ಫಲಿತಾಂಶ : ದೆಹಲಿಗೆ ತೆರಳಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಮೇ 17 : ಕರ್ನಾಟಕದಲ್ಲಿನ ಲೋಕಸಭೆ ಚುನಾವಣೆ ಫಲಿತಾಂಶ ಸಿಎಂ ಸಿದ್ದರಾಮಯ್ಯ ಅವರ ಮೇಲೆ ಯಾವ ಪರಿಣಾಮ ಬೀರಬಹುದು ಎಂಬ ಲೆಕ್ಕಾಚಾರ ಆರಂಭವಾಗಿದೆ. ತಮ್ಮ ಖುರ್ಚಿಗೆ ಯಾವುದೇ ಕಂಟಕವಿಲ್ಲ, ಮುಂದಿನ ಐದು ನಾಲ್ಕು ವರ್ಷಗಳಿಗೆ ನಾನೇ ಸಿಎಂ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಸೋಲಿನ ಪರಾಮರ್ಶೆ ನಡೆಸಲು ದೆಹಲಿಗೆ ತೆರಳಿದ್ದಾರೆ.
ಶುಕ್ರವಾರ ನಡೆದ ಲೋಕಸಭೆ ಚುನಾವಣೆ ಮತ ಎಣಿಕೆಯಲ್ಲಿ ರಾಜ್ಯದ ಆಡಳಿತ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ಪಕ್ಷ 9 ಸ್ಥಾನಗಳನ್ನು ಗಳಿಸಿದೆ. ಅದರಲ್ಲೂ ಸಿಎಂ ಸಿದ್ದರಾಮಯ್ಯ ತವರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲು ಅನುಭವಿಸಿದ್ದಾರೆ. ಬೆಂಗಳೂರು ನಗರದಲ್ಲಿ ಮೂರು ಸ್ಥಾನಗಳು ಬಿಜೆಪಿಗೆ ಒಲಿದಿದ್ದು, ಕಾಂಗ್ರೆಸ್ ಪಾಲಿಗೆ ಭಾರೀ ನಿರಾಸೆ ಉಂಟುಮಾಡಿದೆ. [ಕರ್ನಾಟಕದಲ್ಲಿ ಗೆದ್ದವರು, ಸೋತವರು]

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರ ನಡೆಸುತ್ತಿರುವುದರಿಂದ ಎಐಸಿಸಿ ರಾಜ್ಯದ ಮೇಲೆ ಭಾರೀ ನಿರೀಕ್ಷೆ ಇಟ್ಟಿತ್ತು. ಬೆಂಗಳೂರು ದಕ್ಷಿಣ, ಮಂಡ್ಯ ಮತ್ತು ಬೆಳಗಾವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ವಿಶೇಷ ಪ್ರಯತ್ನ ನಡೆದಿತ್ತು. ಆದರೆ, ಎಲ್ಲಾ ಲೆಕ್ಕಾಚಾರ ತಲೆಕೆಳಗಾಗಿದ್ದು, ಜನರು ನರೇಂದ್ರ ಮೋದಿ ಅವರನ್ನು ಬೆಂಬಲಿಸಿದ್ದಾರೆ.
ದೆಹಲಿಗೆ ತೆರಳಿದ ಸಿಎಂ : ಶುಕ್ರವಾರ ಚುನಾವಣಾ ಫಲಿತಾಂಶ ಪ್ರಕಟವಾದ ನಂತರ ಪ್ರತಿಕ್ರಿಯೆ ನೀಡಿದ್ದ ಸಿಎಂ ಸಿದ್ದರಾಮಯ್ಯ ಇದು, ರಾಷ್ಟ್ರೀಯ ವಿಷಯಗಳ ಆಧಾರದಲ್ಲಿ ನಡೆದ ಚುನಾವಣೆ ಆದ್ದರಿಂದ ನಮ್ಮ ಸರ್ಕಾರದ ಸಾಧನೆ ನೋಡಿ ಜನರು ಮತ ನೀಡಿಲ್ಲ ಎಂದು ಹೇಳಿದ್ದಾರೆ. ಮುಂದಿನ ನಾಲ್ಕು ವರ್ಷ ನಾನೇ ಸಿಎಂ ಎಂದು ಸ್ಪಷ್ಟಪಡಿಸಿದ್ದಾರೆ.
ಶನಿವಾರ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ದೆಹಲಿಗೆ ತೆರಳಿದ್ದು, ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಿ ಸೋಲಿನ ಬಗ್ಗೆ ಪರಾಮರ್ಶೆ ನಡೆಸಲಿದ್ದಾರೆ. ಲೋಕಸಭೆ ಚುನಾವಣೆ ಫಲಿತಾಂಶದಿಂದಾಗಿ ಸಚಿವ ಸಚಿವ ಸಂಪುಟ ವಿಸ್ತರಣೆ, ನಿಗಮ ಮಂಡಳಿ ಅಧ್ಯಕ್ಷ, ಉಪಾಧ್ಯಕ್ಷರ ನೇಮಕ ಮುಂತಾದ ಪ್ರಕ್ರಿಯೆಗಳು ವಿಳಂಬವಾಗುವ ಸಾಧ್ಯತೆ ಇದೆ.












Click it and Unblock the Notifications