ಈಶ್ವರಪ್ಪ ರಾಜೀನಾಮೆಗೆ ಒತ್ತಾಯ; ಕಾಂಗ್ರೆಸ್ ಅಹೋರಾತ್ರಿ ಧರಣಿ
ಬೆಂಗಳೂರು, ಫೆಬ್ರವರಿ 18; ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿರುವ ಪ್ರತಿಪಕ್ಷ ಕಾಂಗ್ರೆಸ್ ಸದಸ್ಯರು ವಿಧಾನಸಭೆ, ವಿಧಾನ ಪರಿಷತ್ನಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.
ಅಹೋರಾತ್ರಿ ಧರಣಿ ಕೈ ಬಿಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮಾಡಿದ ಮನವಿಗೆ ಕಾಂಗ್ರೆಸ್ ನಾಯಕರು ಒಪ್ಪಿಲ್ಲ. ಸರ್ಕಾರದ ವತಿಯಿಂದಲೇ ಧರಣಿ ನಡೆಸುತ್ತಿರುವ ಸದಸ್ಯರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು.
Recommended Video
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯರು ಧರಣಿ ನಡೆಸಿದರು. ರಾತ್ರಿ ಊಟ ಮುಗಿಸಿ ವಿಧಾನಸೌಧದ ಸಭಾಂಗಣದಲ್ಲಿಯೇ ಕಾಂಗ್ರೆಸ್ ಸದಸ್ಯರು ನಿದ್ರೆಗೆ ಜಾರಿದರು. ಹಾಸಿಗೆ ವ್ಯವಸ್ಥೆ ಮಾಡಲಾಯಿತು.
ರಾಷ್ಟ್ರಧ್ವಜಕ್ಕೆ ಸಚಿವ ಕೆ. ಎಸ್. ಈಶ್ವರಪ್ಪ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಧರಣಿ ನಡೆಸುತ್ತಿದೆ. ಕಾಂಗ್ರೆಸ್ ಸದಸ್ಯರ ಗದ್ದಲದ ಕಾರಣ ಗುರುವಾರ ಮಧ್ಯಾಹ್ನವೇ ವಿಧಾನಸಭೆ ಕಲಾಪವನ್ನು ಶುಕ್ರವಾರಕ್ಕೆ ಮುಂದೂಡಲಾಗಿದೆ. ಆದರೆ ಕಾಂಗ್ರೆಸ್ ಸದಸ್ಯರು ವಿಧಾನಸಭೆ ಸಭಾಂಗಣ ಬಿಟ್ಟು ಕದಲಲಿಲ್ಲ.

ಗಡುವು ನೀಡಿದ್ದ ಕಾಂಗ್ರೆಸ್ ನಾಯಕರು
ಗುರುವಾರ ಬೆಳಗ್ಗೆ 11 ಗಂಟೆಯೊಳಗೆ ಸಚಿವ ಈಶ್ವರಪ್ಪ ರಾಜೀನಾಮೆ ನೀಡಬೇಕು ಎಂದು ಕಾಂಗೆಸ್ ಗಡುವು ನೀಡಿತ್ತು. ಆದರೆ ಇದಕ್ಕೆ ಬಿಜೆಪಿ ಮಣಿಯಲಿಲ್ಲ. ಆದ್ದರಿಂದ ವಿಧಾನಸಭೆ ಮತ್ತು ಪರಿಷತ್ ಕಲಾಪ ಆರಂಭವಾಗುತ್ತಿದ್ದಂತೆ ಸಭಾಪತಿ, ಸ್ಪೀಕರ್ ಪೀಠದ ಮುಂದೆ ಕಾಂಗ್ರೆಸ್ ಸದಸ್ಯರು ಧರಣಿ ನಡೆಸಿದರು. ಸ್ಪೀಕರ್ ಮಾಡಿದ ಮನವಿಗೆ ಕಾಂಗ್ರೆಸ್ ಸದಸ್ಯರು ಸ್ಪಂದಿಸಲಿಲ್ಲ. ಬಳಿಕ ಗದ್ದಲದ ನಡುವೆಯೇ ಪ್ರಶ್ನೋತ್ತರ ಕಲಾಪ ನಡೆಸಲಾಯಿತು.

