ಟಿಕೆಟ್ಗಾಗಿ 1230 ಆಕಾಂಕ್ಷಿಗಳು ಅರ್ಜಿ; ರೆಡಿಯಾಯ್ತು ಟಿಕೆಟ್ ಆಕಾಂಕ್ಷಿಗಳ ಶಾರ್ಟ್ ಲಿಸ್ಟ್, ಮೊದಲ ಪಟ್ಟಿ ಬಿಡುಗಡೆ ಯಾವಾಗ.?
ಬೆಂಗಳೂರು,ಫೆಬ್ರವರಿ2: ರಾಜ್ಯ ಕಾಂಗ್ರೆಸ್ ನಲ್ಲಿ ಈ ಬಾರಿ ಟಿಕೆಟ್ಗಾಗಿ 1230 ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದು, ಇಂದು ನಡೆದ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆಯಲ್ಲಿ ಟಿಕೆಟ್ ಆಕಾಂಕ್ಷಿಗಳ ಹೆಸರನ್ನು ಶಾರ್ಟ್ ಲಿಸ್ಟ್ ಮಾಡಲಾಗಿದೆ.
ಗುರುವಾರ ಬೆಂಗಳೂರು ಹೊರ ವಲಯದಲ್ಲಿ ನಡೆದ ರಾಜ್ಯ ನಾಯಕ ಸಭೆಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಹೆಸರನ್ನು ಶಾರ್ಟ್ ಲಿಸ್ಟ್ ಮಾಡಿದ್ದು, ಮೂಲಗಳ ಪ್ರಕಾರ ತಿಂಗಳಾದ್ಯಂತದಲ್ಲಿ ಕಾಂಗ್ರೆಸ್ ಮೊದಲ ಪಟ್ಟಿ ಪ್ರಕಟಗೊಳ್ಳಲಿದೆ ಎಂದು ತಿಳಿದು ಬಂದಿದೆ.
ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ
ಇನ್ನೂ ಕಾಂಗ್ರೆಸ್ ನಲ್ಲಿ ಟಿಕೆಟ್ಗಾಗಿ 1230 ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದು, ಇಂದಿನ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಪರಿಷತ್ ಪ್ರತಿಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದು, ಟಿಕೆಟ್ ನೀಡುವ ಕುರಿತು ಚರ್ಚೆ ನಡೆಸಿದ್ದಾರೆ. ಈಗಾಗಲೇ ಶಾರ್ಟ್ ಲಿಸ್ಟ್ ಮಾಡಿದ್ದು, ಈ ಸಂದರ್ಭದಲ್ಲಿ ಕೆಲವು ಹೆಸರುಗಳನ್ನ ಕೈ ಬಿಡಲಾಗಿದೆ. ಅದೇ ಅಲ್ಲದೇ ಬಹುತೇಕ ಹಾಲಿ ಶಾಸಕರಿಗೆ ಟಿಕೆಟ್ ಸಿಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಇನ್ನೂ ಹಾಲಿ ಶಾಸಕರು, ಹಾಗೂ ಕಳೆದ ಬಾರಿ ಚುನಾವಣೆಯಲ್ಲಿ ಕಡಿಮೆ ಅಂತದಿಂದ ಸೋತ ಅಭ್ಯರ್ಥಿಗಳ ಹೆಸರು ಹಾಗೂ ಸಮೀಕ್ಷೆಯ ಆಧಾರಿತವಾಗಿ ಕೆಲವು ಹೆಸರುಗಳನ್ನು ಶಾರ್ಟ್ ಲಿಸ್ಟ್ ಮಾಡಲಾಗಿದೆ. ಕೆಲವು ಕ್ಷೇತ್ರಗಳಲ್ಲಿ 20 ರಿಂದ 30 ಮಂದಿ ಆಕಾಂಕ್ಷಿಗಳು ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಅದು ಅಲ್ಲದೇ ಕೆಲವೊಂದು ಪ್ರಬಲವಾದ ಎದುರಾಳಿ ಕ್ಷೇತ್ರದಲ್ಲಿ ತಮ್ಮ ಯಾವ ಅಭ್ಯರ್ಥಿಯನ್ನ ಕಣಕ್ಕೆ ಇಳಿಸಬೇಕು ಎಂಬ ಬಗ್ಗೆಯೂ ರಾಜ್ಯ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ರಣದೀಪ್ ಸುರ್ಜೆವಾಲ ಜೊತೆಗೆ ಚರ್ಚೆಸಿದ್ದಾರೆ ಎನ್ನಲಾಗಿದೆ.
ಇಂದಿನ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆಯಲ್ಲಿ ಪ್ರಮುಖರ ಹೆಸರುಗಳನ್ನು ಮಾತ್ರ ಲಿಸ್ಟ್ ನಲ್ಲಿ ಸೇರಿಸಲಾಗಿದ್ದು, ಇನ್ನು ಅಭ್ಯರ್ಥಿಗಳನ್ನು ಸೇರ್ಪಡೆ ಅಥವಾ ಕೈಬಿಡುವ ಕುರಿತಾದ ಅಭಿಪ್ರಾಯಗಳನ್ನು ಲಿಖಿತ ರೂಪವಾಗಿ ನೀಡುವಂತೆ ಸಭೆಯಲ್ಲಿ ಚುನಾವಣಾ ಸಮಿತಿ ಸದಸ್ಯರಿಗೆ ತಿಳಿಸಲಾಗಿದೆ ಎಂದು ತಿಳಿದುಬಂದಿದೆ. ಇನ್ನೂ ಮೊದಲ ಪಟ್ಟಿಯನ್ನು ಈ ತಿಂಗಳ ಕೊನೆಯಲ್ಲಿ ಅಂತಿಮಗೊಳಿಸಿ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಈ ಸಭೆಯಲ್ಲಿ ಶಾರ್ಟ್ ಲಿಸ್ಟ್ ಆದ ಹೆಸರುಗಳನ್ನು ಸ್ಕ್ರೀನಿಂಗ್ ಕಮಿಟಿಗೆ ಕಳಿಸಲಾಗುತ್ತದೆ. ಅಲ್ಲಿ ಚರ್ಚೆಯಾದ ಬಳಿಕ ಪಟ್ಟಿ ಬಿಡುಗಡೆ ಆಗಲಿದೆ.
ಇನ್ನೂ ಚುನಾವಣೆಯಲ್ಲಿ ಅಭ್ಯರ್ಥಿಗಳಿಗೆ ಕ್ಷೇತ್ರದಲ್ಲಿ ಪ್ರಚಾರ ಹಾಗೂ ಕಾರ್ಯತಂತ್ರ ರೂಪಿಸಲು ಅನುಕೂಲವಾಗುವ ನಿಟ್ಟಿನಲ್ಲಿ ಆದಷ್ಟು ಶೀಘ್ರವಾಗಿ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡುವಂತೆ ಸಲಹೆಗಳು ವ್ಯಕ್ತವಾಗಿವೆ ಎಂದು ಮೂಲಗಳಿಂದ ತಿಳಿದು ಬಂದಿದೆ.