ನಾಲ್ಕು ಜಿಲ್ಲೆಗಳಿಂದ ಕಾಂಗ್ರೆಸ್ ಪ್ರಚಾರ ಆರಂಭ
ಬೆಂಗಳೂರು, ಜ.6 : ಭಿನ್ನಮತದ ನಡುವೆಯೂ ಲೋಕಸಭೆ ಚುನಾವಣೆ ಸಿದ್ಧತೆ ಆರಂಭಿಸಿರುವ ಕರ್ನಾಟಕ ಕಾಂಗ್ರೆಸ್ ನಾಲ್ಕು ಜಿಲ್ಲೆಗಳಲ್ಲಿ ಸಮಾವೇಶಗಳನ್ನು ನಡೆಸಿ, ಚುನಾವಣಾ ಪ್ರಚಾರ ಕಾರ್ಯ ಆರಂಭಿಸಲು ಮುಂದಾಗಿದೆ. ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ.
ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಸಮನ್ವಯ ಸಮಿತಿ ನಂತರ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಮತ್ತು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಈ ಕುರಿತು ಮಾಹಿತಿ ನೀಡಿದರು. ಬೆಳಗಾವಿ, ಗುಲ್ಬರ್ಗ, ಮೈಸೂರು ಮತ್ತು ಬೆಂಗಳೂರಿನಲ್ಲಿ ಕಾಂಗ್ರೆಸ್ ಸಮಾವೇಶಗಳನ್ನು ನಡೆಸಲಿದ್ದು, ದಿನಾಂಕಗಳು ಇನ್ನೂ ನಿಗದಿಯಾಗಬೇಕಿದೆ ಎಂದು ಹೇಳಿದರು.

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಅವರು ನೀಡುವ ದಿನಾಂಕದ ಆಧಾರದ ಮೇಲೆ ಸಮಾವೇಶದ ದಿನಾಂಕ ನಿಗದಿಪಡಿಸಲಿದ್ದು, ಸಮಾವೇಶದ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಲೋಕಸಭೆ ಚುನಾವಣೆ ಪ್ರಚಾರಕಾರ್ಯ ಆರಂಭಿಸಲಾಗುವುದು ಎಂದು ಪರಮೇಶ್ವರ್ ಹೇಳಿದರು. [ಸಚಿವರ ಕಾರ್ಯ ವೈಖರಿ ಬಗ್ಗೆ ಅಸಮಾಧಾನ]
ಲೋಕಸಭೆ ಚುನಾವಣೆಗೂ ಮುನ್ನ ಕೆಪಿಸಿಸಿ ಸಮಿತಿ ಪುನರ್ ರಚನೆ ಮಾಡಲು ಸಭೆಯಲ್ಲಿ ಚರ್ಚೆ ನಡೆಸಲಾಗಿದ್ದು, ಸಚಿವರು, ಶಾಸಕರಿಗೆ ಸಮಿತಿಯಿಂದ ಕೋಕ್ ನೀಡಿ, ಕಾರ್ಯಕರ್ತರಿಗೆ ಹೆಚ್ಚಿನ ಸ್ಥಾನ ನೀಡಲು ನಿರ್ಧರಿಸಲಾಗಿದೆ. ಒಬ್ಬ ವ್ಯಕ್ತಿಗೆ ಒಂದೇ ಹುದ್ದೆ ನಿಯಮದ ಅನ್ವಯ ಈ ಪುನರ್ ರಚನೆ ನಡೆಯಲಿದೆ ಎಂದು ಪರಮೇಶ್ವರ್ ತಿಳಿಸಿದರು.
ಕೆಪಿಸಿಸಿ ಪುನರ್ ರಚನೆ ಸಂದರ್ಭದಲ್ಲಿ ಒಬ್ಬ ವ್ಯಕ್ತಿಗೆ ಒಂದೇ ಹುದ್ದೆ ಎಂಬ ನಿಯಮ ಪಾಲಿಸಲಾಗುತ್ತದೆ. ಶಾಸಕರು, ಸಚಿವರು, ಜಿಲ್ಲಾಧ್ಯಕ್ಷ ಸ್ಥಾನವನ್ನೂ ಪಡೆದುಕೊಂಡಿದ್ದರೆ ಅಂತಹ ಶಾಸಕರು, ಸಚಿವರನ್ನು ಕೈ ಬಿಟ್ಟು ಆ ಸ್ಥಾನಗಳಿಗೆ ಕಾರ್ಯಕರ್ತರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಪರಮೇಶ್ವರ್ ಹೇಳಿದರು.
ಜನವರಿ 15ರೊಳಗೆ ಕಾರ್ಯಕರ್ತರಿಗೆ ಆದ್ಯತೆ ನೀಡಿ ಕೆಪಿಸಿಸಿ ಸಮಿತಿಯನ್ನು ಪುನರ್ ರಚಿಸಲು ಸಮನ್ವಯ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ. ಪುನರ್ ರಚನೆ ಕಾರ್ಯ ಮುಗಿದ ಬಳಿಕ ಲೋಕಸಭೆ ಚುನಾವಣೆ ಸಿದ್ಧತೆಗಳನ್ನು ಆರಂಭಿಸಲಾಗುತ್ತದೆ ಎಂದು ಅವರು ಮಾಹಿತಿ ನೀಡಿದರು. ಸಭೆಯಲ್ಲಿ ಸಮನ್ವಯ ಸಮಿತಿ ಸದಸ್ಯರಾದ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್, ಸಿಎಂ ಸಿದ್ದರಾಮಯ್ಯ, ಎಐಸಿಸಿ ಉಸ್ತುವಾರಿ ಕಾರ್ಯದರ್ಶಿ ಎ. ಚೆಲ್ಲಕುಮಾರ್ ಹಾಗೂ ಶಾಂತರಾಂ ನಾಯ್ಕ್, ಗೃಹ ಸಚಿವ ಕೆ.ಜೆ. ಜಾರ್ಜ್, ಇಂಧನ ಸಚಿವ ಡಿ.ಕೆ.ಶಿವಕುಮಾರ್ ಭಾಗವಹಿಸಿದ್ದರು.












Click it and Unblock the Notifications