ಚಿಂಚೋಳಿ ಕಾಂಗ್ರೆಸ್ ಶಾಸಕ ಡಾ.ಉಮೇಶ್ ಜಾಧವ್ ಬಿಜೆಪಿಗೆ?
ಬೆಂಗಳೂರು, ಜನವರಿ 13 : ಚಿಂಚೋಳಿ ಕ್ಷೇತ್ರದ ಕಾಂಗ್ರೆಸ್ ಡಾ.ಉಮೇಶ್ ಜಾಧವ್ ಬಿಜೆಪಿ ಸೇರಲಿದ್ದಾರೆ?. ಹೌದು, ಭಾನುವಾರ ಈ ಕುರಿತು ಸುದ್ದಿ ಹಬ್ಬಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಅವರು ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಸ್ಪರ್ಧೆ ಮಾಡುವ ಸಾಧ್ಯತೆ ಇದೆ.
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರು ರಾಜ್ಯ ಬಿಜೆಪಿ ನಾಯಕರಿಗೆ ಸೂಚಿಸಿದ್ದಾರೆ. ಆದ್ದರಿಂದ, ಖರ್ಗೆ ವಿರುದ್ಧ ಪ್ರಬಲ ಅಭ್ಯರ್ಥಿಗಾಗಿ ಹುಡುಕಾಟ ನಡೆದಿದೆ.
ಉಮೇಶ್ ಜಾಧವ್ ಕಲಬುರಗಿ ಜಿಲ್ಲೆಯ ಪ್ರಭಾವಿ ನಾಯಕ. ಲಂಬಾಣಿ ಸಮುದಾಯಕ್ಕೆ ಅವರು ಸೇರಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಡಾ.ಉಮೇಶ್ ಜಾಧವ್ ಕಣಕ್ಕಿಳಿಸಿದರೆ ಗೆಲುವು ಸಾಧಿಸಬಹುದು ಎಂಬ ಲೆಕ್ಕಾಚಾರ ಬಿಜೆಪಿ ನಾಯಕರದ್ದು.
ಉಮೇಶ್ ಜಾಧವ್ ಅವರನ್ನು ಆಹಾರ ಮತ್ತು ಉಗ್ರಾಣ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಅವರು ಶುಕ್ರವಾರ ಅಧಿಕಾರ ಸ್ವೀಕಾರ ಮಾಡಬೇಕಿತ್ತು. ಆದರೆ, ಅದನ್ನು ಅವರು ಮುಂದೂಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ....

ಬೆಂಬಲಿಗರ ಜೊತೆ ಶಾಸಕರ ಸಭೆ
ಚಿಂಚೋಳಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಉಮೇಶ್ ಜಾಧವ್ ಅವರು ಬಿಜೆಪಿ ಸೇರುವ ಕುರಿತು ತಮ್ಮ ಬೆಂಬಲಿಗರ ಜೊತೆ ಸಭೆ ನಡೆಸಿದ್ದಾರೆ. ಜನವರಿ ಅಂತ್ಯದಲ್ಲಿ ಅವರು ಬಿಜೆಪಿ ಸೇರುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ರಾಜ್ಯ ಬಿಜೆಪಿ ನಾಯಕರು ಅವರ ಜೊತೆ ಮತ್ತೊಮ್ಮೆ ಸಭೆ ನಡೆಸಲಿದ್ದಾರೆ.

73 ಸಾವಿರ ಮತಗಳನ್ನು ಪಡೆದಿದ್ದಾರೆ
ಉಮೇಶ್ ಜಾಧವ್ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡು ಅವರನ್ನು 2019ರ ಲೋಕಸಭಾ ಚುನಾವಣಾ ಕಣಕ್ಕೆ ಇಳಿಸುವುದು ಬಿಜೆಪಿಯ ತಂತ್ರವಾಗಿದೆ. 2018ನೇ ವಿಧಾನಸಭೆ ಚುನಾವಣೆಯಲ್ಲಿ ಉಮೇಶ್ ಜಾಧವ್ ಅವರು 73,905 ಮತಗಳನ್ನು ಪಡೆದು ಚಿಂಚೋಳಿ ಕ್ಷೇತ್ರದಲ್ಲಿ ಜಯಗಳಿಸಿದ್ದಾರೆ.

ಚಿಂಚನಸೂರು ಬಿಜೆಪಿಯಲ್ಲಿದ್ದಾರೆ
ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಲು ಬಿಜೆಪಿ ನಾಯಕರನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿದೆ. ಮಾಲೀಕಯ್ಯ ಗುತ್ತೇದಾರ್ ಮತ್ತು ಬಾಬೂರಾವ್ ಚಿಂಚನಸೂರು ಅವರು ಈಗಾಗಲೇ ಬಿಜೆಪಿಯಲ್ಲಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಈ ಎಲ್ಲಾ ನಾಯಕರು ಖರ್ಗೆ ಅವರ ಗೆಲುವುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಕಲಬುರಗಿ ಕ್ಷೇತ್ರ
ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಸಬೇಕು. ಆದರೆ, ಕಲಬುರಗಿ ಕೇತ್ರದಲ್ಲಿ ಅಭ್ಯರ್ಥಿ ಕೊರತೆಯನ್ನು ಬಿಜೆಪಿ ಎದುರಿಸುತ್ತಿದೆ. ಆದ್ದರಿಂದ, ಉಮೇಶ್ ಜಾಧವ್ ಅವರನ್ನು ಅಭ್ಯರ್ಥಿಯಾಗಿ ಮಾಡುವ ತಂತ್ರವನ್ನು ಪಕ್ಷ ರೂಪಿಸಿದೆ. 2014ರ ಚುನಾವಣೆಯಲ್ಲಿ ರೇವು ನಾಯಕ್ ಬೆಳಮಗಿ ಅವರು ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಸ್ಪರ್ಧಿಸಿದ್ದರು. ಆದರೆ, ಈಗ ಅವರು ಪಕ್ಷವನ್ನು ತೊರೆದು ಜೆಡಿಎಸ್ ಸೇರಿದ್ದಾರೆ. ಆದ್ದರಿಂದ, ಉಮೇಶ್ ಜಾಧವ್ ಅವರನ್ನು ಸೆಳೆಯಲು ಬಿಜೆಪಿ ಪ್ರಯತ್ನ ನಡೆಸಿದೆ.

ಬಿಜೆಪಿಗೆ ಹೋಗಲ್ಲ ಎಂದು ಹೇಳಿದ್ದರು
2018ರ ಅಕ್ಟೋಬರ್ ತಿಂಗಳಿನಲ್ಲಿ ಉಮೇಶ್ ಜಾಧವ್ ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಆಗ ಪ್ರತಿಕ್ರಿಯೆ ನೀಡಿದ್ದ ಅವರು, 'ನಾನು ಕಾಂಗ್ರೆಸ್ ಬಿಟ್ಟು ಹೋಗುವುದಿಲ್ಲ. ಮಲ್ಲಿಕಾರ್ಜುನ ಖರ್ಗೆ ನಮ್ಮ ನಾಯಕರು. ಅವರ ವಿರುದ್ಧ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ' ಎಂದು ಹೇಳಿದ್ದರು.












Click it and Unblock the Notifications