ರಾಜ್ಯಕ್ಕೆ ಬರ್ತಿರೋ ಮೋದಿಯತ್ತ ಪ್ರಶ್ನೆಗಳ ಬಾಣ ಬಿಟ್ಟ ಕಾಂಗ್ರೆಸ್

ಬೆಂಗಳೂರು, ನವೆಂಬರ್ 9: ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಿ ಮೋದಿಗೆ ಕಾಂಗ್ರೆಸ್ 15 ಪ್ರಶ್ನೆಗಳನ್ನು ಕೇಳಿದೆ. ನವೆಂಬರ್ 11 ರಂದು ಪ್ರಧಾನಿ ನರೇಂದ್ರ ಮೋದಿ ಕೆಂಪೇಗೌಡ ಅವರ ಪ್ರತಿಮೆ ಅನಾವರಣ ಮಾಡಲು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಲವು ಪ್ರಶ್ನೆಗಳನ್ನು ಮೋದಿಯವರ ಮುಂದಿಟ್ಟಿದ್ದಾರೆ.

ಬೆಂಗಳೂರಿನಲ್ಲಿ ಬಧುವಾರ ಸುದ್ದಿಗೋ‍ಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಕಾರ್ಯಧ್ಯಕ್ಷ ರಾಮಲಿಂಗಾ ರೆಡ್ಡಿ, ಮೊದಲಿಗೆ ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಪ್ರತಿಮೆ ಅನಾವರಣ ಮಾಡುತ್ತಿರುವ ನಿಮಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ.

ಆದರೆ ಚುನಾವಣೆ ಸಮೀಪಿಸುತ್ತಿದ್ದಂತೆ ದೇಶದಲ್ಲಿ ಕರ್ನಾಟಕ ಎಂಬ ರಾಜ್ಯವಿದೆ ಎಂದು ಜ್ಞಾನೋದಯವಾಗಿರುವ ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ಮೂರ್ನಾಲ್ಕು ತಿಂಗಳಿಂದ ರಾಜ್ಯದ ಪ್ರದಕ್ಷಣೆ ಆರಂಭಿಸಿದ್ದಾರೆ.

Congress shares 15 questions to PM Narendra Modi who is visting Karnataka

ರಾಜ್ಯ ಬಿಜೆಪಿ ಸರ್ಕಾರ ನುಡಿದಂತೆ ನಡೆದಿಲ್ಲ, ಅವರು ಚುನಾವಣೆಗೂ ಮುನ್ನ ಕೊಟ್ಟ ಭರವಸೆಗಳಲ್ಲಿ ಯಾವುದನ್ನು ಈಡೇರಿಸಿದ್ದೀರಿ ಎಂದು ದಿನ ನಿತ್ಯ ಪ್ರಶ್ನೆ ಕೇಳುತ್ತಲೇ ಇದ್ದೇವೆ. ಆದರೆ ಅದಕ್ಕೆ ಉತ್ತರ ನೀಡುವ ಧಮ್ಮು, ತಾಕತ್ತು ನಿಮ್ಮ ಪಕ್ಷದ ಯಾರಿಗೂ ಇಲ್ಲವಾಗಿದೆ ಎಂದು ರಾಮಲಿಂಗಾ ರೆಡ್ಡಿ ಕಿಡಿಕಾರಿದ್ದಾರೆ.

ಹೀಗಾಗಿ ಡಬಲ್ ಇಂಜಿನ್ ಸರ್ಕಾರ ಕರ್ನಾಟಕದಲ್ಲಿ ಏನು ಸಾಧನೆ ಮಾಡಿ ಗುಡ್ಡೆ ಹಾಕಿದೆ ಎಂದು ಉತ್ತರಿಸುವ ಧಮ್ಮು, ತಾಕತ್ತು 56 ಇಂಚಿನ ಎದೆಯ, ಮಾತಿನ ಮಲ್ಲರಾದ ಪ್ರಧಾನಿ ಮೋದಿ ಅವರಿಗೆ ಇದೆ ಎಂದು ಭಾವಿಸಿ ಈ 15 ಪ್ರಶ್ನೆಗಳನ್ನು ರಾಮಲಿಂಗರೆಡ್ಡಿ ಕೇಳಿದ್ದಾರೆ.

