ಸಚಿವ ಸ್ಥಾನ ನೀಡುತ್ತೇವೆ, ಷರತ್ತು ಅನ್ವಯ!
ಬೆಂಗಳೂರು, ಜ.7 : ಕಾಂಗ್ರೆಸ್ ಪಕ್ಷದಲ್ಲಿನ ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಷರತ್ತು ಹಾಕಿದ್ದಾರೆ. ತಮ್ಮ ಉಸ್ತುವಾರಿಯ ಜಿಲ್ಲೆಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಲೋಕಸಭೆ ಚುನಾವಣೆಯಲ್ಲಿ ಗೆಲ್ಲಿಸಿಕೊಂಡು ಬಂದರೆ ಸಚಿವ ಸ್ಥಾನ ನೀಡುತ್ತೇವೆ ಎಂದು ಭರವಸೆ ನೀಡಿದ್ದಾರೆ.
ಸೋಮವಾರ ವಿಧಾನಪರಿಷತ್ ಸದಸ್ಯರ ತಂಡ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರನ್ನು ಭೇಟಿ ಮಾಡಿ ಪರಿಷತ್ ಸದಸ್ಯರಿಗೆ ಸಚಿವ ಸಂಪುಟ ವಿಸ್ತರಣೆಯಲ್ಲಿ ಅವಕಾಶ ನೀಡಬೇಕು. ಸದ್ಯ ಕೇವಲ ಒಬ್ಬರು ಪರಿಷತ್ ಸದಸ್ಯರಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು ಮನವಿ ಮಾಡಿದರು. [ ಸಿಂಗ್ ಗೆ ದೂರು ಕೊಟ್ಟ ಅತೃಪ್ತ ಶಾಸಕರು]

ಕೆಪಿಸಿಸಿ ಕಚೇರಿಯಲ್ಲಿ ನಡೆಸ ಸಮನ್ವಯ ಸಮತಿ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಿದ ದಿಗ್ವಿಜಯ್ ಸಿಂಗ್, ಶಾಸಕರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಿಗೆ ಅವರ ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿಯನ್ನು ನೀಡುವಂತೆ ಸಿಂಗ್ ಸಿಎಂ ಸಿದ್ದರಾಮಯ್ಯ ಅವರಿಗೆ ಸೂಚಿಸಿದ್ದಾರೆ. [ಸಚಿವರ ಬಗ್ಗೆ ಸಿಂಗ್ ಅತೃಪ್ತಿ]
ಲೋಕಸಭೆ ಚುನಾವಣೆಯಲ್ಲಿ ಯಾವುದೇ ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲನ್ನು ಅನುಭವಿಸಿದರೆ, ಅದಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ನೇರವಾಗಿ ಹೊಣೆಗಾರರಾಗುತ್ತಾರೆ ಎಂದು ಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷರಿಗೆ ದಿಗ್ವಿಜಯ್ ಸಿಂಗ್ ಸೂಚನೆ ನೀಡಿದ್ದಾರೆ. ಆದ್ದರಿಂದ ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವ ಷರತ್ತನ್ನು ಸಿಂಗ್ ಹಾಕಿದ್ದಾರೆ. [ಸಮನ್ವಯ ಸಮಿತಿ ನಿರ್ಣಯಗಳು]
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಉತ್ತಮ ಕೆಲಸ ಮಾಡಿ ಪಕ್ಷ ಹೆಚ್ಚಿನ ಸ್ಥಾನಗಳಿಸಲು ಯಾರು ನೆರವಾಗುತ್ತಾರೋ ಅವರಿಗೆ ಅಧಿಕಾರ ನೀಡಲಾಗುವುದು. ಇದು ಹಾಲಿ ಅಧಿಕಾರದಲ್ಲಿ ಇರುವವರು ಹಾಗೂ ಉನ್ನತ ಸ್ಥಾನಗಳನ್ನು ಬಯಸಿರುವವರು ಈ ನಿಯಮ ಅನ್ವಯವಾಗುತ್ತದೆ ಎಂದು ದಿಗ್ವಿಜಯ್ ಸಿಂಗ್ ಹೇಳಿದ್ದಾರೆ. ಈ ಮೂಲಕ ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಲೋಕಸಭೆ ಚುನಾವಣೆ ನಿರ್ಣಾಯಕವಾಗಿದೆ.












Click it and Unblock the Notifications