ಕಾಂಗ್ರೆಸ್ ಅಹೋರಾತ್ರಿ ಧರಣಿ; ರಾಷ್ಟ್ರೀಯ ಪಕ್ಷಗಳಿಗೆ ಕುಮಾರಸ್ವಾಮಿ ಪ್ರಶ್ನೆ!
ಬೆಂಗಳೂರು, ಫೆಬ್ರವರಿ 18; ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ಸದಸ್ಯರು ವಿಧಾನಸಭೆ, ವಿಧಾನ ಪರಿಷತ್ನಲ್ಲಿ ಅಹೋರಾತ್ರಿ ಧರಣಿ ನಡೆಸಿದರು. ಕಲಾಪ ಧರಣಿಗೆ ಆಹುತಿಯಾಗಿದ್ದು ಈ ಕುರಿತು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.
ಶುಕ್ರವಾರ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, "ಕಳೆದೆರಡು ದಿನಗಳ ವಿಧಾನಮಂಡಲ ಕಲಾಪ ರಾಜಕೀಯ ಪ್ರತಿಷ್ಠೆಗೆ ಆಹುತಿಯಾಗಿದೆ. ಬೆಳಗಾವಿ ಕಲಾಪವನ್ನು ಬಲಿ ಪಡೆದ ಮೇಲೂ ರಾಜ್ಯಪಾಲರ ಭಾಷಣದ ಮೇಲೆ ಅಮೂಲ್ಯ ಚರ್ಚೆ ನಡೆಸಬೇಕಿದ್ದ ಈ ಸದನಕ್ಕೂ ಅದೇ ಚಾಳಿ ವಕ್ಕರಿಸಿದೆ" ಎಂದು ಆರೋಪಿಸಿದರು.
"ಪ್ರಜಾಪ್ರಭುತ್ವಕ್ಕೆ ಗ್ರಹಣ ಹಿಡಿಸುವ ಕೆಲಸ ನಡೆದಿದೆ. ಹತ್ತು ನಿಮಿಷ ಧರಣಿ, ಆಮೇಲೆ ಕಲಾಪ ಮುಂದೂಡುವುದು. ಸದನ ನಡೆಯುವ ರೀತಿ ಇದೇನಾ? ಯಾವ ಪುರುಷಾರ್ಥಕ್ಕೆ ಈ ಅಧಿವೇಶನ?. ದಿನಕ್ಕೆ1.5 ರಿಂದ 2 ಕೋಟಿ ರೂ.ನಷ್ಟು ಪೋಲಾಗುವ ಜನರ ತೆರಿಗೆ ಹಣಕ್ಕೆ ಉತ್ತರದಾಯಿತ್ವ ಯಾರದ್ದು? ಅವರ ನಿರೀಕ್ಷೆಗಳನ್ನು ಕಾಲ ಕಸ ಮಾಡಿಕೊಂಡ ರಾಜಕೀಯ ಪ್ರತಿಷ್ಠೆಗೆ ಕೊನೆ ಇಲ್ಲವೆ?" ಎಂದು ಕೇಳಿದ್ದಾರೆ.

"ಕೋವಿಡ್ನಿಂದ ಎರಡು ವರ್ಷ ಮಕ್ಕಳ ಶಿಕ್ಷಣ ಹಾಳಾಯಿತು. ಈಗ ಹಿಜಾಬ್, ಕೇಸರಿ ಶಾಲು ಗಲಾಟೆಯಿಂದ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ನಡುವೆಯೇ ಸಂಘರ್ಷದ ವಾತಾವರಣ ಸೃಷ್ಟಿಯಾಗಿದೆ. ಇದಕ್ಕೆ ಹೊಣೆ ಯಾರು?. ಸಮಾಜಘಾತುಕ ಶಕ್ತಿಗಳನ್ನು ಹತ್ತಿಕ್ಕುವ ಜವಾಬ್ದಾರಿ ರಾಜಕೀಯ ಪಕ್ಷಗಳಿಗೆ ಇಲ್ಲವೇ?" ಎಂದು ಪ್ರಶ್ನೆ ಮಾಡಿದ್ದಾರೆ.
