ಸಾರ್ವತ್ರಿಕ ಚುನಾವಣೆಗಳಲ್ಲಿ ಈ ಸಮುದಾಯಗಳಿಗೂ ರಾಜಕೀಯ ಪ್ರಾತಿನಿಧ್ಯ: ಪರಮೇಶ್ವರ
ಬೆಂಗಳೂರು, ಡಿಸೆಂಬರ್ 26: ಸಾರ್ವತ್ರಿಕ ಚುನಾವಣೆಗಳಲ್ಲಿ ಗೆಲುವು ಸಾಧಿಸಲು ಸಾಧ್ಯವಾಗದ ಸಮುದಾಯಗಳಿಗೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸುವುದೇ ಕಾಂಗ್ರೆಸ್ ಪಕ್ಷದ ನೀತಿ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಹೇಳಿದರು.
ಮಂಗಳವಾರ ಬೆಳಗ್ಗೆ ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಎಲ್ಲ ವರ್ಗದ ಜನರಿಗೆ ರಾಜಕೀಯ ಸ್ಥಾನಮಾನ ನೀಡುವುದು ಕಾಂಗ್ರೆಸ್ ಪಕ್ಷದ ಸಿದ್ಧಾಂತ. ಈ ಹಿಂದಿನಿಂದಲೂ ಪಾಲಿಸಿಕೊಂಡು ಬಂದಿದ್ದೇವೆ. ಇದಕ್ಕೆ ಬೇರೆ ರೀತಿಯ ಅರ್ಥ ಕಲ್ಪಿಸುವುದು ಬೇಡ ಎಂದರು.

ಕೆಲ ಸಮುದಾಯಗಳ ನಾಯಕರು ಸಾರ್ವತ್ರಿಕ ಚುನಾವಣೆಗಳಲ್ಲಿ ಗೆಲುವು ಸಾಧಿಸಲು ಆಗುವುದಿಲ್ಲ. ಅಂತಹ ಸಮುದಾಯವನ್ನು ಗುರುತಿಸಿ ವಿಧಾನ ಪರಿಷತ್, ರಾಜ್ಯಸಭೆ ಹಾಗೂ ಸರ್ಕಾರದಲ್ಲಿ ಇನ್ನಿತರ ಸ್ಥಾನಮಾನಗಳನ್ನು ಕಲ್ಪಿಸುತ್ತಿದ್ದೇವೆ. ಕ್ರಿಶ್ಚಿಯನ್, ಮುಸ್ಲಿಂ ಸೇರಿ ಇನ್ನಿತರ ಸಣ್ಣ ಸಮುದಾಯಗಳಿಗೆ ರಾಜಕೀಯ ಸ್ಥಾನ ನೀಡುವ ನಿರಂತರ ಪ್ರಯತ್ನ ಮಾಡುತ್ತಿರುತ್ತೇವೆ ಎಂದು ಹೇಳಿದರು.
ಹೊಸ ವರ್ಷಕ್ಕೆ ಪೊಲೀಸ್ ಬಂದೋಬಸ್ತ್
ಹೊಸ ವರ್ಷದ ಆಚರಣೆ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ಪೊಲೀಸರು ಮುನ್ನೆಚ್ವರಿಕೆ ವಹಿಸಿದ್ದಾರೆ. ಈಗಾಗಲೇ ಪೊಲೀಸ್, ಅಗ್ನಿಶಾಮಕ, ಗುಪ್ತದಳ, ಆರೋಗ್ಯ ಇಲಾಖೆ, ಅಬಕಾರಿ ಇಲಾಖೆ, ಬಿಬಿಎಂಪಿ, ಬಿಎಂಟಿಸಿ ಸೇರಿದಂತೆ ಇನ್ನಿತರ ಇಲಾಖೆಯ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿ, ಕೆಲವು ನಿರ್ದೇಶನಗಳನ್ನು ನೀಡಿದ್ದೇನೆ. ಮೈಸೂರು, ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಮಂಗಳೂರು ನಗರಗಳಲ್ಲಿಯೂ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.
ಕಾರಿಯಪ್ಪ ಪ್ರಕರಣಕ್ಕೆ ಗೃಹ ಸಚಿವರ ಪ್ರತಿಕ್ರಿಯೆ
ಕ್ರಿಕೆಟಿಗ ಕೆ.ಸಿ.ಕಾರಿಯಪ್ಪ ಅವರ ಮೇಲಿನ ಆರೋಪದ ಪ್ರಕರಣವನ್ನು ಡಿಸಿಪಿಯವರು ಕೂಲಂಕುಷವಾಗಿ ತನಿಖೆ ಕೈಗೊಂಡಿದ್ದಾರೆ. ಕಾರಿಯಪ್ಪ ಅವರು ಡ್ರಗ್ಸ್, ಗಾಂಜಾ ಸೇವನೆ ಮಾಡುತ್ತಿದ್ದರು ಎಂದು ದೂರುದಾರ ಮಹಿಳೆ ಮಾಡಿರುವ ಆರೋಪವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿ, ತನಿಖೆ ಆರಂಭಿಸಿದ್ದಾರೆ. ತನಿಖೆಯಲ್ಲಿ ಬರುವ ಅಂಶಗಳನ್ನು ಆಧರಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳುತ್ತಾರೆ ಎಂದು ಹೇಳಿದರು.

ಕೋವಿಡ್ ಹೆಚ್ಚಳ: ಎಚ್ಚರ ಅಗತ್ಯ
ಕೋವಿಡ್ ಜೆಎನ್ 1 ಕುರಿತು ಕೇಂದ್ರ ಸರ್ಕಾರ ಅಡ್ವೈಸರಿ ಕಳುಹಿಸಿದ್ದು, ಅಷ್ಟೊಂದು ಪರಿಣಾಮಕಾರಿಯಾಗಿಲ್ಲ. ಮುಂಜಾಗ್ರತೆ ವಹಿಸುವುದು ಅಗತ್ಯ. ಹೀಗಾಗಿ ಅರವತ್ತು ವರ್ಷ ಮೇಲ್ಪಟ್ಟವರು ಹಾಗೂ ಹೆಚ್ಚು ಜನ ಸೇರುವ ಪ್ರದೇಶಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಸೂಚನೆಗಳನ್ನು ನೀಡಿದೆ. ಆರೋಗ್ಯ ಇಲಾಖೆಯು ಗೃಹ ಇಲಾಖೆಗೆ ಪ್ರತ್ಯೇಕವಾಗಿ ಸೂಚನೆಗಳನ್ನು ಕೊಟ್ಟಿಲ್ಲ. ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಿ ಹೊಸ ವರ್ಷ ಆಚರಿಸಬೇಕು ಎಂದು ತಿಳಿಸಿದರು.












Click it and Unblock the Notifications