ಕಾಂಗ್ರೆಸ್ ಮುಕ್ತ ಕರ್ನಾಟಕ : ಯಾರು, ಏನು ಹೇಳಿದರು?
ಬೆಂಗಳೂರು, ಜ.5 : ಕರ್ನಾಟಕಕ್ಕೆ ಆಗಮಿಸಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ 'ಕಾಂಗ್ರೆಸ್ ಮುಕ್ತ ಕರ್ನಾಟಕ ನಮ್ಮ ಗುರಿಯಾಗಿದೆ' ಎಂದು ಶನಿವಾರ ಹೇಳಿಕೆ ನೀಡಿದ್ದರು. ಕಾಂಗ್ರೆಸ್ ನಾಯಕರು ಇದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಮುಕ್ತ ರಾಜ್ಯ ಮಾಡುವುದು ಬಿಜೆಪಿಯ ಕನಸು ಎಂದು ಕುಟುಕಿದ್ದಾರೆ.
'ಕರ್ನಾಟಕವನ್ನು ಕಾಂಗ್ರೆಸ್ ಮುಕ್ತ ಮಾಡಲು ಸಾಧ್ಯವಿಲ್ಲ. ಬೇರೆ ರಾಜ್ಯದಲ್ಲಿ ಅದು ಸಾಧ್ಯವಾಗಿರಬಹುದು. ಆದರೆ, ರಾಜ್ಯದಲ್ಲಿ ಕಾಂಗ್ರೆಸ್ ಬಲಿಷ್ಠವಾಗಿ, ಸದೃಢವಾಗಿದೆ ಎಂದು' ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ತಿರುಗೇಟು ನೀಡಿದ್ದಾರೆ. [ಚಿತ್ರಗಳಲ್ಲಿ : ಬೆಂಗಳೂರಿನಲ್ಲಿ ಬಿಜೆಪಿ ಚಾಣಾಕ್ಷ ಅಮಿತ್ ಶಾ]
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಶನಿವಾರ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತ, ಕಾಂಗ್ರೆಸ್ ಮುಕ್ತ ಕರ್ನಾಟಕ ಬಿಜೆಪಿ ಗುರಿ ಎಂದು ಹೇಳಿದ್ದರು. ಈ ಬಗ್ಗೆ ಚಿಕ್ಕಬಳ್ಳಾಪುರದಲ್ಲಿ ಪರಮೇಶ್ವರ್ ಅವರನ್ನು ಸುದ್ದಿಗಾರರು ಪ್ರಶ್ನಿಸಿದಾಗ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.
'ಬಿಜೆಪಿಯಲ್ಲಿರುವವರು ಎಲ್ಲರೂ ಅರೆ ಹುಚ್ಚರು ಹಾಗಾಗಿ ಕರ್ನಾಟಕವನ್ನು ಕಾಂಗ್ರೆಸ್ ಮುಕ್ತ ಮಾಡುವ ಕನಸು ಕಾಣುತ್ತಿದ್ದಾರೆ, ಕಾಂಗ್ರೆಸ್ ಮುಕ್ತ ಮಾಡುವುದು ಸಾಧ್ಯವಿಲ್ಲದ ಮಾತು' ಎಂದು ಮಾಜಿ ಸಚಿವ ಎಚ್. ವಿಶ್ವನಾಥ್ ವ್ಯಂಗ್ಯವಾಡಿದ್ದಾರೆ. ಅಮಿತ್ ಶಾ ಹೇಳಿಕೆಗೆ ಯಾರು, ಏನು ಹೇಳಿದರು?
