ಚಳಿಗಾಲದ ಅಧಿವೇಶನ; ಕಾಂಗ್ರೆಸ್ ನಾಯಕರ ಮಹತ್ವದ ಸಭೆ
ಬೆಂಗಳೂರು, ಡಿಸೆಂಬರ್ 6 : ಕರ್ನಾಟಕ ವಿಧಾನಸಭೆಯ ಚಳಿಗಾಲದ ಅಧಿವೇಶನ ಸೋಮವಾರದಿಂದ ಆರಂಭವಾಗಲಿದೆ. ಗೋಹತ್ಯೆ ನಿಷೇಧ, ಲವ್ ಜಿಹಾದ್ ನಿಷೇಧ ಸೇರಿದಂತೆ ಹಲವಾರು ಪ್ರಮುಖ ಮಸೂದೆಗಳನ್ನು ಮಂಡನೆ ಮಾಡಲಾಗುತ್ತಿದೆ.
ಭಾನುವಾರ ಕಾಂಗ್ರೆಸ್ ನಾಯಕರು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಭೆ ನಡೆಸಿದರು. ಅಧಿವೇಶನದಲ್ಲಿ ಚರ್ಚೆಗೆ ಕೈಗೆತ್ತಿಕೊಳ್ಳಬೇಕಾದ ವಿಷಯಗಳು ಹಾಗೂ ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ಚರ್ಚೆ ನಡೆಸಿದರು.

ಡಿಸೆಂಬರ್ 7 ರಿಂದ 15ರ ತನಕ ವಿಧಾನಮಂಡಲ ಅಧಿವೇಶನ ನಡೆಯಲಿದೆ. ಕೋವಿಡ್ ಸಂದರ್ಭದಲ್ಲಿ ಅಧಿವೇಶನ ನಡೆಯುತ್ತಿದ್ದು, ಸದಸ್ಯರು ಸಾಮಾಜಿಕ ಅಂತರ ಕಾಪಾಡಲು ವ್ಯವಸ್ಥೆ ಮಾಡಲಾಗಿದೆ. ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸಿದ್ಧತೆಗಳನ್ನು ಪರಿಶೀಲಿಸಿದರು.

ಲವ್ ಜಿಹಾದ್ ನಿಷೇಧ ಕಾಯ್ದೆ, ಗೋಹತ್ಯೆ ನಿಷೇಧ ತಿದ್ದುಪಡಿ ಕಾಯ್ದೆಯನ್ನು ಅಧಿವೇಶನದಲ್ಲಿ ಮಂಡನೆ ಮಾಡಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಪ್ರಸ್ತಾಪಿಸಿರುವ ಒಂದು ದೇಶ, ಒಂದು ಚುನಾವಣೆಯ ಬಗ್ಗೆ ಎರಡು ದಿನಗಳ ಕಾಲ ಚರ್ಚೆ ನಡೆಸಲು ಅವಕಾಶವನ್ನು ನೀಡಲಾಗಿದೆ.
ಸಚಿವ ಸಂಪುಟ ವಿಸ್ತರಣೆ, ಗ್ರಾಮ ಪಂಚಾಯಿತಿ ಚುನಾವಣೆ ಮುಂತಾದ ವಿಚಾರಗಳಲ್ಲಿ ಆಡಳಿತ ಪಕ್ಷ ಬಿಜೆಪಿ ಬ್ಯುಸಿಯಾಗಿದೆ. ಎರಡು ಕ್ಷೇತ್ರಗಳ ಉಪ ಚುನಾವಣೆ ಗೆದ್ದು ಬಿಜೆಪಿ ಉತ್ಸಾಹದಲ್ಲಿದೆ.
ಲವ್ ಜಿಹಾದ್ ನಿಷೇಧ, ಗೋಹತ್ಯೆ ವಿಚಾರದಲ್ಲಿ ವಿಧಾನ ಸಭೆಯಲ್ಲಿ ಭಾರೀ ಚರ್ಚೆ ನಡೆಯುವ ನಿರೀಕ್ಷೆ ಇದೆ. ವಿಧಾನ ಪರಿಷತ್ನಲ್ಲಿ ಸಭಾಪತಿಗಳ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಮಾಡಲು ಬಿಜೆಪಿ ಸಿದ್ಧತೆ ನಡೆಸಿದೆ.












Click it and Unblock the Notifications