ರಾಜ್ಯಸಭೆ ಚುನಾವಣೆ; ಕರ್ನಾಟಕದ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ
ಬೆಂಗಳೂರು, ಜೂನ್ 05 : ರಾಜ್ಯಸಭೆ ಚುನಾವಣೆಗೆ ಕರ್ನಾಟಕ ಕಾಂಗ್ರೆಸ್ನ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ. ಜೂನ್ 19ರಂದು ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಒಂದು ಸ್ಥಾನದಲ್ಲಿ ಸುಲಭವಾಗಿ ಜಯಗಳಿಸಲಿದೆ.
Recommended Video
ರಾಜ್ಯಸಭೆ ಚುನಾವಣೆಗೆ ಕರ್ನಾಟಕದಿಂದ ಮಲ್ಲಿಕಾರ್ಜುನ ಖರ್ಗೆ (77) ಅಭ್ಯರ್ಥಿ ಎಂದು ಎಐಸಿಸಿ ಘೋಷಣೆ ಮಾಡಿದೆ. ಇದರಿಂದಾಗಿ ಅಭ್ಯರ್ಥಿ ಯಾರು? ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಸೋತಿದ್ದ ಖರ್ಗೆ, ಈಗ ರಾಜ್ಯಸಭೆ ಪ್ರವೇಶ ಮಾಡುತ್ತಿದ್ದಾರೆ.
ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಬಿ. ಕೆ. ಹರಿಪ್ರಸಾದ್, ರಾಜೀವ್ ಗೌಡ, ಪ್ರಭಾಕರ ಕೋರೆ ಮತ್ತು ಕುಪೇಂದ್ರ ರೆಡ್ಡಿ ಅವರ ಸದಸ್ಯತ್ವದ ಅವಧಿ ಜೂನ್ 25ಕ್ಕೆ ಮುಗಿಯಲಿದೆ. ಅದರೊಳಗೆ ಚುನಾವಣೆ ನಡೆದು ಹೊಸ ಸದಸ್ಯರು ಆಯ್ಕೆಯಾಗಲಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಆಯ್ಕೆ ಬಗ್ಗೆ ಕರ್ನಾಟಕ ಕಾಂಗ್ರೆಸ್ನಲ್ಲಿ ಯಾವುದೇ ಅಸಮಾಧಾನವಿಲ್ಲ. ಹಿರಿಯ ನಾಯಕರಿಗೆ ಸೂಕ್ತ ಸ್ಥಾನಮಾನ ನೀಡಬೇಕು ಎಂಬ ಕೂಗು ಬಹಳ ದಿನದಿಂದ ಕೇಳಿ ಬರುತ್ತಿತ್ತು. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಹ ಖರ್ಗೆ ಹೆಸರಿಗೆ ಒಪ್ಪಿಗೆ ಸೂಚಿಸಿದ್ದರು.

ಲೋಕಸಭೆ ಚುನಾವಣೆ ಸೋಲು
ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕರಾಗಿದ್ದ ಮಲ್ಲಿಕಾರ್ಜುನ ಖರ್ಗೆ 2019ರ ಲೋಕಸಭೆ ಚುನಾವಣೆಯಲ್ಲಿ ಗುಲ್ಬರ್ಗ ಕ್ಷೇತ್ರದಲ್ಲಿ ಬಿಜೆಪಿಯ ಡಾ. ಉಮೇಶ್ ಜಾಧವ್ ವಿರುದ್ಧ 85 ಸಾವಿರ ಮತಗಳ ಅಂತರದಿಂದ ಸೋಲು ಕಂಡಿದ್ದರು. ಈ ಮೂಲಕ ಅವರ ಸೋಲಿಲ್ಲದ ಸರದಾರ ಹಣೆಪಟ್ಟಿ ಕಳಚಿ ಬಿದ್ದಿತ್ತು.

