Kittur Karnataka: ಬಿಜೆಪಿ ಭದ್ರಕೋಟೆ ಕಿತ್ತೂರು ಕರ್ನಾಟಕದಲ್ಲಿ ಕಾಂಗ್ರೆಸ್ ದಿಗ್ವಿಜಯ
ಶನಿವಾರ, ಮೇ 13ರಂದು 2023ರ ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯದಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ಭರ್ಜರಿ ಪ್ರದರ್ಶನ ನೀಡಿದ್ದರೆ, ಆಡಳಿತರೂಢ ಬಿಜೆಪಿ ಪಕ್ಷಕ್ಕೆ ಭಾರೀ ಮುಖಭಂಗವಾಗಿದೆ.
ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆಯ ಹೊಡೆತಕ್ಕೆ ಬಿಜೆಪಿ ಪಕ್ಷ ಸಂಪೂರ್ಣ ನೆಲಕಚ್ಚಿದ್ದು, ರಾಜ್ಯದೆಲ್ಲೆಡೆ ಕಾಂಗ್ರೆಸ್ ಅಲೆ ಎದ್ದಿದೆ. ಅತಂತ್ರ ವಿಧಾನಸಭೆ ನಿರ್ಮಾಣ ಮಾಡದೆ, ಮತದಾರರು ಈ ಬಾರಿ ಒಂದೇ ಪಕ್ಷಕ್ಕೆ ಪೂರ್ಣ ಬಹುಮತ ನೀಡಿದ್ದಾರೆ.

ಈ ಬಾರಿ ಬಿಜೆಪಿ ಭದ್ರಕೋಟೆ ಕಿತ್ತೂರು ಕರ್ನಾಟಕದಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ. ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳ ಒಟ್ಟು 50 ಸ್ಥಾನಗಳಲ್ಲಿ ಬಹುತೇಕ ಸ್ಥಾನಗಳನ್ನು ಕಾಂಗ್ರೆಸ್ ಬಾಚಿಕೊಂಡಿದೆ.
2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 33 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ, ಬಿಜೆಪಿ 16 ಸ್ಥಾನಗಳಿಗೆ ತೃಪ್ತಿಪಟ್ಟಿದೆ. ಇನ್ನು ಜೆಡಿಎಸ್ 1 ಸ್ಥಾನದಲ್ಲಿ ಗೆಲುವು ಕಂಡಿದೆ. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಎಲ್ಲವೂ ಅದಲು ಬದಲಾಗಿದೆ.
2018ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 30 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಇನ್ನು ಕಾಂಗ್ರೆಸ್ 17 ಸ್ಥಾನಗಳಲ್ಲಿ ಜಯ ಕಂಡಿತ್ತು. ಜೆಡಿಎಸ್ 2 ಸ್ಥಾನದಲ್ಲಿ ಗೆದ್ದಿದ್ದರೆ, ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ಕಂಡಿದ್ದರು.

