ಡಾ.ಉಮೇಶ್ ಜಾಧವ್ ರಾಜೀನಾಮೆ : ಯಾರು, ಏನು ಹೇಳಿದರು?
Recommended Video

ಬೆಂಗಳೂರು, ಮಾರ್ಚ್ 04 : ಚಿಂಚೋಳಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ.ಉಮೇಶ್ ಜಾಧವ್ ಕೊನೆಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಂಡಾಯ ಶಾಸಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದ ಜಾಧವ್ ಬಿಜೆಪಿ ಸೇರಲಿದ್ದಾರೆ.
ಸೋಮವಾರ ಸ್ಪೀಕರ್ ರಮೇಶ್ ಕುಮಾರ್ ಅವರ ನಿವಾಸಕ್ಕೆ ತೆರಳಿ ಡಾ.ಉಮೇಶ್ ಜಾಧವ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ಅವರು ಇಂದು ರಾಜೀನಾಮೆ ಸಲ್ಲಿಸಲಿದ್ದಾರೆ.
ಡಾ.ಉಮೇಶ್ ಜಾಧವ್ ಅವರು ಕಾಂಗ್ರೆಸ್ ತೊರೆಯಲಿದ್ದಾರೆ ಎಂಬ ಸುದ್ದಿ ಹಲವು ದಿನಗಳಿಂದ ಹಬ್ಬಿತ್ತು. ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಅಸಮಾಧಾನಗೊಂಡಿದ್ದ ಡಾ.ಉಮೇಶ್ ಜಾಧವ್ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರುತ್ತಿದ್ದಾರೆ.
2019ರ ಲೋಕಸಭಾ ಚುನಾವಣೆಗೆ ಡಾ.ಉಮೇಶ್ ಜಾಧವ್ ಅವರು ಗುಲ್ಬರ್ಗಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ. ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಅವರು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿ ಹಬ್ಬಿದೆ....

ದಿನೇಶ್ ಗುಂಡೂರಾವ್
'ಡಾ.ಉಮೇಶ್ ಜಾಧವ್ ಅವರಿಗೆ ಎರಡು ಬಾರಿ ಶಾಸಕರಾಗಲು ಪಕ್ಷ ಸಹಾಯ ಮಾಡಿತ್ತು. ಈಗ ಪಕ್ಷಕ್ಕೆ ಮೋಸ ಮಾಡಿ ಸ್ವಾರ್ಥಕ್ಕೆ ಬಿಕರಿಯಾಗಿದ್ದಾರೆ. ಕುಂಟು ನೆಪ ಹೇಳಿ ಅವರು ಪಕ್ಷಕ್ಕೆ ಮೋಸ ಮಾಡಿದ್ದಾರೆ. ಪಕ್ಷಕ್ಕೆ ಚೂರಿ ಹಾಕುವವರು ಬಿಟ್ಟು ಹೋಗುವುದು ಒಳ್ಳೆಯದು. ನನ್ನ ಮಾಹಿತಿ ಪ್ರಕಾರ ಬೇರೆ ಯಾರೂ ಪಕ್ಷ ಬಿಟ್ಟು ಹೋಗುವುದಿಲ್ಲ' ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು.

ಬಿಜೆಪಿಗೆ ಅಭ್ಯರ್ಥಿಗಳಿಲ್ಲ
'ಬಿಜೆಪಿ ಪಕ್ಷಕ್ಕೆ ಗುಲ್ಬರ್ಗಾ ಕ್ಷೇತ್ರದಲ್ಲಿ ಅಭ್ಯರ್ಥಿಗಳಿಲ್ಲ. ಆದ್ದರಿಂದ, ನಮ್ಮ ಪಕ್ಷದ ಪ್ರಭಾವಿ ನಾಯಕನನ್ನು ಕರೆದುಕೊಂಡು ಹೋಗಿದ್ದಾರೆ. ಡಾ.ಉಮೇಶ್ ಜಾಧವ್ ಒಬ್ಬರು ಪಕ್ಷ ಬಿಟ್ಟು ಹೋದರೆ ಪಕ್ಷಕ್ಕೆ ಯಾವುದೇ ಡ್ಯಾಮೇಜ್ ಆಗುವುದಿಲ್ಲ. ಬಿಜೆಪಿ ಅವರು ಆಫರ್ ಕೊಟ್ಟು ಕರೆದುಕೊಂಡು ಹೋಗಿದ್ದಾರೆ ಅವರು ಎಷ್ಟು ಪವರ್ ಫುಲ್ ಶಾಸಕ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು' ಎಂದು ಕಾಂಗ್ರೆಸ್ ನಾಯಕ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ.

ರಾಜಕೀಯ ಭವಿಷ್ಯ ಹಾಳು ಮಾಡಿಕೊಂಡಿದ್ದಾರೆ
'ಡಾ.ಉಮೇಶ್ ಜಾಧವ್ ಅವರ ರಾಜೀನಾಮೆ ಅಂಗೀಕಾರ ಮಾಡುವ ಬಗ್ಗೆ ಸ್ಪೀಕರ್ ತೀರ್ಮಾನ ಮಾಡುತ್ತಾರೆ. ಅನರ್ಹತೆ ಬಗ್ಗೆಯೂ ಸ್ಪೀಕರ್ ನಿರ್ಧಾರ ಕೈಗೊಳ್ಳುತ್ತಾರೆ. ಡಾ.ಉಮೇಶ್ ಜಾಧವ್ ಅವರು ರಾಜೀನಾನೆ ನೀಡಿ ತಮ್ಮ ರಾಜಕೀಯ ಭವಿಷ್ಯ ಹಾಳು ಮಾಡಿಕೊಂಡಿದ್ದಾರೆ. ಅವರಿಗೆ ಈ ಬಗ್ಗೆ ಮುಂದಿನ ದಿನದಲ್ಲಿ ಅರಿವಾಗಲಿದೆ' ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದ್ದಾರೆ.

ಸರ್ಕಾರ ಶೀಘ್ರದಲ್ಲೇ ಪತನವಾಗಲಿದೆ
'ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಸಾಕಷ್ಟು ಅಸಮಾಧಾನವಿದೆ. ಬಿಜೆಪಿ ಅವರು ಕರೆದರು ಎಂದು ಉಮೇಶ್ ಜಾಧವ್ ರಾಜೀನಾಮೆ ಕೊಟ್ಟಿಲ್ಲ. ಕಾಂಗ್ರೆಸ್ನಲ್ಲಿನ ಅಸಮಧಾನದಿಂದಾಗಿ ರಾಜೀನಾಮೆ ನೀಡಿದ್ದಾರೆ. ಇನ್ನಷ್ಟು ಶಾಸಕರು ರಾಜೀನಾಮೆ ಕೊಡಲಿದ್ದಾರೆ. ಶೀಘ್ರದಲ್ಲೇ ಸರ್ಕಾರ ಪತನವಾಗಲಿದೆ' ಎಂದು ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.











Click it and Unblock the Notifications