ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿಎಸ್ ವೈ ಹೆಸರು; ಕಾಂಗ್ರೆಸ್ ಕೆಂಡಾಮಂಡಲ
ಶಿವಮೊಗ್ಗ, ಏಪ್ರಿಲ್ 21: ಶಿವಮೊಗ್ಗದಲ್ಲಿ ನಿರ್ಮಾಣ ಆಗುತ್ತಿರುವ ನೂತನ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೆಸರಿಡುವ ನಿರ್ಧಾರಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದೆ.
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿಎಸ್ ಯಡಿಯೂರಪ್ಪ ಹೆಸರನ್ನು ಇಡುತ್ತಿರುವುದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಕುರ್ಚಿ ಕಸರತ್ತಿನ ರಾಜಕಾರಣ ಎಂದು ಕಾಂಗ್ರೆಸ್ ದೂರಿದೆ.
Shivamogga Airport: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ.ಎಸ್. ಯಡಿಯೂರಪ್ಪ ಹೆಸರು ಅಂತಿಮ; ಸಿಎಂ ಘೋಷಣೆ
"ಕುವೆಂಪು, ಜಿ ಎಸ್ ಶಿವರುದ್ರಪ್ಪ, ಯು.ಆರ್ ಅನಂತಮೂರ್ತಿ, ಶಾಂತವೇರಿ ಗೋಪಾಲಗೌಡ, ಶಿವಪ್ಪ ನಾಯಕ, ಅಕ್ಕಮಹಾದೇವಿ, ಕೆಳದಿ ಚೆನ್ನಮ್ಮರಂತಹ ಸಾಧಕರು ಹಾಗೂ ಐತಿಹಾಸಿಕ ವ್ಯಕ್ತಿಗಳಿದ್ದರೂ ಸರ್ಕಾರಕ್ಕೆ ಅವರ ನೆನಪಾಗಲಿಲ್ಲವೇ?," ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲಿಸಿದ್ದ ಸಿಎಂ:
ಶಿವಮೊಗ್ಗದಲ್ಲಿ ಏಪ್ರಿಲ್ 20ರಂದು ನೂತನ ವಿಮಾನ ನಿಲ್ದಾಣದ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿದ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದರು. ಇದೇ ಡಿಸೆಂಬರ್ ತಿಂಗಳಲ್ಲಿ ನೂತನ ವಿಮಾನ ನಿಲ್ದಾಣವು ಉದ್ಘಾಟನೆಗೆ ಸಜ್ಜಾಗಲಿದೆ. ಎಲ್ಲಾ ಕಾಮಗಾರಿಗಳನ್ನು ಜೊತೆಯಾಗಿ ನಿರ್ವಹಿಸಿ ಲೋಕಾರ್ಪಣೆ ಮಾಡಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ತಿಳಿಸಿದ್ದರು.
ಕೇಂದ್ರ ವಿಮಾನಯಾನ ಸಚಿವರಿಗೆ ಪ್ರಸ್ತಾವನೆ ಕಳುಹಿಸಿ ಅನುಮೋದನೆ ಪಡೆದ ಕೂಡಲೇ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಹೆಸರನ್ನು ನಾಮಕರಣ ಮಾಡಲು ಆದೇಶ ಪಡೆದುಕೊಳ್ಳುತ್ತೇವೆ. ಉಡಾನ್ ಯೋಜನೆಯಡಿ ಕಾಮಗಾರಿಯಲ್ಲಿ ಕೈಗೊಂಡಿದ್ದು, ವಿಮಾನ ನಿಲ್ದಾಣ ಪ್ರಾಧಿಕಾರದ ಅನುಮತಿ ಪಡೆದುಕೊಳ್ಳಲಾಗುವುದು. ಎಟಿಸಿ ಪರಿಕರಗಳನ್ನು ಅಳವಡಿಸಿ, ಸೌಲಭ್ಯ ನಿರ್ಮಿಸಲಾಗುವುದು ಎಂದು ಸಿಎಂ ತಿಳಿಸಿದ್ದರು.
ರಾಜ್ಯದ ಹೆಮ್ಮೆಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ:
ಶಿವಮೊಗ್ಗದ ಕೈಗಾರಿಕೋದ್ಯಮ, ಶಿಕ್ಷಣ, ಆರೋಗ್ಯ ಎಲ್ಲ ಅಭಿವೃದ್ಧಿಗೆ ವಿಮಾನ ಸೌಲಭ್ಯ ಬಹಳ ಪ್ರಮುಖವಾಗಿದೆ. ಜನರ ಸಮಯ ಹಾಗೂ ಹಣದ ಉಳಿತಾಯವೂ ಆಗುತ್ತದೆ. ಬೆಂಗಳೂರಿನ ನಂತರ ವಿವಿಧ ಜಿಲ್ಲೆಗಳಲ್ಲಿ ವಿಮಾನ ನಿಲ್ದಾಣ ನಿರ್ಮಿಸಲಾಗಿದೆ. ವಿಜಯಪುರ ಮತ್ತು ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಕಾಮಗಾರಿ ನಡೆಯುತ್ತಿದೆ. ಶಿವಮೊಗ್ಗದಲ್ಲಿ ಕೈಗಾರಿಕೆ ಹಾಗೂ ವಾಣಿಜ್ಯೋದ್ಯಮಕ್ಕೆ ಇಂಬು ನೀಡಲು ವಿಮಾನ ನಿಲ್ದಾಣದ ಅವಶ್ಯಕತೆ ಬಹಳ ವರ್ಷಗಳಿಂದ ಇದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
2020ರಲ್ಲಿ ವಿಮಾನ ನಿಲ್ದಾಣ ಯೋಜನೆಗೆ ಅನುಮೋದನೆ:
ಕಳೆದ 2006-07ರಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ಪ್ರಾರಂಭಕ್ಕೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಯೋಜನೆ ರೂಪಿಸಿದ್ದರು. 2020ರಲ್ಲಿ ಈ ಯೋಜನೆಗೆ ಅನುಮೋದನೆ ನೀಡಿ ಹಣ ಬಿಡುಗಡೆ ಮಾಡಿದ್ದಾರೆ. ಬೆಂಗಳೂರು ನಂತರ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ 3200 ಮೀಟರ್ ಉದ್ದದ ರನ್ ವೇ ಇರಲಿದೆ. ಏರ್ ಬಸ್ ಲ್ಯಾಂಡ್ ಆಗುವ ವ್ಯವಸ್ಥೆ ಆಗುತ್ತಿದೆ. ಅಂತರರಾಷ್ಟ್ರೀಯ ಮಟ್ಟದ ವಿಮಾನ ನಿಲ್ದಾಣವಾಗಲು ಎಲ್ಲ ಮೂಲಸೌಕರ್ಯಗಳನ್ನು ವ್ಯವಸ್ಥೆಗೊಳಿಸಲಾಗಿದೆ.
