BJP V/S BJP: RSS ನಾಯಕರಿಗೆ ಬಿಜೆಪಿ ಗೊಂದಲ ಪರಿಹಾರಕ್ಕೆ ಉಚಿತ ಐಡಿಯಾ ಕೊಟ್ಟ ಕಾಂಗ್ರೆಸ್!
ಬೆಂಗಳೂರು, ಜೂನ್ 29: ರಾಜ್ಯ ವಿಧಾನಸಭೆ ಚುನಾವಣೆ ಸೋಲಿನ ಬಳಿಕ ಕರ್ನಾಟಕ ಬಿಜೆಪಿಯಲ್ಲಿ ಆಂತರಿಕ ಕಲಹ ಜೋರಾಗಿ ಸದ್ದು ಮಾಡುತ್ತಿದ್ದು, ಸ್ವಪಕ್ಷದ ನಾಯಕರ ವಿರುದ್ದ ಬಹಿರಂಗವಾಗಿಯೇ ಅಸಮಾಧಾನವನ್ನ ವ್ಯಕ್ತಪಡಿಸುತ್ತಿದಾರೆ.
ಬಿಜೆಪಿ ನಾಯಕರು ಪರಸ್ಪರ ತಮ್ಮ ಪಕ್ಷದ ನಾಯಕರ ಕುರಿತು ಟೀಕಾ ಪ್ರಹಾರ ನಡೆಸುತ್ತಿದ್ದಾರೆ. ಬಿಜೆಪಿಯ ಈ ಪರಿಸ್ಥಿತಿಗೆ ರಾಜ್ಯ ಕಾಂಗ್ರೆಸ್ ವ್ಯಂಗ್ಯವಾಡಿದೆ. ಇತಿಹಾಸದಲ್ಲಿ ಮೊದಲ ಬಾರಿಗೆ ಆರ್ಎಸ್ಎಸ್ನವರ ಲಾಠಿ ಉಪಯೋಗಕ್ಕೆ ಬರಲಿದೆ. ಬಿಜೆಪಿಯಲ್ಲಿನ ಗೊಂದಲ ಬಗೆಹರಿಸಲು ನಮ್ಮ ಕಡೆಯಿಂದ ಉಚಿತವಾಗಿ ಸಲಹೆ ಕೊಡುತ್ತಿದ್ದೇವೆ ಎಂದು ಆರ್ಎಸ್ಎಸ್ ನಾಯಕರಿಗೆ ಕಾಂಗ್ರೆಸ್ ಟ್ವೀಟ್ ಮೂಲಕ ಟಾಂಗ್ ನೀಡಿದೆ.

ಇನ್ನೂ ಬಿಜೆಪಿ ನಾಯಕರಲ್ಲಿ ನಿರಂತರವಾಗಿ ಕಿತ್ತಾಟದ ಕುರಿತು ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, ಇತಿಹಾಸದಲ್ಲಿ ಮೊದಲ ಬಾರಿಗೆ ಆರ್ಎಸ್ಎಸ್ನವರ ಲಾಠಿ ಉಪಯೋಗಕ್ಕೆ ಬರಲಿದೆ. ಸದ್ಯದ ಸ್ಥಿತಿಯಲ್ಲಿ ಬಿಜೆಪಿಗರ ಕೈಗೆ ಲಾಠಿಯನ್ನು ಕೊಟ್ಟರೆ ಬಡಿದಾಡಿಕೊಳ್ಳಲು ಬಳಸುತ್ತಾರೆ. ಆ ನಂತರ ಬದುಕುಳಿದವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಹಾಗೂ ವಿಪಕ್ಷ ನಾಯಕನ ಸ್ಥಾನ ಕೊಟ್ಟು ಕೂರಿಸಬಹುದು ಎಂದು ವ್ಯಂಗ್ಯವಾಡಿದೆ.