ಶುಕ್ರವಾರಕ್ಕೆ ಕಲಾಪ ಮುಂದೂಡಿಕೆ
ಗುರುವಾರ ಭೋಜನ ವಿರಾಮದ ಬಳಿಕವೂ ಕಾಂಗ್ರೆಸ್ ಸದಸ್ಯರ ಧರಣಿ ಮುಂದುವರೆಯಿತು. ಕಲಾಪ ನಡೆಸಲು ಸಾಧ್ಯವಾಗದ ಕಾರಣ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಶುಕ್ರವಾರಕ್ಕೆ ಕಲಾಪ ಮುಂದೂಡಿದರು. ಆದರೆ ಕಾಂಗ್ರೆಸ್ ನಾಯಕರು ಸಭಾಂಗಣ ಬಿಟ್ಟು ಹೋಗಲಿಲ್ಲ. ಅಹೋರಾತ್ರಿ ಧರಣಿ ನಡೆಸುತ್ತೇವೆ ಎಂದು ಘೋಷಣೆ ಮಾಡಿದರು. ಈಶ್ವರಪ್ಪ ರಾಜೀನಾಮೆ ಪಡೆಯಲೇಬೇಕು ಎಂದು ಪಟ್ಟು ಹಿಡಿದರು.

ಯಡಿಯೂರಪ್ಪ ಸಂಧಾನ ಸಭೆ
ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಕಾಂಗ್ರೆಸ್ ನಾಯಕರೊಂದಿಗೆ ಸಂಧಾನ ಸಭೆ ನಡೆಸಿದರು. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಜೊತೆ ಮಾತುಕತೆ ನಡೆಸಿದರು. ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸಹ ಆಗಮಿಸಿದ ಮಾತುಕತೆ ನಡೆಸಿದರು. ಅಹೋರಾತ್ರಿ ಧರಣಿ ಕೈಬಿಡಿ ವಿಧಾನಸಭೆಯಲ್ಲಿ ಶುಕ್ರವಾರ ನಿಮ್ಮ ಹೋರಟ ಮುಂದುವರೆಸಿ ಎಂದು ಮನವಿ ಮಾಡಿದರು. ಆದರೆ ಕಾಂಗ್ರೆಸ್ ನಾಯಕರು ತಮ್ಮಪಟ್ಟು ಸಡಿಲಿಸಲಿಲ್ಲ.

ಕಾಂಗ್ರೆಸ್ ನಾಯಕರಿಗೆ ಊಟದ ವ್ಯವಸ್ಥೆ
ರಾತ್ರಿ 8.30 ಆದರೂ ಕಾಂಗ್ರೆಸ್ ನಾಯಕರು ತಮ್ಮ ಪಟ್ಟು ಸಡಿಲಿಸಲಿಲ್ಲ. ಇದರಿಂದಾಗಿ ಸರ್ಕಾರದ ವತಿಯಿಂದಲೇ ಕಾಂಗ್ರೆಸ್ ಸದಸ್ಯರಿಗೆ ರಾತ್ರಿ ಊಟದ ವ್ಯವಸ್ಥೆ ಮಾಡಲಾಯಿತು. ಊಟದ ಬಳಿಕ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ವಿಧಾನ ಪರಿಷತ್ ಸದಸ್ಯರ ಜೊತೆ ಇಡೀ ದಿನದ ಬೆಳವಣಿಗೆ ಕುರಿತು ಚರ್ಚೆ ನಡೆಸಿದರು. ಬಳಿಕ ವಿಧಾನಸೌಧದ ಸಭಾಂಗಣದಲ್ಲಿಯೇ ನಿದ್ರೆಗೆ ಜಾರಿದರು.

ಮುಖ್ಯಮಂತ್ರಿಗಳ ಪ್ರತಿಕ್ರಿಯೆ
ಕಾಂಗ್ರೆಸ್ ಅಹೋರಾತ್ರಿ ಧರಣಿ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, "ವಿಧಾಸಸಭೆಯಲ್ಲಿ ಈ ಹಿಂದೆ ಅಹೋರಾತ್ರಿ ಧರಣಿ ರೈತರು, ಜನಪರ ವಿಚಾರಗಳಿಗೆ ನಡೆದಿದೆ. ಆದರೆ ಈಗ ಕಾಂಗ್ರೆಸ್ ನಡೆಸುತ್ತಿರುವ ಧರಣಿಯಲ್ಲಿ ರಾಜ್ಯದ ಹಿತಾಸಕ್ತಿ ಇಲ್ಲ. ಸಚಿವ ಈಶ್ವರಪ್ಪ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡು ಜನರಲ್ಲಿಯೂ ತಪ್ಪು ಅಭಿಪ್ರಾಯವನ್ನು ಮೂಡಿಸಲು ಪ್ರಯತ್ನ ನಡೆಸಲಾಗುತ್ತಿದೆ. ಇದು ಜನ ವಿರೋಧಿಯಾದ ಧರಣಿ" ಎಂದು ಹೇಳಿದ್ದಾರೆ.












Click it and Unblock the Notifications