ಕಾಂಗ್ರೆಸ್ 15 ಪ್ರಶ್ನೆಗಳು ಹೀಗಿವೆ ನೋಡಿ? ಉತ್ತರಿಸುತ್ತಾ ಬಿಜೆಪಿ?

1. ಕಳೆದ ನಾಲ್ಕು ವರ್ಷಗಳಿಂದ ರಾಜ್ಯ ನಿರಂತರವಾಗಿ ಪ್ರವಾಹಕ್ಕೆ ಸಿಲುಕಿದೆ. ಈ ಸಂದರ್ಭದಲ್ಲಿ ಕರ್ನಾಟಕದ ಕಡೆ ತಲೆ ಹಾಕದ ನಿಮಗೆ ಈಗ ಚುನಾವಣೆ ಬಂದ ತಕ್ಷಣ ರಾಜ್ಯ ನೆನಪಾಯಿತೆ? ಕಳೆದ ಐದು ವರ್ಷಗಳಲ್ಲಿ ರಾಜ್ಯದಲ್ಲಿ ನೆರೆಯಿಂದಾಗಿ 2.62 ಲಕ್ಷ ಮನೆಗಳು,1.5 ಲಕ್ಷ ಕಿ.ಮೀ ರಸ್ತೆಗಳು, 30 ಸಾವಿರ ಸೇತುವೆಗಳು, 54.32 ಲಕ್ಷ ಹೆಕ್ಟೇರ್ ಕೃಷಿ ಹಾಗೂ ತೋಟಗಾರಿಕಾ ಬೆಳೆ ನಾಶವಾಗಿದೆ. ಒಟ್ಟು 93,648 ಕೋಟಿ ರೂಪಾಯಿಯಷ್ಟು ನಷ್ಟವಾಗಿದ್ದು, ರಾಜ್ಯಕ್ಕೆ ಕೇಂದ್ರದಿಂದ ಬಂದಿರುವ ಪರಿಹಾರ ಎಷ್ಟು?

2. ಡಬಲ್ ಇಂಜಿನ್ ಸರ್ಕಾರ ಬಂದರೆ ರಾಜ್ಯವನ್ನು ಅಭಿವೃದ್ಧಿಯಲ್ಲಿ ತೇಲಿಸುತ್ತೇವೆ ಎಂದಿದ್ದಿರಿ ನೆನಪಿದೆಯೇ? ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಸ್ಮಾರ್ಟ್ ಸಿಟಿ, ಜಲ್ ಜೀವನ ಮಿಷನ್, 2 ಕೋಟಿ ಉದ್ಯೋಗ,ರೈತರ ಆದಾಯ ಡಬಲ್ (2022 ಒಳಗೆ) ಎಲ್ಲರಿಗೂ ಸ್ವಂತ ಸೂರು (2022 ಒಳಗೆ) ಯಾವ ಒಂದು ಯೋಜನೆ ಸಂಪೂರ್ಣವಾಗಿದೆ ಹೇಳಿ?

3. ಕೇಂದ್ರ ಸರ್ಕಾರಕ್ಕೆ ಅತಿಹೆಚ್ಚು ಜಿಎಸ್ಟಿ ಕಟ್ಟುತ್ತಿರುವ ರಾಜ್ಯಗಳಲ್ಲಿ ಕರ್ನಾಟಕ 2ನೇ ರಾಜ್ಯ ಎಂದು ನಿಮ್ಮದೇ ಸರ್ಕಾರ ಟ್ವೀಟ್ ಮಾಡಿತ್ತು. ಇದು ನಿಮ್ಮ ಸಾಧನೆ ಅಲ್ಲ, ಅದು ಈ ರಾಜ್ಯದ ಜನರ ಬೆವರಿನ ಪರಿಶ್ರಮ. ಆದರೆ ನೀವು ಕಲೆಹಾಕಿದ ಜಿಎಸ್ಟಿ ಹಣದಲ್ಲಿ ರಾಜ್ಯಗಳಿಗೆ ಹಂಚಿಕೆ ಆಗುವ ಅನುದಾನದ ಪಟ್ಟಿಯಲ್ಲಿ ರಾಜ್ಯಕ್ಕೆ ಎಷ್ಟನೇ ಸ್ಥಾನ ಇದೆ ಎಂದು ಹೇಳುತ್ತೀರಾ? ಆ ಮೂಲಕ ನಿಮ್ಮ ಸಾಧನೆ ಏನು ಎಂದು ಹೇಳುತ್ತೀರಾ?

