ಪತ್ರಕರ್ತೆಗೆ "ನಿಂದೇನಾದ್ರೂ ಹೆರಿಗೆ ಮಾಡಿಸಬೇಕಾ" ಎಂದ ಕಾಂಗ್ರೆಸ್ ಶಾಸಕ, ಇಲ್ಲಿದೆ ವೈರಲ್ ವಿಡಿಯೋ!
ಕಾಂಗ್ರೆಸ್ ಶಾಸಕ ಆರ್.ವಿ ದೇಶಪಾಂಡೆ ಪತ್ರಕರ್ತೆಯೊಬ್ಬರ ಪ್ರಶ್ನೆಗೆ ಉಡಾಫೆಯಿಂದ ಉತ್ತರಿಸಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು ಆಕ್ರೋಶ ವ್ಯಕ್ತವಾಗಿದೆ. ನಿನಗೆ ಬೇಕಾದರೆ ಹೇಳು ಬೇರೆ ಕರೆ ಹೆರಿಗೆ ಮಾಡಿಸುತ್ತೇವೆ ಎಂದು ಅವರು ಹೇಳಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲ್ಲೂಕಿನಲ್ಲಿ ಸರ್ಕಾರಿ ಆಸ್ಪತ್ರೆ ಸಮಸ್ಯೆ ಆಗಿರುವ ಬಗ್ಗೆ ಖಾಸಗಿ ಸುದ್ದಿ ವಾಹಿನಿಯ ಪತ್ರಕರ್ತೆ ಗಮನ ಸೆಳೆದಿದ್ದಾರೆ. ಇದಕ್ಕೆ ಶಾಸಕರು ಕೊಟ್ಟಿರುವ ಉಡಾಫೆಯ ಉತ್ತರ ಜನರ ಆಕ್ರೋಶಕ್ಕೆ ಕಾರಣವಾಗಿದೆ.
ಈ ಭಾಗದಲ್ಲಿ ಉತ್ತಮ ಸರ್ಕಾರಿ ಆಸ್ಪತ್ರೆ ಇಲ್ಲದೆ ಗರ್ಭಿಣಿಯರಿಗೆ ಭಾರೀ ತೊಂದರೆ ಆಗುತ್ತಿದ್ದು, ಈ ಭಾಗಕ್ಕೆ ಆಧುನಿಕ ದರ್ಜೆಯ ಸರ್ಕಾರಿ ಆಸ್ಪತ್ರೆಯ ಬೇಕಿದೆ. ಯಾವಾಗ ಆಗಬಹುದು ಎಂದು ಪತ್ರಕರ್ತೆ ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಆರ್ವಿ ದೇಶಪಾಂಡೆ ಅವರು ಚಿಂತಿಸಬೇಡ, ನಿಮ್ಮ ಹೆರಿಗೆಯನ್ನು ಬೇಕಾದರೆ ನಾವು ಬೇರೆಡೆ ಮಾಡಿಸುತ್ತೇವೆ ಎಂದಿದ್ದಾರೆ. ಅಲ್ಲದೇ ಮಹಿಳಾ ಪತ್ರಕರ್ತೆಗೆ ಕಣ್ಣು ಮಿಟುಕಿಸುತ್ತಾ ನಕ್ಕಿದ್ದಾರೆ. ಹಿರಿಯ ರಾಜಕಾರಣಿ ಹಾಗೂ ಮಾಜಿ ಸಚಿವ ದೇಶಪಾಂಡೆ ಅವರ ನಡೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಕರ್ನಾಟಕ ಪತ್ರಕರ್ತೆಯರ ಸಂಘ ಸಹ ಶಾಸಕರ ಹೇಳಿಕೆಯನ್ನು ಖಂಡಿಸಿದೆ. ಹೆಣ್ಣು ಮಕ್ಕಳ ಹೆರಿಗೆಗೆ ಅಗತ್ಯವಿರುವ ಹೆರಿಗೆ ಆಸ್ಪತ್ರೆ ಸೌಲಭ್ಯವನ್ನು ಯಾವಾಗ ಕಲ್ಪಿಸುತ್ತೀರಿ ಎಂದು ಪತ್ರಕರ್ತೆ ಕೇಳಿದ ಪ್ರಶ್ನೆಗೆ ಮಾಜಿ ಸಚಿವರಾದ ಆರ್ ವಿ ದೇಶಪಾಂಡೆ ಅವರು ನೀಡಿದ ಉತ್ತರ ಬೇಜವಾಬ್ದಾರಿತನದಿಂದ ಕೂಡಿದೆ. ಇದನ್ನು ಕರ್ನಾಟಕ ಪತ್ರಕರ್ತೆಯರ ಸಂಘ ತೀವ್ರವಾಗಿ ಖಂಡಿಸುತ್ತದೆ. ಆರ್.ವಿ ದೇಶಪಾಂಡೆ ಅವರು ಹಿರಿಯರಾಗಿ, ಮಾಜಿ ಸಚಿವರಾಗಿ, ಜವಾಬ್ದಾರಿಯುತ ಸ್ಥಾನದಲ್ಲಿ ಇದ್ದುಕೊಂಡು ಇಂತಹ ಉಡಾಫೆಯ ಹೇಳಿಕೆಯನ್ನು ನೀಡಬಾರದಾಗಿತ್ತು. ಮುಖ್ಯವಾಗಿ ಜವಾಬ್ದಾರಿಯುತವಾಗಿ ಸಮಾಜದ ಪರವಾಗಿ ಪ್ರಶ್ನೆಯನ್ನು ಎತ್ತಿದ ಪತ್ರಕರ್ತೆಗೆ ಜವಾಬ್ದಾರಿಯಿಂದ ಉತ್ತರಿಸಬೇಕಿತ್ತು.
