ಹಾಸನ, ಮಂಡ್ಯ ಕ್ಷೇತ್ರ ಜೆಡಿಎಸ್ಗೆ ಬಿಟ್ಟುಕೊಡಬೇಡಿ!
ಬೆಂಗಳೂರು, ಜುಲೈ 24 : ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಕುರಿತು ಚರ್ಚೆ ನಡೆಯುತ್ತಿದೆ. ಆದರೆ, ಎರಡು ಕ್ಷೇತ್ರಗಳಲ್ಲಿ ಜೆಡಿಎಸ್ಗೆ ಬಿಟ್ಟುಕೊಡಬಾರದು ಎಂದು ಕಾಂಗ್ರೆಸ್ ನಾಯಕರು ಪಟ್ಟು ಹಿಡಿದಿದ್ದಾರೆ.
ಹಾಸನ ಜಿಲ್ಲಾ ಕಾಂಗ್ರೆಸ್ ಘಟಕದ ಸದಸ್ಯರು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಹಾಸನ ಮತ್ತು ಮಂಡ್ಯ ಕ್ಷೇತ್ರಗಳನ್ನು ಯಾವುದೇ ಕಾರಣಕ್ಕೂ ಬಿಟ್ಟುಕೊಡಬಾರದು ಎಂದು ಒತ್ತಾಯಿಸಿದರು.

ಹಾಸನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಾವಗಲ್ ಮಂಜುನಾಥ್ ಅವರ ನೇತೃತ್ವದಲ್ಲಿ ಬಿ.ಶಿವರಾಮ್, ಎಚ್.ಎಂ.ವಿಶ್ವನಾಥ್, ಎಸ್.ಎಂ.ಆನಂದ್ ಮುಂತಾದ ನಾಯಕರು ಕೆಪಿಸಿಸಿ ಕಚೇರಿಯಲ್ಲಿ ದಿನೇಶ್ ಗುಂಡೂರಾವ್ ಅವರ ಜೊತೆ ಸಭೆ ನಡೆಸಿದರು.
ಹಾಸನ ಕ್ಷೇತ್ರದ ಹಾಲಿ ಸಂಸದರು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ. ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ನ ಎ.ಮಂಜು ಅವರು ಕೇವಲ 50 ಸಾವಿರ ಮತಗಳ ಅಂತರದಿಂದ ಸೋತಿದ್ದಾರೆ. ಆದ್ದರಿಂದ, ಈ ಬಾರಿ ಮೈತ್ರಿ ಮಾಡಿಕೊಂಡು ಕ್ಷೇತ್ರವನ್ನು ಬಿಟ್ಟುಕೊಡಬಾರದು ಎಂಬುದು ನಾಯಕರ ವಾದ.
2014ರ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಜೆಡಿಎಸ್ನ ಸಿ.ಎಸ್.ಪುಟ್ಟರಾಜು ಅವರು ಆಯ್ಕೆಯಾಗಿದ್ದರು. ಈಗ ಅವರು ವಿಧಾನಸಭೆ ಚುನಾವಣೆಯಲ್ಲಿ ಜಯಗಳಿಸಿದ ಬಳಿಕ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಪ್ರಬಲವಾಗಿದೆ. ಮೈತ್ರಿ ಮಾಡಿಕೊಂಡರೂ ಮಂಡ್ಯವನ್ನು ಜೆಡಿಎಸ್ಗೆ ಬಿಟ್ಟುಕೊಡಬಾರದು ಎಂಬುದು ಜಿಲ್ಲಾ ನಾಯಕರ ಒತ್ತಾಯವಾಗಿದೆ. ಇದಕ್ಕೆ ಜೆಡಿಎಸ್ ಒಪ್ಪಲಿದೆಯೇ? ಎಂದು ಕಾದು ನೋಡಬೇಕು.












Click it and Unblock the Notifications