"ಕಲಾಪಕ್ಕೆ ಜನಪರ ಅಜೆಂಡಾ ಇರಬೇಕೆ ವಿನಾ ಚುನಾವಣೆ ಅಜೆಂಡಾ ಅಲ್ಲ. ರಾಷ್ಟ್ರೀಯ ಪಕ್ಷಗಳಿಗೆ ಅಧಿವೇಶನವು ಮತ ಗಳಿಕೆಗೆ ಗುರಾಣಿ ಆಗಿರುವುದು ದುರದೃಷ್ಟಕರ. ತಮ್ಮ ಪ್ರತಿಷ್ಠೆಗೆ ಕಲಾಪವನ್ನು ಹಳಿತಪ್ಪಿಸಿ ಜನರ ನಿರೀಕ್ಷೆಗಳನ್ನು ಹೊಸಕಿ ಹಾಕುವುದು ರಾಷ್ಟ್ರೀಯ ಪಕ್ಷಗಳ ರಕ್ಕಸ ರಾಜಕಾರಣಕ್ಕೆ ನಿದರ್ಶನ ಎನ್ನುವುದು ನನ್ನ ಅಭಿಪ್ರಾಯ" ಎಂದು ಟ್ವೀಟ್ ಮಾಡಿದ್ದಾರೆ.
ಕಲಾಪಕ್ಕೆ ʼಜನಪರ ಅಜೆಂಡಾʼ ಇರಬೇಕೆ ವಿನಾ ʼಚುನಾವಣೆ ಅಜೆಂಡಾʼ ಅಲ್ಲ. ರಾಷ್ಟ್ರೀಯ ಪಕ್ಷಗಳಿಗೆ ಅಧಿವೇಶನವು ʼಮತ ಗಳಿಕೆಗೆ ಗುರಾಣಿʼ ಆಗಿರುವುದು ದುರದೃಷ್ಟಕರ. ತಮ್ಮ ಪ್ರತಿಷ್ಠೆಗೆ ಕಲಾಪವನ್ನು ಹಳಿತಪ್ಪಿಸಿ ಜನರ ನಿರೀಕ್ಷೆಗಳನ್ನು ಹೊಸಕಿ ಹಾಕುವುದು ʼರಾಷ್ಟ್ರೀಯ ಪಕ್ಷಗಳ ರಕ್ಕಸ ರಾಜಕಾರಣʼಕ್ಕೆ ನಿದರ್ಶನ ಎನ್ನುವುದು ನನ್ನ ಅಭಿಪ್ರಾಯ. 5/6
— H D Kumaraswamy (@hd_kumaraswamy) February 18, 2022
"ಜನರು ಕಷ್ಟದಲ್ಲಿದ್ದಾರೆ. ಕೋವಿಡ್ನಿಂದ ಅವರ ಬದಕಿನ ಬವಣೆ ಹೆಚ್ಚಿ ರೋಸಿ ಹೋಗಿದ್ದಾರೆ. ಅವರು ರೊಚ್ಚಿಗೇಳುವ ಮುನ್ನ ಆಡಳಿತಾರೂಢ ಬಿಜೆಪಿ & ಅಧಿಕೃತ ಪ್ರತಿಪಕ್ಷ ಕಾಂಗ್ರೆಸ್ ಎಚ್ಚೆತ್ತುಕೊಂಡು ತಮ್ಮ ಜನವಿರೋಧಿ ನೀತಿ ಬದಲಿಸಿಕೊಳ್ಳಬೇಕು. ವಿಧಾನ ಕಲಾಪಕ್ಕೆ ಕುಣಿಕೆ ಬಿಗಿಯುವ ಹೀನ ರಾಜಕಾರಣ ನಿಲ್ಲಲಿ" ಎಂದು ಆಶಯ ವ್ಯಕ್ತಪಡಿಸಿದ್ದಾರೆ.
ಡಿ. ಕೆ. ಶಿವಕುಮಾರ್ ಪ್ರತಿಕ್ರಿಯೆ; ಶುಕ್ರವಾರ ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, "ನಾವು ಈಶ್ವರಪ್ಪ ಅವರಿಂದ ರಾಜೀನಾಮೆ ಪಡೆಯಿರಿ ಎಂದು ಸರ್ಕಾರಕ್ಕೆ ಕೇಳುತ್ತಿಲ್ಲ. ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂಬುದು ನಮ್ಮ ಆಗ್ರಹ" ಎಂದರು.