ಮತ್ತೊಂದೆಡೆ ಸಮಾಜದಲ್ಲಿರುವ ಹೆಣ್ಣು ಮಕ್ಕಳ ಮೂಲಭೂತ ಸೌಲಭ್ಯದ ಕೊರತೆಯನ್ನು ಗಂಭೀರವಾಗಿ ಪರಿಗಣಿಸಬೇಕಿತ್ತು. ರಾಜಕಾರಣಿಗಳು ಪತ್ರಕರ್ತೆಯರನ್ನು ಹಗುರವಾಗಿ ಪರಿಗಣಿಸಬಾರದು ಮತ್ತು ಹೆಣ್ಣು ಮಕ್ಕಳ ಮೂಲಭೂತ ಸೌಲಭ್ಯದ ಬಗ್ಗೆ ಉಡಾಫೆಯ ಮಾತು ಸಲ್ಲದು. ಆರ್ ವಿ ದೇಶಪಾಂಡೆ ಅವರ ಹೇಳಿಕೆಗೆ ಪತ್ರಕರ್ತೆಯರು ತೀವ್ರ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಮತ್ತು ಅವರ ಹಗುರ ಮಾತನ್ನು ಖಂಡಿಸುತ್ತಿದ್ದೇವೆ ಎಂದು ಹೇಳಲಾಗಿದೆ.
ಇನ್ನು ಈ ವಿಚಾರವಾಗಿ ರಾಜಕೀಯ ವಿರೋಧವೂ ವ್ಯಕ್ತವಾಗಿದೆ. ಸೋಷಿಯಲ್ ಎಕ್ಸ್ನಲ್ಲಿ ಟ್ವೀಟ್ ಮಾಡಿರುವ ಬಿಜೆಪಿ, ಉತ್ತರ ಕನ್ನಡ ಜಿಲ್ಲೆಯ ಆಸ್ಪತ್ರೆ ಸಮಸ್ಯೆ ಕುರಿತು ಪ್ರಶ್ನೆ ಕೇಳಿದ ಮಹಿಳಾ ಪತ್ರಕರ್ತೆಗೆ ನಿನ್ನ ಹೆರಿಗೆ ಬೇರೆ ಕಡೆ ಮಾಡಿಸುವುದಾಗಿ ಉಡಾಫೆಯ ಉತ್ತರವನ್ನು ಕಾಂಗ್ರೆಸ್ನ ಹಿರಿಯ ನಾಯಕ, ಶಾಸಕರಾದ ಆರ್. ವಿ. ದೇಶಪಾಂಡೆ ನೀಡಿದ್ದಾರೆ.
Congress MLA R.V. Deshpande’s remark is appalling, sexist, and utterly disgraceful, especially coming from a senior politician with decades in public life.
— Chetana Belagere (@chetanabelagere) September 3, 2025
Definitely need a public apology on this highly disrespectful reply. @INCKarnataka @siddaramaiah pic.twitter.com/MYjCp3YrX7
ಶಾಸಕರ ಹೇಳಿಕೆಯಿಂದ ಕಾಂಗ್ರೆಸ್ ಪಕ್ಷದಲ್ಲಿ ಮಹಿಳೆಯರ ವಿಚಾರದಲ್ಲಿ ಕಾಂಗ್ರೆಸ್ನ ಮಹಿಳಾ ವಿರೋಧಿ ಧೋರಣೆ ವ್ಯಕ್ತವಾಗುತ್ತಿದೆ. ಸಮಸ್ಯೆ ಹೇಳಿಕೊಂಡು ಬರುವ ಮಹಿಳೆಯರ ದುಪಟ್ಟಾ ಎಳೆಯುವ ಮುಖ್ಯಮಂತ್ರಿ ಒಂದೆಡೆಯಾದರೆ, ಸಮಸ್ಯೆ ಕುರಿತು ಪ್ರಶ್ನಿಸುವ ಮಹಿಳಾ ಪತ್ರಕರ್ತರಿಗೆ ಉಡಾಫೆಯ ಉತ್ತರ ನೀಡುವ ಕೈ ಶಾಸಕರು ಮತ್ತೊಂದೆಡೆ. ರಾಜ್ಯದಲ್ಲಿ ಮೂಲಭೂತ ಅವಶ್ಯಕತೆಗಳನ್ನು ಕೇಳೋದು ತಪ್ಪಾ? ಅಸಭ್ಯವಾಗಿ ಉತ್ತರ ನೀಡಿದ ಕಾಂಗ್ರೆಸ್ ಶಾಸಕರು ಈ ಕೂಡಲೇ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದೆ.












Click it and Unblock the Notifications