ಶಾಸಕಾಂಗ ಪಕ್ಷದ ಸಭೆಯಲ್ಲಿ ಸಚಿವರ ವಿರುದ್ಧ ದೂರು
ಬೆಂಗಳೂರು, ಜೂ. 18 : ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರೀಕ್ಷೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವರ ಕಾರ್ಯವೈಖರಿ ಕುರಿತು ಶಾಸಕರು ದೂರು ಹೇಳಿದ್ದಾರೆ. ಪ್ರಮುಖವಾಗಿ ಕನ್ನಡ ಮತ್ತು ಸಂಸ್ಕೃತಿ, ವಸತಿ, ಇಂಧನ, ಲೋಕೋಪಯೋಗಿ, ಕೃಷಿ ಇಲಾಖೆಯ ಸಚಿವರ ಬಗ್ಗೆ ಶಾಸಕರು ದೂರಿದ್ದು, ಸಚಿವರು ಕೈಗೆ ಸಿಗುವುದಿಲ್ಲ ಎಂದು ಆರೋಪಿಸಿದ್ದಾರೆ.
ವಿಧಾನಸೌಧದಲ್ಲಿ ಬುಧವಾರ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಹಲವಾರು ವಿಚಾರಗಳ ಕುರಿತು ಬಿಸಿ-ಬಿಸಿ ಚರ್ಚೆಗಳು ನಡೆದವು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರಿಗೆ ಶಾಸಕರು ತಮ್ಮ ದೂರುಗಳನ್ನು ಸಲ್ಲಿಸಿದರು.
ಸಚಿವರು ಮತ್ತು ಅಧಿಕಾರಿಗಳು ಆಡಳಿತ ಪಕ್ಷದ ಶಾಸಕರ ಮಾತನ್ನು ಕೇಳುತ್ತಿಲ್ಲ. ಹೀಗಾದರೆ ನಾವು ಏಕೆ ಇರಬೇಕು? ಎಂದು ಮುಖ್ಯಮಂತ್ರಿಗಳ ಸಮ್ಮುಖದಲ್ಲೇ ಶಾಸಕರು ಸಚಿವರನ್ನು ತರಾಟೆಗೆ ತೆಗೆದುಕೊಂಡರು. ರಾಜ್ಯಸಭೆ ಚುನಾವಣೆಯಲ್ಲಿ ಮಾಜಿ ವಿದೇಶಾಂಗ ಸಚಿವ ಎ.ಎಸ್.ಕೃಷ್ಣ ಅವರಿಗೆ ಟಿಕೆಟ್ ಕೈ ತಪ್ಪಿದ ವಿಷಯ ಸಹ ಸಭೆಯಲ್ಲಿ ಪ್ರಸ್ತಾಪಗೊಂಡಿತು.
ಸಭೆಯ ಬಳಿಕ ಮಾತನಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಂದಿನ ಸಭೆಯಲ್ಲಿ ಎಲ್ಲಾ ಶಾಸಕರಿಗೂ ತಮ್ಮ ಅಭಿಪ್ರಾಯವನ್ನು ಹೇಳಿಕೊಳ್ಳಲು ಸಮಯಾವಕಾಶ ದೊರೆಯಲಿಲ್ಲ. ಆದ್ದರಿಂದ ಸೋಮವಾರ ಪುನಃ ಶಾಸಕಾಂಗ ಪಕ್ಷದ ಸಭೆ ನಡೆಸಲಾಗುವುದು ಎಂದು ಹೇಳಿದರು.

ಸಚಿವರ ವಿರುದ್ಧ ಶಾಸಕರ ಅಸಮಾಧಾನ
ಬುಧವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಆಡಳಿತ ಪಕ್ಷದ ಶಾಸಕರು, ಸಚಿವರ ಮತ್ತು ಕೆಲವು ಅಧಿಕಾರಿಗಳ ಕಾರ್ಯವೈಖರಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ವಿಶೇಷವಾಗಿ ಕನ್ನಡ ಮತ್ತು ಸಂಸ್ಕೃತಿ, ವಸತಿ, ಇಂಧನ, ಲೋಕೋಪಯೋಗಿ ಮತ್ತು ಕೃಷಿ ಇಲಾಖೆಯ ಸಚಿವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಶಾಸಕರು, ಈ ಮಂತ್ರಿಗಳು ಕೈಗೇ ಸಿಗುವುದಿಲ್ಲ. ದೂರವಾಣಿ ಕರೆ ಮಾಡಿದರೂ ಸ್ಪಂದನೆ ಮಾಡುವುದಿಲ್ಲ ಎಂದು ದೂರಿದ್ದಾರೆ.