ಕಾಂಗ್ರೆಸ್ ಮುಕ್ತ ಅಸಾಧ್ಯ : ಸಿದ್ದರಾಮಯ್ಯ
'ಕರ್ನಾಟಕವನ್ನು ಕಾಂಗ್ರೆಸ್ ಮುಕ್ತ ಮಾಡಲು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷಕ್ಕೆ 130 ವರ್ಷಗಳ ದೀರ್ಘವಾದ ಇತಿಹಾಸವಿದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಮಿತ್ ಶಾ ಹೇಳಿಕೆಗೆ ಟಾಂಗ್ ನೀಡಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಬಲಿಷ್ಠವಾಗಿದೆ
'ಕರ್ನಾಟಕವನ್ನು ಕಾಂಗ್ರೆಸ್ ಮುಕ್ತ ಮಾಡಲು ಸಾಧ್ಯವಿಲ್ಲ. ಬೇರೆ ರಾಜ್ಯದಲ್ಲಿ ಅದು ಸಾಧ್ಯವಾಗಿರಬಹುದು. ಆದರೆ, ರಾಜ್ಯದಲ್ಲಿ ಕಾಂಗ್ರೆಸ್ ಬಲಿಷ್ಠವಾಗಿ, ಸದೃಢವಾಗಿದೆ ಎಂದು' ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ತಿರುಗೇಟು ನೀಡಿದ್ದಾರೆ. 'ಭ್ರಷ್ಟಾಚಾರದಿಂದಾಗಿಯೇ ರಾಜ್ಯದಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡಿದೆ. ಆದ್ದರಿಂದ ಅದರ ಬಗ್ಗೆ ಬಿಜೆಪಿ ಮಾತನಾಡಲಿ' ಎಂದು ಅವರು ಹೇಳಿದ್ದಾರೆ.
ಪ್ರತಿ ಗಿಡ ಮರದಲ್ಲೂ ಕಾಂಗ್ರೆಸ್ ಹೆಸರಿದೆ
'ಕಾಂಗ್ರೆಸ್ ಮುಕ್ತ ಭಾರತ ನಿರ್ಮಾಣ ಎಂಬುದು ಬಿಜೆಪಿಯ ಕನಸು, ಅದೆಂದಿಗೂ ನನಸಾಗುವುದಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಆಂಜನೇಯ ಅವರು ತಿರುಗೇಟು ಕೊಟ್ಟಿದ್ದಾರೆ. 'ಬಿಜೆಪಿಯೇ ಅಲ್ಲ, ಯಾರಿಂದಲೂ ದೇಶವನ್ನು ಕಾಂಗ್ರೆಸ್ ಮುಕ್ತವಾಗಿಸಲು ಸಾಧ್ಯವಿಲ್ಲ. ದೇಶದ ಜನರಲ್ಲಷ್ಟೇ ಅಲ್ಲ, ಪ್ರತಿ ಗಿಡ ಮರದಲ್ಲೂ ಕಾಂಗ್ರೆಸ್ ಹೆಸರಿದೆ' ಎಂದು ಅವರು ಹೇಳಿದ್ದಾರೆ.
ಬಿಜೆಪಿಯವರು ಅರೆ ಹುಚ್ಚರಂತೆ : ಎಚ್. ವಿಶ್ವನಾಥ್
'ಬಿಜೆಪಿಯಲ್ಲಿರುವವರು ಎಲ್ಲರೂ ಅರೆ ಹುಚ್ಚರು ಹಾಗಾಗಿ ಕರ್ನಾಟಕವನ್ನು ಕಾಂಗ್ರೆಸ್ ಮುಕ್ತ ಮಾಡುವ ಕನಸು ಕಾಣುತ್ತಿದ್ದಾರೆ ಕಾಂಗ್ರೆಸ್ ಮುಕ್ತ ಮಾಡುವುದು ಸಾಧ್ಯವಿಲ್ಲದ ಮಾತು' ಎಂದು ಮಾಜಿ ಸಂಸದ ಎಚ್.ವಿಶ್ವನಾಥ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ['ಅಮಿತ್ ಶಾ ಮಾರಿಗುಡಿ ಪೂಜಾರಿ': ಎಚ್.ವಿಶ್ವನಾಥ್]
ಅಮಿತ್ ಶಾ ಏನು ಹೇಳಿದ್ದರು?
ಶನಿವಾರ ಕರ್ನಾಟಕಕ್ಕೆ ಆಗಮಿಸಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ, 'ಕಾಂಗ್ರೆಸ್ ಮುಕ್ತ ಕರ್ನಾಟಕ ನಮ್ಮ ಗುರಿಯಾಗಿದ್ದು, ಅದಕ್ಕಾಗಿ ಬಿಜೆಪಿ ಸದಸ್ಯತ್ವ ಅಭಿಯಾನವನ್ನು ಆರಂಭಿಸಿದೆ' ಎಂದು ಹೇಳಿದ್ದರು.