತ್ತಿರುವುದಕ್ಕಾಗಿ ಅವರನ್ನು ಶಿಕ್ಷಿಸಲು ಹೊರಟಿದೆಯೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಸ್ಥಳೀಯ ಮಾರುಕಟ್ಟೆ ನಾಶ
ಈ ಒಪ್ಪಂದದ ಮೂಲಕ ಸೋರಿಕೆಯಾದ ದಾಖಲೆಗಳು ವಿದೇಶಿ ಹೂಡಿಕೆದಾರರು ಕೃಷಿ ಭೂಮಿಯನ್ನು ಖರೀದಿಸಲು ಸಾಧ್ಯವಾಗುತ್ತದೆ ಮತ್ತು ಸರಕು ಮತ್ತು ಸೇವೆಗಳು ಸರ್ಕಾರಿ ಸಾರ್ವಜನಿಕ ಸಂಗ್ರಹಣೆಯಲ್ಲಿ ವಿದೇಶಿ ಕಂಪೆನಿಗಳು ಸಹ ಬೆಂಬಲವನ್ನು ಪಡೆಯಬಹುದು ಎಂಬುದನ್ನು ಸೂಚಿಸುತ್ತದೆ. ಸೂಪರ್ ಮಾರ್ಕೆಟ್ ಮತ್ತು ದೊಡ್ಡ ಕಂಪನಿಗಳ ನೇರ ಚಿಲ್ಲರೆ ವ್ಯಾಪಾರವು ಸ್ಥಳೀಯ ಮಾರುಕಟ್ಟೆಗಳನ್ನು ನಾಶ ಮಾಡಲು ಹೆಚ್ಚಿನ ಶಕ್ತಿಯನ್ನು ಪಡೆಯಲಿದೆ.
ಈ ಒಪ್ಪಂದದಲ್ಲಿ ಉಳಿದೆಲ್ಲ ದೇಶಗಳಿಗಿಂತ ಚೀನಾ ಸೇರಿಕೊಂಡಿರುವುದು ಭಾರತದ ಚಿಂತೆಗೆ ಕಾರಣವಾಗಿದೆ. ಒಂದೆಡೆ ಚೀನಾ ವ್ಯಾಪಾರ ವಹಿವಾಟಿಗೆ ಸಂಬಂಧಿಸಿದಂತೆ ಅಮೆರಿಕದ ಜೊತೆ ಸಂಘರ್ಷದಲ್ಲಿ ತೊಡಗಿದೆ. ಚೀನಾದ ಜೊತೆ ಭಾರತ ಮುಕ್ತ ವ್ಯಾಪಾರದ ಒಪ್ಪಂದ ವೇರ್ಪಟ್ಟರೆ ಭಾರತ ಅನಿವಾರ್ಯವಾಗಿ ಅಮೆರಿಕ ವಿರೋಧಿ ನಿಲುವನ್ನು ತೆಗೆದುಕೊಳ್ಳಬೇಕಾಗುತ್ತದೆ.












Click it and Unblock the Notifications