ಕಾಂಗ್ರೆಸ್ ಭಾಗ್ಯಗಳನ್ನು ಸಂಪೂರ್ಣ ನಿಲ್ಲಿಸಿದರೂ ಆಶ್ಚರ್ಯಪಡಬೇಕಿಲ್ಲ!
ಬೆಂಗಳೂರು, ಆಗಸ್ಟ್ 14: ಕರ್ನಾಟಕದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳ ಕುರಿತು ಚರ್ಚೆಗಳು ಆರಂಭವಾಗಿವೆ. ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸಲಾಗುತ್ತದೆ ಎಂಬ ಚರ್ಚೆಗಳು ಹಲವು ಬಾರಿ ನಡೆದಿದ್ದು, ಸರ್ಕಾರದ ಕಡೆಯಿಂದಲೂ ಸಹ ಸ್ಪಷ್ಟನೆಗಳನ್ನು ನೀಡಲಾಗುತ್ತಿದೆ. ಲೋಕಸಭೆ ಚುನಾವಣೆ 2024ರ ಫಲಿತಾಂಶದಲ್ಲಿ ಕಾಂಗ್ರೆಸ್ಗೆ ಹಿನ್ನಡೆಯಾದ ಬಳಿಕ ಈ ಚರ್ಚೆಗಳು ಜೋರಾಗಿವೆ.
ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಪತ್ರಿಕಾ ಹೇಳಿಕೆಯೊಂದನ್ನು ಉಲ್ಲೇಖ ಮಾಡಿ ಬುಧವಾರ ಟ್ವೀಟ್ ವೊಂದನ್ನು ಮಾಡಿದ್ದಾರೆ. " ಕಾಂಗ್ರೆಸ್ ಸರ್ಕಾರಕ್ಕೆ ಬಿಟ್ಟಿ ಭಾಗ್ಯಗಳನ್ನು ಜನಸಾಮಾನ್ಯರಿಗೆ ವಿತರಿಸಲೂ ಆಗುತ್ತಿಲ್ಲ, ನಿರ್ವಹಿಸಲೂ ಆಗುತ್ತಿಲ್ಲ, ಅದಕ್ಕೆ ಬೇಕಾದ ಹಣವನ್ನು ಹೊಂದಿಸಲೂ ಆಗುತ್ತಿಲ್ಲ" ಎಂದು ದೂರಿದ್ದಾರೆ.

"ಈ ಹಿನ್ನೆಲೆಯಲ್ಲಿ ಸಚಿವರ ಮೂಲಕ ಗ್ಯಾರಂಟಿಗಳ ವಿರುದ್ಧ ಅಪಸ್ವರ ಎತ್ತಿಸಿರುವ ಕಾಂಗ್ರೆಸ್ ನಾಯಕರು ಭಾಗ್ಯಗಳಿಗೆ ಕತ್ತರಿ ಪ್ರಯೋಗಿಸುವುದಲ್ಲದೇ, ಸಂಪೂರ್ಣವಾಗಿ ನಿಲ್ಲಿಸಿದರೂ ಆಶ್ಚರ್ಯಪಡಬೇಕಿಲ್ಲ" ಎಂದು ಬಿ. ವೈ. ವಿಜಯೇಂದ್ರ ಟೀಕಿಸಿದ್ದಾರೆ.
"ಮತ ಗಳಿಕೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ದೂರ ದೃಷ್ಟಿ ಇಲ್ಲದ, ಬದ್ಧತೆ ಇಲ್ಲದ ಯೋಜನೆ ರೂಪಿಸಿ ಅದನ್ನು ನಿರ್ವಹಿಸಲಾಗದೆ ವೈಫಲ್ಯ ಅನುಭವಿಸುತ್ತಿರುವ ರಾಜ್ಯ ಸರ್ಕಾರ ಎಲ್ಲಾ ಕ್ಷೇತ್ರಗಳಲ್ಲೂ ಹಿನ್ನಡೆಯನ್ನು ಅನುಭವಿಸುತ್ತಿದೆ. ಇದರಿಂದ ರಾಜ್ಯದ ಅಭಿವೃದ್ಧಿ ಮರೀಚಿಕೆಯಾಗಿಯೇ ಉಳಿದಿದೆ" ಎಂದು ವಿಜಯೇಂದ್ರ ಆರೋಪಿಸಿದ್ದಾರೆ.