ಈ ಭಾಗದ ಅಭಿವೃದ್ಧಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಾಕಷ್ಟು ಶ್ರಮ ವಹಿಸಿದ್ದಾರೆ. ಅವರ ಆಡಳಿತದ ಅವಧಿಯಲ್ಲಿ ಹಲವಾರು ಮೂಲಭೂತ ಸೌಕರ್ಯಗಳನ್ನು ಶಿವಮೊಗ್ಗ ಜಿಲ್ಲೆಗೆ ಕಲ್ಪಿಸಿದ್ದಾರೆ. ವಿಮಾನ ನಿಲ್ದಾಣ ಬರುವ ದಿನಗಳಲ್ಲಿ ಕರ್ನಾಟಕದ ಸಮಗ್ರ ಅಭಿವೃದ್ಧಿ ಈ ಭಾಗದ ಕೈಗಾರಿಕಾ, ವಾಣಿಜ್ಯ ಅಭಿವೃದ್ಧಿಗೆ ಪ್ರಮುಖ ಪಾತ್ರ ವಹಿಸಲಿದೆ. ಕರ್ನಾಟಕದ ಹೆಮ್ಮೆಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಇದಾಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ನೂತನ ವಿಮಾನ ನಿಲ್ದಾಣಕ್ಕೆ ರೈತರ ಸಹಕಾರ:
ಶಿವಮೊಗ್ಗದಲ್ಲಿ ನೂತನ ವಿಮಾನ ನಿಲ್ದಾಣಕ್ಕೆ ಜಿಲ್ಲೆಯ ಹಲವಾರು ರೈತರು ಸಹಕಾರ ನೀಡಿದ್ದಾರೆ. ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ರೈತರ ಸಭೆ ನಡೆಸಲಾಗಿದೆ. ಈ ಮುಂದೆ ಅವಶ್ಯಕತೆ ಇರುವ ಜಮೀನನ್ನು ನೀಡಲು ರೈತರು ಒಪ್ಪಿ ಸಹಕರಿಸಿದ್ದಾರೆ. ಅವರಿಗೆ ಹೃದಯಪೂರ್ವಕ ಧನ್ಯವಾದಗಳು. ಅಂಥ ರೈತರಿಗೆ ಪರಿಹಾರ ನೀಡಬೇಕಿದೆ. ವಿಮಾನ ನಿಲ್ದಾಣ ಕಾಂಪೌಂಡ್ ಸುತ್ತಲಿನ ಸರ್ವಿಸ್ ರಸ್ತೆಗೆ ಡಾಂಬರು ಹಾಕಬೇಕಾಗಿದೆ. ರಾತ್ರಿ ವೇಳೆಯಲ್ಲಿ ವಿಮಾನಗಳನ್ನು ಇಳಿಸಲು (ನೈಟ್ ಲ್ಯಾಂಡಿಂಗ್) ಸೌಲಭ್ಯ ಕಲ್ಪಿಸಬೇಕಿದೆ. ಈ ಎಲ್ಲಾ ಕಾಮಗಾರಿಗಳಿಗೆ ಹೆಚ್ಚುವರಿಯಾಗಿ ಸುಮಾರು 40-50 ಕೋಟಿ ರೂ.ಗಳ ಅಗತ್ಯವಿದೆ. ಅದನ್ನು ರಾಜ್ಯ ಸರ್ಕಾರ ಅನುಮೋದನೆ ನೀಡಿ ಬಿಡುಗಡೆ ಮಾಡಲಿದೆ. ಕಾಂಪೌಂಡಿನ ಹೊರಗೆ ರೈತರು ಹೊಲಗಳನ್ನು ಬಿಟ್ಟುಕೊಟ್ಟಿದ್ದು, ಅವರು ಓಡಾಡಲು ತೊಂದರೆಯಾಗುತ್ತದೆ. ಅದಕ್ಕಾಗಿ ಕಾಂಪೌಂಡಿನ ಆಚೆಗೂ ಡಾಂಬರು ರಸ್ತೆ ನಿರ್ಮಿಸಲಾಗುವುದು. ಶಿವಮೊಗ್ಗದಿಂದ ವಿಮಾನ ನಿಲ್ದಾಣದ ರಸ್ತೆಯನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮಟ್ಟಕ್ಕೆ ಅಭಿವೃದ್ಧಿ ಮಾಡಲಾಗುವುದು. ಇದರಿಂದ ಪ್ರವಾಸೋದ್ಯಮಕ್ಕೂ ಸಹಾಯವಾಗಲಿದೆ.