ದಿಗ್ವಿಜಯ್ ಸಿಂಗ್ ಗೆ ದೂರು ಕೊಟ್ಟ ಅತೃಪ್ತ ಶಾಸಕರು
ಬೆಂಗಳೂರು, ಜ.6 : ಡಿಕೆ ಶಿವಕುಮಾರ್ ಮತ್ತು ರೋಷನ್ ಬೇಗ್ ಸಚಿವ ಸಂಪುಟ ಸೇರಿರುವ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಭುಗಿಲೆದ್ದಿರುವ ಅಸಮಾಧಾನದ ದೂರು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರನ್ನು ತಲುಪಿದೆ. ಭಾನುವಾರ ಸಿಂಗ್ ಬೆಂಗಳೂರಿಗೆ ಆಗಮಿಸಿದ್ದು, ಸೋಮವಾರ ಕಾಂಗ್ರೆಸ್ ಸಮನ್ವಯ ಸಮಿತಿ ಸಭೆ ನಡೆಯಲಿದೆ.
ಸೋಮವಾರದ ಸಮನ್ವಯ ಸಮಿತಿ ಸಭೆಯಲ್ಲಿ ಭಾಗವಹಿಸಲು ಬೆಂಗಳೂರಿಗೆ ಭಾನುವಾರ ಆಗಮಿಸಿದ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್, ಅತೃಪ್ತ ಶಾಸಕರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಎಲ್ಲಾ ಶಾಸಕರ ದೂರು ಆಲಿಸಿರುವ ಅವರು, ಈ ಕುರಿತು ಹೈ ಕಮಾಂಡ್ ನಾಯಕರಿಗೆ ಮಾಹಿತಿ ನೀಡುತ್ತೇನೆ ಎಂದು ಭರವಸೆ ನೀಡಿದ್ದಾರೆ. [ಎಸ್.ಎಂ.ಕೃಷ್ಣ ಮನೆ ತಲುಪಿದ ಕಾಂಗ್ರೆಸ್ ಬಂಡಾಯ]

ದಿಗ್ವಿಜಯ್ ಸಿಂಗ್ ಭಾನುವಾರ ಸಂಜೆ ಕುಮಾರ ಕೃಪಾ ಅತಿಥಿಗೃಹಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಎಲ್ಲ ಶಾಸಕರು ಒಟ್ಟಾಗಿ ಅವರನ್ನು ಭೇಟಿ ಮಾಡಲು ನಿರ್ಧರಿಸಿದರು. ಆದರೆ, ಸಿಂಗ್ ಅತೃಪ್ತ ಶಾಸಕರನ್ನು ಪ್ರತ್ಯೇಕವಾಗಿ ಒಬ್ಬೊಬ್ಬರನ್ನು ಮುಖಾಮುಖಿ ಭೇಟಿ ಮಾಡಿ ಅಹವಾಲು ಆಲಿಸಿದರು. ಶಾಸಕರಾದ ಕೆ.ಬಿ.ಕೋಳಿವಾಡ, ಡಾ. ಎ.ಬಿ.ಮಾಲಕರೆಡ್ಡಿ, ಮಾಲಿಕಯ್ಯ ಗುತ್ತೇದಾರ್, ಬಿ.ಬಿ.ಚಿಮ್ಮನಕಟ್ಟಿ, ಈಶ್ವರ್ ಖಂಡ್ರೆ, ಸಿದ್ದು ನ್ಯಾಮಗೌಡ, ಆರ್.ವಿ.ದೇವರಾಜ್, ವಿಧಾನಪರಿಷತ್ ಸದಸ್ಯ ಎಂ.ಆರ್.ಸೀತಾರಾಂ ಮುಂತಾದವರು ಸಿಂಗ್ ಅವರನ್ನು ಭೇಟಿ ಮಾಡಿದರು.
ತಾವು ಏಕೆ ಸಚಿವ ಸ್ಥಾನದ ಆಕಾಂಕ್ಷಿಗಳು, ಇದರಿಂದ ಲೋಕಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಎಂತಹ ಲಾಭವಾಗಲಿದೆ ಮುಂತಾದ ವಿಚಾರಗಳನ್ನು ಅತೃಪ್ತ ಶಾಸಕರು ದಿಗ್ವಿಜಯ್ ಸಿಂಗ್ ಬಳಿ ಹೇಳಿದ್ದಾರೆ. ಇದೇ ವೇಳೆ ಸಚಿವ ಸಂಪುಟದಲ್ಲಿ ಉತ್ತರ ಕರ್ನಾಟಕಕ್ಕೆ ಆಗಿರುವ ಅನ್ಯಾಯ, ಪ್ರಾದೇಶಿಕ ಅಸಮಾನತೆ ಹಾಗೂ ಶಾಸಕರ ಹಿರಿತನದ ವಿಚಾರವನ್ನೂ ಶಾಸಕರು ಪ್ರಸ್ತಾಪಿಸಿದ್ದಾರೆ.
ಸೋಮವಾರ ಸಮನ್ವಯ ಸಮಿತಿ ಸಭೆ : ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ನೇತೃತ್ವದಲ್ಲಿ ಸೋಮವಾರ ಸಮನ್ವಯ ಸಮಿತಿ ಸಭೆ ನಡೆಯಲಿದೆ. ಕೆಪಿಸಿಸಿ ಕಚೇರಿಯಲ್ಲಿ ನಡೆಯಲಿರುವ ಸಭೆಯಲ್ಲಿ ಸಮನ್ವಯ ಸಮಿತಿ ಸದಸ್ಯರಾದ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್, ಸಿಎಂ ಸಿದ್ದರಾಮಯ್ಯ, ಎಐಸಿಸಿ ಉಸ್ತುವಾರಿ ಕಾರ್ಯದರ್ಶಿ ಎ. ಚೆಲ್ಲಕುಮಾರ್ ಹಾಗೂ ಶಾಂತರಾಂ ನಾಯ್ಕ್, ಗೃಹ ಸಚಿವ ಕೆ.ಜೆ. ಜಾರ್ಜ್, ಇಂಧನ ಸಚಿವ ಡಿ.ಕೆ.ಶಿವಕುಮಾರ್ ಭಾಗವಹಿಸಲಿದ್ದಾರೆ.











Click it and Unblock the Notifications