'ಪುರುಷಾರ್ಥದ ಅರ್ಥ ಬಿಜೆಪಿಯವರಿಗೆ ಗೊತ್ತಿದೆಯೇ?'
ದಾವಣಗೆರೆ. ಮೇ 16: 'ನಮ್ಮದು ಅಹಿಂದ ಪರವಾದ ಸರ್ಕಾರ, ರೈತ ಪರವಾದ ಸರ್ಕಾರ, ಮಹಿಳೆಯರ ಪರವಾದ ಸರ್ಕಾರ, ಹಿಂದುಳಿದವರ ಪರವಾದ ಸರ್ಕಾರ, ಇದನ್ನು ಹೇಳಿಕೊಳ್ಳಲು ನಮಗೆ ಮುಚ್ಚುಮರೆ ಇಲ್ಲ. ಬಿಜೆಪಿ ಮುಕ್ತ ಕರ್ನಾಟಕ ನಮ್ಮ ಮುಂದಿನ ಸಂಕಲ್ಪ' ಇದು ಸಿಎಂ ಸಿದ್ದರಾಮಯ್ಯ ಅವರ ಸ್ಪಷ್ಟ ಮಾತುಗಳು.
ಲೇವಡಿ ಮಾಡುವ ವಿಪಕ್ಷದವರಿಗೆ ನಮ್ಮ ಬಗ್ಗೆ ಮಾತನಾಡುವ ನೈತಿಕ ಹಕ್ಕು ಇಲ್ಲ. ಬಿಜೆಪಿಯಿಂದ ಸಿಎಂ ಆಗಿದ್ದ ಜಗದೀಶ್ ಶೆಟ್ಟರ್. ಬಿಎಸ್ ಯಡಿಯೂರಪ್ಪ ಏನು ಮಾಡಿದ್ದಾರೆ ಎಂದು ಹೊಸದಾಗಿ ಹೇಳಬೇಕಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.[ಚಿತ್ರಗಳು : ಸಿದ್ದರಾಮಯ್ಯ ಬೆಂಗಳೂರು ನಗರ ಪ್ರದಕ್ಷಿಣೆ]

ಕಾಂಗ್ರೆಸ್ ಸರ್ಕಾರಕ್ಕೆ ಎರಡು ವರ್ಷ ತುಂಬಿದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿರುವ ಸರ್ವೋದಯ ಸಮಾವೇಶದಲ್ಲಿ ಮಾತನಾಡಿದ ಸಿದ್ದರಾಮಯ್ಯ ತಮ್ಮ ಭಾಷಣದ ಉದ್ದಕ್ಕೂ ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡರು. ಜಗದೀಶ್ ಶೆಟ್ಟರ್ ಅವರಿಗೆ ನಮ್ಮ ಬಗ್ಗೆ ಮಾತನಾಡುವ ಹಕ್ಕಿಲ್ಲ ಎಂದು ಹೇಳಿದರು.[ಕೈ-ಕಮಲದ ನಡುವೆ ಸೂಟು ಬೂಟಿಗೆ ಕಿತ್ತಾಟ]
ನಾವು ಅಧಿಕಾರಕ್ಕೆ ಬಂದ ನಂತರ ರಾಜ್ಯದ ಜನತೆಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ. ನುಡಿದಂತೆ ನಡೆಯುತ್ತಿದ್ದು ಸದಾ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದೇವೆ. ಸರ್ಕಾರದ ಸಾಧನೆ ಬಗ್ಗೆ ಹೆಮ್ಮೆ ಇದೆ ಎಂದು ತಿಳಿಸಿದರು.
ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಾ. ಜಿ ಪರಮೇಶ್ವರ, ಮಹಿಳಾ ವಿಭಾಗದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ ಕರ್, ಸಚಿವರು ಮತ್ತು ಶಾಸಕರು ಭಾಗವಹಿಸಿದ್ದರು.
ಸಿಎಂ ಭಾಷಣಕ್ಕೆ ಮಳೆ ಅಡ್ಡಿ
ಮುಖ್ಯಮಂತ್ರಿ ವೇದಿಕೆಯಲ್ಲಿ ಭಾಷಣ ಮಾಡುತ್ತಿದ್ದಾಗ ಏಕಾಏಕಿ ಮಳೆ ಆರಂಭವಾಯಿತು. ಜನರು ತಾವು ಕುಳಿತಿದ್ದ ಕುರ್ಚಿಯನ್ನೇ ಬಳಸಿ ಮಳೆಯಿಂದ ರಕ್ಷಣೆ ಪಡೆದುಕೊಂಡರು.
ಹುಬ್ಬಳ್ಳಿಯಲ್ಲಿ ಮಾತನಾಡಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಯಾವ ಪುರಷಾರ್ಥಕ್ಕಾಗಿ ಕಾಂಗ್ರೆಸ್ ನವರು ಸಮಾವೇಶ ಮಾಡುತ್ತಿದ್ದಾರೆ? ಸಿದ್ದರಾಮಯ್ಯ ಒಬ್ಬ ಸೋಮಾರಿ ಮುಖ್ಯಮಂತ್ರಿ ಎಂದು ವಾಗ್ದಾಳಿ ಮಾಡಿದ್ದರು. ಇದಕ್ಕೆ ಸಿಎಂ ಸಿದ್ದರಾಮಯ್ಯ ತಮ್ಮ ಭಾಷಣದ ಮೂಲಕ ಉತ್ತರ ನೀಡಿದ್ದಾರೆ.












Click it and Unblock the Notifications