ಕಾಂಗ್ರೆಸ್ ನವರಿಗೆ ರಾಮ ಮಂದಿರ ಆಗಬಾರದು ಅನ್ನುವ ಆಸೆ ಇತ್ತು: ಮಾಜಿ ಸಿಎಂ ಹೇಳಿದ್ದೇನು?
ಬೆಂಗಳೂರು, ಜನವರಿ 08: ಕಾಂಗ್ರೆಸ್ ನವರಿಗೆ ರಾಮ ಮಂದಿರ ಆಗಬಾರದು ಅನ್ನುವ ಆಸೆ ಇತ್ತು. ಆದರೆ, ಭವ್ಯವಾದ ರಾಮಮಂದಿರ ನಿರ್ಮಾಣವಾಗಿದೆ. ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ್ ರಾಮ ಮಂದಿರ ಉದ್ಘಾಟನೆ ಸಂದರ್ಭದಲ್ಲಿ ಗೋಧ್ರಾ ಮಾದರಿಯ ಗಲಾಟೆ ನಡೆಯುವ ಸಾಧ್ಯತೆ ಇದೆ ಎಂದು ಹೇಳುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಈ ಕುರಿತು ಮಾತನಾಡಿದ ಅವರು, ಅದೇ ರೀತಿ ಇಂಡಿಯಾ ಒಕ್ಕೂಟದ ನಾಯಕರೂ ರೈಲಿನಲ್ಲಿ ಪ್ರಯಾಣ ಮಾಡಬೇಡಿ ಎಂದು ಜನರಿಗೆ ಹೇಳುತ್ತಿದ್ದಾರೆ. ದೇಶದಲ್ಲಿ ಮೋದಿಯವರು ಪ್ರಧಾನಿಯಾಗಿದ್ದಾರೆ. ಯಾವುದೇ ರೀತಿಯ ಸಣ್ಣ ಗಲಭೆಗೂ ಅವಕಾಶ ಕೊಡುವುದಿಲ್ಲ. ಸುರಕ್ಷಿತವಾಗಿ, ವೈಭವಯುತವಾಗಿ ರಾಮಮಂದಿರ ಉದ್ಘಾಟನೆಯಾಗಲಿದೆ ಎಂದು ತಿಳಿಸಿದರು.

ಬಿ.ಕೆ. ಹರಿಪ್ರಸಾದ್ ಅವರ ಹೇಳಿಕೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಅವರು ಸಂದರ್ಭ ಬಂದರೆ ಹರಿಪ್ರಸಾದ್ ಅವರಿಂದ ಮಾಹಿತಿ ಪಡೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ. ಗಲಭೆಯಾದ ಮೇಲೆ ಮಾಹಿತಿ ಪಡೆದುಕೊಳ್ಳುತ್ತಾರಾ ಎಂದು ಪ್ರಶ್ನಿಸಿದರು. ಡಿಜೆ ಹಳ್ಳಿ ಕೆಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಎರಡು ಪೊಲಿಸ್ ಠಾಣೆಗಳಿಗೆ ಬೆಂಕಿ ಹಚ್ಚಿದವರನ್ನು ಅಮಾಯಕರು ಎಂದು ಬಿಂಬಿಸುತ್ತಿದ್ದಾರೆ.
ಈ ಪ್ರಕರಣ ತನಿಖಾ ವರದಿಯನ್ನು ಕಾಂಗ್ರೆಸ್ ನವರೇ ಒಪ್ಪಿಕೊಂಡಿದ್ದಾರೆ. ಈಗ ಅವರನ್ನು ಅಮಾಯಕರು ಎಂದು ಹೇಳುತ್ತಿದ್ದಾರೆ. ಈ ಮೂಲಕ ಅಲ್ಪಸಂಖ್ಯಾತರನ್ನು ಮತ್ತು ರಾಜ್ಯದ ಜನತೆಯನ್ನು ದಾರಿ ತಪ್ಪಿಸುತ್ತಿದ್ದಾರೆ. ರಾಜ್ಯದಲ್ಲಿ ಅಕಸ್ಮಾತ್ ಏನಾದರೂ ಆದರೆ ಅದಕ್ಕೆ ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು ಹೇಳಿದರು.
ಪುನೀತ್ ಕೆರಹಳ್ಳಿ ಬಳಸಿ ಕೋಮು ಗಲಭೆಗೆ ಬಿಜೆಪಿ ಪತ್ವಾ ಹೊರಡಿಸಿದೆ ಎಂದು ಆರೋಪಿಸಿರುವ ಬಿ.ಕೆ. ಹರಿಪ್ರಸಾದ್ ಹೇಳಿಕೆಗೆ ತಿರುಗೇಟು ನೀಡಿರುವ ಅವರು, ಪುನಿತ್ ಕೆರೆ ಹಳ್ಳಿ ಸೇರಿದಂತೆ ಯಾರದೇ ಪ್ರಕರಣದಲ್ಲಿ ಕಾಂಗ್ರೆಸ್ ಜನರಲ್ಲಿ ಕೋಮು ಭಾವನೆ ಹುಟ್ಟು ಹಾಕುವ ಕೆಲಸ ಮಾಡುತ್ತಿದೆ. ಬಿಜೆಪಿ ಯನ್ನು ಕೋಮುವಾದಿ ಎಂದು ಆರೋಪಿಸುವ ಕಾಂಗ್ರೆಸ್ ನಿಜವಾದಿ ಕೋಮುವಾದಿ ಎಂದು ಆರೋಪಿಸಿದರು.

ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದ್ದು, ಕಾಂಗ್ರೆಸ್ ಸರ್ಕಾರ ಜನರಲ್ಲಿ ಭಯ ಹುಟ್ಟಿಸುವ ಕೆಲಸ ಮಾಡುತ್ತಿದೆ. ಏಳೇ ತಿಂಗಳಲ್ಲಿ ಸರ್ಕಾರಕ್ಕೆ ಅಧಿಕಾರದ ಮದ ಏರಿದೆ. ಇದು ಸರ್ಕಾರ ದಬ್ಬಾಳಿಕೆಯ ಸರ್ಕಾರ. ಮುಖ್ಯಮಂತ್ರಿಗಳು, ಮಂತ್ರಿಗಳ ಭಾಷೆ ವ್ಯಕ್ತಿಯ ಸ್ವಾತಂತ್ರ್ಯಕ್ಕೆ ಧಕ್ಕೆ ಆಗುತ್ತಿದೆ.
ಅನ್ಯಾಯದ ವಿರುದ್ದ ಹೋರಾಟ ಮಾಡಿದರೆ ಅವರ ವಿರುದ್ಧ ಕೇಸ್ ಹಾಕುತ್ತಿದ್ದಾರೆ. ಈ ಸರ್ಕಾರದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ವಾತಾವರಣ ಇದೆ. ಕರ್ನಾಟಕದಲ್ಲಿ ಜನರಲ್ಲಿ ಭಯ ಹುಟ್ಟಿಸುವ ಪ್ರಯತ್ನ ನಡೆಯುತ್ತಿದೆ. ಅದರಲ್ಲಿ ಶ್ರೀಕಾಂತ್ ಪೂಜಾರಿ ಕೇಸ್ ಒಂದು. ಅವರ ವಿರುದ್ದ ಯಾವುದೇ ಪ್ರಕರಣ ಇಲ್ಲದಿದ್ದರೂ, ಅವರನ್ನು ಒಳಗಡೆ ಹಾಕಿದರು. ಇದು ಎಮರ್ಜೆನ್ಸಿಯಲ್ಲಿ ಮಾತ್ರ ಸಾಧ್ಯ ಎಂದರು.
ಶ್ರೀಕಾಂತ ಪೂಜಾರಿ ಅವರನ್ನು ಒಳಗಡೆ ಹಾಕಿದ ಅಧಿಕಾರಿ, ಮಂತ್ರಿಗಳು ಕ್ಷಮೆ ಕೇಳಲಿಲ್ಲ. ಇದನ್ನು ಜನರು ಗಮನಸುತ್ತಿದ್ದಾರೆ. ಏಳೇ ತಿಂಗಳಲ್ಲಿ ಈ ಸರ್ಕಾರಕ್ಕೆ ಅಧಿಕಾರದ ಮದ ಏರಿದೆ. ಸರ್ಕಾರದ ದಾಷ್ಟ್ಯ ಹೆಚ್ಚಾಗಿದೆ. ಈ ಸರ್ಕಾರದ ವಿರುದ್ದ ನಾವು ಹೋರಾಟ ಮಾಡುತ್ತೇವೆ ಎಂದರು.












Click it and Unblock the Notifications