ಇಬ್ಬರು ಕಾಂಗ್ರೆಸ್ ಶಾಸಕರ ರಾಜೀನಾಮೆ : ಯಾರು, ಏನು ಹೇಳಿದರು?
ಬೆಂಗಳೂರು, ಜುಲೈ 01 : ಕರ್ನಾಟಕದ ಇಬ್ಬರು ಕಾಂಗ್ರೆಸ್ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕರ್ನಾಟಕದ ರಾಜಕೀಯದಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿವೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಅಮೆರಿಕ ಪ್ರವಾಸದಲ್ಲಿದ್ದಾರೆ.
ಸೋಮವಾರ ವಿಜಯನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್, ಗೋಕಾಕ್ ಕ್ಷೇತ್ರದ ಶಾಸಕ ರಮೇಶ್ ಜಾರಕಿಹೊಳಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸ್ಫೀಕರ್ ರಮೇಶ್ ಕುಮಾರ್ ಅವರು ಇನ್ನೂ ರಾಜೀನಾಮೆ ಅಂಗೀಕಾರ ಮಾಡಿಲ್ಲ.
ಶಾಸಕರ ರಾಜೀನಾಮೆಯಿಂದಾಗಿ ಕರ್ನಾಟಕದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಅಲ್ಪ ಮತಕ್ಕೆ ಕುಸಿಯಲಿದೆಯೇ? ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ರಾಜ್ಯದಲ್ಲಿ ಮಧ್ಯಂತರ ಚುನಾವಣೆಯ ಬಗ್ಗೆ ಚರ್ಚೆ ನಡೆಯುತ್ತಿರುವಾಗಲೇ ಶಾಸಕರಿಬ್ಬರು ರಾಜೀನಾಮೆ ನೀಡಿದ್ದಾರೆ.
ಅಮೆರಿಕ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, 'ರಾಜ್ಯದ ಎಲ್ಲ ವಿದ್ಯಮಾನಗಳನ್ನು ಇಲ್ಲಿಂದಲೇ ಗಮನಿಸುತ್ತಿದ್ದೇನೆ. ರಾಜ್ಯದಲ್ಲಿ ಸರ್ಕಾರವನ್ನು ಅಸ್ಥಿರಗೊಳಿಸುವ BJP ಯ ಪ್ರಯತ್ನ ನಿರಂತರ ಹಗಲುಗನಸು' ಎಂದು ಟ್ವೀಟ್ ಮಾಡಿದ್ದಾರೆ. ಶಾಸಕರ ರಾಜೀನಾಮೆ ಬಗ್ಗೆ ಯಾರು, ಏನು ಹೇಳಿದರು? ನೋಡೋಣ.....

ಯಡಿಯೂರಪ್ಪ ಪ್ರತಿಕ್ರಿಯೆ
ಸೋಮವಾರ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕರ್ನಾಟಕ ಬಿ.ಎಸ್.ಯಡಿಯೂರಪ್ಪ ಅವರು, 'ನಾನೇನು ಸನ್ಯಾನಿಯಲ್ಲ. ಮೈತ್ರಿ ಸರ್ಕಾರ ತಾನಾಗಿಯೇ ಪತನವಾದರೆ ಸರ್ಕಾರ ರಚಿಸಲು ಸಿದ್ಧ. ಆನಂದ್ ಸಿಂಗ್ ರಾಜೀನಾಮೆ ಕುರಿತು ಮಾಧ್ಯಮದಲ್ಲಿ ನೋಡಿದೆ. ಆ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಸರ್ಕಾರ ಪತನ ಮಾಡುವುದಕ್ಕೆ ಯಾವುದೇ ತಂತ್ರಗಾರಿಕೆ ಮಾಡಿಲ್ಲ' ಎಂದು ಸ್ಪಷ್ಟಪಡಿಸಿದರು.