4. ಮೊನ್ನೆಯಷ್ಟೇ ರಾಜ್ಯ ಪ್ರವಾಸ ಮಾಡಿ ಕಾಂಗ್ರೆಸ್ ಸರ್ಕಾರ ಮಾಡಿದ್ದ ಯೋಜನೆಗಳನ್ನು ಅನಾವರಣ ಮಾಡಿ ಕ್ಯಾಮೆರಾಗೆ ಪೋಸ್ ಕೊಟ್ಟು ಹೋದಿರಿ. ಈ ಸಂದರ್ಭದಲ್ಲಿ ಸಬ್ ಅರ್ಬನ್ ರೈಲಿಗೆ 40 ತಿಂಗಳು ಗಡವು ನೀಡಿದ್ದೀರಿ. ಈ ಯೋಜನೆಗೆ ಕೇಂದ್ರ ಬಿಡುಗಡೆ ಮಾಡಬೇಕಾಗಿದ್ದ ಹಣ ಎಷ್ಟು? ಈವರೆಗೂ ಎಷ್ಟು ಬಿಡುಗಡೆ ಮಾಡಿದ್ದೀರಿ?

5. ನೀವು ಬಂದಾಗ ನಿಮ್ಮನ್ನು ಮೆಚ್ಚಿಸಲು ಬೆಂಗಳೂರು ನಗರಕ್ಕೆ ಸಿಂಗಾರ ಮಾಡಲು ರಾಜ್ಯ ಸರ್ಕಾರ 23 ಕೋಟಿ ವೆಚ್ಚದಲ್ಲಿ ರಸ್ತೆ ಹಾಕಿದರು. ನೀವು ರಾಜ್ಯ ಬಿಡುತ್ತಿದ್ದಂತೆ ರಸ್ತೆಯ ಡಾಂಬರು ಕೂಡ ಕಿತ್ತು ಬಂದವು. ಡಬಲ್ ಇಂಜಿನ್ ಸರ್ಕಾರದ ಈ ಮಹಾನ್ ಸಾಧನೆ ಬಗ್ಗೆ ನಿಮ್ಮ ಅಭಿಪ್ರಾಯ ಏನು?

Congress shares 15 questions to PM Narendra Modi who is visting Karnataka

6. ಭ್ರಷ್ಟಾಚಾರದ ವಿರುದ್ಧ ಉದ್ದುದ್ದ ಭಾಷಣ ಬಿಗಿದು ನಾ ಖಾವೂಂಗಾ ನಾ ಖಾನೆದೂಂಗಾ ಎಂದ ನೀವು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರ 40% ಕಮಿಷನ್ ಕುರಿತ ದೂರು, RUPSA ಸಂಸ್ಥೆ ನೀಡಿರುವ ದೂರು, ಬೆಳಗಾವಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ, ಹುಬ್ಬಳ್ಳಿ ಗುತ್ತಿಗೆದಾರ ಬಸವರಾಜ್ ಅವರ ದಯಾಮರಣ ಅರ್ಜಿ ಬಗ್ಗೆ ಬಾಯಿಗೆ ಬೀಗ ಜಡಿದು ಕೊಂಡಿರುವುದು ಏಕೆ?

