ಶುರುವಾಯ್ತು 'MyCM' ಕ್ಯಾಂಪೇನ್: ಸಿದ್ದು ಪರ ಬ್ಯಾಟ್ ಬೀಸಿದ ಬೆಂಬಲಿಗರು- ಪೇಟಿಎಂ, ಪೇಸಿಎಂ ತರಹವೇ ಮೈಸಿಎಂ ಪೋಸ್ಟರ್
ಬೆಂಗಳೂರು, ಮೇ 13: ಕರ್ನಾಟಕ ವಿಧಾನಸಭೆ ಫಲಿತಾಂಶ ಇಂದು ಹೊರಬರಲಿದೆ. ಈ ಸಂದರ್ಭದಲ್ಲಿ ರಾಜ್ಯದಲ್ಲಿ ಯಾವ ಪಕ್ಷ ಅಧಿಕಾರದ ಗದ್ದುಗೆ ಏರಲಿದೆ ಎಂಬ ಕುತೂಹಲ ಕೆರಳಿಸಿದೆ. ಆಡಳಿತಾರೂಢ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ಗಳು ಸ್ಪರ್ಧೆಯ ಕಣದಲ್ಲಿವೆ. ಆದರೆ, ಸಿದ್ದರಾಮಯ್ಯ ಬೆಂಬಲಿಗರು ಮಾತ್ರ ಅವರು ಸಿಎಂ ಆಗಲೇಬೇಕೆಂದು ಬ್ಯಾಟ್ ಬೀಸಿದ್ದಾರೆ.
ಈ ಹಿಂದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಪೇಸಿಎಂ ಕ್ಯಾಂಪೇನ್ ಅನ್ನು ಕಾಂಗ್ರೆಸ್ ಕೈಗೊಂಡಿತ್ತು. ಬಿಜೆಪಿಯ ಭ್ರಷ್ಟಾಚಾರದ ವಿರುದ್ಧ ಸಮರ ಸಾರಿತ್ತು. ಈ ಪ್ರಚಾರ ತಂತ್ರವು ದೇಶದಾದ್ಯಂತ ಭಾರೀ ಪರ-ವಿರೋಧ ಚರ್ಚೆಗೆ ಗ್ರಾಸವಾಗಿತ್ತು..

ಈಗ ಫಲಿತಾಂಶದ ಹೊತ್ತಿನಲ್ಲಿ ಕಾಂಗ್ರೆಸ್ ಪರ ಅಲೆ ಎಂಬ ನಂಬಿಕೆಯನ್ನು ಕೈ ಬೆಂಬಲಿಗರು ವ್ಯಕ್ತಪಡಿಸಿದ್ದಾರೆ. ಆ ಕಾರಣಕ್ಕಾಗಿ ಅವರು 'MyCM' ಕ್ಯಾಂಪೇನ್ ಅನ್ನು ಆರಂಭಿಸಿದ್ದಾರೆ. ಕಾಂಗ್ರೆಸ್ಗೆ ಬಹುಮತ ಬಂದರೆ ಸಿದ್ದರಾಮಯ್ಯನವರೇ ಸಿಎಂ ಆಗಬೇಕೆಂದು ಬೆಂಬಲಗರು ಒತ್ತಾಯಿಸುತ್ತಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯನವರು ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಅವರ ವಿರುದ್ಧ ಸಚಿವ ವಿ ಸೋಮಣ್ಣ ಅವರು ಕಣಕ್ಕಿಳಿದಿದ್ದಾರೆ. ಈ ವಿಚಾರವಾಗಿ ಮಾತನಾಡಿರುವ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು, 'ಕರ್ನಾಟಕದಲ್ಲಿ ಕಾಂಗ್ರೆಸ್ ಸಂಪೂರ್ಣ ಬಹುಮತ ಪಡೆದು ಸರ್ಕಾರ ರಚಿಸಲಿದೆ. ಸ್ವಂತ ಬಲದಿಂದ ಸರ್ಕಾರ ರಚಿಸುವ ವಿಶ್ವಾಸವಿದೆ' ಎಂದು ತಿಳಿಸಿದ್ದಾರೆ.
ವರುಣಾ ವಿಧಾನಸಭಾ ಕ್ಷೇತ್ರವು ಕರ್ನಾಟಕ ರಾಜ್ಯ ವಿಧಾನಸಭೆಯ ಸ್ಥಾನಗಳಲ್ಲಿ ಒಂದಾಗಿದೆ. ಇದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಭಾಗವಾಗಿದೆ. ಸಿದ್ದರಾಮಯ್ಯನವರ ಪುತ್ರ 2018ರಲ್ಲಿ ಬಿಜೆಪಿಯ ಟಿ ಬಸವರಾಜು ಅವರನ್ನು ಸೋಲಿಸಿ ಕ್ಷೇತ್ರದಲ್ಲಿ ಗೆದ್ದಿದ್ದರು. 2018 ರ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದ 78 ವಿಧಾನಸಭಾ ಕ್ಷೇತ್ರಗಳಲ್ಲಿ ವರುಣಾ ವಿಧಾನಸಭಾ ಕ್ಷೇತ್ರವೂ ಒಂದು.
ಈ ವಿಚಾರವಾಗಿ ಮಾತನಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು, 'ಮತದಾರರಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಶೇ.60ಕ್ಕೂ ಹೆಚ್ಚು ಮತಗಳನ್ನು ಪಡೆಯುತ್ತೇನೆ. ಕಾಂಗ್ರೆಸ್ ಸ್ವಂತ ಬಲದಿಂದ ಸರಕಾರ ರಚಿಸಲಿದೆ. ನಾನು ನಿವೃತ್ತಿಯಾಗುವುದಿಲ್ಲ. ಆದರೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಇದು ನನ್ನ ಕೊನೆಯ ಚುನಾವಣೆ' ಎಂದು ಮತ ಚಲಾಯಿಸಿದ ಬಳಿಕ ಸಿದ್ದರಾಮಯ್ಯ ಹೇಳಿದ್ದಾರೆ.
ವರುಣಾ ವಿಧಾನಸಭಾ ಕ್ಷೇತ್ರದಲ್ಲಿ 2,13,809 ಮತದಾರರಿದ್ದು, ಅವರಲ್ಲಿ 1,08,249 ಪುರುಷ ಮತದಾರರು ಮತ್ತು 1,05,547 ಮಹಿಳೆಯರು ಇದ್ದಾರೆ. ಕ್ಷೇತ್ರದಲ್ಲಿ ಲಿಂಗಾಯತ ಸಮುದಾಯದ ಪ್ರಾಬಲ್ಯವಿದೆ.












Click it and Unblock the Notifications