ಆರ್ಎಸ್ಎಸ್ ನಾಯಕರಿಗೆ ಬಿಜೆಪಿಯ ಗೊಂದಲ ಬಗೆಹರಿಸಲು ಉತ್ತಮ ಐಡಿಯಾವನ್ನು ಕಾಂಗ್ರೆಸ್ ಕಡೆಯಿಂದ ಉಚಿತವಾಗಿ ನೀಡುತ್ತಿದ್ದೇವೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ. ಅದಲ್ಲದೇ ರಾಜ್ಯಾಧ್ಯಕ್ಷರಿಂದಲೇ ಬಿಜೆಪಿಗೆ ಸೋಲಾಗಿದ್ದು ಎಂದು ರೇಣುಕಾಚಾರ್ಯ ಹೇಳಿದ್ದಾರೆ. ನಳಿನ್ ಕುಮಾರ್ ಕಟೀಲ್ ಅವರು ಈ ಆರೋಪ ಕೇಳಿಯೂ ಸುಮ್ಮನಿರುವುದೇಕೆ? ನನ್ನದೇನೂ ತಪ್ಪಿಲ್ಲ, ಶಾಡೋ ಅಧ್ಯಕ್ಷರಾದ ಜೋಶಿ, ಸಂತೋಷ್ ಅವರೇ ಸೋಲಿಗೆ ಹೊಣೆ ಎಂದು ಘೋಷಿಸಿಬಿಡಲಿ! ಸೋಲಿಗೆ ಸರದಾರರಾದ ಜೋಶಿ, ಸಂತೋಷ್ ಅವರುಗಳ ಹೆಸರೆತ್ತಲು ಬಿಜೆಪಿಗರು ಭಯಪಾಡುತ್ತಿರುವುದೇಕೆ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಬಿಜೆಪಿಯ ಸೋಲಿನ ಆತ್ಮವಲೋಕನದ ಫೈನಲ್ ರಿಸಲ್ಟ್ ಬರಲೇ ಇಲ್ಲ! ಒಬ್ಬೊಬ್ಬರದ್ದೂ ಒಂದೊಂದು ಅವಲೋಕನ ಎಂದು ಕರ್ನಾಟಕ ಕಾಂಗ್ರೆಸ್ ಕುಟುಕಿದ್ದು, ಅಧ್ಯಕ್ಷರಿಂದ ಸೋಲಾಯ್ತು, ವಲಸಿಗರಿಂದ ಸೋಲಾಯ್ತು, ಅಡ್ಜಸ್ಟ್ಮೆಂಟ್ ನಿಂದ ಸೋಲಾಯ್ತು. ಬಡವರ ಅಕ್ಕಿ ಕಿತ್ತುಕೊಂಡು ಸೋಲಾಯ್ತು, ಮೋದಿ ಬೀದಿ ಸುತ್ತಿದ್ದಕ್ಕೆ ಸೋಲಾಯ್ತು ಹಾಗೂ ಗುಜರಾತ್ ಮಾಡೆಲ್ ನಿಂದ ಸೋಲಾಯ್ತು ಮತ್ತು ಪಕ್ಷದ್ರೋಹಿಗಳಿಂದ ಸೋಲಾಯ್ತು ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ತಿಳಿಸಿದೆ.
ಅಕಸ್ಮಾತ್ ಗೆಲುವಾಗಿದ್ದಿದ್ದರೆ ಕ್ರೆಡಿಟ್ ಸಿಂಪಲ್ ಆಗಿರುತ್ತಿದ್ದವು, ಮೋದಿಯಿಂದ ಗೆಲುವಾಯ್ತು, ಜೋಶಿ, ಸಂತೋಷರಿಂದ ಗೆಲುವಾಯ್ತು! ಅಂತೂ ಇಂತೂ ಬಿಜೆಪಿಯ ಆತ್ಮವಲೋಕನದಲ್ಲಿ ಹಲವು ಸತ್ಯಗಳು ಹೊರಬಂದಿವೆ, ಇನ್ನೂ ಹಲವು ಹೊರಬಾರದೆ ಒದ್ದಾಡುತ್ತಿವೆ! ಎಂದು ಬಿಜೆಪಿ ನಾಯಕರಲ್ಲಿ ಆಂತರಿಕ ಕಚ್ಚಾಟದ ಕುರಿತು ಕಾಂಗ್ರೆಸ್ ವ್ಯಂಗ್ಯವಾಡಿದೆ.












Click it and Unblock the Notifications