ಕಲಬುರಗಿ ಬಿಟ್ಟು ಹೊಸ ಕ್ಷೇತ್ರದತ್ತ ಖರ್ಗೆ! ಯಾರ್ಯಾರು ಯಾವ ಕ್ಷೇತ್ರದಿಂದ ಸ್ಪರ್ಧೆ: ಇಲ್ಲಿದೆ ಕೈ ಪಡೆಯ ಹೊಸ ಲೆಕ್ಕಾ?
ಬೆಂಗಳೂರು, ಜುಲೈ 13: ರಾಜ್ಯ ಕಾಂಗ್ರೆಸ್ ನಲ್ಲಿ ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ಸಿದ್ದತೆ ಆರಂಭಿಸಿದ್ದು, ವಿಧಾನಸಭಾ ಚುನಾವಣೆಯಲ್ಲಿ ಅತೀ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದಂತೆ ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳನ್ನ್ ಗೆಲ್ಲುವ ನಿಟ್ಟಿನಲ್ಲಿ ಕಾಂಗ್ರೆಸ್ ಪಡೆ ಮಾಸ್ಟರ್ ಪ್ಲಾನ್ ನಡೆಸಿದೆ.
ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಜೊತೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಸಭೆ ನಡೆಸಿದ್ದು, ಲೋಕಸಮರಕ್ಕೆ ಭರ್ಜರಿ ಪ್ಲಾನ್ ಮಾಡುತ್ತಿದ್ದಾರೆ. ವಿಧಾನಸಭಾ ಚುನಾವಣೆಯ ಕಾರ್ಯತಂತ್ರದಂತೆ ಈ ಬಾರಿಯೂ ಲೋಕಸಭಾ ಚುನಾವಣೆಯಲ್ಲಿ ಡಿ ಕೆ ಶಿವಕುಮಾರ್ ಹಾಗೂ ಮಲ್ಲಿಕಾರ್ಜುನ್ ಖರ್ಗೆ ಹೊಸ ಪ್ರಯೋಗಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಭರ್ಜರಿ ಪ್ಲಾನ್ ನಂತೆ ಈ ಬಾರೀ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನು ಕರ್ನಾಟಕದಲ್ಲಿ ಕಣಕ್ಕಿಳಿಸಲು ಯೋಜಿಸಲಾಗಿದ್ದು, ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರನ್ನು ಮಂಡ್ಯ ಕ್ಷೇತ್ರದಿಂದ ಚುನಾವಣೆಗೆ ನಿಲ್ಲಿಸುವ ಲೆಕ್ಕಾಚಾರವನ್ನ ಹಾಕಿಕೊಂಡಿದ್ದಾರೆ.
2019 ಲೋಕಸಭಾ ಚುನಾವಣೆ ಇಡೀ ದೇಶದ ಗಮನ ಸೆಳೆದಿತ್ತು. ಎಚ್ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ವಿರುದ್ಧ ಸೋಲು ಅನುಭವಿಸಿದ್ದರು. ಈಗ ಈ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ನಟಿ ರಮ್ಯಾ ಅವರು ಸ್ಪರ್ಧಿಸುವ ಸಾಧ್ಯತೆ ಇದೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ - ಜೆಡಿಎಸ್ ಮೈತ್ರಿಯಾಗುವ ಸಾಧ್ಯತೆ ಇರುವುದರಿಂದ ಮಂಡ್ಯ ಯಾರ ಪಾಲಾಗುತ್ತದೆ ಎಂಬುದರ ಮೇಲೆ ಅಭ್ಯರ್ಥಿ ನಿರ್ಧಾರವಾಗುತ್ತದೆ.
ಕೋಲಾರಕ್ಕೆ ಖರ್ಗೆ?
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಈ ಬಾರೀ ಹಲವು ಕಡೆ ಪ್ರಯೋಗಕ್ಕೂ ಮುಂದಾಗಿದ್ದು, ಹಲವು ಕ್ಷೇತ್ರಗಳಲ್ಲಿ ಬದಲಾವಣೆ ಕುರಿತು ಕೈ ಪಡೆ ಪ್ಲಾನ್ ನಡೆಸಿದ್ದು, ಹಿರಿಯ ನಾಯಕ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ಕ್ಷೇತ್ರವಾದ ಕಲಬುರಗಿ ಬದಲಿಗೆ ಕೋಲಾರ (ಎಸ್ಸಿ) ಕ್ಷೇತ್ರದಿಂದ ಕಣಕ್ಕಿಳಿಸಲು ಪಕ್ಷದೊಳಗೆ ಗಂಭೀರ ಚರ್ಚೆ ನಡೆಯುತ್ತಿದೆ.

ಈ ಹಿಂದೆ 2019 ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದ ಮಲ್ಲಿಕಾರ್ಜುನ ಖರ್ಗೆ ಈ ಬಾರೀ ಕೋಲಾರ ಎಸ್ಸಿ ಮೀಸಲು ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ. ಕಲಬುರಗಿಯಲ್ಲಿ ಹೊಸ ಅಭ್ಯರ್ಥಿಯನ್ನು ಕಾಂಗ್ರೆಸ್ ಹುಡುಕುತ್ತಿದೆ ಎನ್ನಲಾಗಿದೆ.
ತೇಜಸ್ವಿ ಸೂರ್ಯ VS ಡಿಕೆ ಸುರೇಶ್?