"ಎತ್ತು ಏರಿಗೆ ಎಳೆದರೆ ಕೋಣ ನೀರಿಗೆ ಎಳೆಯಿತು ಎನ್ನುವಂತಾಗಿದ್ದು, ಮುಖ್ಯಮಂತ್ರಿಗಳು ಒಂದು ಕಡೆ, ಪಕ್ಷದ ಪ್ರಮುಖರು ಮತ್ತೊಂದು ಕಡೆ, ಇನ್ನು ಸಚಿವರು ಮಗದೊಂದು ಕಡೆ ಮುಖ ಮಾಡಿದ್ದು ಈ ಸರ್ಕಾರ ದಿಕ್ಕು ದೆಸೆ ಇಲ್ಲದ ಭ್ರಷ್ಟತೆಯ ವ್ಯೂಹದಲ್ಲಿ ಸಿಲುಕಿದೆ. ಇಂತಹ ಸರ್ಕಾರ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆಯನ್ನೂ ಉಳಿಸಿಕೊಂಡಿಲ್ಲ. ಈ ಸರ್ಕಾರಕ್ಕೆ ಜನರೇ ಬುದ್ದಿ ಕಲಿಸುವ ಕಾಲ ಸನ್ನಿಹಿತವಾಗುತ್ತಿದೆ" ಎಂದು ವಿಜಯೇಂದ್ರ ಪೋಸ್ಟ್ ಹಾಕಿದ್ದಾರೆ.
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ: ಗ್ಯಾರಂಟಿ ಯೋಜನೆಗಳ ದುರುಪಯೋಗ ತಡೆಯಲು ಅವುಗಳನ್ನು ಪರಿಷ್ಕರಣೆ ಮಾಡಬೇಕು ಎಂದು ಸಚಿವರೇ ಹೈಕಮಾಂಡ್ ನಾಯಕರ ಮುಂದೆ ಬೇಡಿಕೆ ಇಟ್ಟಿದ್ದಾರೆ ಎಂಬ ಸುದ್ದಿಗಳು ಹಬ್ಬಿದೆ. ಇದನ್ನು ಆಧರಿಸಿ ವರದಿಯೊಂದು ಪ್ರಕಟವಾಗಿದೆ ಅದನ್ನು ಉಲ್ಲೇಖಿಸಿ ಬಿ. ವೈ. ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ.
ಲೋಕೋಪಯೋಗಿ ಖಾತೆ ಸಚಿವ ಸತೀಶ್ ಜಾರಕಿಹೊಳಿ ಗ್ಯಾರಂಟಿ ಯೋಜನೆಗಳ ಕುರಿತು ಬುಧವಾರ ಮಾತನಾಡಿದ್ದಾರೆ. ಯೋಜನೆಗಳನ್ನು ಪರಿಷ್ಕರಣೆ ಮಾಡುವಂತೆ ನಾಯಕರ ಬಳಿ ಮನವಿಯನ್ನು ಸಲ್ಲಿಕೆ ಮಾಡಿದ್ದಾರೆ. ಸಚಿವ ಕೆ. ಎಚ್. ಮುನಿಯಪ್ಪ ಸಹ ಅನ್ನಭಾಗ್ಯ ಯೋಜನೆ ಅನರ್ಹ ಬಿಪಿಎಲ್ ಕಾರ್ಡುದಾರರು ಪಡೆಯುತ್ತಿರುವ ಕುರಿತು ಮಾತನಾಡಿದ್ದಾರೆ.
ಕರ್ನಾಟಕದಲ್ಲಿ 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು 5 ಗ್ಯಾರಂಟಿ ಯೋಜನೆಗಳು ಪ್ರಮುಖ ಕಾರಣ. ಆದರೆ ಇದರಿಂದ ಆಗುತ್ತಿರುವ ಆರ್ಥಿಕ ಹೊರೆ ಸರ್ಕಾರದ ಚಿಂತೆಗೆ ಕಾರಣವಾಗಿದೆ. ಆದ್ದರಿಂದ ಗ್ಯಾರಂಟಿ ಯೋಜನೆಗಳನ್ನು ಪರಿಷ್ಕರಣೆ ಮಾಡಬೇಕು ಎಂಬುದು ಕೆಲವು ನಾಯಕರ ಅಭಿಪ್ರಾಯವಾಗಿದೆ.
ಗ್ಯಾರಂಟಿ ಯೋಜನೆಗಳಿಗೆ ಕೋಟ್ಯಾಂತರ ರೂಪಾಯಿ ವೆಚ್ಚವಾಗುತ್ತಿದೆ. ಇದರಿಂದಾಗಿ ಅಭಿವೃದ್ಧಿ ಕಾರ್ಯಗಳಿಗೆ ಅನುದಾನದ ಕೊರತೆ ಉಂಟಾಗುತ್ತಿದೆ. ಶ್ರೀಮಂತರು, ಅನರ್ಹರು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಾಗುತ್ತಿದ್ದಾರೆ. ಅವರು ಪಕ್ಷದ ಪರವಾಗಿಯೂ ನಿಲ್ಲುತ್ತಿಲ್ಲ ಎಂಬುದು ಹಲವು ನಾಯಕರ ಅಭಿಪ್ರಾಯವಾಗಿದೆ.












Click it and Unblock the Notifications