7. ವರ್ಷಕ್ಕೆ 2 ಕೋಟಿ ಉದ್ಯೋಗ ಎಂದವರು, ಈಗ 70 ಸಾವಿರ ನೇಮಕಾತಿಯನ್ನೇ ದೊಡ್ಡ ಸಾಧನೆ ಎಂದು ಪ್ರಚಾರ ಪಡೆಯುತ್ತಿದ್ದೀರಿ. ಪಿಎಸ್ಐ, ಶಿಕ್ಷಕರು, ಅರೋಗ್ಯ ಇಲಾಖೆ ಸೇರಿದಂತೆ ಎಲ್ಲ ಇಲಾಖೆಗಳ ನೇಮಕಾತಿಯಲ್ಲಿ ಅಕ್ರಮ ತಾಂಡವವಾಡುತ್ತಿದೆ. ಆದರೂ ಸಿಬಿಐ, ಇಡಿ, ಆದಾಯ ತೆರಿಗೆ ಇಲಾಖೆಗಳಿಂದ ತನಿಖೆ ಯಾಕಿಲ್ಲ? ಭ್ರಷ್ಟಾಚಾರ ವಿರುದ್ಧದ ಹೋರಾಟ ಎಂದರೆ, ಕಾಂಗ್ರೆಸ್ ನಾಯಕರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸುವುದು ಮಾತ್ರವೇ?

8. ನಿಮ್ಮಲ್ಲಿ ಮುಖ್ಯಮಂತ್ರಿ ಕುರ್ಚಿಯನ್ನು 2500 ಕೋಟಿಗೆ, ಮಂತ್ರಿಸ್ಥಾನವನ್ನು 100 ಕೋಟಿಗೆ ಮಾರಾಟ ಮಾಡಲಾಗಿದೆ ಎಂದು ನಿಮ್ಮದೇ ಶಾಸಕರು ಹೇಳಿದ್ದಾರೆ. ನಿಮ್ಮ ಈ ಅಮೋಘ ಸಾಧನೆ ಬಗ್ಗೆ ಏನು ಹೇಳುತ್ತೀರಿ?

9. ಸಿಲಿಕಾನ್ ಸಿಟಿ, ಐಟಿ ರಾಜಧಾನಿ ಎಂದು ಮನ್ನಣೆ ಗಳಿಸಿದ್ದ ಬೆಂಗಳೂರು ನಗರ ನಿಮ್ಮ ಡಬಲ್ ಇಂಜಿನ್ ಆಡಳಿತದಲ್ಲಿ Sinking City, ಗಾರ್ಬೇಜ್ ಸಿಟಿ ಆಗಿದೆ. ಈ ಬಗ್ಗೆ ನಿಮ್ಮ ಅಭಿಪ್ರಾಯ ಏನು?

10. ಬೆಂಗಳೂರಿನಲ್ಲಿ ಕಳೆದ ಎರಡು ವರ್ಷಗಳಿಂದ ರಸ್ತೆ ಗುಂಡಿಗೆ 20ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಸಾವಿರಾರು ಮಂದಿ ಗಾಯಗೊಂಡಿದ್ದಾರೆ. ಇದರ ಜವಾಬ್ದಾರಿಯನ್ನು ನಿಮ್ಮ ಡಬಲ್ ಇಂಜಿನ್ ಸರ್ಕಾರ ಹೊರಬೇಕಲ್ಲವೆ?

11. ನಾವು ಮೇಕೆದಾಟು ಯೋಜನೆ ಆಗ್ರಹಿಸಿ ಪಾದಯಾತ್ರೆ ಮಾಡಿದ್ದೇವೆ. ಅದಕ್ಕೆ ಹೆದರಿದ ನಿಮ್ಮ ಸರ್ಕಾರ ಬಜೆಟ್ ನಲ್ಲಿ ಯೋಜನೆಗೆ 1 ಸಾವಿರ ಕೋಟಿ ಎಂದು ಘೋಷಣೆ ಮಾಡಿತು. ಮೇಕೆದಾಟು ಯೋಜನೆ ಜಾರಿ ವಿಚಾರ ಎಲ್ಲಿಯವರೆಗೂ ಬಂದಿತು?

12. ಅದೇ ರೀತಿ ಮಹದಾಯಿ ವಿಚಾರದಲ್ಲೂ ರಾಜ್ಯ ಸರ್ಕಾರ 1 ಸಾವಿರ ಕೋಟಿ ರು ಅನುದಾನ ಘೋಷಣೆ ಮಾಡಿದೆ. ಕರ್ನಾಟಕ, ಗೋವಾ, ಮಹಾರಾಷ್ಟ್ರ ಹಾಗೂ ಕೇಂದ್ರದಲ್ಲಿ ಒಟ್ಟು ನಾಲ್ಕು ಇಂಜಿನ್ ಸರ್ಕಾರ ನಿಮ್ಮದೇ ಇದೆ. ಮಹದಾಯಿ ಯೋಜನೆ ಜಾರಿ ಯಾವಾಗ?