ಕಿತ್ತೂರು ಕರ್ನಾಟಕದ ಜಿಲ್ಲಾವಾರು ವಿವರ
ಹಾವೇರಿ: ಉತ್ತರ ಕರ್ನಾಟಕದ ಹೆಬ್ಬಾಗಿಲು ಹಾವೇರಿ ಜಿಲ್ಲೆಯಲ್ಲಿ ಈ ಬಾರಿ ಬಿಜೆಪಿ ಪಕ್ಷ ಕೇವಲ ಒಂದು ಸ್ಥಾನದಲ್ಲಿ ಗೆಲುವು ಸಾಧಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪರ್ಧಿಸುವ ಶಿಗ್ಗಾಂವಿ ಕ್ಷೇತ್ರ ಹೊರತುಪಡಿಸಿ ಉಳಿದ ಐದು ಕ್ಷೇತ್ರಗಳಲ್ಲಿ ತನ್ನ ಅಸ್ತಿತ್ವ ಕಳೆದುಕೊಂಡಿದೆ. ಸಚಿವ ಬಿ.ಸಿ. ಪಾಟೀಲ್ ಆದಿಯಾಗಿ ಐದು ಬಿಜೆಪಿ ಅಭ್ಯರ್ಥಿಗಳು ಸೋಲನುಭವಿಸಿದ್ದಾರೆ.
ಗದಗ: ಗದಗ ಜಿಲ್ಲೆಯ ಒಟ್ಟು ನಾಲ್ಕು ಕ್ಷೇತ್ರಗಳಲ್ಲಿ ಎರಡು ಸ್ಥಾನಗಳಲ್ಲಿ ಬಿಜೆಪಿ ಮತ್ತು ಎರಡು ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು ದಾಖಲಿಸಿದೆ. ನರಗುಂದದಲ್ಲಿ ಬಿಜೆಪಿಯ ಸಿಸಿ ಪಾಟೀಲ್, ಗದಗ ಕ್ಷೇತ್ರದಲ್ಲಿ ಕಾಂಗ್ರೆಸ್ನ ಎಚ್.ಕೆ. ಪಾಟೀಲ್ ಗೆಲುವು ಕಂಡಿದ್ದಾರೆ.
ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಈ ಬಾರಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಒಟ್ಟು 7 ಕ್ಷೇತ್ರಗಳಲ್ಲಿ ಕಾಂಗ್ರೆಸ್ 4 ಸ್ಥಾನ ಮತ್ತು ಬಿಜೆಪಿ 3 ಸ್ಥಾನಗಳಲ್ಲಿ ಗೆಲುವು ಸಾಧಿಸಿವೆ. ಕಾಂಗ್ರೆಸ್ನ ಜಗದೀಶ್ ಶೆಟ್ಟರ್ ಸೋಲು ಕಂಡಿದ್ದರೆ, ವಿನಯ್ ಕುಲಕರ್ಣಿ ಗೆಲುವಿನ ನಗೆ ಬೀರಿದ್ದಾರೆ.
ಬೆಳಗಾವಿ: ಬೆಂಗಳೂರು ನಗರ ಹೊರತುಪಡಿಸಿ ಅತಿ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಜಿಲ್ಲೆಯೆಂದರೆ ಅದು ಬೆಳಗಾವಿ ಜಿಲ್ಲೆ. ಈ ಬಾರಿ ಜಿದ್ದಾಜಿದ್ದಿನಿಂದ ಕೂಡಿದ್ದ ಬೆಳಗಾವಿಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದೆ. ಒಟ್ಟು 18 ಕ್ಷೇತ್ರಗಳ ಪೈಕಿ 11 ಸ್ಥಾನಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದ್ದರೆ, 7 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಕಂಡಿದೆ.
ಬಾಗಲಕೋಟೆ: ಕಿತ್ತೂರು ಕರ್ನಾಟಕದ ಬಾಗಲಕೋಟೆ ಜಿಲ್ಲೆಯಲ್ಲಿ ಈ ಬಾರಿ ಬಿಜೆಪಿ ಕಳಪೆ ಪ್ರದರ್ಶನ ನೀಡಿದೆ. ಒಟ್ಟು 7 ಕ್ಷೇತ್ರಗಳಲ್ಲಿ ಕಾಂಗ್ರೆಸ್ 5 ಸ್ಥಾನ ಗೆದ್ದಿದ್ದರೆ, ಬಿಜೆಪಿ ಕೇವಲ 2 ಸ್ಥಾನ ಮಾತ್ರ ಗಳಿಸಿದೆ. ಸಚಿವರಾಗಿದ್ದ ಗೋವಿಂದ ಕಾರಜೋಳ, ಮುರುಗೇಶ್ ನಿರಾಣಿ ಸೋಲು ಕಂಡಿದ್ದಾರೆ.
ವಿಜಯಪುರ: ಬಿಜೆಪಿಯ ಭದ್ರಕೋಟೆಗಳಲ್ಲಿ ಒಂದಾಗಿರುವ ವಿಜಯಪುರ ಜಿಲ್ಲೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ. ಒಟ್ಟು 8 ಕ್ಷೇತ್ರಗಳಲ್ಲಿ ಕಾಂಗ್ರೆಸ್ 6 ಸ್ಥಾನದಲ್ಲಿ ಗೆಲುವು ಕಂಡಿದ್ದರೆ, ಬಿಜೆಪಿ ಮತ್ತು ಜೆಡಿಎಸ್ ತಲಾ ಒಂದೊಂದು ಸ್ಥಾನದಲ್ಲಿ ತೃಪ್ತಿಪಟ್ಟಿವೆ.
ಅಂತಿಮವಾಗಿ ಲಿಂಗಾಯತ ಮತ ಬ್ಯಾಂಕ್ ನಂಬಿದ್ದ ಬಿಜೆಪಿಗೆ ಈ ಭಾಗದಲ್ಲಿ ಭಾರೀ ಹಿನ್ನಡೆಯಾಗಿದೆ. ಲಕ್ಷ್ಮಣ ಸವದಿ ಮತ್ತು ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಸೇರಿದ ಕಾರಣ, ಲಿಂಗಾಯತ ಮತಗಳು ಕಾಂಗ್ರೆಸ್ನ ಹಿಂದೆ ಹೋಗಿವೆ. ಮತ್ತೆ 2013ರ ಚುನಾವಣಾ ಫಲಿತಾಂಶ ಮರುಕಳಿಸಿದೆ. ಕಿತ್ತೂರು ಕರ್ನಾಟಕ ಭಾಗದಲ್ಲಿ ಪ್ರಭಾವಿ ನಾಯಕರಿದ್ದರೂ, ಬಿಜೆಪಿಗೆ ಹಿನ್ನಡೆಯಾಗಿರುವುದು ಪರಮಾರ್ಶೆ ಮಾಡಬೇಕಾದ ಪರಿಸ್ಥಿತಿ ಬಂದಿದೆ.












Click it and Unblock the Notifications