ಅಮಿತ್ ಶಾ ದೊಡ್ಡ ಸುಳ್ಳುಗಾರ, ಚಾಣಾಕ್ಷ ಅಲ್ಲ : ಕಾಂಗ್ರೆಸ್ ವ್ಯಂಗ್ಯ
ಬೆಂಗಳೂರು, ಜನವರಿ 17 : ಬಿಜೆಪಿಯವರು ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಲು ಹೊರಟಿದ್ದಾರೆ. ಇವರು ತಿಪ್ಪರಲಾಗ ಹಾಕಿದರೂ ಕರ್ನಾಟಕದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಬೀಳಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ.
ಆಪರೇಷನ್ ಕಮಲ ಮಾಡುತ್ತಿರುವ ಬಿಜೆಪಿ ನಾಯಕರ ವಿರುದ್ಧ ಕರ್ನಾಟಕ ಕಾಂಗ್ರೆಸ್ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಬೆಂಗಳೂರಿನ ಮೌರ್ಯ ಸರ್ಕಲ್ನಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿ, ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್, ಸಚಿವೆ ಡಾ.ಜಯಮಾಲಾ, ಸಚಿವ ಯು.ಟಿ.ಖಾದರ್ ಸೇರಿದಂತೆ ಹಲವು ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ರಾಜ್ಯದ ವಿವಿಧ ಜಿಲ್ಲೆಗಳಲ್ಲೂ ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ.
ಮತ್ತೊಂದು ಕಡೆ ಮೂರು ದಿನಗಳಿಂದ ನಾಪತ್ತೆಯಾಗಿದ್ದ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕ ಬಿ.ನಾಗೇಂದ್ರ ಅವರು ಬೆಂಗಳೂರಿನಲ್ಲಿ ಕಾಣಿಸಿಕೊಂಡಿದ್ದಾರೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅವರು ಗುರುವಾರ ವಿಚಾರಣೆಗೆ ಹಾಜರಾಗಿದ್ದರು.

ಅಮಿತ್ ಶಾ ಚಾಣಾಕ್ಷ ಅಲ್ಲ
ಪ್ರತಿಭಟನೆಯಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕರು, 'ಹಣದ ಮದದಿಂದ ಮೆರೆಯುತ್ತಿರುವುದರಿಂದ ಅಹಂಕಾರಿ ಅಮಿತ್ ಶಾ ಅವರಿಗೆ ಹಂದಿ ಜ್ವರ ಬಂದಿದೆ. ದೇಶಕಂಡ ಅತಿ ದೊಡ್ಡ ಸುಳ್ಳುಗಾರ ಅಮಿತ್ ಶಾ, ಅವರು ಚಾಣಾಕ್ಷ ಅಲ್ಲ ಕುತಂತ್ರಿ' ಎಂದು ಟೀಕಿಸಿದರು.

ಜನರು ತಕ್ಕ ಪಾಠ ಕಲಿಸಲಿದ್ದಾರೆ
ಪ್ರತಿಭಟನೆಯಲ್ಲಿ ಮಾತನಾಡಿದ ಬಿ.ಕೆ.ಹರಿಪ್ರಸಾದ್ ಅವರು, 'ಪಂಚರಾಜ್ಯದ ಸೋಲಿನ ನಂತರ ಬಿಜೆಪಿಯವರು ಹತಾಶರಾಗಿದ್ದಾರೆ. ಇವರ ಕೌಂಟ್ ಡೌನ್ ಶುರುವಾಗಿದೆ. ಸಮಿಶ್ರ ಸರ್ಕಾರ ಭದ್ರವಾಗಿದ್ದು ಸಂಪೂರ್ಣ 5 ವರ್ಷ ಪೂರ್ಣಗೊಳಿಸಲಿದೆ. ಬಿಜೆಪಿಯವರಿಗೆ ಜನರು ತಕ್ಕಪಾಠ ಕಲಿಸಲಿದ್ದಾರೆ' ಎಂದರು.

ಬೆದರಿಕೆಗೆ ಶಾಸಕರು ಬಗ್ಗುವುದಿಲ್ಲ
ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಮಾತನಾಡಿ, 'ಬಿಜೆಪಿಯವರು ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಲು ಹೊರಟಿದ್ದಾರೆ, ಇವರುಗಳು ತಿಪ್ಪರಲಾಗ ಹಾಕಿದ್ರುನೂ ಸಮ್ಮಿಶ್ರ ಸರ್ಕಾರವನ್ನು ಬೀಳಿಸಲು ಸಾಧ್ಯವಿಲ್ಲ. ಇವರ ಅಸೆ, ಆಮಿಷ ಹಾಗೂ ಬೆದರಿಕೆಗೆ ನಮ್ಮ ಯಾವ ಶಾಸಕರು ಬಗ್ಗುವುದಿಲ್ಲ' ಎಂದು ಹೇಳಿದರು.
|
ಬಿಜೆಪಿ ಶಾಸಕರಿಗೆ ಸ್ವಾಗತ
ಐಷಾರಾಮಿ ಹೋಟೆಲ್ನಲ್ಲಿ ರಜೆಯ ಮಜಾ ಅನುಭವಿಸಿ ರಾಜ್ಯಕ್ಕೆ ಮರಳುತ್ತಿರುವ ಬಿಜೆಪಿ ಶಾಸಕರಿಗೆ ಸ್ವಾಗತ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಟ್ವೀಟ್ ಮಾಡಿ ವ್ಯಂಗ್ಯವಾಡಿದ್ದಾರೆ.

ಕಾಂಗ್ರೆಸ್ ಪ್ರತಿಭಟನೆ
ಕಲಬುರಗಿ ಜಿಲ್ಲಾ ಕಾಂಗ್ರೆಸ್ ಸಮಿತಿ ನಗರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮಾಡುತ್ತಿರುವ ಪ್ರಜಾಪ್ರಭುತ್ವದ ಕಗ್ಗೊಲೆ ಮತ್ತು ಕುದುರೆ ವ್ಯಾಪಾರವನ್ನ ಖಂಡಿಸಿ ಇಂದು ಬ್ರಹತ್ ಪ್ರತಿಭಟನೆ ನಡೆಸಿತು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಜಗದೇವ ಗುತ್ತೆದಾರ ಅವರು ಮಾತಾನಾಡಿ, ಕರ್ನಾಟಕದ ಸಮಿಶ್ರ ಸರ್ಕಾರವನ್ನು ಅಸ್ಥಿರ ಮಾಡಲು ಯತ್ನಿಸುತ್ತಿದ್ದ ಬಿಜೆಪಿ ಪಕ್ಷದ ರಾಷ್ಟ್ರೀಯ ನಾಯಕರು ಮತ್ತು ರಾಜ್ಯ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.












Click it and Unblock the Notifications