ಕುಮಾರಸ್ವಾಮಿ ಬಜೆಟ್ ಬಗ್ಗೆ ಕಾಂಗ್ರೆಸ್ ಸಭೆಯಲ್ಲಿ ಕಾವೇರಿದ ಚರ್ಚೆ
Recommended Video
ಬೆಂಗಳೂರು, ಜುಲೈ 11 : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಂಡನೆ ಮಾಡಿದ ಬಜೆಟ್ ಬಗ್ಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಇಂದು ವಿರೋಧ ವ್ಯಕ್ತವಾಯಿತು. ಹಲವು ಶಾಸಕರು ಬಜೆಟ್ನ ಹಲವು ಅಂಶಗಳಿಗೆ ವಿರೋಧ ವ್ಯಕ್ತಪಡಿಸಿದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಬುಧವಾರ ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಹೆಚ್ಚಳ ಮಾಡಿರುವ ಬಗ್ಗೆ ಸಭೆಯಲ್ಲಿ ವಿರೋಧ ವ್ಯಕ್ತವಾಯಿತು.
ಕರ್ನಾಟಕ ಬಜೆಟ್ 2018 : ಕುಮಾರಸ್ವಾಮಿ ಆಯವ್ಯಯದ Highlights
ಸಭೆಯಲ್ಲಿ ಮಾತನಾಡಿದ ಮಾಜಿ ಸಚಿವ, ಹಿರಿಯ ನಾಯಕ ಎಚ್.ಕೆ.ಪಾಟೀಲ್, 'ಪೆಟ್ರೋಲ್, ಡೀಸೆಲ್ ಮೇಲಿನ ಹೆಚ್ಚುವರಿ ತೆರಿಗೆ ಪರಿಷ್ಕರಿಸಿ' ಎಂದು ಒತ್ತಾಯಿಸಿದರು.
ಉತ್ತರ ಕರ್ನಾಟಕ ಭಾಗಕ್ಕೆ ಅನುದಾನ ಹಂಚಿಕೆಯಲ್ಲಿ ತಾರತಮ್ಯ, ಅಲ್ಪಸಂಖ್ಯಾತರಿಗೆ ಅನ್ಯಾಯ, ಸಾಲಮನ್ನಾ ವಿಚಾರದಲ್ಲಿ ಆಗುತ್ತಿರುವ ತೊಂದರೆಗಳ ಬಗ್ಗೆ ಶಾಸಕರು ಸಭಾ ನಾಯಕ ಸಿದ್ದರಾಮಯ್ಯ ಅವರ ಗಮನ ಸೆಳೆದರು.
ಕುಮಾರಸ್ವಾಮಿ ಬಜೆಟ್ 2018: ಯಾವುದು ಏರಿಕೆ? ಯಾವ್ದು ಇಳಿಕೆ?
ಅಲ್ಪ ಸಂಖ್ಯಾತರಿಗೆ ಯಾವುದೇ ಯೋಜನೆಗಳನ್ನು ಘೋಷಣೆ ಮಾಡಿಲ್ಲ. ಅನುದಾನವನ್ನು ಕೊಟ್ಟಿಲ್ಲ. ಇದರಿಂದ ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರದ ವಿರುದ್ಧ ತಪ್ಪು ಸಂದೇಶ ಹಬ್ಬುವಂತೆ ಆಗಲಿದೆ ಎಂದು ಕೆಲವು ನಾಯಕರು ಹೇಳಿದರು.
ಸಭೆಯ ಬಳಿಕ ಮಾತನಾಡಿದ ಎಚ್.ಕೆ.ಪಾಟೀಲ್, 'ಉತ್ತರ ಕರ್ನಾಟಕ ಭಾಗಕ್ಕೆ ಅನುದಾನ ಹಂಚಿಕೆಯಲ್ಲಿ ಆಗಿರುವ ಅನ್ಯಾಯದ ಬಗ್ಗೆ ಗಮನ ಸೆಳೆದಿದ್ದೇನೆ. ಪರಮೇಶ್ವರ ಮತ್ತು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳ ಜೊತೆ ಮಾತನಾಡಿ ಸರಿಪಡಿಸುವುದಾಗಿ ಹೇಳಿದ್ದಾರೆ' ಎಂದರು.
ಸಭೆಯ ಬಳಿಕ ಮಾತನಾಡಿದ ಸಚಿವ ಡಿ.ಕೆ.ಶಿವಕುಮಾರ್, 'ಮುಂದಿನ ಚುನಾವಣೆಗೆ ಶಿಸ್ತಿನಿಂದ ಕೆಲಸ ಮಾಡುವಂತೆ ಸೂಚನೆ ನೀಡಲಾಗಿದೆ. ಸಭಾಪತಿ ಸ್ಥಾನ ಬೇಗ ಭರ್ತಿ ಮಾಡಬೇಕು ಎಂದು ಚರ್ಚೆಯಾಗಿದೆ. ನಮ್ಮ ರಾಷ್ಟ್ರೀಯ ಕಾರ್ಯದರ್ಶಿಗಳ ಜೊತೆ ಈ ವಿಚಾರ ಚರ್ಚೆ ಮಾಡಲಾಗುತ್ತದೆ' ಎಂದು ಹೇಳಿದರು.