ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ಸಿಗೆ ಎಷ್ಟು ಸ್ಥಾನ? ಡಿಕೆಶಿ ಭವಿಷ್ಯ
ಕಮಲ ಕೆರೆಯಲ್ಲಿದ್ದರೆ ಚಂದ, ತೆನೆ ಹೊಲದಲ್ಲಿದ್ದರೆ ಚಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚಂದ ಎಂದು ಡಿ ಕೆ ಶಿವಕುಮಾರ ಹೇಳಿದರು.
ಮೈಸೂರು,ಫೆಬ್ರವರಿ15: ಕಾಂಗ್ರೆಸ್ 140 ಕ್ಷೇತ್ರಗಳಲ್ಲಿ ಗೆದ್ದರೆ, ಬಿಜೆಪಿ 60, ಜೆಡಿಎಸ್ 25 ಕ್ಷೇತ್ರ ಗೆಲ್ಲಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಭವಿಷ್ಯ ನುಡಿದಿದ್ದಾರೆ.
ಈ ಕುರಿತು ಹುಣಸೂರಿನಲ್ಲಿ ಮಾರನಾಡಿದ ಅವರು, ನಾವು ಬಿಜೆಪಿ ದುರಾಡಳಿತದ ಪಾಪದ ಪುರಾಣ ಎಂಬ ಕಿರುಹೊತ್ತಿಗೆ ಬಿಡುಗಡೆ ಮಾಡಿದ್ದೇವೆ. ಇದನ್ನು ನೀವು ಪ್ರತಿ ಮನೆ ಮನೆಗೆ ಕಳುಹಿಸಬೇಕು. ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ. ಹೀಗಾಗಿ ಕಾಂಗ್ರೆಸ್ ಪಕ್ಷದ ಹಸ್ತದ ಗುರುತಿಗೆ ಮತ ಹಾಕಿ ಶಕ್ತಿ ತುಂಬಬೇಕು ಎಂದರು.
ಇಲ್ಲಿನ ಶಾಸಕ ಮಂಜುನಾಥ್ ಅವರು ಉತ್ತಮ ರೀತಿಯಲ್ಲಿ ನಿಮ್ಮ ಸೇವೆ ಮಾಡುತ್ತಿದ್ದಾರೆ. ನಾನು ಇಲ್ಲಿ ಉಪಚುನಾವಣೆ ಸಮಯದಲ್ಲಿ ಬಂದಿದ್ದೆ. ನೀವು ವಿಶ್ವನಾಥ್ ಅವರನ್ನು ಸೋಲಿಸಿ, ಕಾಂಗ್ರೆಸ್ ಗೆ ಶಕ್ತಿ ತುಂಬಿದ್ದಿರಿ. ವಿಶ್ವನಾಥ್ ಅವರು ಈ ಭಾಗದ ಶಾಸಕರಾಗಿದ್ದವರು. ಈ ಜಿಲ್ಲೆಯ ಸಂಸದರೂ ಆಗಿದ್ದರು. ಪ್ರಜ್ಞಾವಂತ ಹಾಗೂ ಅನುಭವಿ ನಾಯಕರು. ಅವರು ಆಪರೇಷನ್ ಕಮಲದ ಮೂಲಕ ಬಿಜೆಪಿಗೆ ಹೋದರು. ಅಲ್ಲಿ ಎಂಎಲ್ ಸಿ ಆದರು. ನಂತರ ನನ್ನನ್ನು ಭೇಟಿ ಮಾಡಿ ತಾನು ಸಾಯುವ ಮುನ್ನ ಕಾಂಗ್ರೆಸ್ಸಿಗನಾಗಬೇಕು ಎಂದು ಕೇಳಿದ್ದಾರೆ. ಅವರು ಪಕ್ಷದ ತತ್ವ ಸಿದ್ಧಾಂತದ ಮೇಲೆ ನಂಬಿಕೆ ಇಟ್ಟುಕೊಂಡಿದ್ದಾರೆ ಎಂದು ಹೇಳಿದರು.

