ಟಿಕೆಟ್ ಗಾಗಿ ಕಾಂಗ್ರೆಸ್ ಮಹಿಳಾಮಣಿಗಳ ಅಹವಾಲು
ನವದೆಹಲಿ, ಡಿಸೆಂಬರ್ 14 : ಇದನ್ನು ಹಕ್ಕಂತಾದರೂ ಕರೆಯಿರಿ, ಲಾಬಿಯಂತಾದರೂ ಕರೆಯಿರಿ, ಕರ್ನಾಟಕ ಕಾಂಗ್ರೆಸ್ ಮಹಿಳಾ ಮಂಡಳಿ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ತಮಗೂ ಟಿಕೆಟ್ ನೀಡಬೇಕೆಂದು ಸಿದ್ದರಾಮಯ್ಯನವರಿಗೆ ಅಹವಾಲು ಸಲ್ಲಿಸಿದೆ.
ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯರಿಂದ ಭಾವುಕ ಪತ್ರ
ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ, ಪ್ರಭಾವಿ ನಾಯಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ನೇತೃತ್ವದಲ್ಲಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರ ನಿಯೋಗವೊಂದು ಸಿದ್ದರಾಮಯ್ಯನವರನ್ನು ನವದೆಹಲಿಯ ಕರ್ನಾಟಕ ಭವನದಲ್ಲಿ ಮಂಗಳವಾರ ಭೇಟಿ ಮಾಡಿದೆ. ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಬೆಳಗಾವಿ ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು.
ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರಿಗೆ ಪ್ರಾಧಾನ್ಯತೆ ನೀಡಿ, ಸ್ಪರ್ಧಿಸಲು ಟಿಕೆಟ್ ನೀಡಬೇಕೆಂದು ಆಗ್ರಹಿಸಿದರು. ಇದಕ್ಕೆ ಆಗಬಹುದು ಎಂದು ಭರವಸೆ ನೀಡಿದ ಸಿದ್ದರಾಮಯ್ಯನವರೊಂದಿಗೆ ಹಲವಾರು ಮಹಿಳಾಮಣಿಗಳು ಸೆಲ್ಫಿ ತೆಗೆಸಿಕೊಂಡು ಸಂಭ್ರಮಪಟ್ಟರು.
224 ಕ್ಷೇತ್ರಗಳಲ್ಲಿ ಶೇ.33ರಷ್ಟು ಸ್ಥಾನಗಳಿಗೆ ಮಹಿಳೆಯರಿಗೆ ಟಿಕೆಟ್ ನೀಡುವುದಾಗಿ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ ಅವರು ಮಹಿಳಾ ಕಾರ್ಯಕರ್ತೆಯರಿಗೆ ಈಗಾಗಲೆ ವಾಗ್ದಾನ ನೀಡಿದ್ದಾರೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರು ಕೂಡ ಶೇ.33ರಷ್ಟು ಮಹಿಳೆಯರಿಗೆ ಪ್ರಾಧಾನ್ಯತೆ ಸಿಗಬೇಕೆಂದು ಹೋರಾಟ ನಡೆಸಿದ್ದಾರೆ.
ಈ ಭೇಟಿ ನಡೆದಿರುವ ಸಮಯದಲ್ಲಿಯೇ, ಜಾತ್ಯತೀತ ಜನತಾದಳದಿಂದ ವಜಾ ಆಗಿರುವ ಶಾಸಕರನೇಕರು ಕರ್ನಾಟಕ ಭವನದಲ್ಲಿ ಕಾಣಿಸಿಕೊಂಡು, ಸಿದ್ದರಾಮಯ್ಯನವರೊಂದಿಗೆ ಹಸ್ತಲಾಘವ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿರುವ ರಾಹುಲ್ ಅವರಿಗೆ ಅಭಿನಂದನೆ ಸಲ್ಲಿಸಿದ ನಂತರ ಈ ಭೇಟಿ ನಡೆದಿದೆ.
ಅವರಲ್ಲಿ ಪ್ರಮುಖರು, ಬೆಂಗಳೂರಿನ ಚಾಮರಾಜಪೇಟೆ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಪಡೆದು ಸ್ಪರ್ಧಿಸಲು ಹವಣಿಸುತ್ತಿರುವ ಜಮೀರ್ ಅಹ್ಮದ್ ಖಾನ್ ಮತ್ತು ಮಂಡ್ಯದ ಸಂಸದ ಚೆಲುವರಾಯಸ್ವಾಮಿಯವರು ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದು ಅಂತಹ ಕುತೂಹಲಕರ ಸಂಗತಿಯೇನಲ್ಲ. ಏಕೆಂದರೆ, ಜೆಡಿಎಸ್ ನಿಂದ ಲಂಘನ ಮಾಡಿರುವ ಏಳು ಶಾಸಕರು ಕಾಂಗ್ರೆಸ್ ಸೇರುವುದು ಹೆಚ್ಚೂಕಡಿಮೆ ಖಚಿತವಾಗಿದೆ. ಆದರೆ, ಸಮಯ ಇನ್ನೂ ನಿಗದಿಯಾಗಿಲ್ಲ.