ಯಾವುದೇ ಸಮಯದಲ್ಲಿ ಚುನಾವಣೆ ಎದುರಿಸಲು ಕಾಂಗ್ರೆಸ್ ಸಿದ್ಧ; ಸಿದ್ದರಾಮಯ್ಯ
ಬೆಂಗಳೂರು, ಜುಲೈ 20: "ರಾಜ್ಯದಲ್ಲಿ ಯಾವುದೇ ಸಮಯದಲ್ಲಿ ಚುನಾವಣೆ ಎದುರಿಸಲು ಕಾಂಗ್ರೆಸ್ ಪಕ್ಷ ಸಿದ್ಧವಾಗಿದೆ" ಎಂದು ಕಾಂಗ್ರೆಸ್ ಹಿರಿಯ ಮುಖಂಡ ಸಿದ್ದರಾಮಯ್ಯ ಹೇಳಿದ್ದಾರೆ. "ಸದ್ಯ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಸಾಧ್ಯತೆ ಇಲ್ಲ" ಎಂದು ಹೇಳಿದ್ದಾರೆ.
ಸಿಎಂ ಯಡಿಯೂರಪ್ಪ ಅವರ ನಾಯಕತ್ವ ಬದಲಾವಣೆ ಸಾಧ್ಯತೆ ಕುರಿತು ಆಡಳಿತಾರೂಢ ಬಿಜೆಪಿಯಲ್ಲಿ ಉಂಟಾಗಿರುವ ಊಹಾಪೋಹಗಳಿಗೆ ಪ್ರತಿಕ್ರಿಯಿಸಿದ ಅವರು, "ಭ್ರಷ್ಟ ಮುಖ್ಯಮಂತ್ರಿ ಹೊರಗೆ ಹೋಗುವುದು ಒಳ್ಳೆಯ ವಿಚಾರ" ಎಂದಿದ್ದಾರೆ.
ಬಿಜೆಪಿಗೆ ತನ್ನ ಆಂತರಿಕ ಬಿಕ್ಕಟ್ಟನ್ನು ನಿಭಾಯಿಸಲು ಅಸಾಧ್ಯವಾದಲ್ಲಿ ಕಾಂಗ್ರೆಸ್ ಸಿದ್ಧವಾಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, "ಯಾವುದೇ ಸಮಯದಲ್ಲಿ ಚುನಾವಣೆ ಎದುರಿಸಲು ಕಾಂಗ್ರೆಸ್ ಸಿದ್ಧವಾಗಿದೆ" ಎಂದಿದ್ದಾರೆ.
"ಯಡಿಯೂರಪ್ಪ ನಿರ್ಗಮಿಸಿದರೆ ಇನ್ನೊಬ್ಬ ವ್ಯಕ್ತಿಯನ್ನು ಸಿಎಂ ಮಾಡಲಾಗುವ ಕಾರಣಕ್ಕೆ ಶೀಘ್ರ ಚುನಾವಣೆ ನಡೆಯುತ್ತದೆ ಎಂದು ನನಗನಿಸುವುದಿಲ್ಲ. ಆದರೆ ಯಾವಾಗ ಚುನಾವಣೆಯಾದರೂ ನಾವು ಅಣಿಯಾಗಿದ್ದೇವೆ" ಎಂದು ಪುನರುಚ್ಚರಿಸಿದರು.
ಕಾಂಗ್ರೆಸ್ ಹೈಕಮಾಂಡ್ ಭೇಟಿಗೆ ಮುಂದಾದ ಸಿದ್ದರಾಮಯ್ಯ
"ಸಿಎಂ ಬದಲಾವಣೆ ಕುರಿತು ಮುಂಚಿನಿಂದಲೂ ನಾನು ಹೇಳುತ್ತಲೇ ಬಂದಿದ್ದೇನೆ. ಯಾರೂ ಅದನ್ನು ನಂಬಲಿಲ್ಲ. ನನಗೆ ತುಂಬಾ ಹಿಂದೆಯೇ ಈ ಮಾಹಿತಿ ದೊರೆತಿದೆ. ಯಡಿಯೂರಪ್ಪ ಅವರ ಸರ್ಕಾರ ಅತಿ ಭ್ರಷ್ಟ ಸರ್ಕಾರ" ಎಂದು ಆರೋಪಿಸಿದ್ದಾರೆ.
Recommended Video
ಈ ಬೆಳವಣಿಗೆಗಳ ಬೆನ್ನಲ್ಲೇ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರು ದೆಹಲಿಗೆ ತೆರಳಿ ಮಂಗಳವಾರ ಕಾಂಗ್ರೆಸ್ ಹೈಕಮಾಂಡ್ ಭೇಟಿ ಮಾಡಲಿರುವುದಾಗಿ ತಿಳಿದುಬಂದಿದೆ.