13. ಕೋವಿಡ್‌ನಿಂದ ಸತ್ತವರಲ್ಲಿ ಎಷ್ಟು ಕುಟುಂಬಕ್ಕೆ ಪರಿಹಾರ ನೀಡಿದ್ದೀರಿ?

14. ನಿಮ್ಮ ಈ ರಾಜ್ಯ ಪ್ರವಾಸದಲ್ಲಿ ಹಿಂದಿನ ಕಾಂಗ್ರೆಸ್ ಸರ್ಕಾರದ ಮೇಲೆ ಸುಳ್ಳು ಆರೋಪ ಮಾಡದೇ, ನಿಮ್ಮ ಡಬಲ್ ಇಂಜಿನ್ ಸರ್ಕಾರದ ಯಾವುದಾದರೂ ಐದು ಕೊಡುಗೆಗಳನ್ನು ಹೇಳಿ ಜನರಿಂದ ಚಪ್ಪಾಳೆ ಗಿಟ್ಟಿಸಿಕೊಳ್ಳಲು ಸಾಧ್ಯವೇ?

15. ನಾಡಪ್ರಭು ಕೆಂಪೇಗೌಡರು ಈ ನಗರ ಕಟ್ಟುವಾಗ ಎಲ್ಲಾ ಸಮುದಾಯದವರಿಗೂ ಅನುಕೂಲ ಆಗಲೆಂದು 52 ಸಮುದಾಯಗಳ ಪೇಟೆಗಳನ್ನು ನಿರ್ಮಿಸಿದ್ದರು. ಅದು ನಿಜವಾದ ಸಬ್ ಕಾ ಸಾಥ್ ಸಬ್ ಕಾ ವಿಕಾಸ್. ಆದರೆ ನಿಮ್ಮ ಡಬಲ್ ಇಂಜಿನ್ ಸರ್ಕಾರ ಜಾತಿ, ಧರ್ಮಗಳ ಹೆಸರಲ್ಲಿ ದ್ವೇಷ ಬಿತ್ತಿ ಸಮಾಜ ಒಡೆಯುತ್ತಿರುವುದು ಎಷ್ಟರಮಟ್ಟಿಗೆ ಸರಿ?

ಪ್ರತಿಮೆ ಉದ್ಘಾಟನೆ ಕಾರ್ಯಕ್ರಮಕ್ಕೆ ಸರ್ಕಾರಿ ಕಾಲೇಜು ವಿದ್ಯಾರ್ಥಿಗಳನ್ನು ಕರೆತರುವ ಆದೇಶದ ಬಗ್ಗೆ ರಾಮಲಿಂಗಾ ರೆಡ್ಡಿ ಮಾತನಾಡಿ, 'ಈ ಬಗ್ಗೆ ಅವರು ಆದೇಶ ಹೊರಡಿಸಿದ್ದು, ರಾತ್ರಿ ಈ ಆದೇಶ ಹಿಂಪಡೆದಿದ್ದಾರೆ. ನಾನು ಶಿಕ್ಷಣ ಸಚಿವನಾಗಿದ್ದ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರ ಕ್ಷೇತ್ರದಲ್ಲಿ ಜೆಸಿಬಿ ಅವಘಡ ಸಂಭವಿಸಿತ್ತು. ಆನಂತರ ನಾನು ಮಕ್ಕಳನ್ನು ಯಾವುದೇ ಸರ್ಕಾರಿ ಕಾರ್ಯಕ್ರಮಕ್ಕೆ ಕರೆತರಬಾರದು ಎಂದು ನೀತಿ ಮಾಡಿದ್ದೆ. ಈಗ ಅವರು ಆದೇಶ ಹಿಂಪಡೆದಿರುವ ಹಿನ್ನೆಲೆಯಲ್ಲಿ ನಾನು ಆ ವಿಚಾರವಾಗಿ ಮಾತನಾಡಲಿಲ್ಲ' ಎಂದರು.