ನಮ್ಮ ಜಿಲ್ಲೆಗಳಿಗೆ ಸಚಿವರು ಬರುವುದಿಲ್ಲ
ಕೆಲವು ಜಿಲ್ಲಾ ಉಸ್ತುವಾರಿ ಸಚಿವರು ತಮ್ಮ ಜಿಲ್ಲೆಗಳಿಗೆ ಮಾತ್ರ ಸೀಮಿತರಾಗಿದ್ದಾರೆ. ಸಚಿವರು ಎಲ್ಲಾ ಜಿಲ್ಲೆಗಳಿಗೆ ಭೇಟಿ ಕೊಡುತ್ತಿಲ್ಲ, ಪ್ರಗತಿ ಪರಿಶೀಲನಾ ಸಭೆ ಮಾಡುತ್ತಿಲ್ಲ ಎಂದು ಸಚಿವರ ಕಾರ್ಯವೈಖರಿ ಬಗ್ಗೆ ಶಾಸಕರು ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷರಿಗೆ ದೂರು ಸಲ್ಲಿಸಿದರು.

ಇಬ್ರಾಹಿಂ ಬಗ್ಗೆ ಅಪಸ್ವರ
ಮುಖ್ಯಮಂತ್ರಿ ಸಿದ್ದರಾಮಯ್ಯ ಪರಮಾಪ್ತರಾದ ಸಿ.ಎಂ.ಇಬ್ರಾಹಿಂ ಅವರನ್ನು ಯೋಜನಾ ಮಂಡಳಿಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿರುವ ಸರ್ಕಾರದ ನಿರ್ಧಾರದ ಬಗ್ಗೆಯೂ ಕೆಲವು ಶಾಸಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಸೋತವರಿಗೆ ಇಷ್ಟು ಬೇಗ ಏಕೆ ಪಟ್ಟ ಕಟ್ಟಿದ್ದೀರಿ? ಇನ್ನೂ ಸ್ವಲ್ಪ ಕಾಲ ಕಾಯಬಹುದಾಗಿತ್ತು ಎಂದು ಅನೇಕ ಶಾಸಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ರಮ್ಯಾ ಸೋಲಿನ ಬಗ್ಗೆ ಚರ್ಚೆ
ಮಳವಳ್ಳಿ ಶಾಸಕ ನರೇಂದ್ರ ಸ್ವಾಮಿ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಲ್ಲಿ ರಮ್ಯಾ ಅವರ ಸೋಲಿನ ಬಗ್ಗೆ ವಿಷಯ ಪ್ರಸ್ತಾಪಿಸಿದ್ದಾರೆ. ಮಂಡ್ಯ ಕ್ಷೇತ್ರದಲ್ಲಿ ಅಭ್ಯರ್ಥಿ ಸೋಲಿನ ಬಗ್ಗೆ ವರದಿ ತರಿಸಿಕೊಳ್ಳಿ. ಜಿಲ್ಲೆಯಲ್ಲಿ ಕೆಲವು ಕಾಂಗ್ರೆಸ್ ಮುಖಂಡರು ಪಕ್ಷದ ಅಭ್ಯರ್ಥಿ ಸೋಲಿಗೆ ಕಾರಣರಾಗಿದ್ದಾರೆ ಅವರ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದರು.

ಮುಖ್ಯಮಂತ್ರಿಗಳು ಹೇಳಿದ್ದೇನು?
ಶಾಸಕರ ಆರೋಪಗಳಿಗೆ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಇನ್ನು ಕೆಲವೇ ದಿನಗಳಲ್ಲಿ ಗ್ರಾಮ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಬರುತ್ತಿದ್ದು, ಎಲ್ಲ ಶಾಸಕರು ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಸೂಚನೆ ನೀಡಿದರು.

ಪ್ರತಿ ಗುರುವಾರ ಶಾಸಕರ ಭೇಟಿ ಮಾಡಿ
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಎಲ್ಲ ಮಂತ್ರಿಗಳು ಗುರುವಾರ ಶಾಸಕರ ಭೇಟಿಗೆ ಎರಡು ಗಂಟೆ ಮೀಸಲಿಡಬೇಕು. ಕ್ಷೇತ್ರದ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಿ ಸಾಧ್ಯವಾದವುಗಳನ್ನು ಸ್ಥಳದಲ್ಲೇ ಪರಿಹಾರ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.












Click it and Unblock the Notifications