ಹೈಕಮಾಂಡ್ ಜೊತೆ ಉತ್ತಮ ನಂಟು
ಮಲ್ಲಿಕಾರ್ಜುನ ಖರ್ಗೆ ಯುಪಿಎ ಸರ್ಕಾರದ ಅವಧಿಯಲ್ಲಿ ರೈಲ್ವೆ ಸಚಿವರಾಗಿದ್ದರು. ಕಾಂಗ್ರೆಸ್ ಹೈಕಮಾಂಡ್ ಜೊತೆ ಅವರು ಉತ್ತಮ ಸಂಪರ್ಕ ಹೊಂದಿದ್ದಾರೆ. ಲೋಕಸಭೆಯಲ್ಲಿ ಪ್ರತಿಪಕ್ಷದ ನಾಯಕರಾಗಿ ಎನ್ಡಿಎ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದ್ದರು. ಲೋಕಸಭೆ ಚುನಾವಣೆಯಲ್ಲಿ ಸೋತಿದ್ದ ಅವರು ಈಗ ರಾಜ್ಯಸಭಾ ಸದಸ್ಯರಾಗಿ ಮೇಲ್ಮನೆ ಪ್ರವೇಶ ಮಾಡುತ್ತಿದ್ದಾರೆ.

ಒಂದು ಸ್ಥಾನದಲ್ಲಿ ಗೆಲುವು ಸುಲಭ
ಕರ್ನಾಟಕ ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯ ಬಲ 68. ಒಬ್ಬರು ಅಭ್ಯರ್ಥಿ ಆಯ್ಕೆಯಾಗುವುದಕ್ಕೆ 45 ಮತಗಳು ಸಾಕು. ಆದ್ದರಿಂದ, ಮಲ್ಲಿಕಾರ್ಜುನ ಖರ್ಗೆ ಸುಲಭವಾಗಿ ಗೆಲುವು ಸಾಧಿಸಲಿದ್ದಾರೆ. ಕರ್ನಾಟಕದ ಹಿರಿಯ ನಾಯಕರಿಗೆ ಪಕ್ಷ ರಾಜ್ಯಸಭಾ ಸದಸ್ಯರಾಗುವ ಅವಕಾಶವನ್ನು ನೀಡಿದೆ.

ವಿಧಾನಸಭೆಯಿಂದ ರಾಜ್ಯಸಭೆ
9 ಬಾರಿ ಶಾಸಕರಾಗಿ, 2 ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಮಲ್ಲಿಕಾರ್ಜುನ ಖರ್ಗೆ 2019ರ ಲೋಕಸಭೆ ಚುನಾವಣೆಯಲ್ಲಿ ಸೋಲು ಕಂಡಿದ್ದರು. ಅದರಲ್ಲೂ ಕಾಂಗ್ರೆಸ್ ಪಕ್ಷದಲ್ಲಿ ಅವರ ಜೊತೆಗಿದ್ದ ನಾಯಕರೇ ಬಿಜೆಪಿ ಸೇರಿ ಖರ್ಗೆ ಸೋಲಿಸಲು ಪಣ ತೊಟ್ಟಿದ್ದರು. ಅದರಲ್ಲಿ ಯಶಸ್ವಿಯೂ ಆಗಿದ್ದರು.

ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿ
ರಾಜ್ಯಸಭೆ ಚುನಾವಣೆಗೆ ಕರ್ನಾಟಕದಿಂದ ಅಭ್ಯರ್ಥಿಯಾಗಲು ಮುದ್ದಹನುಮೇಗೌಡ, ವೀರಪ್ಪ ಮೊಯ್ಲಿ, ಮೋಟಮ್ಮ, ಬಿ. ಕೆ. ಹರಿಪ್ರಸಾದ್ ಸೇರಿದಂತೆ ಹಲವು ಹೆಸರುಗಳು ಕೇಳಿ ಬಂದಿದ್ದವು. ಅಂತಿಮವಾಗಿ ಮಲ್ಲಿಕಾರ್ಜುನ ಖರ್ಗೆ ಅಭ್ಯರ್ಥಿಯಾಗಿದ್ದಾರೆ.












Click it and Unblock the Notifications