Congress Candidate List : ಗೊಂದಲವೇ ಇಲ್ಲ 68 ಹಾಲಿ ಶಾಸಕರಿಗೆ ಕಾಂಗ್ರೆಸ್ ಟಿಕೆಟ್ ಖಚಿತ!
ಕರ್ನಾಟಕ ಕಾಂಗ್ರೆಸ್ 150 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಹಾಲಿ ಶಾಸಕರಿಗೆ ಈ ಬಾರಿ ಟಿಕೆಟ್ ಸಿಗುವುದು ಬಹುತೇಕ ಖಚಿತವಾಗಿದೆ.
ಬೆಂಗಳೂರು, ಫೆಬ್ರವರಿ 16; ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದೆ. ವಿವಿಧ ಪಕ್ಷಗಳು ಬಿರುಸಿನ ಪ್ರಚಾರವನ್ನು ನಡೆಸುತ್ತಿವೆ. ರಾಜ್ಯದಲ್ಲಿ ಅಧಿಕಾರ ಹಿಡಿಯಲೇ ಬೇಕು ಎಂಬ ಗುರಿಯೊಂದಿಗೆ ಕೆಲಸ ಆರಂಭಿಸಿರುವ ಕಾಂಗ್ರೆಸ್ ಪಕ್ಷ ಅಭ್ಯರ್ಥಿಗಳ ಆಯ್ಕೆಯ ಕಡೆ ಹೆಚ್ಚಿನ ಗಮನ ನೀಡಿದೆ.
ಈ ಬಾರಿಯ ಚುನಾವಣೆಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಮೋಹನ್ ಪ್ರಕಾಶ್ ನೇತೃತ್ವದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಕ್ರೀನಿಂಗ್ ಕಮಿಟಿ ರಚನೆ ಮಾಡಿದ್ದಾರೆ. ಮಂಗಳವಾರ ಬೆಂಗಳೂರಿನಲ್ಲಿ ಕಮಿಟಿಯು ಸುಮಾರು 3 ತಾಸು ಸಭೆ ಮಾಡಿದೆ. ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಕುರಿತು ವಿವರವಾದ ಚರ್ಚೆ ಮಾಡಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಡಿ. ಕೆ. ಶಿವಕುಮಾರ್, ಸಿದ್ದರಾಮಯ್ಯ, ಬಿ. ಕೆ. ಹರಿಪ್ರಸಾದ್, ಎಂ. ಬಿ. ಪಾಟೀಲ ಸೇರಿದಂತೆ ಹಿರಿಯ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು. ಸಭೆಯಲ್ಲಿ ಅಂತಿಮ ಗೊಳಿಸಿದ ಅಭ್ಯರ್ಥಿಗಳ ಪಟ್ಟಿ ಕೇಂದ್ರ ಚುನಾವಣಾ ಸಮಿತಿಗೆ ಸಲ್ಲಿಕೆಯಾಗಲಿದೆ.
ಹಾಲಿ ಶಾಸಕರಿಗೆ ಟಿಕೆಟ್ ನೀಡುವುದು, ಕಳೆದ ಬಾರಿ ಕಡಿಮೆ ಅಂತರದಲ್ಲಿ ಸೋತರವರಿಗೆ ಟಿಕೆಟ್, ಕಡಿಮೆ ಪೈಪೋಟಿ ಇರುವ ಕ್ಷೇತ್ರಗಳಿಗೆ ಅಭ್ಯರ್ಥಿಗಳು ಅಂತಿಮ ಹೀಗೆ ವಿವಿಧ ವಿಷಯಗಳ ಕುರಿತು ಸಭೆಯಲ್ಲಿ ವಿವರವಾದ ಚರ್ಚೆ ನಡೆದಿದೆ. ಯಾವುದೇ ಗೊಂದಲ ಇಲ್ಲದ ಕ್ಷೇತ್ರಗಳ ಪಟ್ಟಿ ಮಾಡಿ ಅಭ್ಯರ್ಥಿಗಳ ಹೆಸರಿಗೆ ಅಂತಿಮ ಮುದ್ರೆ ಒತ್ತಲಾಗಿದೆ...

ಅಭ್ಯರ್ಥಿಗಳ ಆಯ್ಕೆಯಲ್ಲಿ ಕಗ್ಗಂಟು ಇಲ್ಲ
ಮೋಹನ್ ಪ್ರಕಾಶ್ ನೇತೃತ್ವದ ಸ್ಕ್ರೀನಿಂಗ್ ಕಮಿಟಿ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಕಗ್ಗಂಟು ಇಲ್ಲದ 150 ಕ್ಷೇತ್ರಗಳನ್ನು ಪಟ್ಟಿ ಮಾಡಿದೆ. ಈ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದ್ದು, ಕೇಂದ್ರ ಚುನಾವಣಾ ಸಮಿತಿಗೆ ಹೆಸರುಗಳನ್ನು ಕಳಿಸಲಾಗುತ್ತದೆ.
ಈ 150 ಅಭ್ಯರ್ಥಿಗಳ ಪಟ್ಟಿಯಲ್ಲಿ ಹಾಲಿ ಶಾಸಕರು, ಕಳೆದ ಬಾರಿ ಕಡಿಮೆ ಅಂತರದಲ್ಲಿ ಸೋತವರು, ಹೆಚ್ಚು ಆಕಾಂಕ್ಷಿಗಳು ಇಲ್ಲದ ಕ್ಷೇತ್ರಗಳು ಸೇರಿವೆ. ಚುನಾವಣಾ ಕಾರ್ಯಕ್ಕೆ ಸಹಾಯಕವಾಗುವಂತೆ ಈ ಕ್ಷೇತ್ರದ ಅಭ್ಯರ್ಥಿಗಳನ್ನು ಶೀಘ್ರವೇ ಪಕ್ಷ ಬಿಡುಗಡೆ ಮಾಡಲಿದೆ.

