ಎಐಸಿಸಿ ಪುನಾರಚನೆ: ದಿನೇಶ್ ಗುಂಡೂರಾವ್ ಚಿತ್ತ ತಮಿಳುನಾಡಿನತ್ತ!
ಬೆಂಗಳೂರು, ಸೆ. 12: ಕಳೆದ ವಿಧಾನಸಭಾ ಉಪ ಚುನಾವಣೆ ಕಾಂಗ್ರೆಸ್ ಪಕ್ಷದ ಸೋಲಿನ ಹೊಣೆ ಹೊತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದ ದಿನೇಶ್ ಗುಂಡೂರಾವ್ ಅವರಿಗೆ ಎಐಸಿಸಿ ಹೊಸ ಜವಾಬ್ದಾರಿ ಕೊಟ್ಟಿದೆ. ಪಕ್ಷ ಸಂಘಟನೆಯಲ್ಲಿ ಹೊಸ ಮುಖಗಳಿಗೆ ಅವಕಾಶ ಕೊಡುವ ಮೂಲಕ ಮುಂದಿನ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಹೈಕಮಾಂಡ್ ಈಗಿನಿಂದಲೇ ತಯಾರಿ ನಡೆಸಿದಂತಿದೆ.
ಬದಲಾದ ಸಂದರ್ಭದಲ್ಲಿ ಕೆಪಿಸಿಸಿ ಮಾಜಿ ಅಧ್ಯಕ್ಷ, ಮಾಜಿ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮೂರು ರಾಜ್ಯಗಳ ಕಾಂಗ್ರೆಸ್ ಉಸ್ತುವಾರಿ ಜವಾಬ್ದಾರಿಯನ್ನು ಕೊಡಲಾಗಿದೆ. ಬೆಂಗಳೂರಿನ ಗಾಂಧಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿರುವ ದಿನೇಶ್ ಗುಂಡೂರಾವ್ ಅವರು ಸಿದ್ದರಾಮಯ್ಯ ಹಾಗೂ ಮೈತ್ರಿ ಸರ್ಕಾರದಲ್ಲಿ ಮಂತ್ರಿಯಾಗಿದ್ದವರು. ಜೊತೆಗೆ ಮೂಲ ಕಾಂಗ್ರೆಸ್ಸಿಗರಾಗಿದ್ದು, ಕರ್ನಾಟಕ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿಯೂ ಕೆಲಸ ಮಾಡಿದ ಅನುಭವವಿದೆ. ಹೀಗಾಗಿ ಅವರಿಗೆ ತಮಿಳುನಾಡು, ಪುದುಚ್ಚೇರಿ ಹಾಗೂ ಗೋವಾ ರಾಜ್ಯಗಳ ಕಾಂಗ್ರೆಸ್ ಉಸ್ತುವಾರಿ ಜವಾಬ್ದಾರಿ ವಹಿಸಲಾಗಿದೆ.
ಎಐಸಿಸಿ ಪುನಾರಚನೆ: ಮಲ್ಲಿಕಾರ್ಜುನ್ ಖರ್ಗೆರಿಗೆ ನಿಜವಾಗಿಯೂ ಹಿನ್ನಡೆ ಆಯ್ತಾ?
ಮೂರು ರಾಜ್ಯಗಳಲ್ಲಿಯೂ ಕಾಂಗ್ರೆಸ್ ಪಕ್ಷ ಸಂಘಟನೆ ಮಾಡುವುದು ದಿನೇಶ್ ಗುಂಡೂರಾವ್ ಅವರ ಎದುರಿಗಿರುವ ಸವಾಲು. ಆದರೆ ಕೆಪಿಸಿಸಿ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ನೆರೆಯ ರಾಜ್ಯಗಳ ಕಾಂಗ್ರೆಸ್ ನಾಯಕರೊಂದಿಗೆ ಒಡನಾಟ ಇಟ್ಟುಕೊಂಡಿದ್ದರು. ಹೀಗಾಗಿ ಎಐಸಿಸಿ ದಿನೇಶ್ ಗುಂಡೂರಾವ್ ಅವರ ಮೇಲೆ ಭರವಸೆಯಿಟ್ಟು ಹೊಸ ಜವಾಬ್ದಾರಿ ಕೊಟ್ಟಿದೆ.
Recommended Video
ಕೆಪಿಸಿಸಿ ಮಾಜಿನ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ತಂದೆ ದಿ. ಮಾಜಿ ಮುಖ್ಯಮಂತ್ರಿ ಆರ್. ಗುಂಡೂರಾವ್ ಅವರು ಕೂಡ ಗಾಂಧಿ ಕುಟುಂಬದ ಆಪ್ತರಾಗಿದ್ದರು. ಮುಂದಿನ ದಿನಗಳಲ್ಲಿ ಕರ್ನಾಟಕದಿಂದ ಕೇಂದ್ರಕ್ಕೆ ಹೊಸ ನಾಯಕತ್ವ ಹುಟ್ಟುಹಾಕುವ ನಿಟ್ಟಿನಲ್ಲಿ ಈ ಪ್ರಯೋಗಕ್ಕೆ ಎಐಸಿಸಿ ಮುಂದಾಗಿದೆ ಎನ್ನಲಾಗಿದೆ. ಹಿಂದೆ ಮಾಜಿ ಕೇಂದ್ರ ಸಚಿವ ಬಿ.ಕೆ. ಹರಿಪ್ರಸಾದ್ ಸೇರಿದಂತೆ ಕೆಲವರಿಗೆ ಬೇರೆ ರಾಜ್ಯಗಳ ಉಸ್ತುವಾರಿ ಹೊಣೆಯನ್ನು ಕೊಡಲಾಗಿತ್ತು.