ರಸ್ತೆಗಳ ಗುಣಮಟ್ಟದ ವಿಚಾರವಾಗಿ ಮಾತನಾಡಿ, 'ಈ ಸರ್ಕಾರ ಬಂದ ನಂತರ ಬೆಂಗಳೂರಿನ ರಸ್ತೆಗಳ ಸ್ಥಿತಿ ಹೀಗೆ ಹೀನಾಯವಾಗಿದೆ. 2013ರಲ್ಲಿ ಬಿಜೆಪಿ ಸರ್ಕಾರ ಹೋದ ನಂತರ ರಸ್ತೆಗಳ ಪರಿಸ್ಥಿತಿ ಹೀಗೆ ಹದಗೆಟ್ಟಿತ್ತು. ಆಗ ನಾನು ಮೂರ್ನಾಲ್ಕು ತಿಂಗಳಲ್ಲಿ ಎಲ್ಲ ರಸ್ತೆ ಪಡಿಸಿದೆ. ರಸ್ತೆ ಹಾಳಾಗಬಾರದು ಎಂಬ ಕಾರಣಕ್ಕೇ ಕಾಂಕ್ರೀಟ್ ರಸ್ತೆಗಳನ್ನು ಮಾಡಲು ಮುಂದಾದೆವು. ಆಗ ಇವರು ವಿರೋಧ ಪಕ್ಷದಲ್ಲಿದ್ದು, ಅದರ ಬಗ್ಗೆ ಟೀಕೆ ಮಾಡಿದ್ದರು. ರಾಜ್ಯದ ಪ್ರಮುಖ ರಸ್ತೆಗಳನ್ನು ಡಾಂಬರೀಕರಣ ಬದಲು ಕಾಂಕ್ರೀಟ್ ರಸ್ತೆ ಹಾಕಬೇಕು ಎಂದು ಸಲಹೆ ನೀಡುತ್ತೇನೆ. ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣ ಮಾಡಬಾರದು' ಎಂದರು.

ಸತೀಶ್ ಜಾರಕಿಹೊಳಿ ಅವರ ವಿವಾದಾತ್ಮಕ ಹೇಳಿಕೆ ವಿಚಾರವಾಗಿ ಮಾತನಾಡಿ, ಈ ಬಗ್ಗೆ ಈಗಾಗಲೇ ಸುರ್ಜೆವಾಲ ಅವರು ಎಲ್ಲ ಸ್ಪಷ್ಟನೆ ನೀಡಿದ್ದಾರೆ. ಸತೀಶ್ ಜಾರಕಿಹೊಳಿ ಅವರು ನಿಜವಾದ ಹಿಂದೂ ಧರ್ಮ ಪಾಲಿಸಿದರೆ, ಬಿಜೆಪಿ ಚುನಾವಣೆಗಾಗಿ ಹಿಂದೂ ಧರ್ಮ ಎಂದು ಮಾತನಾಡುತ್ತಾರೆ. ನಮ್ಮದು ಸನಾತನ ಧರ್ಮ. ನನಗೆ ಅದರ ಬಗ್ಗೆ ಹೆಮ್ಮೆ ಇದೆ. ಸತೀಶ್ ಜಾರಕಿಹೊಳಿ ಅವರು ಯಾವ ಅರ್ಥದಲ್ಲಿ ಹೇಳಿದ್ದಾರೆ ಗೊತ್ತಿಲ್ಲ. ಅವರು ಹಿಂದೂ ಧರ್ಮದ ಬಗ್ಗೆ ಮಾತನಾಡಿಲ್ಲ. ಕೆಲವು ಪುಸ್ತಕದಲ್ಲಿ ಆ ಪದದ ಅರ್ಥ ಹೀಗಿದೆ ಎಂದಿದ್ದಾರೆ. ಕಾಂಗ್ರೆಸ್‌ನವರು ಕಟ್ಟಿದಷ್ಟು ದೇವಾಲಯಗಳು, ದೇವಾಲಯಗಳ ಅಭಿವೃದ್ಧಿ ಹಾಗೂ ಜೀರ್ಣೋದ್ದಾರ ಕಾರ್ಯಗಳಲ್ಲಿ ಬಿಜೆಪಿಯವರು ಶೇ.10ರಷ್ಟು ಮಾಡಿಲ್ಲ' ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+