"ಮುಖ್ಯಮಂತ್ರಿಗಳು ಪ್ರಮಾಣ ವಚನ ಸ್ವೀಕರಿಸುವಾಗ ಏನೆಂದು ಪ್ರಮಾಣ ಮಾಡಿದ್ದರು?. ಸಂವಿಧಾನ ಕಾಪಾಡುತ್ತೇನೆ. ದೇಶದ ಗೌರವ ಕಾಪಾಡುತ್ತೇನೆ ಎಂದಿದ್ದಾರೆ. ಹೀಗಾಗಿ ಮುಖ್ಯಮಂತ್ರಿಗಳು ಹಾಗೂ ರಾಜ್ಯಪಾಲರು ಈಗ ಆ ಕೆಲಸ ಮಾಡಬೇಕಲ್ಲವೇ?. ಇದು ಕೇವಲ ಈಶ್ವರಪ್ಪನ ವಿಚಾರ ಅಲ್ಲ. ರಾಷ್ಟ್ರಧ್ವಜ ಗೌರವದ ಪ್ರಶ್ನೆ" ಎಂದು ಹೇಳಿದರು.
"ವಿಧಾನಸೌಧದಲ್ಲಿ ಅಹೋರಾತ್ರಿ ನಡೆಸಿದ ಧರಣಿ ನಮ್ಮ ಹಾಗೂ ಬಿಜೆಪಿ ನಡುವಣ ವೈಯಕ್ತಿಕ ಹೋರಾಟ ಅಲ್ಲ. ಈಶ್ವರಪ್ಪ ಅವರು ನನ್ನ ತಂದೆಯನ್ನು ಎಳೆದು ತಂದಿದ್ದಾರೆ. ಅದು ವೈಯಕ್ತಿಕ ವಿಚಾರವಾದರೂ ನಾನು ಆ ಬಗ್ಗೆ ಮಾತನಾಡುತ್ತಿಲ್ಲ. ಇದು ದೇಶದ ಸ್ವಾತಂತ್ರ್ಯ, ಸಂವಿಧಾನ, ರಾಷ್ಟ್ರಧ್ವಜಕ್ಕೆ ಸಂಬಂಧಿಸಿದ ವಿಚಾರ. ಇದಕ್ಕಾಗಿ ನಮ್ಮ, ನಿಮ್ಮ ಪೂರ್ವಜರು ಮಾಡಿರುವ ತ್ಯಾಗ ಬಲಿದಾನ ಅಪಾರವಾಗಿದೆ. ಇದು ದೇಶದ ಗೌರವ ಹಾಗೂ 135 ಕೋಟಿ ಭಾರತೀಯರ ಸ್ವಾಭಿಮಾನದ ಪ್ರಶ್ನೆ" ಎಂದರು.
"ರಾಷ್ಟ್ರಧ್ವಜ ಹಾರುವಾಗ ನಮ್ಮೆಲ್ಲರ ಮೈ ರೋಮಾಂಚನವಾಗುತ್ತದೆ. ಅಂತಹ ಧ್ವಜ ತೆಗೆದುಹಾಕಿ, ಕೇಸರಿ ಧ್ವಜ ಹಾರಿಸುತ್ತೇವೆ ಎಂದು ಹೇಳಿದರೆ ನೋಡಿಕೊಂಡು, ಕೇಳಿಕೊಂಡು ಸುಮ್ಮನೆ ಕೂರಲು ಸಾಧ್ಯವೇ?. ಈ ದೇಶಕ್ಕೆ ರಾಷ್ಟ್ರಧ್ವಜ, ಸ್ವಾತಂತ್ರ್ಯ ತಂದುಕೊಟ್ಟವರು ಕಾಂಗ್ರೆಸಿಗರು. ಹೀಗಾಗಿ ನಾವು ಈ ವಿಚಾರವಾಗಿ ಸುಮ್ಮನೆ ಕೂರಲು ಸಾಧ್ಯವಿಲ್ಲ" ಎಂದು ಸ್ಪಷ್ಟಪಡಿಸಿದರು.












Click it and Unblock the Notifications