ವಿಧಾನಸಭೆ ಅಧಿವೇಶನ; ಸಿಎಎ ಬಗ್ಗೆ ಚರ್ಚೆ, ಕಾಂಗ್ರೆಸ್ ಸಭಾತ್ಯಾಗ
ಬೆಂಗಳೂರು, ಫೆಬ್ರವರಿ 18 : ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಚರ್ಚೆಗೆ ಸ್ಪೀಕರ್ ಅವಕಾಶ ನೀಡದ ಹಿನ್ನಲೆಯಲ್ಲಿ ಕಾಂಗ್ರೆಸ್ ಸದಸ್ಯರು ಸಭಾತ್ಯಾಗ ಮಾಡಿದರು. ಕರ್ನಾಟಕ ವಿಧಾನಸಭೆಯ 2ನೇ ದಿನದ ಕಲಾಪ ಮಂಗಳವಾರ ನಡೆಯುತ್ತಿದೆ.
ಕಲಾಪ ಆರಂಭವಾಗುತ್ತಿದ್ದಂತೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೊಸದಾಗಿ ಸಂಪುಟಕ್ಕೆ ಸೇರಿದ ಸಚಿವರ ಪರಿಚಯ ಮಾಡಿಕೊಟ್ಟರು. ಬಳಿಕ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸೂಚನೆ ನೀಡಿದರು.
ಮಂಗಳೂರು ಗೋಲಿಬಾರ್: ಸಿಐಡಿ ತನಿಖೆಗೆ ವಹಿಸಿದ ರಾಜ್ಯ ಸರ್ಕಾರ
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕಾಂಗ್ರೆಸ್ ಸದಸ್ಯರಾದ ಪ್ರಿಯಾಂಕ್ ಖರ್ಗೆ ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರವಾಗಿ ಚರ್ಚೆ ನಡೆಸಲು ಅವಕಾಶ ನೀಡುವಂತೆ ಸ್ಪೀಕರ್ಗೆ ಮನವಿ ಮಾಡಿದರು. ಆದರೆ, ಸ್ಪೀಕರ್ ಬುಧವಾರ ಮಧ್ಯಾಹ್ನ 3 ಗಂಟೆಗೆ ಚರ್ಚೆ ಮಾಡೋಣ ಎಂದು ಹೇಳಿದರು.
ಮಂಗಳೂರು ಗೋಲಿಬಾರ್ಗೆ ಪೊಲೀಸರ ವೈಫಲ್ಯವೇ ಕಾರಣ
ಕಾಂಗ್ರೆಸ್ ಸದಸ್ಯರು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದರು. ನಿಯಮ 69ರ ಅಡಿ ವಿವರವಾದ ಚರ್ಚೆ ಆಗಬೇಕು ಎಂದು ಒತ್ತಾಯಿಸಿದರು. ಆದರೆ, ಸ್ಪೀಕರ್ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ರೂಲಿಂಗ್ ನೀಡಿದರು. ಆದ್ದರಿಂದ ಕಾಂಗ್ರೆಸ್ ಸದಸ್ಯರು ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭಾತ್ಯಾಗ ಮಾಡಿದರು.
ಸಿಎಎ ಬಗ್ಗೆ ಸೊಲ್ಲೆತ್ತದ ರಾಜ್ಯಪಾಲ, ಕಾಂಗ್ರೆಸ್ ಗೆ ನಿರಾಸೆ, ಬಿಜೆಪಿಗೆ ಅನುಮಾನ
ಸಿದ್ದರಾಮಯ್ಯ ಹೇಳಿದ್ದೇನು?
ಕಲಾಪದಲ್ಲಿ ಮಾತನಾಡಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, "ಬಿಜೆಪಿಯವರು ಸಿಎಎ-ಎನ್ಆರ್ಸಿ ಅನ್ನು ಒಂದು ವರ್ಗಕ್ಕೆ ಸೀಮಿತಗೊಳಿಸಿ, ಸಮಾಜದ ಹಾದಿ ತಪ್ಪಿಸಲು ಹೊರಟಿದ್ದಾರೆ. ಪೊಲೀಸ್ ಇಲಾಖೆ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಾ, ಇದನ್ನು ವಿರೋಧಿಸುವವರ ಮೇಲೆ ದೇಶದ್ರೋಹದ ಪ್ರಕರಣ ದಾಖಲಿಸುತ್ತಿದೆ. ಒಟ್ಟಿನಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟುಹೋಗಿದೆ" ಎಂದು ಆರೋಪಿಸಿದರು.
ಸರ್ಕಾರದ ರಾಕ್ಷಸಿ ಪ್ರವೃತ್ತಿ
"ರಾಜ್ಯದಲ್ಲಿ 144 ಸೆಕ್ಷನ್ ಜಾರಿಗೆ ಪೂರಕ ವಾತಾವರಣ ಇಲ್ಲದ ಹೊರತಾಗಿಯೂ ಇದ್ದಕ್ಕಿದ್ದಂತೆ ಸೆಕ್ಷನ್ ಜಾರಿ ಮಾಡಿರುವುದು ನಿಯಮ ಬಾಹಿರ ಎಂದು ಹೈಕೋರ್ಟ್ ತನ್ನ ತೀರ್ಪಿನಲ್ಲಿ ಹೇಳಿದೆ. ಈ ಪ್ರತಿಭಟನೆ ವೇಳೆ ಗೋಲಿಬಾರ್ ಮಾಡಿಸಿ ಇಬ್ಬರು ಅಮಾಯಕರನ್ನು ಬಲಿಪಡೆದಿರುವುದು ಸರ್ಕಾರದ ರಾಕ್ಷಸಿ ಪ್ರವೃತ್ತಿಯನ್ನು ತೋರಿಸುತ್ತಿದೆ" ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
ಪರಿಷತ್ನಲ್ಲಿಯೂ ಪ್ರಸ್ತಾಪ
ವಿಧಾನ ಪರಿಷತ್ನಲ್ಲಿಯೂ ಮಂಗಳೂರು ಗಲಭೆ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ವಿಪಕ್ಷ ನಾಯಕ ಎಸ್. ಆರ್. ಪಾಟೀಲ್ ಮನವಿ ಮಾಡಿದರು. "ಪ್ರತಿಭಟನೆ ಮಾಡುವ ಹಕ್ಕನ್ನು ಕಿತ್ತುಕೊಂಡ ಹಾಗಿದೆ. ಇದರಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ" ಎಂದರು.
ಸಿದ್ದರಾಮಯ್ಯ ಕೊಠಡಿಗೆ ಮಾಧುಸ್ವಾಮಿ
ಸಭಾತ್ಯಾಗ ಮಾಡಿದ ಕಾಂಗ್ರೆಸ್ ಸದಸ್ಯರು ಸಭೆ ನಡೆಸಲು ತೆರಳಿದರು. ಆಗ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ. ಸಿ. ಮಾಧುಸ್ವಾಮಿ ಸಿದ್ದರಾಮಯ್ಯ ಅವರ ಕಚೇರಿಗೆ ತೆರಳಿ ಮನವೊಲಿಕೆ ಮಾಡಲು ಮುಂದಾದರು.