ಇಬ್ಬರ ರಾಜೀನಾಮೆಯಿಂದ ಏನೂ ಆಗಲ್ಲ
'ಒಂದಿಬ್ಬರಾಗಲೀ, ಮೂರ್ನಾಲ್ಕು ಶಾಸಕರ ರಾಜೀನಾಮೆಯಿಂದ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ. ಸರ್ಕಾರ ಪತನವಾಗಲು ಕನಿಷ್ಠ 15 ಶಾಸಕರು ರಾಜೀನಾಮೆ ನೀಡಬೇಕು. ಆದರೆ, ಅಷ್ಟೊಂದು ಪ್ರಮಾಣದಲ್ಲಿ ಶಾಸಕರು ರಾಜೀನಾಮೆ ನೀಡಿಲ್ಲ. ಸರ್ಕಾರ ಭದ್ರವಾಗಿದೆ' ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಹೇಳಿದರು.

ಸಿ.ಟಿ.ರವಿ ಹೇಳುವುದೇನು?
'ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಅವರು ಜಿಂದಾಲ್ ಕಂಪನಿಗೆ ಜಾಗ ಪರಭಾರೆ ಮಾಡುವುದನ್ನು ವಿರೋಧಿಸಿ ಅಥವ ರಾಜಕೀಯ ಕಾರಣಕ್ಕೆ ರಾಜೀನಾಮೆ ನೀಡಿರಬಹುದು. ಆನಂದ್ ಸಿಂಗ್ ನನಗೆ ಒಳ್ಳೆಯ ಸ್ನೇಹಿತರು. ಹಿಂದೆ ಬಿಜೆಪಿಯಲ್ಲಿದ್ದರು. ರಾಜೀನಾಮೆಗೆ ಕಾರಣ ತಿಳಿದುಕೊಳ್ಳಲು ಅವರನ್ನು ಸಂಪರ್ಕಿಸಲು ಪ್ರಯತ್ನ ನಡೆಸಿದೆ. ಫೋನ್ ಸ್ವಿಚ್ ಆಫ್ ಆಗಿದೆ' ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.

ಸಚಿವ ಎಸ್.ಆರ್.ಶ್ರೀನಿವಾಸ್ ಹೇಳಿಕೆ
ಶಾಸಕರ ರಾಜೀನಾಮೆ ಬಗ್ಗೆ ಪ್ರತಿಕ್ರಿಯೆ ನೀಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಆರ್.ಶ್ರೀನಿವಾಸ್ ಅವರು, 'ಸರ್ಕಾರ ಏನಾದ್ರು ನಮಗೇನು ಬೇಜಾರಿಲ್ಲ. ಇದ್ರೆ ಕೆಲಸ ಮಾಡ್ತಿವಿ. ಹೋದ್ರೆ ಮನಗೆ ಹೋಗ್ತಿವಿ ಅಷ್ಟೇ. ಸರ್ಕಾರದಲ್ಲಿ ಇಂಥವರು ಇರುತ್ತಾರೆ, ಅಂಥವರು ಇರುತ್ತಾರೆ. ಎಲ್ಲರೂ ಒಂದೇ ಮನಸ್ಥಿತಿಯವರು ಇರುವುದಿಲ್ಲ. ಇಷ್ಟಕ್ಕೂ ಸರ್ಕಾರ ಹೋಗುತ್ತದೆ ಎಂದು ಹೇಳಿದವರು ಯಾರು?' ಎಂದು ಪ್ರಶ್ನೆ ಮಾಡಿದರು.

ರಾಜೀನಾಮೆ ವಿಚಾರ ತಿಳಿದು ಆಶ್ಚರ್ಯವಾಯಿತು
'ಶಾಸಕ ಆನಂದ್ ಸಿಂಗ್ ರಾಜೀನಾಮೆ ನೀಡಿದ್ದಾರೆ ಎಂಬ ವಿಚಾರವನ್ನು ಮಾಧ್ಯಮಗಳಲ್ಲಿ ನೋಡಿ ಆಶ್ಚರ್ಯವಾಯಿತು. ನಾನು ಅವರನ್ನು ಸಂಪರ್ಕಿಸಲು ಪ್ರಯತ್ನ ನಡೆಸಿದೆ. ಆದರೆ, ಸಾಧ್ಯವಾಗಲಿಲ್ಲ' ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು.












Click it and Unblock the Notifications