68 ಶಾಸಕರಿಗೆ ಟಿಕೆಟ್ ಖಚಿತ
ಕಾಂಗ್ರೆಸ್ ಪಕ್ಷದ ಮೂಲಗಳ ಮಾಹಿತಿ ಪ್ರಕಾರ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ 68 ಹಾಲಿ ಶಾಸಕರಿಗೆ ಟಿಕೆಟ್ ನೀಡಲು ಒಪ್ಪಿಗೆ ನೀಡಲಾಗಿದೆ. ಈ ವಿಚಾರದಲ್ಲಿ ಯಾವುದೇ ಗೊಂದಲ ಉಂಟಾಗಿಲ್ಲ. ಅಲ್ಲದೇ ಕಳೆದ ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಸೋತ ಅಭ್ಯರ್ಥಿಗಳಿಗೆ ಈ ಬಾರಿಯೂ ಟಿಕೆಟ್ ಕೈ ಸೇರುವುದು ಖಚಿತವಾಗಿದೆ.
ಸುಮಾರು 40-50 ಕ್ಷೇತ್ರಗಳಲ್ಲಿ ಟಿಕೆಟ್ಗಾಗಿ ಪೈಪೋಟಿ ಹೆಚ್ಚಿದೆ. 30-40 ಕ್ಷೇತ್ರಗಳಲ್ಲಿ ಅಭ್ಯರ್ಥಿ ಆಯ್ಕೆ ಸ್ವಲ್ಪ ಗೊಂದಲವಿದೆ. ಇಂತಹ ಕಡೆ 3-4 ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಲಾಗಿದೆ. ಕೊನೆಗೆ ಯಾರಿಗೆ ಟಿಕೆಟ್? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಪಕ್ಷಕ್ಕೆ ಸೇರ್ಪಡೆಗೊಂಡಿರುವವರಿಗೆ ಟಿಕೆಟ್
ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಬೇರೆ ಪಕ್ಷದಿಂದ ಬಂದಿರುವ ಮಾಜಿ ಶಾಸಕರು, ಹಾಲಿ ಶಾಸಕರು ಬಂದರೆ ಅವರಿಗೆ ಟಿಕೆಟ್ ನೀಡುವುದು, ಸ್ಥಳೀಯ ಪಕ್ಷದ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕುರಿತು ವಿವರವಾದ ಚರ್ಚೆ ನಡೆದಿದೆ. ಗೊಂದಲಕ್ಕೆ ಎಡೆ ಮಾಡಿಕೊಡದಂತೆ ಎಚ್ಚರಿಕೆಯಿಂದ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ತೀರ್ಮಾನಿಸಲಾಯಿತು. ಅದಕ್ಕೆ ಮೊದಲ ಹಂತದಲ್ಲಿ 150 ಅಭ್ಯರ್ಥಿಗಳ ಪಟ್ಟಿ ಘೋಷಣೆ ಮಾಡೋಣ ಎಂದು ನಾಯಕರು ನಿರ್ಧರಿಸಿದ್ದಾರೆ. ಉಳಿದ ಕ್ಷೇತ್ರಗಳಿಗೆ ಚುನಾವಣಾ ದಿನಾಂಕ ಘೋಷಣೆಯಾದ ಬಳಿಕ ಅಭ್ಯರ್ಥಿಗಳು ಅಂತಿಮವಾಗುವ ನಿರೀಕ್ಷೆ ಇದೆ.

ಸಮುದಾಯದ ಮಟ್ಟದಲ್ಲಿ ಟಿಕೆಟ್ ಹಂಚಿಕೆ
ಕಾಂಗ್ರೆಸ್ ಟಿಕೆಟ್ ಅನ್ನು ಯಾವ-ಯಾವ ಸಮುದಾಯಕ್ಕೆ ನೀಡಬೇಕು ಎಂದು ಸಹ ಸಭೆಯಲ್ಲಿ ಚರ್ಚೆ ನಡೆದಿದೆ. ಈಗಾಗಲೇ ವೀರಶೈವ ಲಿಂಗಾಯತ ಸಮುದಾಯದ ನಾಯಕರು ಸ್ಕ್ರೀನಿಂಗ್ ಕಮಿಟಿಗೆ ಮನವಿಯೊಂದನ್ನು ಸಲ್ಲಿಕೆ ಮಾಡಿದ್ದಾರೆ. ಸಮುದಾಯದ ನಾಯಕರಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕು ಎಂದು ಪತ್ರದಲ್ಲಿ ತಿಳಿಸಲಾಗಿದೆ.
ಫೆಬ್ರವರಿ 13ರಂದು ವೀರಶೈವ ಲಿಂಗಾಯತ ಸಮಯದಾಯದ ಸಭೆ ನಡೆದಿತ್ತು. ಚಾಮರಾಜನಗರ, ಮೈಸೂರು, ಮಂಡ್ಯ, ಹಾಸನ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಸಮುದಾಯದ ನಾಯಕರು ಪ್ರಬಲವಾಗಿದ್ದಾರೆ. ಇಂತಹ ಕ್ಷೇತ್ರಗಳಲ್ಲಿ ಸಮುದಾಯಕ್ಕೆ ಹೆಚ್ಚಿನ ಆದ್ಯತೆ ಸಿಗಬೇಕು ಎಂದು ಚರ್ಚೆ ನಡೆದಿತ್ತು.












Click it and Unblock the Notifications