ದೇವರು ವರವನ್ನು ನೀಡುವುದಿಲ್ಲ, ಶಾಪವನ್ನೂ ನೀಡುವುದಿಲ್ಲ. ಕೇವಲ ಅವಕಾಶವನ್ನು ಮಾತ್ರ ನೀಡುತ್ತಾನೆ. ಆದರೆ ನಿಮಗೆ ಕೊಟ್ಟಿರುವ ಅವಕಾಶವನ್ನು ಸರಿಯಾದ ರೀತಿಯಲ್ಲಿ ಉಪಯೋಗಿಸಿಕೊಳ್ಳಬೇಕು. ಅದರಂತೆ ನಿಮ್ಮ ಶಾಸಕ ಮಂಜುನಾಥ್ ಅವರು ತಮಗೆ ಸಿಕ್ಕ ಅವಕಾಶವನ್ನು ಉಪಯೋಗಿಸಿಕೊಂಡು ನಿಮ್ಮ ಸೇವೆ ಮಾಡುತ್ತಿದ್ದಾರೆ.
ನಮ್ಮ ಪಕ್ಷ ಆಹಾರ, ಅಕ್ಷರ, ಆಶ್ರಯ ಯೋಜನೆ ನೀಡಿ ಜನರ ಬದುಕು ಬದಲಾವಣೆ ಮಾಡಿದೆ. ಇಂದಿರಾ ಗಾಂಧಿ ಅವರು ಪ್ರಧಾನಿಯಾಗಿ, ದೇವರಾಜ ಅರಸು ಅವರು ಸಿಎಂ ಆಗಿದ್ದ ಸಮಯದಲ್ಲಿ ಉಳುವವನೆ ಭೂಮಿಯ ಒಡೆಯ ಎಂದು ರೈತರಿಗೆ ಜಮೀನು ಕೊಟ್ಟರು. ಭಾರತ ಜೋಡೋ ಯಾತ್ರೆ ಸಮಯದಲ್ಲಿ ಸಾಗುವಾಗ ಹಿರಿಯ ಮಹಿಳೆ ಬಂದು ರಾಹುಲ್ ಗಾಂಧಿ ಅವರಿಗೆ ಸೌತೇ ಕಾಯಿ ಕೊಟ್ಟು, ಇದು ನಿಮ್ಮ ಅಜ್ಜಿ ಕೊಟ್ಟ ಜಮೀನಿನಲ್ಲಿ ಬೆಳೆಯಲಾಗಿದೆ ಎಂದು ಹೇಳಿದರು. ಇವು ಕಾಂಗ್ರೆಸ್ ಪಕ್ಷದ ಕಾರ್ಯಕ್ರಮ, ಬದ್ಧತೆ. ಮನೆ, ವಿದ್ಯಾಭ್ಯಾಸ, ಮೀಸಲಾತಿ ಸೇರಿದಂತೆ ಸಂವಿಧಾನ ಚೌಕಟ್ಟಿನಲ್ಲಿ ನಿಮಗೆ ಶಕ್ತಿ ತುಂಬಿದೆ. ಆ ಮೂಲಕ ನಿಮ್ಮ ಬದುಕಿನಲ್ಲಿ ಬದಲಾವಣೆ ತರಲಾಗಿದೆ.

ಬಿಜೆಪಿ ಚುನಾವಣೆಗೂ ಮುನ್ನ ಕೊಟ್ಟ ಯಾವುದೇ ಭರವಸೆ ಈಡೇರಿಸಿಲ್ಲ. ಮೋದಿ ಅವರು ಅಚ್ಛೇದಿನ ಬರುತ್ತದೆ ಎಂದರು, ನಿಮ್ಮ ಆದಾಯ ಡಬಲ್ ಮಾಡುತ್ತೇವೆ ಎಂದರು, ಯುವಕರಿಗೆ ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇವೆ ಎಂದರು, ನಿಮ್ಮ ಖಾತೆಗೆ 15 ಲಕ್ಷ ಹಾಕುತ್ತೇವೆ ಎಂದರು. ಈ ಯಾವುದಾದರೂ ಭರವಸೆ ಈಡೇರಿಸಿದ್ದಾರಾ? ಅವರಿಂದ ನಿಮ್ಮ ಬದುಕಿನಲ್ಲಿ ಬದಲಾವಣೆ ತರಲು ಆಗಲಿಲ್ಲ
ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಈ ಸರ್ಕಾರದಲ್ಲಿ 40% ಕಮಿಷನ್ ನೀಡಬೇಕು ಎಂದು ಪ್ರಧಾನಿಗೆ ದೂರಿದರು. ಇನ್ನು ಸ್ವಾಮೀಜಿಗಳು ಈ ಸರ್ಕಾರಕ್ಕೆ 30% ಕಮಿಷನ್ ನೀಡಬೇಕು ಎಂದರು. ಗೂಳಿಹಟ್ಟಿ ಶೇಖರ್ ಅವರು 22 ಸಾವಿರ ನೀರಾವರಿ ಟೆಂಡರ್ ಅಕ್ರಮದ ಬಗ್ಗೆ ಆರೋಪ ಮಾಡಿದ್ದಾರೆ ಎಂದು ಹೇಳಿದರು.












Click it and Unblock the Notifications