ಈಗಾಗಲೇ ರಾಜಕೀಯ ಬೇಸರವಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಿಕೆ ಸುರೇಶ್ ಅವರು ಅಸಮಾಧಾನ ಹೊರ ಹಾಕಿದ್ದು, ಪಕ್ಷದಲ್ಲಿ ಸೂಕ್ತ ಅಭ್ಯರ್ಥಿ ಸಿಕ್ಕರೆ ಅವರಿಗೆ ಕ್ಷೇತ್ರವನ್ನು ಬಿಟ್ಟುಕೊಡುತ್ತೇನೆ ಎಂದು ಹೇಳಿದ್ದಾರೆ ಎನ್ನಲಾಗಿದೆ. ಇನ್ನೂ ಮುಂದಿನ ಬಿಬಿಎಂಪಿ ಚುನಾವಣೆ ಹಿನ್ನಲೆ ಬೆಂಗಳೂರು ವಾಪ್ತಿಯಲ್ಲಿ ಕನಿಷ್ಠ ಎರಡು ಕ್ಷೇತ್ರಗಳನ್ನ ಗೆಲ್ಲಲ್ಲು ಕಾಂಗ್ರೆಸ್ ಸಿದ್ದತೆ ನಡೆಸಿದೆ.
ಹೀಗಾಗಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಕ್ಕೆ ವಲಸೆ ಬರುವ ಸಾಧ್ಯತೆ ಇದೆ. ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಡಿಕೆ ಸುರೇಶ್ ಕಣಕ್ಕಿಳಿಯಲಿದ್ದಾರೆ. ಡಿಕೆ ಸುರೇಶ್ ಬೆಂಗಳೂರು ದಕ್ಷಿಣಕ್ಕೆ ವಲಸೆ ಬಂದರೆ ಬೆಂಗಳೂರು ಗ್ರಾಮಾಂತರಕ್ಕೆ ಕುಸುಮಾ ಹನುಮಂತಯ್ಯ ಕಾಂಗ್ರೆಸ್ ಅಭ್ಯರ್ಥಿಯಾಗುವ ಸಾಧ್ಯತೆ ಇದೆ. ಅದಲ್ಲದೇ ತೇಜಸ್ವಿನಿ ಅಂನತ್ ಕುಮಾರ್ ಅವರನ್ನ ಕಾಂಗ್ರೆಸ್ಸ ಸೆಳೆಯಲು ಪ್ಲಾನ್ ನಡೆಸಿದೆ ಎಂದು ಹೇಳಲಾಗಿದೆ. ಒಂದು ವೇಳೆ ಬಿಜೆಪಿ ನಾಯಕರನ್ನು ಸೆಳೆಯುವ ಪ್ರಯತ್ನವನ್ನು ಡಿಕೆ ಶಿವಕುಮಾರ್ ನಡೆಸಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ಗೆ ಬಂದರೆ ಅವರೇ ಬೆಂಗಳೂರು ದಕ್ಷಿಣದ ಕಾಂಗ್ರೆಸ್ ಅಭ್ಯರ್ಥಿಯಾಗಲಿದ್ದಾರೆ ಎನ್ನಲಾಗಿದೆ.
ಹೊಸ ಮುಖಗಳಿಗೆ ಮಣಿ?
ಚಿಕ್ಕಬಳ್ಳಾಪುರಕ್ಕೆ ರಾಜ್ಯ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಹಾಗೂ ಮಾಜಿ ಸಚಿವ ಎಂ.ಆರ್.ಸೀತಾರಾಮ್ ಪುತ್ರ ರಕ್ಷಾ ರಾಮಯ್ಯ ಅವರನ್ನು ಕಣಕ್ಕಿಳಿಸಲಿದ್ದಾರೆ ಎನ್ನಲಾಗಿದೆ. ಇನ್ನೂ ಹಾಸನ ಕ್ಷೇತ್ರದಿಂದ ಹೊಳೆನರಸೀಪುರದ ಯುವ ಕಾಂಗ್ರೆಸ್ ನಾಯಕ ಶ್ರೇಯಸ್ ಪಟೇಲ್, ಮಾಜಿ ಸಂಸದ ದಿವಂಗತ ಪುಟ್ಟಸ್ವಾಮಿಗೌಡ ಅವರ ಮೊಮ್ಮಗ ಅವರನ್ನು ಕಣಕ್ಕಿಳಿಸಬಹುದು. ಜೆಡಿಎಸ್ನ ಭದ್ರಕೋಟೆಯಾಗಿತ್ತು. ಮಾಜಿ ಐಪಿಎಸ್ ಅಧಿಕಾರಿ ಕೆಸಿ ರಾಮಮೂರ್ತಿ ಬಿಜೆಪಿಯಿಂದ ಕಾಂಗ್ರೆಸ್ಗೆ ವಲಸೆ ಹೋಗುವ ಸಾಧ್ಯತೆ ಇದ್ದು, ಬೆಂಗಳೂರು ಉತ್ತರ ಅಥವಾ ಬೆಂಗಳೂರು ಸೆಂಟ್ರಲ್ನಲ್ಲಿ ಅಭ್ಯರ್ಥಿಯಾಗುವ ಸಾಧ್ಯತೆ ಇದೆ.
ಒಟ್ನಲಿ, ಕಾಂಗ್ರೆಸ್ ಈ ಬಾರಿ ಹೊಸ ಪ್ರಯೋಗಕ್ಕೆ ಮುಂದಾಗಿದ್ದು, ರಾಜ್ಯದ ಎಲ್ಲಾ 28 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಮುಂಚಿತವಾಗಿಯೇ ಅಂತಿಮಗೊಳಿಸುವ ಮೂಲಕ ಕಾಂಗ್ರೆಸ್ ತನ್ನ ಲೋಕಸಭಾ ಪ್ರಚಾರವನ್ನು ಪ್ರಾರಂಭಿಸುವ ಗುರಿಯನ್ನು ಹೊಂದಿದೆ.












Click it and Unblock the Notifications