ಕರ್ನಾಟಕ ಚುನಾವಣೆ; ಮೇ 2ರಂದು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ
ಬೆಂಗಳೂರು, ಮೇ 01; ಕರ್ನಾಟಕ ವಿಧಾನಸಭೆ ಚುನಾವಣೆಗೆ 5 ಗ್ಯಾರಂಟಿಗಳನ್ನು ಘೋಷಣೆ ಮಾಡಿರುವ ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯನ್ನು ಮೇ 2ರಂದು ಬಿಡುಗಡೆ ಮಾಡಲಿದೆ. ಮೇ 10ರಂದು ರಾಜ್ಯದಲ್ಲಿ ಚುನಾವಣೆ ನಡೆಯಲಿದ್ದು, ಪ್ರಣಾಳಿಕೆಯಲ್ಲಿ ಹಲವಾರು ಜನಪ್ರಿಯ ಯೋಜನೆಗಳನ್ನು ನಿರೀಕ್ಷೆ ಮಾಡಲಾಗಿದೆ.
ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸಮಿತಿ ರಚನೆ ಮಾಡಲಾಗಿತ್ತು. ಕಳೆದ ವಾರ ಸಭೆ ನಡೆಸಿದ್ದ ಚುನಾವಣಾ ಪ್ರಣಾಳಿಕೆ ಸಮಿತಿಯು ಮುದ್ರಣಗೊಳ್ಳಲು ಸಿದ್ಧವಾಗಿರುವ ಪ್ರಣಾಳಿಕೆಯ ಅಂತಿಮ ಹಂತದ ರೂಪರೇಷೆಗಳ ಬಗ್ಗೆ ಸಮಾಲೋಚನೆ ನಡೆಸಿತ್ತು.

ಮೇ 2ರ ಮಂಗಳವಾರ ಕೆಪಿಸಿಸಿ ಕಚೇರಿಯಲ್ಲಿ ನಡೆಯಲಿರುವ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗುತ್ತದೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮುಂತಾದ ನಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಕಾಂಗ್ರೆಸ್ ಪ್ರಣಾಳಿಕೆ ಸಮಿತಿಗೆ ಡಾ. ಜಿ. ಪರಮೇಶ್ವರ್ ಅಧ್ಯಕ್ಷರು. ಸೊರಬದ ಮಾಜಿ ಶಾಸಕ ಮಧು ಬಂಗಾರಪ್ಪ ಮತ್ತು ಪ್ರೊಫೆಸರ್ ರಾಧಾಕೃಷ್ಣ ಅವರು ಉಪಾಧ್ಯಕ್ಷರು. ಕಳೆದ ವಾರ ಸಮಿತಿಯ ಮೂವರು ಸಹ ಸಭೆ ನಡೆಸಿ ಪ್ರಣಾಳಿಕೆಗೆ ಅಂತಿಮ ರೂಪುರೇಷೆ ನೀಡಿದೆ. ಹಲವಾರು ಹೊಸ ಘೋಷಣೆಗಳನ್ನು ಪ್ರಣಾಳಿಕೆ ಒಳಗೊಂಡಿರುವ ನಿರೀಕ್ಷೆ ಇದೆ.
ಕಾಂಗ್ರೆಸ್ ಗ್ಯಾರಂಟಿಗಳು; ಚುನಾವಣಾ ಪ್ರಣಾಳಿಕೆ ಬಿಡುಗಡೆಗೆ ಮೊದಲೇ ಕಾಂಗ್ರೆಸ್ ಪಕ್ಷ ಜನರಿಗೆ ಗ್ಯಾರಂಟಿ ಕಾರ್ಡ್ಗಳನ್ನು ವಿತರಣೆ ಮಾಡುತ್ತಿದೆ. ಈಗಾಗಲೇ 5 ಗ್ಯಾರಂಟಿಗಳನ್ನು ಪಕ್ಷ ಘೋಷಣೆ ಮಾಡಿದೆ.

* ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್
* ಮಹಿಳೆಯರಿಗೆ ಪ್ರತಿ ತಿಂಗಳು 2000 ರೂ.
* ಅನ್ನಭಾಗ್ಯ ಯೋಜನೆಯಡಿ ಪ್ರತಿ ತಿಂಗಳು 10 ಕೆಜಿ ಉಚಿತ ಅಕ್ಕಿ
* ನಿರುದ್ಯೋಗಿ ಯುವಕರಿಗೆ 3000 ರೂ. ಭತ್ಯೆ
* ಸರ್ಕಾರಿ ಬಸ್ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ
ಎಂಬ ಗ್ಯಾರಂಟಿಗಳನ್ನು ಕಾಂಗ್ರೆಸ್ ಪಕ್ಷ ಘೋಷಣೆ ಮಾಡಿದೆ. ಈ ಘೋಷಣೆಗಳನ್ನು ಮುಂದಿಟ್ಟುಕೊಂಡು ಜನರ ಮುಂದೆ ಮತ ಕೇಳಲು ಪಕ್ಷದ ನಾಯಕರು ಹೋಗಿದ್ದಾರೆ. ಈಗ ಪಕ್ಷದ ಪ್ರಣಾಳಿಕೆ ಬಿಡುಗಡೆ ಆಗುತ್ತಿದ್ದು, ಇನ್ನೂ ಹಲವಾರು ಘೋಷಣೆಗಳನ್ನು ನಿರೀಕ್ಷೆ ಮಾಡಲಾಗಿದೆ.
ಕರ್ನಾಟಕ ಚುನಾವಣೆಗೆ ಜೆಡಿಎಸ್ ಪಕ್ಷ ಈಗಾಗಲೇ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಬಿಜೆಪಿ ಪಕ್ಷದ ಚುನಾವಣಾ ಪ್ರಣಾಳಿಕೆ ಸೋಮವಾರ ಬಿಡುಗಡೆಯಾಗುತ್ತಿದೆ. ಚುನಾವಣೆಗೆ ಕೇವಲ 9 ದಿನಗಳು ಬಾಕಿ ಇದ್ದು, ಕಾಂಗ್ರೆಸ್ ನಾಯಕರು ಬಿರುಸಿನ ಪ್ರಚಾರವನ್ನು ಕೈಗೊಂಡಿದ್ದಾರೆ. 223 ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಮೋದಿ ವಾಗ್ದಾಳಿ; ಕರ್ನಾಟಕದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಕಾಂಗ್ರೆಸ್ ಗ್ಯಾರಂಟಿಗಳನ್ನು ಲೇವಡಿ ಮಾಡುತ್ತಿದ್ದಾರೆ. "ಕಾಂಗ್ರೆಸ್ ತುಷ್ಟೀಕರಣದ ರಾಜಕಾರಣ ಮಾಡುತ್ತಿದ್ದರೆ, ಬಿಜೆಪಿ ಸರ್ಕಾರ ಜನರಿಗೆ ಕಲ್ಯಾಣ ಕಾರ್ಯಕ್ರಮ ನೀಡುವ ಸಂತುಷ್ಟೀಕರಣ ಮಾಡುತ್ತಿದೆ. ಜನರ ಆಕಾಂಕ್ಷೆ, ಅವಕಾಶ ಮತ್ತು ಗೌರವಕ್ಕಾಗಿ ಡಬಲ್ ಎಂಜಿನ್ ಸರ್ಕಾರ ಕಾರ್ಯ ನಿರ್ವಹಿಸುತ್ತಿದೆ" ಎಂದು ಹೇಳಿದ್ದಾರೆ.
"ಕಾಂಗ್ರೆಸ್ ಮಂದಿ ಈಗಲೂ ಸುಳ್ಳು ಗ್ಯಾರಂಟಿ ಹಿಡಿದು ಓಡಾಡುತ್ತಿದ್ದಾರೆ. ನಿಜವಾದ ಗ್ಯಾರಂಟಿ ಏನು ಗೊತ್ತೇ? ಕಿಸಾನ್ ಸಮ್ಮಾನ್ ನಿಧಿಯ 6,000 ಜೊತೆ ರಾಜ್ಯದ ಡಬಲ್ ಎಂಜಿನ್ನ 4,000 ಸೇರಿ ರೈತರಿಗೆ ಡಬಲ್ ಲಾಭವಾಗಿದೆ. ಇದು ಚುನಾವಣಾ ನಾಟಕವಲ್ಲ, ಬದಲಾಗಿ ರೈತರಿಗೆ ನಿಜವಾಗಿಯೂ ತಲುಪುತ್ತಿರುವ ಗ್ಯಾರಂಟಿ" ಎಂದು ಮೋದಿ ತಿಳಿಸಿದ್ದಾರೆ.
"ಕಾಂಗ್ರೆಸ್ ಮತ್ತು ಜೆಡಿಎಸ್ನ ನೀತಿಗಳು ಅವರಿಂದ ಕಿತ್ತು ಇವರಿಗೆ ಕೊಡುವುದು. ಕಾಂಗ್ರೆಸ್ ತುಷ್ಟೀಕರಣ ಮಾಡುತ್ತ ಬಂದಿದೆ ಆದರೆ ಬಿಜೆಪಿ ಸಂತುಷ್ಟೀಕರಣದ ಮೂಲಕ ಪರಿಶಿಷ್ಟ, ಹಿಂದುಳಿದ ಸಮುದಾಯಗಳಿಗೆ ಬಲ ತುಂಬಿದೆ. ಕಾಂಗ್ರೆಸ್ ಜೆಡಿಎಸ್ನಿಂದ ಅಭಿವೃದ್ಧಿ ಸಾಧ್ಯವಿಲ್ಲ. ಈಗಾಗಲೇ ರಾಜಸ್ಥಾನ, ಛತ್ತೀಸ್ಗಢ, ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ನ ವಿಫಲ ಆಡಳಿತ ನೋಡಿದ್ದೇವೆ. ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ. ಬಿಜೆಪಿಯಿಂದ ಮಾತ್ರ ಅಭಿವೃದ್ಧಿ ಸಾಧ್ಯ" ಎಂದು ಮೋದಿ ಹೇಳಿದ್ದಾರೆ.












Click it and Unblock the Notifications