ಮೂರು ಸಮೀಕ್ಷೆ ಬಳಿಕ ಕಾಂಗ್ರೆಸ್ ಅಭ್ಯರ್ಥಿಗಳು ಅಂತಿಮ?
ಬೆಂಗಳೂರು, ಫೆಬ್ರವರಿ 28 : ಕರ್ನಾಟಕ ಕಾಂಗ್ರೆಸ್ 2018ರ ವಿಧಾನಸಭೆ ಚುನಾವಣೆ ಟಿಕೆಟ್ ಹಂಚಿಕೆ ಮಾಡಲು ಆಕಾಂಕ್ಷಿಗಳಿಂದ ಅರ್ಜಿ ಕರೆದಿದೆ. ಮೂರು ಸಮೀಕ್ಷೆಗಳ ನಂತರ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುತ್ತದೆ. ಹಾಲಿ ಶಾಸಕರಿಗೂ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದೆ ಎಂಬ ಸುದ್ದಿಗಳು ಹಬ್ಬಿವೆ.
ಕಾಂಗ್ರೆಸ್ ಪಕ್ಷದ ಹೈಕಮಾಂಡ್ ನೇಮಕ ಮಾಡಿರುವ ಸಮೀಕ್ಷಾ ತಂಡ ರಾಜ್ಯದಲ್ಲಿ ಎರಡು ಸುತ್ತಿನ ಸಮೀಕ್ಷೆಯನ್ನು ಪೂರ್ಣಗೊಳಿಸಿದೆ. ಮತ್ತೊಂದು ಹಂತದ ಸಮೀಕ್ಷೆ ಬಳಿಕ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ.
ಕರ್ನಾಟಕ ಬಿಜೆಪಿ 150 ಸ್ಥಾನಗಳಲ್ಲಿ ಜಯಗಳಿಸುವ ಉದ್ದೇಶದಿಂದ 'ಮಿಷನ್ 150' ಎಂಬ ಗುರಿ ನಿಗದಿ ಮಾಡಿದೆ. ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷ 130 ಸ್ಥಾನಗಳಲ್ಲಿ ಜಯಗಳಿಸುವ ಗುರಿಯನ್ನು ಹೊಂದಿದೆ.

ಕಾಂಗ್ರೆಸ್ ಪಕ್ಷ 150 ಅಭ್ಯರ್ಥಿಗಳನ್ನು ಈಗಾಗಲೇ ಅಂತಿಮಗೊಳಿಸಿದೆ. 12ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಹಾಲಿ ಶಾಸಕರು ಸೋಲುವ ಭೀತಿ ಇದೆ. ಆ ಕ್ಷೇತ್ರಗಳಲ್ಲಿ ಹೊಸ ಅಭ್ಯರ್ಥಿಗಳಿಗೆ ಟಿಕೆಟ್ ಕೊಡುವ ಬಗ್ಗೆ ಚಿಂತನೆ ನಡೆಸಿದೆ.
ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯನ್ನು ಮೊದಲು ಚುನಾವಣಾ ಸಮಿತಿ ಅಂತಿಮಗೊಳಿಸಲಿದೆ. ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಒಂದು ಕ್ಷೇತ್ರಕ್ಎಕ 3 ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಿದ್ದಾರೆ. ಆ ಪಟ್ಟಿಯನ್ನು ಹೈಕಮಾಂಡ್ ನಾಯಕರಿಗೆ ರವಾನಿಸಲಾಗುತ್ತದೆ.











Click it and Unblock the Notifications