ಪರಿಷತ್ ಚುನಾವಣೆ: ಗೊಂದಲ ಮೂಡಿಸಿದ ಕೆಪಿಸಿಸಿ ಟ್ವೀಟ್!
ಬೆಂಗಳೂರು, ಜೂ. 22: ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್ನ 7 ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದೆ. ಅವಿರೋಧ ಆಯ್ಕೆಯಾಗಿರುವುದನ್ನು ಚುನಾವಣಾಧಿಕಾರಿಯೂ ಆಗಿದ್ದ ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಅವರು ಘೋಷಣೆ ಮಾಡಿದ್ದಾರೆ. ಆದರೆ ಇದೇ ಸಂದರ್ಭದಲ್ಲಿ ಕೆಪಿಸಿಸಿ ಮಾಡಿರುವ ಟ್ವೀಟ್ ಗೊಂದಲಕ್ಕೆ ಕಾರಣವಾಗಿದೆ.
ಕರ್ನಾಟಕ ವಿಧಾನ ಸಭೆಯಿಂದ ವಿಧಾನ ಪರಿಷತ್ ಸದಸ್ಯತ್ವಕ್ಕಾಗಿ ನಡೆಯುವ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ನಾಸಿರ್ ಅಹ್ಮದ್ (ನಸೀರ್ ಅಹ್ಮದ್) ಅವರು ನಾಮಪತ್ರ ಸಲ್ಲಿಸಿದರು. ಮಾಜಿ ಸಚಿವರಾದ ಕೃಷ್ಣ ಭೈರೇಗೌಡ, ಜಮೀರ್ ಅಹಮ್ಮದ್, ಕೆ.ಆರ್. ರಮೇಶ್ ಕುಮಾರ್, ಶಾಸಕ ರಿಜ್ವಾನ್ ಅರ್ಷದ್, ವಿಧಾನ ಪರಿಷತ್ ಸದಸ್ಯ ನಾರಾಯಣಸ್ವಾಮಿ ಉಪಸ್ಥಿತರಿದ್ದರು ಎಂದು ಕರ್ನಾಟಕ ಕಾಂಗ್ರೆಸ್ ಖಾತೆಯಿಂದ ಟ್ವೀಟ್ ಮಾಡಲಾಗಿದೆ. ಇದು ಗೊಂದಲಕ್ಕೆ ಕಾರಣವಾಗಿದೆ.
ಯಾಕೆಂದರೆ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ನಸೀರ್ ಅಹ್ಮದ್ ಅವರು ಇಂದು (ಜೂನ್ 22) ಮಧ್ಯಾಹ್ನ ಪರಿಷತ್ ಅಭ್ಯರ್ಥಿಯಾಗಿ ಅವಿರೋಧ ಆಯ್ಕೆಯಾಗಿರುವ ಕುರಿತು ಪ್ರಮಾಣ ಪತ್ರವನ್ನು ಪಡೆದುಕೊಂಡಿದ್ದರು. ಎಲ್ಲ ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆಂದು ಅಧಿಕೃತ ಘೊಷಣೆ ಬಳಿಕವೂ, ನಸೀರ್ ಅಹ್ಮದ್ ಅವರು ನಾಮಪತ್ರ ಸಲ್ಲಿಸಿದರು ಎಂದು ಟ್ವೀಟ್ ಮಾಡಲಾಗಿದೆ.

ಕಾಂಗ್ರೆಸ್ ಅಭ್ಯರ್ಥಿಗಳಾಗಿ ಬಿ.ಕೆ. ಹರಿಪ್ರಸಾದ್ ಹಾಗೂ ನಸೀರ್ ಅಹ್ಮದ್ ಅವರು ಈಗಾಗಲೇ ಪರಿಷತ್ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜೊತೆಗೆ ಬಿಜೆಪಿ ನಾಲ್ವರು ಹಾಗೂ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿದ್ದ ಒಬ್ಬ ಅಭ್ಯರ್ಥಿ ಕೂಡಾ ಅವಿರೋಧ ಆಯ್ಕೆಯಾಗಿರುವ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಆದರೂ ಕರ್ನಾಟಕ ಕಾಂಗ್ರೆಸ್ ಪಕ್ಷದಿಂದ ಈ ರೀತೀಯ ಟ್ವೀಟ್ ಮಾಡಿರುವುದು ಕುತೂಹಲ ಹಾಗು ಗೊಂದಲ ಮೂಡಿಸಿದೆ.












Click it and Unblock the Notifications