Breaking; ಕೆ. ಎಚ್. ಮುನಿಯಪ್ಪ ಮನೆಯಲ್ಲಿ ಕಾಂಗ್ರೆಸ್ ನಾಯಕರ ದಂಡು!
ಬೆಂಗಳೂರು, ಸೆಪ್ಟೆಂಬರ್ 28: ಕರ್ನಾಟಕ ಕಾಂಗ್ರೆಸ್ನ ಹಿರಿಯ ನಾಯಕರು ಮಾಜಿ ಸಂಸದ ಕೆ. ಎಚ್. ಮುನಿಯಪ್ಪ ಭೇಟಿ ಮಾಡಿದರು. ಮುನಿಯಪ್ಪ ಪಕ್ಷದ ನಾಯಕರ ವಿರುದ್ಧ ಅಸಮಾಧಾನಗೊಂಡಿದ್ದಾರೆ ಎಂಬ ಸುದ್ದಿಗಳು ಹಲವು ದಿನಗಳಿಂದ ಹಬ್ಬಿದೆ.
ಬುಧವಾರ ಕೆ. ಎಚ್. ಮುನಿಯಪ್ಪ ನಿವಾಸಕ್ಕೆ ಮಾಜಿ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ. ಕೆ. ಹರಿಪ್ರಸಾದ್ ಭೇಟಿ ನೀಡಿದರು.
ಭಾರತ್ ಐಕ್ಯತಾ ಯಾತ್ರೆಯ ಸಿದ್ಧತೆಗಳ ಕುರಿತು ಚರ್ಚೆಗಳನ್ನು ನಡೆಸಿದರು. ಪಕ್ಷದ ಹಿರಿಯ ನಾಯಕರು ಒಟ್ಟಾಗಿ ಮುನಿಯಪ್ಪ ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ. ಕೆಲವು ದಿನಗಳ ಹಿಂದೆ ಮುನಿಯಪ್ಪ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಯಾಗಿದ್ದರು.

ಕೇಂದ್ರದ ಮಾಜಿ ಸಚಿವ ಕೆ. ಎಚ್. ಶ್ರೀನಿವಾಸಪುರ ಕ್ಷೇತ್ರದ ಶಾಸಕ ರಮೇಶ್ ಕುಮಾರ್ ಸೇರಿದಂತೆ ಹಲವು ನಾಯಕರ ವಿರುದ್ಧ ಅಸಮಾಧಾನಗೊಂಡಿದ್ದಾರೆ. ಈ ಅಸಮಾಧಾನ ಶಮನ ಮಾಡುವ ಕೆಲಸವನ್ನು ಪಕ್ಷದ ಹಿರಿಯ ನಾಯಕರು ಕೈಗೆತ್ತಿಕೊಂಡಿದ್ದಾರೆ.
ರಮೇಶ್ ಕುಮಾರ್ ವಿರುದ್ಧ ಹೈಕಮಾಂಡ್ ನಾಯಕರಿಗೆ ದೂರು ನೀಡಿದರೂ ಸಹ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಮುನಿಯಪ್ಪ ಅತೃಪ್ತಿ ವ್ಯಕ್ತಪಡಿಸಿದ್ದರು. ಅಲ್ಲದೇ ಸಿದ್ದರಾಮಯ್ಯ ಅವರ ಕೆಲವು ತೀರ್ಮಾನಗಳಿಗೂ ಮುನಿಯಪ್ಪ ಅಸಮಾಧಾನ ವ್ಯಕ್ತಪಡಿಸಿದ್ದರು.
ಕೆಲವೇ ತಿಂಗಳ ಅಂತರದಲ್ಲಿ ಎರಡು ಬಾರಿ ಕೆ. ಎಚ್. ಮುನಿಯಪ್ಪ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಭೇಟಿ ಮಾಡಿದ್ದಾರೆ. ಕಾಂಗ್ರೆಸ್ ನಾಯಕರ ವಿರುದ್ಧ ಮುನಿಸಿಕೊಂಡಿರುವ ಮುನಿಯಪ್ಪ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿಗಳು ಹಬ್ಬಿದ್ದವು.
ಕಳೆದ ವಾರ ಮಾತನಾಡಿದ್ದ ಮುನಿಯಪ್ಪ, "ಯಾರು ಶತ್ರು, ಯಾರು ಮಿತ್ರ ಎಂದು ನಾನೂ ಈಗ ಏನೂ ಹೇಳುವುದಿಲ್ಲ. ಎಲ್ಲವನ್ನೂ ಹೈಕಮಾಂಡ್ಗೆ ಹೇಳಿದ್ದೇನೆ. ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾಗುತ್ತೇನೆ. ಯಾತ್ರೆಗೆ ಎಲ್ಲಿ ಸೇರಬೇಕು ಎಂದು ಪಕ್ಷದ ನಾಯಕರು ಹೇಳುತ್ತಾರೆ. ಅಲ್ಲಿಗೆ ಹೋಗಿ ಯಾತ್ರೆಯಲ್ಲಿ ಪಾಲ್ಗೊಳ್ಳುತ್ತೇನೆ" ಎಂದು ಸ್ಪಷ್ಟಪಡಿಸಿದ್ದರು.
ಡಾ. ಸುಧಾಕರ್ ಭೇಟಿ ಬಗ್ಗೆಯೂ ಸ್ಪಷ್ಟನೆ ನೀಡಿದ್ದ ಕೆ. ಎಚ್. ಮುನಿಯಪ್ಪ, "ನನಗೂ ಸಚಿವ ಸುಧಾಕರ್ ಕುಟುಂಬಕ್ಕೂ ನಾಲ್ಕು ದಶಕಗಳ ಅವಿನಾಭಾವ ಸಂಬಂಧವಿದೆ. ಇತ್ತೀಚಿಗೆ ಅವರನ್ನು ಭೇಟಿ ಮಾಡಿರುವುದು ನಿಜ. ಕೆಲವೊಂದು ಕೆಲಸಗಳ ಕಾರಣಕ್ಕೆ ಭೇಟಿಯಾಗಿದ್ದೇನೆ. ಅದರ ಹೊರತಾಗಿ ರಾಜಕೀಯದ ವಿಚಾರ ಚರ್ಚಿಸಿಲ್ಲ" ಎಂದು ಹೇಳಿದ್ದರು.











Click it and Unblock the Notifications